ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

30.03.22 - "ಒಂದು ವೇಳೆ ತಾಯಿ ಮರೆತರೂ ನಾ ನಿನ್ನನ್ನು ಮರೆಯೆ."

ಮೊದಲನೇ ವಾಚನ: ಯೆಶಾಯ  49:8-15 

ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರಸ್ವಾಮಿ: "ನಿನಗೆ ದಯಪಾಲಿಸಿರುವೆನು ಸದುತ್ತರವನ್ನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನ್ನು ಕಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ. "ಹೊರಟು ಹೋಗಿರಿ" ಎನ್ನುವೆನು ಸೆರೆಯಾಳುಗಳಿಗೆ "ಬೆಳಕಿಗೆ ಬನ್ನಿರಿ" ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ. ದೇಶವನ್ನು ಪುನಃ ತರುವೆನು ಪೂರ್ವಸ್ಥಿತಿಗೆ ದಾರಿಯುದ್ಧಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ. ಇರದು ಅವರಿಗೆ ಹಸಿವು ಬಾಯಾರಿಕೆ, ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ, ಕರುಣಾಕರನು  ಅವರಿಗೆ. ಸಮದಾರಿಯಾಗಿಸುವೆನು ನನ್ನ ಬೆಟ್ಟಗುಡ್ಡಗಳನು, ಎತ್ತರಿಸುವೆನು ನನ್ನ ರಾಜಮಾರ್ಗಗಳನು. ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ, ದಕ್ಷಿಣದ ಆ ಆಶ್ವಾನ್ ನಾಡಿನಿಂದ. ಹರ್ಷಧ್ವನಿಗೈ ಆಕಾಶವೇ, ಉಲ್ಲಾಸಪಡು ಪೊಡವಿಯೇ, ತಟ್ಟಾಡಿರಿ ಬೆಟ್ಟಗಡ್ಡಗಳೇ, ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು, ಕನಿಕರಿಸಿಹನು ಶೋಷಿತರಾದ ತನ್ನ ಜನರನು. ಜೆರುಸಲೇಮಿನ ಜನರಾದರೋ ಇಂತೆಂದರು: ಸರ್ವೇಶ್ವರ ನಮ್ಮನ್ನು ಕೈ ಬಿಟ್ಟಿಹನು, ಆ ಸ್ವಾಮಿ ನಮ್ಮನ್ನು ಮರೆತುಬಿಟ್ಟಿಹನು." ಹೆತ್ತ ತಾಯಿಗೆ ತನ್ನ ಕಂದನ ಪ್ರೀತಿ ಬತ್ತಿಹೋಗುವುದುಂಟೆ? ಆಕೆ ತನ್ನ ಮೊಲೆಗೂಸನ್ನು ಮರೆತುಬಿಡುವುದುಂಟೆ? ಒಂದು ವೇಳೆ ಆಕೆ ಮರೆತರೂ ನಾ ನಿನ್ನನ್ನು ಮರೆಯೆ." 

ಕೀರ್ತನೆ: 145:8-9, 13-14, 17-18 
ಶ್ಲೋಕ: ಪ್ರಭು ದಯಾನಿಧಿ, ಕೃಪಾಸಾಗರನು ಸಹನಶೀಲನು, ಪ್ರೀತಿಪೂರ್ಣನು 

ಶುಭಸಂದೇಶ: ಯೊವಾನ್ನ 5:17-30 

ಯೆಹೂದ್ಯರ ಆಕ್ಷೇಪಣೆಗೆ ಉತ್ತರವಾಗಿ ಯೇಸು, "ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ," ಎಂದು ನುಡಿದರು. ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲು ಮತ್ತಷ್ಟು ಹವಣಿಸಿದರು. ಯೇಸುಸ್ವಾಮಿ ಅವರನ್ನು ಉದ್ದೇಶಿಸಿ ಹೀಗೆಂದರು: ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಪಿತನು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ ಪಿತನು ಮಾಡುವುದನ್ನೇ ಪುತ್ರನೂ ಮಾಡುವುದು. ಪುತ್ರನೆಂದರೆ ಪಿತನಿಗೆ ಪ್ರೀತಿ. ಆದುದರಿಂದ ತಾವು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ಇದಲ್ಲದೆ ಇನ್ನೂ ಎಷ್ಟೋ ಮಿಗಿಲಾದ ಕಾರ್ಯಗಳನ್ನು ಪುತ್ರನಿಗೆ ತೋರಿಸುತ್ತಾರೆ. ಅವುಗಳನ್ನು ಕಂಡು ನೀವು ಬೆರಗಾಗುವಿರಿ. ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನು ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ. ಅಲ್ಲದೆ, ಪಿತನು ಯಾರನ್ನೂ ತೀರ್ಪಿಗೆ ಗುರಿಮಾಡುವುದಿಲ್ಲ. ತೀರ್ಪುಕೊಡುವ ಅಧಿಕಾರವನ್ನೆಲ್ಲಾ ಅವರು ಪುತ್ರನಿಗೆ ಕೊಟ್ಟಿದ್ದಾರೆ. ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನು ಗೌರವಿಸುವುದಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾನೆ. ಅವನು ಖಂಡನೆಗೆ ಗುರಿಯಾಗನು. ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ. ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು. ಪಿತನು ತಾನೇ ಸ್ವಯಂ ಜೀವ ಮೂಲವಾಗಿರುವಂತೆ ಪುತ್ರನು ಸಹ ಸ್ವಯಂ ಜೀವ ಮೂಲವಾಗಿರುವಂತೆ ಕರುಣಿಸಿದ್ದಾರೆ. ಅದೂ ಅಲ್ಲದೆ, ಆತನು ನರಪುತ್ರನಾಗಿರುವ ಕಾರಣ ತೀರ್ಪನ್ನು ಕೊಡುವ ಹಕ್ಕನ್ನು ಆತನಿಗೇ ದಯಪಾಲಿಸಿದ್ದಾರೆ. ಇದನ್ನು ಕೇಳಿ ನೀವು ಬೆರಗಾಗುವುದು ಬೇಡ. ಸತ್ತ ಸಮಾಧಿಯಲ್ಲಿರುವವರೆಲ್ಲರೂ ಆತನ ಧ್ವನಿಯನ್ನು ಕೇಳುವ ಕಾಲ ಬರುವುದು. ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದುಬರುವರು: ಸಜ್ಜನರು ಸಜೀವಕ್ಕಾಗಿ ಪುನರುತ್ದಾನರಾಗುವರು, ದುರ್ಜನರು ದಂಡನಾ ತೀರ್ಪಿಗಾಗಿ ಪುನರುತ್ದಾನರಾಗುವರು. ನನ್ನಷ್ಟಕ್ಕೇ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪುಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯ ಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.

ಮನಸಿಗೊಂದಿಷ್ಟು : ಇಲ್ಲಿ ಯೇಸು ತಮ್ಮ ಹಾಗೂ ಪಿತ ದೇವರ ನಡುವಿನ ಸಂಬಂಧದ ಬಗ್ಗೆ ಅತ್ಯಂತ ಪ್ರಭಾವಶಾಲಿಯಾಗಿ ಮಾತನಾಡುತ್ತಾರೆ. ತಮಗೆ ಪಿತ ದೇವರು ನೀಡಿರುವ ಪರಮ ಅಧಿಕಾರದ ಬಗ್ಗೆ ಮಾತನಾಡುತ್ತಲೇ ತಾನು ತನ್ನ ಇಚ್ಛೆಗಿಂತಲೂ ಪಿತ ದೇವರ ಇಚ್ಛೆಯನ್ನೇ ಬಯಸುತ್ತೇನೆ ಎನ್ನುತ್ತಾರೆ. ನಮ್ಮ ಬಾಳಿನಲ್ಲಿ ನಾವು ದೇವರ ಚಿತ್ತ ಬಯಸಿದ್ದೇ ಆದರೆ, ಯೇಸು ಮತ್ತು ದೇವರ ಅವಿನಾಭಾವ ಸಂಬಂಧ ನಮ್ಮದೂ ದೇವರದೂ ಆಗಬಹುದು.

ಪ್ರಶ್ನೆ : ಸಜ್ಜನರಿಗೆ ಸಜೀವ  ನೀಡುವ ಪುನರುತ್ಥಾನದಲ್ಲಿ ನಮ್ಮ ನಂಬಿಕೆ ಎಷ್ಟು? 

29.03.22 - "ನಿನಗೆ ಗುಣ ಹೊಂದಲು ಮನಸ್ಸಿದೆಯೇ?"

ಮೊದಲನೇ ವಾಚನ: ಯೆಜೆಕಿಯೇಲ 47:1-9, 12

 ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು: ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದ ಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು. ಆಗ ಅವನು ನನ್ನನ್ನು ಉತ್ತರ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಸಿಕೊಂಡು ಪೂರ್ವದ ಹೆಬ್ಬಾಗಿಲಿಗೆ ಕರೆತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು. ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವದಂಡೆಗೆ ಮುಂದುವರಿದು ಐನೂರು ಮೀಟರ್ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ಆ ನೀರು ಹೆಜ್ಜೆ ಮುಳುಗುವಷ್ಟಿತ್ತು. ಅವನು ಪುನಃ ಐನೂರು ಮೀಟರ್ ಅಳೆದು ದಾಟಿಸುವಾಗ ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ಮತ್ತೆ ಐನೂರು ಮೀಟರ್ ಅಳೆದು ನನ್ನನ್ನು ನೀರಿನ ಆಚೆ ದಾಟಿಸುವಾಗ ಆ ನೀರು ಸೊಂಟದವರೆಗೆ ಇತ್ತು. ಅವನು ಮತ್ತೆ ಅಳೆದು ಐನೂರು ಮೀಟರ್ ಅಳೆದಾಗ ಅದು ನನ್ನಿಂದ ದಾಟಲಾಗದ ತೊಂದರೆಯಾಗಿತ್ತು; ನೀರು ಏರಿ ಈಜಾಡುವಷ್ಟು ಪ್ರವಾಹವಾಗಿತ್ತು. ದಾಟಲಾಗದ ತೊರೆಯಾಗಿತ್ತು; ಆಗ ಅವನು ನನಗೆ, "ನರಪುತ್ರನೇ, ಇದನ್ನು ನೋಡಿದೆಯಾ?" ಎಂದು ಹೇಳಿ ನನ್ನನ್ನು ತೊರೆಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು. ನಾನು ಹಿಂದಿರುಗಲು, ಇಗೋ, ತೊರೆಯ ಎರಡು ದಡಗಳಲ್ಲಿಯೂ ಅನೇಕಾನೇಕ ವೃಕ್ಷಗಳು ಕಾಣಿಸಿದವು. ಆಗ ಅವನು ನನಗೆ ಹೀಗೆ ಹೇಳಿದನು: "ಈ ಪ್ರವಾಹ ಪೂರ್ವಪ್ರಾಂತ್ಯಕ್ಕೆ ಹೊರಟು ಅರಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು: ದೇವಸ್ಥಾನದಿಂದ ಹೊರಟ ಪ್ರವಾಹವು ಲವಣಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು. ಈ ತೊರೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ  ಗುಂಪು ಗುಂಪಾಗಿ ಚಲಿಸುವ ಸಕಲವಿಧ ಜಲಜಂತು ಬದುಕಿ ಬಾಳುವುವು; ಈ ತೊರೆ ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು. ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲ್ಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷದಕ್ಕೂ ಅನುಕೂಲಿಸುವುವು. 

ಕೀರ್ತನೆ: 46:2-3, 5-6, 8-9 
ಶ್ಲೋಕ: ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು, ಯಕೋಬ ಕುಲದೇವರು ನಮಗಾಶ್ರಯ ದುರ್ಗವು 

ದೇವರೆಮಗೆ ಆಶ್ರಯ ದುರ್ಗ|
ಸಂಕಟದಲಿ ಸಿದ್ಧ ಸಹಾಯಕ||
ಕಡಲಲ್ಲಿ ಗುಡ್ಡಗಳು ಮುಳುಗಿದರೂ ದಿಗಿಲಿಲ್ಲ|
ಪೊಡವಿ ಕಂಪಿಸಿದರು ನಮಗೇನು ಭಯವಿಲ್ಲ||

ನದಿಯೊಂದು ಆನಂದಗೊಳಿಸುವುದು ದೇವನಗರವನು|
ಪುನೀತಗೊಳಿಸುವುದು ಪರಾತ್ಪರನ ನಿವಾಸವನು||
ದೇವನಿರುವನಾ ನಗರ ಮಧ್ಯೆ, ಅಳಿವಿಲ್ಲ ಅದಕೆ|
ಉದಯಕಾಲದಲೆ ದೇವ ಬರುವನು ಅದರ ಸಹಾಯಕೆ||

ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು|
ಯಕೋಬ ಕುಲದೇವರು ನಮಗಾಶ್ರಯ ದುರ್ಗವು||
ಪ್ರಭುವಿನ ಕಾರ್ಯಗಳ ನೋಡಬನ್ನಿ|
ಇಳೆಯೊಳಗೆಸಗಿದ ಪವಾಡಗಳನು ನೋಡಿ||

ಶುಭಸಂದೇಶ: ಯೊವಾನ್ನ 5:1-16 

ಇದಾದ ಮೇಲೆ ಯೆಹೂದ್ಯರ ಹಬ್ಬ ಬಂದಿತು. ಯೇಸುಸ್ವಾಮಿ ಜೆರುಸಲೇಮಿಗೆ ತೆರಳಿದರು. ಅಲ್ಲ, 'ಕುರಿಬಾಗಿಲು' ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಹಿಬ್ರಿಯ ಭಾಷೆಯಲ್ಲಿ "ಬೆತ್ಸಥ" ಎಂದು ಕರೆಯುತ್ತಾರೆ. ಕುರುಡರು, ಕುಂಟರು, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಆ ಮಂಟಪದಲ್ಲಿ ಬಿದ್ದುಕೊಳ್ಳುತ್ತಾ ಇದ್ದರು. ಮೂವತ್ತೆಂಟು ವರ್ಷ ಕಾಯಿಲೆಯಿಂದ ನರಳುತ್ತಿದ್ದ ಒಬ್ಬ ರೋಗಿ ಅಲ್ಲಿ ಮಲಗಿದ್ದನು. ಯೇಸು ಅವನನ್ನು ನೋಡಿ, ದೀರ್ಘಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, "ನಿನಗೆ ಗುಣಹೊಂದಲು ಮನಸ್ಸಿದೆಯೇ?" ಎಂದು ಕೇಳಿದರು. "ಸ್ವಾಮೀ, ನೀರು ಉಕ್ಕಿದಾಗ ನನ್ನನ್ನು ಕೊಳಕ್ಕಿಳಿಸಲು ಸಹಾಯಕರು ಇರುವುದಿಲ್ಲ; ನಾನು ಹೋಗುವಷ್ಟರಲ್ಲಿ ಬೇರೆ ಯಾರಾದರೂ ಇಳಿದು ಬಿಡುತ್ತಾರೆ," ಎಂದು ಉತ್ತರಿಸಿದ ಆ ರೋಗಿ. ಯೇಸು ಅವನಿಗೆ, "ಎದ್ದು ನಿಲ್ಲು, ನಿನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆ," ಎಂದರು. ಆ ಕ್ಷಣವೇ ಅವನು ಗುಣಹೊಂದಿ ತನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆಯತೊಡಗಿದನು. ಅದು ಸಬ್ಬತ್ತಿನ ದಿನವಾಗಿತ್ತು. ಆದುದರಿಂದ ಯೆಹೂದ್ಯ ಅಧಿಕಾರಿಗಳು ಗುಣಹೊಂದಿದ ಆ ಮನುಷ್ಯನಿಗೆ, "ಇಂದು ಸಬ್ಬತ್ತಿನ ದಿನ. ನೀನು ಹಾಸಿಗೆಯನ್ನು ಎತ್ತಿಕೊಂಡು ನಡೆಯುವುದು ನಿಷಿದ್ದ," ಎಂದು ಹೇಳಿದರು. ಅದಕ್ಕೆ ಅವನು: "ನನ್ನನ್ನು ಗುಣಪಡಿಸಿದವರೇ, "ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ ಎಂದು ಹೇಳಿದರು," ಎಂದು ಉತ್ತರಕೊಟ್ಟನು. ಅಧಿಕಾರಿಗಳು, "ಅದನ್ನು ಎತ್ತಿಕೊಂಡು ನಡೆ ಎಂದ ಅವನು ಯಾರು?" ಎಂದು ಪ್ರಶ್ನಿಸಿದರು. ತನ್ನನ್ನು ಗುಣಪಡಿಸಿದವರು ಯಾರೆಂದು ಅವನಿಗೆ ತಿಳಿದಿರಲಿಲ್ಲ; ಅಲ್ಲದೆ ಜನಸಂದಣಿಯ ನಿಮಿತ್ತ ಯೇಸು ಆಗಲೇ ಮರೆಯಾಗಿ ಬಿಟ್ಟಿದ್ದರು. ಆನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, "ನೋಡು ನೀನು ಗುಣಹೊಂದಿರುವೆ: ಇನ್ನುಮೇಲೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು" ಎಂದರು. ಆ ಮನುಷ್ಯ ಅಲ್ಲಿಂದ ಯೆಹೂದ್ಯರ ಬಳಿಗೆ ಹೋಗಿ, "ನನ್ನನ್ನು ಗುಣಪಡಿಸಿದವನು ಯೇಸುವೇ," ಎಂದು ತಿಳಿಸಿದನು. ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳ ಕೊಡಲು ತೊಡಗಿದರು.

ಮನಸಿಗೊಂದಿಷ್ಟು  :  ಲೋಕದಲ್ಲಿ, ನಮ್ಮ ಬಾಳಿನಲ್ಲಿ ನಮ್ಮನ್ನು ಸೋಲಿನೆಡೆಗೆ, ನಿರಾಸೆಯೆಡೆಗೆ ತಳ್ಳುವ ಸಂಗತಿಗಳು ಎದುರಾಗತ್ತಲೇ ಇರುತ್ತವೆ. ವರ್ಷಗಳಿಂದ ಕಾಡುವ ನೋವುಗಳಿರುತ್ತವೆ. "ಗುಣ ಹೊಂದಲು ಮನಸಿದೆಯೇ" ಎಂಬ ಯೇಸುವಿನ ಪ್ರಶ್ನೆ ಒಂದಲ್ಲ ಒಂದು ದಿನ ನಮಗೆ ಎದುರಾಗುತ್ತದೆ.  ಆ ದಿನಕ್ಕೆ ಕಾಯೋಣ. ನಮ್ಮೆಲ್ಲ ನಿರಾಸೆ, ಸೋಲನ್ನು ಸುತ್ತಿ ಎದ್ದು ನಡೆಯೋಣ.

ಪ್ರಶ್ನೆ : "ನಿನಗೆ ಗುಣಹೊಂದಲು ಮನಸ್ಸಿದೆಯೇ?"  

28.03.22 - ಪ್ರವಾದಿಗೆ ಸ್ವಗ್ರಾಮದಲ್ಲಿ ಮರ್ಯಾದೆ ಇಲ್ಲ

ಮೊದಲನೇ ವಾಚನಯೆಶಾಯ 65:17-21

"ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನುಆಗಮೊದಲಿದ್ದುದ್ದು ಜ್ಞಾಪಕದಲ್ಲಿರದುಅದು ಯಾರ ನೆನಪಿಗೂ ಬಾರದುನಾನು ಮಾಡುವ ಸೃಷ್ಟಿಯಕಾರ್ಯದಲ್ಲೇ ಸಂತೋಷಿಸಿಎಂದೆಂದಿಗೂ ಆನಂದಿಸಿರಿಹೌದುನಾನು ಜೆರುಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಸುವೆನುಅದರ ಜನರನ್ನು ಹರ್ಷಭರಿತನ್ನಾಗಿಸುವೆನುನಾನು ಕೂಡ ಜೆರುಸಲೇಮನ್ನು ನೋಡಿ ಆನಂದಿಸುವೆನುಅದರ ಜನರನ್ನು ದೃಷ್ಟಿಸಿ ಹರ್ಷಗೊಳ್ಳುವೆನುಇನ್ನು ಅಲ್ಲಿ ಅಳುವಾಗಲಿಆಕ್ರೋಶವಾಗಲಿ ಕೇಳಿಬರದುಕೆಲವೇ ದಿನ ಬದುಕುವ ಮಗುವಾಗಲಿಆಯುಸ್ಸು ಮುಗಿಯದ ಮುದುಕನಾಗಲಿ ಇನ್ನು ಅಲ್ಲಿರನುನೂರು ವರ್ಷ ಬಾಳುವವನ್ನು ಯುವಕ ಎನಿಸಿಕೊಳ್ಳುವನುನೂರರೊಳಗೆ ಸಾಯುವ ಪಾಪಿಯು "ಶಾಪಗ್ರಸ್ತಎನಿಸಿಕೊಳ್ಳುವನುಜನರು ಅಲ್ಲೇ ಮನೆಮಾಡಿ ನಿವಾಸ ಮಾಡುವರುತೋಟ ನೆಟ್ಟು ಅದರ ಫಲವನ್ನು ಅನುಭವಿಸುವರು.

ಕೀರ್ತನೆ30:2, 4, 5-6, 11-12, 13
ಶ್ಲೋಕನಿನಗೆನ್ನ ವಂದನೆ ಪ್ರಭೂನನ್ನನ್ನುದ್ಧರಿಸಿದೆ

ಶುಭಸಂದೇಶಯೊವಾನ್ನ 4:43-54

ಎರಡು ದಿನಗಳಾದ ಬಳಿಕ ಯೇಸುಸ್ವಾಮಿ ಸಮಾರಿಯಾದಿಂದ ಗಲಿಲೇಯಕ್ಕೆ ಹೊರಟರುಪ್ರವಾದಿಗೆ ಸ್ವಗ್ರಾಮದಲ್ಲಿ ಮರ್ಯಾದೆ ಇಲ್ಲ ಎಂದು ಅವರೇ ಸಾರಿದರುಗಲಿಲೇಯವನ್ನು ತಲುಪಿದೊಡನೆ ಜನರು ಅವರನ್ನು ಆದರದಿಂದ ಬರಮಾಡಿಕೊಂಡರುಏಕೆಂದರೆಹಬ್ಬಕ್ಕಾಗಿ ಆ ಜನರು ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಯೇಸು ಮಾಡಿದ್ಧನ್ನೆಲ್ಲಾ ನೋಡಿದ್ದರುಯೇಸು ಗಲಿಲೇಯದ ಕಾನಾ ಊರಿಗೆ ಮರಳಿ ಬಂದರುಅವರು ಹಿಂದೆ ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ್ದು ಅಲ್ಲಿಯೇಕಫೆರ್ನವುಮಿನಲ್ಲಿ ರಾಜಸೇವೆಯಲ್ಲಿದ್ದ ಒಬ್ಬ ಅಧಿಕಾರಿಯ ಮಗನಿಗೆ ಕಾಯಿಲೆಯಾಗಿತ್ತುಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದಿರುವುದನ್ನು ಕೇಳಿದ ಆ ಅಧಿಕಾರಿಅವರ ಬಳಿಗೆ ಬಂದುಸಾವಿನ ದವಡೆಯಲ್ಲಿರುವ ತನ್ನ ಮಗನನ್ನು ಬಂದು ಬದುಕಿಸಬೇಕೆಂದು ಬೇಡಿಕೊಂಡನುಯೇಸು ಅವನಿಗೆ "ಸೂಚಕಕಾರ್ಯಗಳನ್ನು ಅದ್ಬುತಗಳನ್ನು ಕಂಡ ಹೊರತು ನೀವು ನಂಬುವುದಿಲ್ಲವಲ್ಲಾ," ಎಂದರುಆದರೂ ಆ ಅಧಿಕಾರಿ, "ನನ್ನ ಮಗನು ಪ್ರಾಣಬಿಡುವ ಮೊದಲೇ ಬನ್ನಿ ಸ್ವಾಮೀ," ಎಂದು ಅಂಗಲಾಚಿದನುಆಗ ಯೇಸು, "ಹೋಗು ನಿನ್ನ ಮಗನು ಬದುಕುತ್ತಾನೆ,"  ಎಂದು ಹೇಳಿದರುಆ ಅಧಿಕಾರಿ ಯೇಸುವಿನ ಮಾತನ್ನು ನಂಬಿ ಹೊರಟನು ಅವನು ಅರ್ಧ ದಾರಿಯಲ್ಲಿ ಇದ್ದಾಗಲೇ ಆಳುಗಳು ಅವನಿಗೆ ಎದುರಾಗಿ ಬಂದು, "ನಿಮ್ಮ ಮಗ ಬದುಕಿಕೊಂಡ," ಎಂದು ತಿಳಿಸಿದರುಎಷ್ಟು ಹೊತ್ತಿಗೆ ತನ್ನ ಮಗ ಚೇತರಿಸಿಕೊಂಡನೆಂದು ಆ ಅಧಿಕಾರಿ ವಿಚಾರಿಸಿದಾಗ, "ನಿನ್ನೆ ಮಧ್ಯಾಹ್ನ ಒಂದು ಗಂಟೆಗೆ ಅವನ ಜ್ವರ ಬಿಟ್ಟಿತು." ಎಂದು ಆಳುಗಳು ಉತ್ತರಕೊಟ್ಟರು. "ನಿನ್ನ ಮಗ ಬದುಕುತ್ತಾನೆಎಂದು ಯೇಸು ಹೇಳಿದ್ದ ಗಳಿಗೆಯಲ್ಲಿಯೇ ತನ್ನ ಮಗ ಬದುಕಿಕೊಂಡನೆಂದು ತಂದೆಗೆ ತಿಳಿಯಿತುಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ವಿಶ್ವಾಸಿಸಿದರುಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದುಮಾಡಿದ ಎರಡನೆಯ ಸೂಚಕ ಕಾರ್ಯ ಇದು.

ಮನಸಿಗೊಂದಿಷ್ಟು : ಉನ್ನತ ಹುದ್ದೆಯಲ್ಲಿದ್ದ ಅಧಿಕಾರಿ ತನ್ನ ಪ್ರತಿಷ್ಠೆ ಮರೆತು ಯೇಸುವಿನ ಬಳಿ ಬರುತ್ತಾನೆ.  ಯೇಸು ಅವನ ವಿಶ್ವಾಸವನ್ನು ಪರೀಕ್ಷಿಸಿದರೂ ಅದರಲ್ಲಿ ಗೆದ್ದು ತನ್ನ ಮಗನನ್ನು ಗುಣಪಡಿಸಿಕೊಳ್ಳುತ್ತಾನೆ. ಅದರಲ್ಲೂ ಮಗ ಬದುಕುತ್ತಾನೆ ಎಂಬ ಯೇಸುವಿನ ಮಾತಲ್ಲಿ ವಿಶ್ವಾಸವಿಟ್ಟು ಹೊರಡುತ್ತಾನೆ. ನಮ್ಮ ಪ್ರತಿಷ್ಠೆ, ಅಡಚಣೆಗಳನ್ನು ಬದಿಗೊತ್ತಿ ವಿಶ್ವಾಸವಿಟ್ಟಾಗ ಹಾಗೂ ಯೇಸುವಿನ ಮಾತಲ್ಲಿ ಅಚಲ ವಿಶ್ವಾಸವಿಟ್ಟಾಗ ನಮ್ಮಲ್ಲೂ ಅದ್ಭುತಗಳು ಆಗುತ್ತವೆ.

ಪ್ರಶ್ನೆ :  ನಮ್ಮ ಮನಸು  ಯೇಸುವಿನ ಸ್ವಗ್ರಾಮ. ಅಲ್ಲಿ ಅವರಿಗೆ ಸಂಪೂರ್ಣ ಗೌರವವಿದೆಯೇ?

27.03.22 - "ತಪ್ಪಿ ಹೋಗಿದ್ದ, ಈಗ ಸಿಕ್ಕಿದ್ದಾನೆ"

ಮೊದಲನೇ ವಾಚನ: ಯೆಹೋಶುವ 5:9,10-12
ರ್ವೇಶ್ವರಸ್ವಾಮಿ ಯೆಹೋಶುವನಿಗೆ, "ನಾನು ಈಜಿಪ್ಟಿನ ಕಳಂಕವನ್ನುಈದಿನ ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ," ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿಡಲಾಗಿದೆ. ಇಸ್ರಯೇಲರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಜೆರಿಕೋವಿನ ಬಯಲಿನಲ್ಲಿ ಪಾಸ್ಕಹಬ್ಬವನ್ನಾಚರಿಸಿದರು.  ಮಾರನೆಯ ದಿನದಂದು ಕಾನಾನಿನ ಧಾನ್ಯವನ್ನು ಊಟಕ್ಕೆ ಬಳಸಲು ತೊಡಗಿದರು. ಹುಳಿಯಿಲ್ಲದ ರೊಟ್ಟಿಗಳನ್ನು ಮತ್ತು ಸುಟ್ಟ ತೆನೆಗಳನ್ನು ತಿನ್ನತೊಡಗಿದರು. ಆ ನಾಡಿನ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು, ಅದು ಅವರಿಗೆ ಮತ್ತೆ ಸಿಕ್ಕಲೇ ಇಲ್ಲ. ಇಸ್ರಯೇಲರು ಆ ವರ್ಷವೆಲ್ಲ ಕಾನಾನ್ ನಾಡಿನ ಉತ್ಪನ್ನವನ್ನೇ ಅನುಭವಿಸಿದರು.

ಕೀರ್ತನೆ: 34:2-3, 4-5, 6-7
ಶ್ಲೋಕ: ಸವಿದು ನೋಡು ಪ್ರಭುವಿನ ಮಾಧುರ್ಯವನ್ನು

ಎರಡನೇ ವಾಚನ: 2 ಕೊರಿಂಥಿಯರಿಗೆ  5:17-21

ಹೋದರರೇ, ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದು ಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ. ಇದೆಲ್ಲಾ ಆಗುವುದು ದೇವರಿಂದ. ದೇವರು ಕ್ರಿಸ್ತಯೇಸುವಿನ ಮುಖಾಂತರ ನಮ್ಮನ್ನು ತಮ್ಮೊಡನೆ ಸಂಧಾನ ಪಡಿಸಿಕೊಂಡಿದ್ದಾರೆ. ಇದಲ್ಲದೆ, ಇತರರನ್ನು ಸಂಧಾನಕ್ಕೆ ತರುವ ಕಾರ್ಯವನ್ನು ನಮಗೆ ವಹಿಸಿದ್ದಾರೆ. ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ. ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ. ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.

ಶುಭಸಂದೇಶ: ಲೂಕ 15:1-3, 11-32

ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸಂಕದವರು ಪಾಪಿಗಳು ಬರುತ್ತಿದ್ದರು. ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ;  ಅವರೊಡನೆ ಊಟ ಮಾಡುತ್ತಾನೆ." ಎಂದು ಗೊಣಗಿದರು.ಆ ಸಂದರ್ಭದಲ್ಲಿ ಯೇಸು ಈ ಸಾಮತಿಯನ್ನು ಹೇಳಿದರು: "ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು ಅವರಲ್ಲಿ ಕಿರಿಯವನು "ಅಪ್ಪಾ, ಆಸ್ತಿಯಲ್ಲಿ ನನಗೆ ಬರಬೇಕಾದ ಪಾಲನ್ನು ಕೊಟ್ಟುಬಿಡು," ಎಂದು ಕೇಳಿದ. ತಂದೆ ಅವರಿಬ್ಬರಿಗೂ ಆಸ್ತಿಯನ್ನು ಹಂಚ್ಚಿಕೊಟ್ಟ. ಕೆಲವು ದಿವಸಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ತೆಗೆದುಕೊಂಡು ಮನೆ ಬಿಟ್ಟು ಹೋದ. ದೂರ ದೇಶಕ್ಕೆ ಹೋಗಿ, ದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೊಲು ಮಾಡಿಬಿಟ್ಟ. ಹೀಗೆ ಅವನು ಎಲ್ಲವನ್ನು ಹಾಳು ಮಾಡಿಕೊಂಡ ಮೇಲೆ ಆ ದೇಶಾದಾದ್ಯಂತ ಘೋರವಾದ ಕ್ಷಾಮ ತಲೆದೋರಿತು. ನಿರ್ಗತಿಕನಾದ ಅವನು ಹೋಗಿ, ಆ ದೇಶದ ನಿವಾಸಿಯೊಬ್ಬನನ್ನು ಆಶ್ರಯಿಸಿದ. ಆತ ಇವನನ್ನು ಹಂದಿ ಮೆಯಿಸಲು ತನ್ನ ರೊಪ್ಪಗಳಿಗೆ ಕಳುಹಿಸಿದ. ಅಲ್ಲಿ ಹಂದಿ ತಿನ್ನುತ್ತಿದ್ದ ಕಾಳುಗಳನ್ನಾದರೂ ತಂದು ಹಸಿವನ್ನು ನೀಗಿಸಿಕೊಳ್ಳಲು ಹಂಬಲಿಸಿದ. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ. ಆಗ ಅವನಿಗೆ ಬುದ್ಧಿ ಬಂದಿತು. ನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆ. ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಾ ಇದ್ದೇನೆ. ನಾನು ಇದೀಗಲೇ ಹೊರಟು, ತಂದೆಯ ಬಳಿಗೆ ಹೋಗಿ, "ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನು ಎನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ; ನನ್ನನ್ನು ನಿಮ್ಮ ಮನೆಯ ಕೂಲಿಯಾಳುಗಳಲ್ಲಿ ಒಬ್ಬನನ್ನಾಗಿ ಇಟ್ಟುಕೊಳ್ಳಿ ಎಂದು ಬೇಡಿಕೊಳ್ಳುತ್ತೇನೆ," ಎಂದುಕೊಡ. 
ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿ ಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ. ಆದರೂ ಮಗನು, "ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪ ಮಾಡಿದ್ದೇನೆ; ನಿಮ್ಮ ಮಗನೆನಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ" ಎಂದ. ತಂದೆಯಾದರೋ ಆಳುಗಳನ್ನು ಕರೆದು, ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ.; ಕೊಬ್ಬಿದ ಕರುವನ್ನು ತಂದು ಕೊಯ್ಯಿರಿ; ಹಬ್ಬ ಮಾಡೋಣ, ಆನಂದಿಸೋಣ, ಏಕೆಂದರೆ, ಈ ನನ್ನ ಮಗ ಸತ್ತು ಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿ ಹೋಗಿದ್ದ, ಈಗ ಸಿಕ್ಕಿದ್ದಾನೆ,' ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.
                              ಇತ್ತ ಹೊಲಕ್ಕೆ ಹೋಗಿದ್ದ ಹಿರಿಯ ಮಗ ಹಿಂದಿರುಗಿ ಮನೆಯನ್ನು ಸಮೀಪಿಸುವಾಗ ಗಾನ, ನರ್ತನಗಳ ಶಬ್ದವು ಅವನ ಕಿವಿಗೆ ಬಿತ್ತು. "ಮನೆಯಲ್ಲೇನು ವಿಶೇಷ?' ಎಂದು ಒಬ್ಬ ಆಳನ್ನು ಕರೆದು ವಿಚಾರಿಸಿದ. "ನಿಮ್ಮ ತಮ್ಮ ಬಂದಿದ್ದಾರೆ; ಅವರು ಮರಳಿ ಸುರಕ್ಷಿತವಾಗಿ ಬಂದುದಕ್ಕಾಗಿ ಕೊಬ್ಬಿದ ಕರುವನ್ನು ನಿಮ್ಮ ತಂದೆ ಕೊಯ್ಯಿಸಿದ್ದಾರೆ," ಎಂದು ಆಳು ತಿಳಿಸಿದ. ಇದನ್ನು ಕೇಳಿದ ಹಿರಿಯ ಮಗನಿಗೆ ಸಿಟ್ಟು ಬಂದಿತು. ಮನೆಯೊಳಕ್ಕೆ ಕಾಲಿಡಲೂ ಒಪ್ಪಲಿಲ್ಲ. ತಂದೆಯೇ ಹೊರಗೆ ಬಂದು ಬೇಡಿಕೊಂಡಾಗ ಅವನು, "ನೋಡಿ, ನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆ ಮಾಡುತ್ತಿದ್ದೇನೆ. ನಿಮ್ಮ ಮಾತನ್ನು ಎಂದೂ ಮೀರಿಲ್ಲ; ಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬಮಾಡಲು ಒಂದು ಆಡುಮರಿಯನ್ನು ಕೂಡ ನೀವು ಕೊಟ್ಟಿಲ್ಲ. ಆದರೆ ನಿಮ್ಮ ಆಸ್ತಿಪಾಸ್ತಿಯನ್ನೆಲ್ಲಾ ವೇಶ್ಯೆಯರಿಗೆ ಸುರಿದು  ಈ ನಿಮ್ಮ ಮಗ ಬಂದುದ್ದೇ ಕೊಬ್ಬಿಸಿದ ಕರುವನ್ನು ಕೊಯ್ಯಿಸಿದ್ಧೀರಿ!' ಎಂದು ವಾದಿಸಿದ. ಆಗ ತಂದೆ ಅವನಿಗೆ, 'ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ; ನನ್ನ ಸರ್ವಸ್ವವೂ ನಿನ್ನದೇ ಆಗಿದೆ. ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿ ಹೋಗಿದ್ದ; ಈಗ ಸಿಕ್ಕಿದ್ಧಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೇ" ಎಂದನು."

ಮನಸಿಗೊಂದಿಷ್ಟು : ಆಗ ತಾನೆ ಅಬ್ರಹಾಂ ಲಿಂಕನ್ ತಮ್ಮದೇ ದೇಶದ ಮೇಲೆ ಯುದ್ಧ ಸಾರಿದ್ದ ದಕ್ಷಿಣ ಪ್ರಾಂತ್ಯದ ಜನರ ಮೇಲೆ ಗೆಲುವು ಸಾಧಿಸಿದ್ದರು. ಸೋತು ಮತ್ತೆ ದೇಶಕ್ಕೆ ಮರಳಿದ ಆ ಜನರನ್ನು ಏನು ಮಾಡುತ್ತೀರಿ ಎಂದು ಕೇಳಲಾಯಿತು. ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬಹುದು ಎಂಬ ಉತ್ತರದ ನಿರೀಕ್ಷೆಯಲ್ಲಿದ್ದವರಿಗೆ ಅಬ್ರಹಾಂ ಲಿಂಕನ್ " ಅವರು ನಮ್ಮಿಂದ ದೂರ ಹೋಗೆ ಇಲ್ಲವೆಂಬಂತೆ ಬರ ಮಾಡಿಕೊಳ್ಳುತೇನೆ" ಎನ್ನುತ್ತಾರೆ.

ಓ ಆತ್ಮಗಳೇ ಈಗೇಕೆ ಚದುರಿ ಹೋಗಿವಿರೇ
ಬೆದರಿ ದಿಕ್ಕೆಟ್ಟ ಕುರಿ ಮಂದೆಯಂತೆ
ಮೂರ್ಖ ಮನಗಳೇ ಈಗೇಕೆ ದೂರಾಗುವಿರೇ
ನೈಜ ಆಳ ಆ ದೇವನ ಪ್ರೀತಿಯಿಂದಲೇ 

ಪ್ರಶ್ನೆ ಓ ಪಾಪದ ಮನವೇ ಮರಳಿ 
            ಬರುವುದೆಂದು ಮತ್ತೆ ದೇವನ ಬಳಿಗೆ?

26.03.22 - ನನಗೆ ಬೇಕಾದುದು ದೈವಜ್ಞಾನ, ದಹನ ಬಲಿದಾನವಲ್ಲ.

 ಮೊದಲನೇ ವಾಚನ: ಹೊಶೇಯ 6:1-6

ಸರ್ವೇಶ್ವರ ಇಂತೆನ್ನುತ್ತಾರೆ; ನನ್ನನ್ನು ಜನರು ಮರೆ ಹೋಗುತ್ತಾ ಹೀಗೆನ್ನುವರು: "ಬನ್ನಿ ಸರ್ವೇಶ್ವರ ಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು. ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು. ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು." ಆದರೆ ಸರ್ವೇಶ್ವರ ಹೇಳುವುದೇನೆಂದರೆ: "ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗದ ಇಬ್ಬನಿಯಂತಿದೆ. ಖಂಡ ತುಂಡವಾದ ತೀರ್ಪು ನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯ ದಂಡನೆ ಮಿಂಚಿನಂತೆ ಹೊರಡುವುದು. ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ; ನನಗೆ ಬೇಕಾದುದು ದೈವಜ್ಞಾನ, ದಹನ ಬಲಿದಾನವಲ್ಲ.

ಕೀರ್ತನೆ: 51:3-4, 18-19, 20-21
ಶ್ಲೋಕ: ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ

ಶುಭಸಂದೇಶ: ಲೂಕ 18:9-14

ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು:  "ಒಮ್ಮೆ, ಇಬ್ಬರು ಪ್ರಾರ್ಥನೆ ಮಾಡಲು ದೇವಾಲಯಕ್ಕೆ ಹೋದರು. ಇವರಲ್ಲಿ ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕ ವಸೂಲಿಯವನು. ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆ ಮಾಡಿದ: "ಓ ದೇವರೇ, ನಾನು ಇತರರ ಹಾಗೆ ಅಲ್ಲ ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೆನೆ;. ನನ್ನ ಆದಾಯದಲ್ಲಿ ಹತ್ತನೆಯ ಒಂದು ಪಾಲನ್ನು ನಿಮಗೆ ಸಲ್ಲಿಸುತ್ತೇನೆ.'  "ಸುಂಕ ವಸೂಲಿಯವನಾದರೋ ದೂರದಲ್ಲೆ ನಿಂತು, ತಲೆಯನ್ನು ಮೇಲಕ್ಕೆ ಎತ್ತದೆ, 'ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ," ಎನ್ನುತ್ತಾ ಎದೆ ಬಡಿದುಕೊಂಡ. "ದೇವರ ದೃಷ್ಟಿಯಲ್ಲಿ ಪಾಪ ಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕ ವಸೂಲಿಯವನು, ಆ ಫರಿಸಾಯನಲ್ಲ. ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನ ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು," ಎಂದರು ಯೇಸು.

ಮನಸಿಗೊಂದಿಷ್ಟು : ತಪ್ಪು ಕಾರಣಗಳಿಗೆ ದೇವರನ್ನು ವಂದಿಸುವುದಕ್ಕೆ ಒಂದು ಉದಾಹರಣೆಯನ್ನು ಇಂದಿನ ಶುಭಸಂದೇಶದಲ್ಲಿ ಕಾಣಬಹುದು. ನಾವು ಇತರರಿಗಿಂತ ಮೇಲು, ನಮ್ಮ ಜೀವನ, ಪರಿಸ್ಥಿತಿ ಇತರರಿಗಿಂತ ಚೆನ್ನಾಗಿದೆ ಎನ್ನುತ್ತಾ ಅದಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುವುದು ಅಮಾನವೀಯ. ನಾವು ಅದೆಷ್ಟೇ ಇತರರಿಗಿಂತೆ ಮೇಲು ಅಂದುಕೊಂಡರೂ ದೇವರ ಕಣ್ಣಲ್ಲಿ ನಮ್ಮ ಸ್ಥಾನವೇನು ಎಂಬುದೇ ಅಂತಿಮ. ಆ ’ಅಂತಿಮ’ ಒಪ್ಪಿಗೆಯತ್ತ ನಮ್ಮ ಬಾಳು, ಚಿತ್ತ ಹರಿಯಲಿ.

ಪ್ರಶ್ನೆ : ನಮ್ಮ ಅಂತರಂಗವನ್ನು ಬಲ್ಲ ದೇವರ ಮುಂದೆ ನಾವೆಷ್ಟು ಎತ್ತರ?

25.03.22 - “ಇಗೋ, ನಾನು ದೇವರ ಸೇವಕಿ, ನೀವು ಹೇಳಿದಂತೆ ನನಗಾಗಲಿ,”

ಮಂಗಳವಾರ್ತೆಯ ಮಹೋತ್ಸವ




ಮೊದಲನೇ ವಾಚನ: ಯೆಶಾಯ 7:10-14; 8:10

ಪುನಃ ಸರ್ವೇಶ್ವರಸ್ವಾಮಿ ಆಹಾಜನಿಗೆ ಹೇಳಿದ್ದೇನೆಂದರೆ: “ನಿನ್ನ ದೇವರಾದ ಸರ್ವೇಶ್ವರನಿಂದ ಒಂದು ಗುರುತನ್ನು ಕೇಳಿಕೊ. ಅದು ಪಾತಾಳದಷ್ಟು ಆಳದಲ್ಲೇ ಇರಲಿ, ಆಕಾಶದಷ್ಟು ಎತ್ತರದಲ್ಲೇ ಇರಲಿ, ಕೇಳು” ಎಂದರು. ಅದಕ್ಕೆ ಆಹಾಜನು “ಇಲ್ಲ, ನಾನು ಗುರುತನ್ನು ಕೇಳುವುದಿಲ್ಲ, ಸರ್ವೇಶ್ವರನನ್ನು ಪರೀಕ್ಷಿಸುವುದಿಲ್ಲ” ಎಂದನು. ಆಗ ಯೆಶಾಯನು: “ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ? ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭ ತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು. ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”

ಕೀರ್ತನೆ: 40:7, 8-9, 10, 11
ಶ್ಲೋಕ: ನಾನೋಗೊಡುತ ಇಂತೆಂದೆ: ’ಇಗೋ ನಾನೇ ಬರುತ್ತಿರುವೆ’

ಬೇಡವಾದವು ನಿನಗೆ ಯಜ್ಞಾರ್ಪಣೆ, ಬಲಿಕಾಣಿಕೆ I
ಬಯಸಿಲ್ಲ ನೀ ಹೋಮವನೆ, ಪರಿಹಾರಕ ಬಲಿಯನೆ I
ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ II

ನಾನೋಗೊಡುತ ಇಂತೆಂದೆ : “ಇಗೋ ನಾನೇ ಬರುತ್ತಿರುವೆ I
ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ? II
ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ I

ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ” II
ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ I
ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ II

ಬಚ್ಚಿಟ್ಟುಕೊಳ್ಳಲಿಲ್ಲ ನನ್ನೆದೆಯೊಳು ನಿನ್ನ ಸತ್ಸಂಬಂಧವನು I
ಪ್ರಕಟಿಸಿದೆನು ಜೀವೋದ್ಧಾರವನು, ನಿನ್ನ ಪ್ರಾಮಾಣಿಕತೆಯನು I
ಮಹಾಸಭೆಗೆ ಮರೆಯಿಸದೆ ಸಾರಿದೆನು ನಿನ್ನ ಪ್ರೀತಿ ಸತ್ಯತೆಯನು II

ಎರಡನೇ ವಾಚನ: ಹಿಬ್ರಿಯರಿಗೆ 10:4-10

ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ. ಆದ್ದರಿಂದಲೇ ಭೂಲೋಕಕ್ಕೆ ಬರಲಿದ್ದ ಕ್ರಿಸ್ತ ಯೇಸು ದೇವರಿಗೆ ಇಂತೆಂದರು: “ಬಲಿಯರ್ಪಣೆಗಳೂ ಕಾಣಿಕೆಗಳೂ ನಿಮಗೆ ಬೇಡವಾದವು ಎಂದೇ ಅಣಿಮಾಡಿ ಕೊಟ್ಟಿರಿ ನನಗೆ ದೇಹವೊಂದನು. ಸರ್ವಾಂಗ ಹೋಮಗಳೂ ಪಾಪ ಪರಿಹಾರಕ ಬಲಿಗಳೂ ನಿಮಗೆ ತರಲಿಲ್ಲ ತೃಪ್ತಿಯನು. ಆಗ ಇಂತೆಂದೆ ನಾನು: ಗ್ರಂಥದ ಸುರುಳಿಯಲಿ ನನ್ನನ್ನು ಕುರಿತು ಬರೆದಿರುವಂತೆ, ಓ ದೇವಾ, ಇಗೋ ನಾ ಬಂದೆ ನಿನ್ನ ಚಿತ್ತವನು ನೆರವೇರಿಸಲೆಂದೇ.” ಧರ್ಮಶಾಸ್ತ್ರದ ವಿಧಿಗನುಸಾರ ಅರ್ಪಿಸಲಾಗುತ್ತಿದ್ದುವಾದರೂ “ಬಲಿಯರ್ಪಣೆಗಳು, ಕಾಣಿಕೆಗಳು, ದಹನಬಲಿಗಳು ಮತ್ತು ಪಾಪ ಪರಿಹಾರಕ ಬಲಿಗಳು ನಿಮಗೆ ಬೇಡವಾದವು; ಇವು ಯಾವುವೂ ನಿಮಗೆ ತರಲಿಲ್ಲ ತೃಪ್ತಿಯನು,” ಎಂದು ಮೊದಲು ಹೇಳುತ್ತಾರೆ. ಅನಂತರ, “ಇಗೋ, ನಾ ಬಂದೆ, ನಿಮ್ಮ ಚಿತ್ತವನ್ನು ನೆರವೇರಿಸಲೆಂದೇ,” ಎನ್ನುತ್ತಾರೆ. ಹೀಗೆ ಹೊಸದನ್ನು ಸ್ಥಾಪಿಸಲು ಹಳೆಯದನ್ನು ರದ್ದು ಮಾಡಿದ್ದಾರೆ. ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ.

ಶುಭಸಂದೇಶ: ಲೂಕ 1:26-38


ಎಲಿಜಬೇತಳು ಗರ್ಭಿಣಿಯಾದ ಆರನೇ ತಿಂಗಳಲ್ಲಿ, ದೇವರು ಗಬ್ರಿಯೇಲ್ ದೂತನನ್ನು ಗಲಿಲೇಯ ಪ್ರಾಂತ್ಯದ ನಜರೇತೆಂಬ ಊರಿನಲ್ಲಿದ್ದ ಒಬ್ಬ ಕನ್ನಿಕೆಯಲ್ಲಿಗೆ ಕಳುಹಿಸಿದರು. ಆಕೆಗೆ ದಾವೀದರಸನ ವಂಶಜನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ. ದೇವದೂತನು ಆಕೆಯ ಬಳಿಗೆ ಬಂದು “ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ ನಿನ್ನೊಡನೆ ಇದ್ದಾರೆ!” ಎಂದನು. ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು. ‘ಇದೆಂಥ ಶುಭಾಶಯ’ ಎಂದು ಅವಳು ಯೋಚಿಸತೊಡಗಿದಳು. ದೂತನು ಆಕೆಗೆ, “ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ; ಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ. ಆತನಿಗೆ ‘ಯೇಸು’ ಎಂಬ ಹೆಸರಿಡಬೇಕು; ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು. ಯಕೋಬನ ವಂಶವನ್ನು ಆತನು ಚಿರಕಾಲ ಆಳುವನು; ಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು,” ಎಂದನು. ಅದಕ್ಕೆ ಮರಿಯಳು, “ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?” ಎಂದು ವಿಚಾರಿಸಿದಳು. ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು. ನಿನ್ನ ಸಂಬಂಧಿಕಳಾದ ಎಲಿಜಬೇತಳ ವಿಷಯವನ್ನು ಕೇಳು: ಆಕೆ ತನ್ನ ಮುಪ್ಪಿನಲ್ಲೂ ಒಬ್ಬ ಮಗನನ್ನು ಹೆರಲಿದ್ದಾಳೆ; ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿ. ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ,” ಎಂದನು. ಆಗ ಮರಿಯಳು, “ಇಗೋ, ನಾನು ದೇವರ ಸೇವಕಿ, ನೀವು ಹೇಳಿದಂತೆ ನನಗಾಗಲಿ,” ಎಂದಳು. ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು.

ಮನಸ್ಸಿಗೊಂದಿಷ್ಟು : ದೂತನು ಮಾತೆ ಮರಿಯ ಬಳಿಗೆ ಬಂದು ಶುಭವಾರ್ತೆಯನ್ನು ತಿಳಿಸಿದಾಗ, ಮೊದಲಿಗೆ ಮರಿಯ ತಬ್ಬಿಬ್ಬಾಗುತ್ತಾರೆ, ಆಶ್ಚರ್ಯಪಡುತ್ತಾರೆ ನಂತರ ಸಂಪೂರ್ಣವಾಗಿ ಒಪ್ಪಿಸಿಕೊಂಡು ದೈವಚಿತ್ತಕ್ಕೆ ತಲೆ ಬಾಗುತ್ತಾರೆ. ದೇವರಿಗೆ ಎಲ್ಲವು ಸಾಧ್ಯ ಎಂಬ ಮರಿಯಳ ವಿಶ್ವಾಸ ಲೋಕ ರಕ್ಷಣಾ ಕಾರ್ಯಕ್ಕೆ ಮುನ್ನುಡಿಯಾಯಿತು. ಬಾಳಿನ ಕಷ್ಟದ ಸಮಯದಲ್ಲಿ ನಾವು ತಬ್ಬಿಬ್ಬಾಗುತ್ತೇವೆ, ಗೊಂದಲಗೊಳ್ಳುತ್ತೇವೆ, ಭಯಪಡುತ್ತೇವೆ. ಆದರೆ ದೇವರಿಗೆ ನಮ್ಮ ಬಾಳನ್ನು ಸಮರ್ಪಿಸಿದಾಗ ದೇವರ ಕಾರ್ಯಗಳು ನಮ್ಮಲ್ಲಿ ಕೈಗೂಡುವುದನ್ನು ಕಾಣುತ್ತೇವೆ, ಅನುಭವಿಸುತ್ತೇವೆ.

ಪ್ರಶ್ನೆ : ಮಾತೆ ಮರಿಯಳ ವಿನಯ ವಿಧೇಯತೆ ನಮ್ಮ ಬಾಳಿಗೆಷ್ಟು ಪ್ರಸ್ತುತ?

24.03.22 - “ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದುರಿಸುತ್ತಾನೆ,”

ಮೊದಲನೇ ವಾಚನ: ಯೆರೆಮೀಯ: 7: 23-28


ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ. ಆದರೆ ಅವರು ಕೇಳಲಿಲ್ಲ. ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು. ನಿಮ್ಮ ಪೂರ್ವಜರು ಈಜಿಪ್ಟ್ ದೇಶದಿಂದ ಹೊರಟದಿನ ಮೊದಲುಗೊಂಡು ಈ ದಿನದವರೆಗೂ ನನ್ನ ದಾಸರಾದ ಎಲ್ಲ ಪ್ರವಾದಿಗಳನ್ನು ನಿಮ್ಮವರ ಬಳಿಗೆ ಕಳಿಸುತ್ತಾ ಬಂದು ಇದ್ದೇನೆ. ದಿನದಿನವೂ ತಡಮಾಡದೆ ಕಳಿಸಿದ್ದೇನೆ. ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.” “ಯೆರೆವಿೂಯನೇ, ನೀನು ಈ ಮಾತುಗಳನ್ನು ಅವರಿಗೆ ಹೇಳಿದರೂ ಅವರು ಕಿವಿಗೊಡುವುದಿಲ್ಲ, ಕರೆದರೂ ಅವರು ಓಗೊಡುವುದಿಲ್ಲ. ಆದಕರಣ ನೀನು ಅವರಿಗೆ – ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದು ಹೋಗಿದೆ’ ಎಂದು ಹೇಳು.”

ಕೀರ್ತನೆ: 95:1-2, 6-7, 8-9

ಶ್ಲೋಕ: ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ, ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ.

ಬನ್ನಿ, ಸ್ತುತಿಗೀತೆ ಹಾಡೋಣ ಬನ್ನಿ, ಪ್ರಭುವಿಗೆ I
ಜಯಘೋಷ ಮಾಡೋಣ ನಮ್ಮ ರಕ್ಷಕ ದೇವನಿಗೆ II

ಆತನ ಸನ್ನಿಧಿ ಸೇರೋಣ ಕೃತಜ್ಞತಾಸ್ತುತಿಯೊಂದಿಗೆ I
ಜಯಜಯಕಾರ ಮಾಡೋಣ ಕೀರ್ತನೆಗಳಿಂದಾತನಿಗೆ II

ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I
ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II

ಆತನೆಮ್ಮ ದೇವರು, ನಾವು ಆತನ ಕೈಮಂದೆ I
ಆತನಿಂದಲೇ ಪಾಲನೆಪೋಷಣೆ ಪಡೆದ ಜನತೆ II

ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ I
ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ I

ಮೆರಿಬಾದಲಿ, ಮಸ್ಸಾ ಮರುಭೂಮಿಯಲಿ ಅವರು ಮಾಡಿದಂತೆ II
ನೋಡಿದರಾದರೂ ನನ್ನ ಮಹತ್ಕಾರ್ಯಗಳನು I
ಅಲ್ಲವರು ಕೆಣಕಿದರು, ಪರಿಶೋಧಿಸಿದರು ನನ್ನನು II

ಶುಭಸ೦ದೇಶ: ಲೂಕ 11:14-23

ಒಮ್ಮೆ ಯೇಸುಸ್ವಾಮಿ ಒಂದು ಮೂಕ ದೆವ್ವವನ್ನು ಬಿಡಿಸುತ್ತಿದ್ದರು. ಆ ದೆವ್ವ ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು. ಜನರು ಆಶ್ಚರ್ಯಚಕಿತರಾದರು. ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು. ಬೇರೆ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಸ್ವರ್ಗದಿಂದ ಒಂದು ಅದ್ಭುತ ಕಾರ್ಯವನ್ನು ಮಾಡಿ ತೋರಿಸುವಂತೆ ಕೇಳಿದರು. ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು, “ಅಂತಃಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯ ನಾಶವಾಗುವುದು; ಕುಟುಂಬ ಕುಟುಂಬಗಳು ಕಚ್ಚಾಡಿ ಹಾಳಾಗುವುವು. ಅಂತೆಯೇ ಸೈತಾನನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯ ಹೇಗೆ ತಾನೆ ಉಳಿದೀತು? ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. ನಾನು ದೇವರ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ, ಎಂಬುದು ಸ್ಪಷ್ಟ. “ಬಲಿಷ್ಠನೊಬ್ಬನು ಸರ್ವಾಯುಧಗಳಿಂದ ಸಜ್ಜಿತನಾಗಿ ತನ್ನ ಮನೆಗೆ ಕಾವಲಿರುವಾಗ ಅವನ ಆಸ್ತಿಯೆಲ್ಲ ಸುರಕ್ಷಿತವಾಗಿರುತ್ತದೆ. ಆದರೆ ಇವನಿಗಿಂತಲೂ ಬಲಿಷ್ಠನು ಎದುರಿಸಿ ಬಂದು ಇವನನ್ನು ಗೆದ್ದಾಗ, ಇವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಯನ್ನು ಹಂಚಿಕೊಡುತ್ತಾನೆ. “ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದುರಿಸುತ್ತಾನೆ,” ಎಂದರು.

ಮನಸ್ಸಿಗೊಂದಿಷ್ಟು : ಇಂದಿನ ಶುಭಸಂದೇಶದಲ್ಲಿ ಎರಡು ಸಂಗತಿಗಳು ಸ್ಪಷ್ಟವಾಗುತ್ತವೆ. ಒಂದು ಅದೆಷ್ಟೇ ಒಳ್ಳೆಯ ಕಾರ್ಯ ಮಾಡಿದರೂ, ಮಾಡಲು ಪ್ರಯತ್ನಿಸಿದರೂ ಕಾಲೆಳೆಯುವ ಜನರಿದ್ದೇ ಇರುತ್ತಾರೆ. ಯೇಸು ದೆವ್ವ ಹಿಡಿದವನನ್ನು ಗುಣಪಡಿಸಿದರೂ ಅದಕ್ಕೊಂದು ಕೊಂಕು ಮಾತು ಬಂತು. ದಿಟ್ಟವಾಗಿ ಉತ್ತರಿಸಿದ ಯೇಸುವಿನಂತೆ ನಮ್ಮ ಕಾರ್ಯದ ಒಳಿತಿನ ಬಗ್ಗೆ ನಾವು ಸ್ಪಷ್ಟವಾಗಿರಬೇಕಷ್ಟೇ 

ಇನ್ನೊಂದು ನಮ್ಮ ಕ್ರೈಸ್ತ ಜೀವನದಲ್ಲಿ ನಾವು ತಟಸ್ಥರಾಗುವಂತಿಲ್ಲ. ನಾವು ಕ್ರಿಸ್ತನ ಪರ ಅಥವಾ ಕ್ರಿಸ್ತನ ವಿರುದ್ಧ, ಅಷ್ಟೇ ನಮ್ಮ ಆಯ್ಕೆ . ಕ್ರಿಸ್ತ ಕಲಿಸಿದ ಆಶಯಗಳ ಪರ ಅಥವಾ ವಿರುದ್ಧವಷ್ಟೇ ನಾವು ತೆಗೆದುಕೊಳ್ಳಬೇಕಾದ ನಿಲುವು. ಸ್ಪಷ್ಟತೆಗಾಗಿ ಪ್ರಾರ್ಥಿಸೋಣ - ಜೀವವಾಕ್ಯ 

23.03.22 - "ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು."

ಮೊದಲನೇ ವಾಚನ: ಧರ್ಮೋಪದೇಶಕಾಂಡ  4:1, 5-9

ಮೋಶೆ ಜನರಿಗೆ ಹೀಗೆಂದನು: ಇಸ್ರಯೇಲರೇ, ಕೇಳಿ: ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು. "ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ  ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ. ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, "ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ  ಜನಾಂಗ', ಎಂದು ಮಾತಾಡಿಕೊಳ್ಳುವರು. ನಾವು ಮೊರೆಯಿಡುವಾಗಲೆಲ್ಲಾ ನಮ್ಮ ದೇವರಾದ ಸರ್ವೇಶ್ವರ ನಮಗೆ ಸಮೀಪವಾಗಿರುವಂತೆ ಬೇರೆ ಯಾವ ಜನಾಂಗಕ್ಕೆ, ಅದೆಷ್ಟೇ ದೊಡ್ಡದಾಗಿರಲಿ, ಯಾವ ದೇವರು ಹೀಗೆ ಸಮೀಪವಾಗಿರುತ್ತಾರೆ? ನಾನು ಈ ದಿನ ನಿಮ್ಮ ಮುಂದಿಡುವ ಇಂಥ ನ್ಯಾಯಯುತವಾದ ಆಜ್ಞಾವಿಧಿಗಳನ್ನು ಒಳಗೊಂಡ ಈ ಧರ್ಮಶಾಸ್ತ್ರಕ್ಕೆ ಸಮಾನವಾದುದು ಬೇರೆಯಾವ ಜನಾಂಗಕ್ಕೆ ಉಂಟು? "ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ.

ಕೀರ್ತನೆ: 147: 12-13, 15-16, 19-20
ಶ್ಲೋಕ: ಜೆರುಸಲೇಮೇ, ಕೀರ್ತಿಸು ಪ್ರಭುವನು.

ಶುಭಸಂದೇಶ: ಮತ್ತಾಯ 5:17-19

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು. "ಮೊಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನಗಳನ್ನಾಗಲಿ ರದ್ದುಮಾಡಲು ನಾನು ಬಂದೆನೆಂದು ತಿಳಿಯಬೇಡಿ. ರದ್ದು ಮಾಡಲು ಅಲ್ಲ ಅವುಗಳನ್ನು ಸಿದ್ಧಿಗೆ ತರಲು ಬಂದಿದ್ದೇನೆ. ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು.

ಮನಸಿಗೊಂದಿಷ್ಟು : "ಹಿಂದಿನ ಹಾಗೂ ಇಂದಿನ ಸ್ಥಿತಿಗಳ ಬಗ್ಗೆ ಜಗಳವಾಡಿಕೊಂಡಿದ್ದರೆ, ಮುಂದಿನದನ್ನು ಕಳೆದುಕೊಳ್ಳುತ್ತೇವೆ" ಎನ್ನುತ್ತಾರೆ ವಿನ್ಸಟನ್ ಚರ್ಚಿಲ್. ಧರ್ಮಶಾಸ್ತ್ರದ ನಿಜ ಕಾಳಜಿ, ಆಶಯಗಳು ಮಾನವ ನಿರ್ಮಿತ ವಿಧಿ ಆಚರಣೆಗಳಲ್ಲಿ ಕಳೆದು ಹೋಗಬಾರದೆನ್ನುವ ಮಾತನ್ನು ಯೇಸು ಆಡುತ್ತಾರೆ. ದೇವರ ಬಗ್ಗೆಗಿನ ಅಖಂಡ ನಿಷ್ಠೆ ಹಾಗೂ ಪರರ ಬಗೆಗಿನ ಪ್ರೀತಿಗೆ ಧರ್ಮಶಾಸ್ತ್ರದ ತಪ್ಪು ಗ್ರಹಿಕೆಗಳು ಅಡ್ಡಬಾರದೆಂಬ ಆಶಯ ಯೇಸುವಿನದು.

ಪ್ರಶ್ನೆ : ಸ್ವರ್ಗ ಸಾಮ್ರಾಜ್ಯದಲ್ಲಿ ಮಹಾತ್ಮನೆನಿಸಿಕೊಳ್ಳುವಲ್ಲಿ ನಮ್ಮ ಪ್ರಯತ್ನವೆಷ್ಟು? 

22.03.22

ಮೊದಲನೇ ವಾಚನ: ಅಜರ್ಯ 1:2, 11-20

ಅಜರ್ಯನು ಬೆಂಕಿಯ ನಡುವೆ ನಿಂತುಕೊಂಡು ಗಟ್ಟಿಯಾಗಿ ಕೂಗಿ ಹೀಗೆಂದು ಪ್ರಾರ್ಥನೆ ಮಾಡಿದ: ಪ್ರಭುದೇವಾ,  ನಿಮ್ಮ ನಾಮದ ಪ್ರಯುಕ್ತ ನಮ್ಮನ್ನು ಎಂದೆಂದಿಗೂ ತ್ಯಜಿಸಬೇಡಿ, ನಿಮ್ಮ ಒಡಂಬಡಿಕೆಯನ್ನು ರದ್ದುಗೊಳಿಸಬೇಡಿ. ನಿಮ್ಮ ಮಿತ್ರ ಅಬ್ರಹಾಮನ ನಿಮಿತ್ತ ನಿಮ್ಮ ದಾಸ ಇಸಾಕನ, ನಿಮ್ಮ ಭಕ್ತ ಯಕೋಬನ ಪ್ರಯುಕ್ತ ನಿಮ್ಮ ಕೃಪೆ ನಮ್ಮನ್ನು ಬಿಟ್ಟಗಲದಿರಲಿ. ಇವರಿಗೆ, "ನಿಮ್ಮ ಸಂತಾನವನ್ನು ಆಕಾಶದ ನಕ್ಷತ್ರಗಳಂತೆ ಸಮುದ್ರ ತೀರದ ಮರಳಿನಂತೆ ಸಂಖ್ಯಾವಾಗಿಸುವೆ" ಎಂದು ನೀವು ವಾಗ್ದಾನ ಮಾಡಿದಿರಲ್ಲವೆ? ಒಡೆಯಾ, ಉಳಿದ ರಾಷ್ಟ್ರಗಳಿಗಿಂತ ನಾವು ಕನಿಷ್ಟರಾಗಿಬಿಟ್ಟೆವು, ನಮ್ಮ ಪಾಪಗಳ ಕಾರಣ ಜಗದಲ್ಲಿನ ಹೀನಸ್ಥಿತಿಗೆ ಇಳಿದುಬಿಟ್ಟೆವು. ನಮಗೀಗ ರಾಜರಿಲ್ಲ, ಪ್ರವಾದಿಗಳಿಲ್ಲ, ನಾಯಕರಿಲ್ಲ; ಹೋಮವಿಲ್ಲ, ಬಲಿದಾನವಿಲ್ಲ, ನೈವೇದ್ಯವಿಲ್ಲ, ಧೂಪವಿಲ್ಲ. ಕಾಣಿಯನ್ನರ್ಪಿಸಿ ನಿಮ್ಮ ಕೃಪೆ ಪಡೆಯಲು ಸ್ಥಳವೂ ಇಲ್ಲ; ಆದರೂ ಪಶ್ಚಾತ್ತಾಪದ ಹೃದಯ, ದೀನ ಮನ ನಿಮಗೆ ಅಂಗೀಕೃತವಾಗಲಿ. ಹೋತಹೋರಿಗಳ, ಸಾವಿರಾರು ಕೊಬ್ಬಿದ ಕುರಿಮರಿಗಳ ದಹನಬಲಿದಾನದಂತೆ ನಮ್ಮ ಅಂತರಂಗದ ಬಲಿ ನಿಮಗಿಂದು ಅಂಗೀಕೃತವಾಗಲಿ. ಪೂರ್ಣ ಹೃದಯದಿಂದ ನಾವು ನಿಮ್ಮನ್ನು ಹಿಂಬಾಲಿಸುವಂತೆ ಅನುಗ್ರಹಿಸಿರಿ. ಏಕೆಂದರೆ ನಿಮ್ಮಲ್ಲಿ ನಂಬಿಕೆಯಿಡುವವರಿಗೆ ಆಶಾಭಂಗವಾಗುವುದಿಲ್ಲ. ಪೂರ್ಣ ಹೃದಯದಿಂದ ನಿಮ್ಮನ್ನೀಗ ಹಿಂಬಾಲಿಸುತ್ತೇವೆ ನಿಮ್ಮಲ್ಲಿ ಭಯಭಕ್ತಿಯಯಿಡುತ್ತೇವೆ, ನಿಮ್ಮ ಸನ್ನಿಧಿಯನ್ನು ಮತ್ತೆ ಅರಸುತ್ತೇವೆ. ನಮ್ಮನ್ನು ನಿರಾಶೆಗೊಳಿಸಬೇಡಿ ನಿಮ್ಮ ಸೈರಣೆಗೆ ತಕ್ಕಂತೆ, ನಿಮ್ಮ ಕೃಪಾತಿಶಯದ ಪ್ರಕಾರ ನಮ್ಮ ಸಂಗಡ ವರ್ತಿಸಿ. ಸರ್ವೇಶ್ವರ, ನಿಮ್ಮ ಮಹತ್ಕಾರ್ಯಗಳ ಮೂಲಕ ನಮ್ಮನ್ನು ಬಿಡುಗಡೆಮಾಡಿ ನಿಮ್ಮ ಹೆಸರಿಗೆ ಹೊಸ ಕೀರ್ತಿ ಬರುವಂತೆ ಮಾಡಿ.

ಕೀರ್ತನೆ: 25:4-5, 6-7, 8-9
ಶ್ಲೋಕ: ನೆನಸಿಕೋ ಪ್ರಭೂ, ನಿನ್ನ ನಿರಂತರ ಕರುಣೆಯನು.

ಶುಭಸಂದೇಶ: ಮತ್ತಾಯ 18:21-35

ಪೇತ್ರನು ಯೇಸುವಿನ ಬಳಿಗೆ ಬಂದು, "ಸ್ವಾಮೀ, ನನಗೆ ವಿರುದ್ದ ದ್ರೋಹಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ? ಎಂದು ಕೇಳಿದನು. "ಏಳುಸಲವಲ್ಲ, ಏಳೆಪ್ಪತ್ತುಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ  ಹೇಳುತ್ತೇನೆ" ಎಂದು ಯೇಸು ಉತ್ತರವಿತ್ತರು. ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, "ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ. ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ಚಿನ್ನದ ನಾಣ್ಯಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು. ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ. ಆಗ ಆ ಸೇವಕನು ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: 'ಸ್ವಲ್ಪ ಸೈರಿಸಿಕೊಳ್ಳಿ ಸ್ವಾಮೀ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,' ಎಂದು ಅಂಗಲಾಚಿದ. ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿಬಿಟ್ಟ. ಆದರೆ ಅದೇ ಸೇವಕ ಹೊರಗೆ ಬಂದದ್ದೇ ತನಗ ಕೇವಲ ನೂರು ಬೆಳ್ಳಿಕಾಸು ಸಾಲ ತೆರಬೇಕಾಗಿದ್ದ  ಒಬ್ಬ ಜೊತೆ ಸೇವಕನನ್ನು ಎದುರುಗೊಂಡ. ಅವನನ್ನು ಹಿಡಿದು, "ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು," ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, 'ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ," ಎಂದು ಕಾಲಿಗೆ ಬಿದ್ದು ಕೇಳಿಕೊಂಡ. ಆದರೂ ಅವನು ಒಪ್ಪಲಿಲ್ಲ. ಅಷ್ಟು ಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ  ಹಾಕಿಸಿದ. ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು. ರಾಜನು ಅವನನ್ನು ಕರೆಹಿಸಿ, 'ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಮಾಡಿದೆ. ನಾನು ನಿನಗೆ ದಯೆ ತೋರಿಸಿದಂತೆ ನೀನೂ ನಿನ್ನ  ಜೊತೆಗಾರನಿಗೆ ದಯೆ ತೋರಿಸಬೇಕಿತ್ತು ಅಲ್ಲವೇ?' ಎಂದು ಸಿಟ್ಟುಗೊಂಡ. ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು  ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು, ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು," ಎಂದರು.

ಮನಸಿಗೊಂದಿಷ್ಟು : ಕ್ಷಮೆ ನೀಡಲು ಕಾರಣವೇ ಇಲ್ಲದಿದ್ದಾಗಲೇ ಕ್ಷಮೆಯ ಮಹತ್ವ ಹೆಚ್ಚು ಎನ್ನಲಾಗುತ್ತದೆ.  ಯೇಸು ಶಿಲುಬೆ ಮೇಲೆ ಮಾಡಿದ್ದು ಅದನ್ನೇ. ಹುಲು ಮಾನವರಾದ ನಮಗೇ ಕ್ಷಮೆ ಎಂಬುದು ಸಹಜವಾಗಿ ಬರದೇ ಹೋಗಬಹುದು. ಕ್ಷಮೆ ಎನ್ನುವುದು ಮೊದಲು ಒಂದು ನಿರ್ಧಾರ ಹಾಗೂ ನಂತರ ಅದೊಂದು ಸತತ ಅಭ್ಯಾಸ

ಪ್ರಶ್ನೆ : ಕ್ಷಮಿಸದೆ ನಮ್ಮಲ್ಲೇ ಉಳಿದಿರುವ ಉದಾಹರಣೆಗಳೆಷ್ಟು?

21.03.22 - "ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ"

ಮೊದಲನೇ ವಾಚನ:  2 ಅರಸುಗಳು 5:1-15


ಸಿರಿಯಾದ ರಾಜನಿಗೆ ನಾಮಾನ್ ಎಂಬೊಬ್ಬ ಸೇನಾಪತಿಯಿದ್ದನು. ಸರ್ವೇಶ್ವರಸ್ವಾಮಿ ಇವನ ಮುಖಾಂತರ ಸಿರಿಯಾದವರಿಗೆ ಜಯವನ್ನು ಅನುಗ್ರಹಿಸಿದ್ದರು. ಆದ್ದರಿಂದ ರಾಜನು ಇವನನ್ನು ಮಹಾಪುರುಷನೆಂದೂ ಸನ್ಮಾನ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮ ಶಾಲಿಯಾದ ಇವನು ಭೀಕರ ಚರ್ಮರೋಗದಿಂದ ನರಳುತ್ತಿದ್ದನು. ಸಿರಿಯಾದವರು, ಒಮ್ಮೆ ಸುಲಿಗೆಗಾಗಿ ಇಸ್ರಯೇಲರ ಪ್ರಾಂತ್ಯಕ್ಕೆ ಹೋಗಿಬರುವಾಗ, ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದರು. ಆಕೆ ನಾಮಾನನ ಹೆಂಡತಿಗೆ ದಾಸಿಯಾದಳು. ಒಂದು ದಿನ ಆಕೆ ತನ್ನ ಯಜಮಾನಿಗೆ, “ನಮ್ಮ ದಣಿಯವರು ಸಮಾರಿಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಅವರು ಇವರನ್ನು ಈ ಚರ್ಮರೋಗದಿಂದ ಗುಣಪಡಿಸುತ್ತಿದ್ದರು,” ಎಂದು ಹೇಳಿದಳು. ನಾಮಾನನು ರಾಜನ ಸನ್ನಿಧಿಗೆ ಹೋಗಿ, ಇಸ್ರಯೇಲ್ ನಾಡಿನ ಹುಡುಗಿ ಹೇಳಿದ್ದನ್ನು ತಿಳಿಸಿದನು. ಅವನು, “ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ,” ಎಂದನು. ನಾಮಾನನು ಮೂವತ್ತು ಸಾವಿರ ಬೆಳ್ಳಿ, ಆರುಸಾವಿರ ಬಂಗಾರ ನಾಣ್ಯಗಳನ್ನೂ, ಹತ್ತು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಸಮಾರಿಯಕ್ಕೆ ಹೋದನು; ತಂದ ಪತ್ರವನ್ನು ಇಸ್ರಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕ ನಾಮಾನನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ; ನೀವು ಅವನ ಚರ್ಮರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೊಳ್ಳಿ,” ಎಂಬುದಾಗಿ ಬರೆದಿತ್ತು. ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮಥ್ರ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳಿದನು. ಇಸ್ರಯೇಲರ ಅರಸನು ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೈವ ಪುರುಷ ಎಲೀಷನು ಕೇಳಿದನು. ದೂತರ ಮುಖಾಂತರ ಅವನಿಗೆ, “ನೀವು ನಿಮ್ಮ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸಿ; ಇಸ್ರಯೇಲರಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ಗೊತ್ತಾಗಲಿ,” ಎಂದು ಹೇಳಿ ಕಳುಹಿಸಿದನು. ನಾಮಾನನು ರಥರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು. ಎಲೀಷನು ಅವನಿಗೆ, “ಹೋಗಿ ಜೋರ್ಡನ್ ನದಿಯಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ದೇಹ ಮೊದಲಿದ್ದಂತಾಗುವುದು; ನೀನು ಶುದ್ಧನಾಗುವೆ,” ಎಂದು ಹೇಳಿಕಳುಹಿಸಿದನು. ನಾಮಾನನು ಇದನ್ನು ಕೇಳಿ ಕೋಪಗೊಂಡನು. “ಇದೇನು! ಇವನು ಖಂಡಿತವಾಗಿ ಹೊರಗೆಬಂದು ನಿಂತು, ತನ್ನ ದೇವರಾದ ಸರ್ವೇಶ್ವರನ ಹೆಸರು ಹೇಳಿ, ನನ್ನ ಚರ್ಮದ ಮೇಲೆ ಕೈಯಾಡಿಸಿ, ರೋಗ ವಾಸಿಮಾಡುವನೆಂದು ನೆನಸಿದೆ. ದಮಸ್ಕದ ಅಬಾನಾ ಹಾಗು ಪರ್ಪರ್ ಎಂಬ ನದಿಗಳು ಇಸ್ರಯೇಲರ ಎಲ್ಲಾ ನದಿ ಹೊಳೆಗಳಿಗಿಂತ ಉತ್ತಮವಾಗಿವೆಯಲ್ಲವೇ? ಸ್ನಾನದಿಂದ ವಾಸಿಯಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಿತ್ತಲ್ಲವೇ? ಎಂದು ಹೇಳಿ, ಬಹಳ ಸಿಟ್ಟಿನಿಂದ ಹೊರಟುಹೋದನು. ಆಗ ಅವನ ಸೇವಕರು ಹತ್ತಿರ ಬಂದು, “ಯಜಮಾನರೇ, ಪ್ರವಾದಿ ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲವೆ? ಹಾಗಾದರೆ ‘ಸ್ನಾನಮಾಡಿ, ಶುದ್ಧರಾಗುವಿರಿ’ ಎಂದು ಹೇಳಿದರೆ ಏಕೆ ಅ
ದರಂತೆ ಮಾಡಬಾರದು?” ಎಂದರು. ಅವನು ಅಂತೆಯೇ ಜೋರ್ಡನಿಗೆ ಹೋಗಿ, ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೈವಪುರುಷನ ಮಾತಿಗನುಸಾರ ಅವನ ದೇಹ ಒಂದು ಮಗುವಿನ ದೇಹದಂತೆ ಶುದ್ಧವಾಯಿತು. ಅನಂತರ ನಾಮಾನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. “ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು." ಎಂದು ಹೇಳಿದನು.

ಕೀರ್ತನೆ: 42:2, 3; 43:3, 4

ಶ್ಲೋಕ: ಜೀವಂತ ದೇವನಿಗಾಗಿ ದಾಹದಿಂದೆ ಎನ್ನ ಮನ,
              ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ

ಶುಭಸಂದೇಶ: ಲೂಕ 4:24-30

ಯೇಸುಸ್ವಾಮಿ ತಾವು ಬೆಳೆದ ಊರಾದ ನಜರೇತಿಗೆ ಬಂದರು. ಅಲ್ಲಿನ ಪ್ರಾರ್ಥನಾಮಂದಿರದಲ್ಲಿ ಬೋಧಿಸುತ್ತಾ ಹೀಗೆಂದರು: "ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು. ಅವರಾರ ಬಳಿಗೂ ದೇವರು ಎಲೀಯನನ್ನು ಕಳಿಸಲಿಲ್ಲ. ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳಿಸಿದರು. ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಠರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮನನನ್ನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ,” ಎಂದು ಹೇಳಿದರು. ಇದನ್ನು ಕೇಳಿ, ಪ್ರಾರ್ಥನಾಮಂದಿರದಲ್ಲಿ ಇದ್ದ ಎಲ್ಲರೂ ಕಡುಗೋಪಗೊಂಡರು. ಯೇಸುವನ್ನು ಆ ಊರ ಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು. ಯೇಸುವಾದರೋ, ಅವರ ನಡುವೆಯೇ ನಡೆದು, ತಮ್ಮ ದಾರಿ ಹಿಡಿದು ಹೋದರು.

ಮನಸ್ಸಿಗೊಂದಿಷ್ಟು : 'ಸ್ವಂತ ಊರಿನಲ್ಲಿ ಸನ್ಮಾನಿತನಲ್ಲ'  ಎಂಬ ಯೇಸುವಿನ ಮಾತನ್ನು ನಮ್ಮಲೇ ಅನೇಕರು ತಮ್ಮಗಾಗಿ ಬಳಸಿಕೊಳ್ಳುವುದನ್ನು ಕಾಣುತ್ತೇವೆ. ತಮಗೆ  ಸಿಗಬೇಕಾದ ಗೌರವ ತಮ್ಮ ಜನರಿಂದ ಸಿಗುತ್ತಿಲ್ಲ ಎಂಬ ದುಃಖ ಅವರದು.  ಆದರೆ ಪ್ರವಾದಿಗಳು ಹಾಗು ತಾವು ತಂದ  ದೇವರ ವಾಕ್ಯಗಳನ್ನು, ಕೃಪೆಯನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ , ಪುರಸ್ಕರಿಸುತ್ತಿಲ್ಲ ಎಂಬ ನೋವು ಕ್ರಿಸ್ತನದು. ಕ್ರಿಸ್ತನ  ಸ್ವಂತ ಜನರಾದ ನಾವು ಅವರನ್ನು ತಿರಸ್ಕರಿಸದಿರೋಣ. 

ಪ್ರಶ್ನೆ : ನಾವು ಕ್ರಿಸ್ತನ ಹತ್ತಿರದವರೇ? ಸ್ವಂತ ಜನರಂತೆ ಬಾಳುತ್ತಿದ್ದೇವೆಯೇ?

ಪ್ರಭುವೇ,
ನಿಮ್ಮ ಆಶಯಗಳ 
ನಯವಾಗಿ ತಿರಸ್ಕರಿಸಿ
ನಿಮ್ಮ ನುಡಿಯಂತೆ 
ನಡೆಯದೆ ಅದನ್ನು 
ದಬ್ಬಿ ಬಾಳುತ್ತಿರುವ 
ನಮ್ಮ ಬಾಳ ನಡುವೆ 
ನಡೆದು ಹೋಗದಿರಿ 
ನಮ್ಮಲ್ಲೇ ತಂಗಿ 
ನೆಲಸಿರಿ  

20.03.22 - " ಹಣ್ಣುಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದು ಹಾಕೋಣ"

ಮೊದಲನೇ ವಾಚನ: ವಿಮೋಚನಾಕಾಂಡ 3:1-8, 13-15

ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಬಾಗಕ್ಕೆ ನಡೆಸಿಕೊಂಡು  'ಹೋರೇಬ್' ಎಂಬ ದೇವರ ಬೆಟ್ಟಕ್ಕೆ ಬಂದನು. ಅಲ್ಲಿ ಮುಳ್ಳಿನ ಪೊದೆಯೊಂದರ ಒಳಗೆ ಉರಿಯುವ ಬೆಂಕಿಯಲ್ಲಿ ಸರ್ವೇಶ್ವರನ ದೂತನು ಅವನಿಗೆ ಕಾಣಿಸಿಕೊಂಡನು. ಮೊಶೆ ನೋಡಿದನು. ಆ ಮುಳ್ಳಿನ ಪೊದೆ ಉರಿಯುತ್ತಲೇ ಇತ್ತು; ಆದರೆ ಸುಟ್ಟುಹೋಗದೆ ಇತ್ತು. ಆಗ ಮೋಶೆ, "ಇದೇನು ಆಶ್ಚರ್ಯ! ಪೊದೆ ಸುಟ್ಟುಹೋಗದೆ ಇರುವುದಕ್ಕೆ ಕಾರಣವೇನು? ನಾನು ಹತ್ತಿರ ಹೋಗಿ ತಿಳಿದುಕೊಳ್ಳುತ್ತೇನೆ" ಎಂದುಕೊಂಡನು. ಅದನ್ನು ನೋಡಲು ಅವನು ಮುಂದಕ್ಕೆ ಬರುವುದನ್ನು ಸರ್ವೇಶ್ವರಸ್ವಾಮಿ ಕಂಡರು. ಪೊದೆಯೊಳಗಿಂದ, "ಮೋಶೆ, ಮೋಶೆ," ಎಂದು ದೇವರು ಕರೆದರು. ಅದಕ್ಕವನು, ಇಗೋ, ಇದ್ದೇನೆ," ಎಂದು ಉತ್ತರಕೊಟ್ಟನು. ದೇವರು ಅವನಿಗೆ "ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರಭೂಮಿ," ಎಂದು ಹೇಳಿದರು. ಅದೂ ಅಲ್ಲದೆ, "ನಾನು ನಿನ್ನ ತಂದೆಯ ದೇವರು, ಇಸಾಕನ  ದೇವರು ಯಕೋಬನ ದೇವರು," ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು. ಆಗ ಸರ್ವೇಶ್ವರ, " ಈಜಿಪ್ಟ್ ನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ. ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕೂ ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ, ಎಂದರು. ಮೋಶೆ ದೇವರಿಗೆ, "ನಾನು ಇಸ್ರಯೇಲರ ಬಳಿಗೆ ಹೋಗಿ, 'ನಿಮ್ಮ ಪೂರ್ವಜರ ದೇವರು ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ," ಎಂದು ಹೇಳಿದಾಗ ಅವರು ಒಂದು ವೇಳೆ, "ಆತನ ಹೆಸರೇನು?" ಎಂದು ನನ್ನನ್ನು ಕೇಳಿದರೆ ನಾನೇನು ಉತ್ತರ ಕೊಡಬೇಕು?" ಎಂದು ಕೇಳಿದನು. ಆಗ ದೇವರು ಹೀಗೆಂದರು. "ಇರುವವನಾಗಿ ಇರುವವನು ನಾನೇ; ನೀನು ಇಸ್ರಯೇಲರಿಗೆ 'ತಾನಾಗಿ ಇರುವವನು,’ ನನ್ನನ್ನ ನಿಮ್ಮ ಬಳಿಗೆ ಕಳಿಸಿದ್ದಾನೆ ಎಂದು ಹೇಳು," ದೇವರು ಮೋಶೆಗೆ ಮತ್ತೆ ಇಂತೆಂದರು: "ನೀನು ಇಸ್ರಯೇಲರಿಗೆ, "ನಿಮ್ಮ ಪೂರ್ವಜರಾದ ಅಬ್ರಹಾಮ , ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ" ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೇ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು."

ಕೀರ್ತನೆ: 103:1-4, 6-8, 11
ಶ್ಲೋಕ: ಪ್ರಭು ಸಹನಶೀಲನು, ಪ್ರೀತಿಮಯನು.

ಎರಡನೇ ವಾಚನ: 1 ಕೊರಿಂಥಿಯರಿಗೆ : 10:1-6, 10-12

ಪ್ರಿಯ ಸಹೋದರರೇ, ನಮ್ಮ ಪೂರ್ವಜರಿಗೆ ಸಂಭವಿಸಿದವುಗಳತ್ತ ನಿಮ್ಮ ಗಮನವನ್ನು ಸೆಳೆಯಬೇಕೆಂದಿದ್ದೇನೆ ಅವರೆಲ್ಲರೂ ಮೋಡದ ನೆರಳಿನಲ್ಲಿಯೇ ನಡೆದರು. ಎಲ್ಲರೂ ಸಮುದ್ರವನ್ನು ಸುರಕ್ಷಿತವಾಗಿ ದಾಟಿದರು. ಹೀಗೆ ಅವರು ಮೋಡದಲ್ಲಿಯೂ ಸಮುದ್ರದಲ್ಲಿಯೂ ಸ್ನಾನದೀಕ್ಷೆಯನ್ನು ಪಡೆದು ಮೋಶೆಗೆ ಶಿಷ್ಯರಾದರು. ಎಲ್ಲರೂ ಒಂದೇ ದೈವಿಕ ಪಾನೀಯವನ್ನು ಕುಡಿದರು; ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ. ಆದರೂ ಅವರಲ್ಲಿ ಬಹುಮಂದಿ ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಆದ್ದರಿಂದಲೇ ಮರುಭೂಮಿಯಲ್ಲಿ ಮಡಿದು ಮಣ್ಣುಪಾಲಾದರು. ಈ ಘಟಣೆಗಳು ನಮಗೆ ಎಚ್ಚರಿಕೆ ನೀಡುವ ನಿದರ್ಶನಗಳಾಗಿವೆ. ಅವರಂತೆ ನಾವು ಕೆಟ್ಟದಾದವುಗಳನ್ನು ಆಶಿಸಬಾರದು. ಅವರಲ್ಲಿ ಕೆಲವರು ಗೊಣಗುಟ್ಟಿದರು ಸಂಹಾರಕ ದೂತನಿಂದ ಸಂಹರಿಸಲ್ಪಟ್ಟರು. ನೀವು ಅವರಂತೆ ಗೊಣಗುಟ್ಟವರಾಗಬೇಡಿ. ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು. ಆದಕಾರಣ ಸ್ಥಿರವಾಗಿ ನಿಂತಿರುವೆನೆಂದು ಕೊಚ್ಚಿಕೊಳ್ಳುವವನೇ, ಕುಸಿದುಬೀಳದಂತೆ ಎಚ್ಚರಿಕೆಯಿಂದಿರು.

ಶುಭಸಂದೇಶ: ಲೂಕ 13:1-9




























ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, ಬಲಿಯರ್ಪಿಸುತ್ತಾ ಇದ್ದ ಗಲಿಲೇಯದವರನ್ನು ಪಿಲಾತನು ಕೊಲ್ಲಿಸಿದನೆಂಬ ವಿಷಯವನ್ನು ತಿಳಿಸಿದರು. ಅದಕ್ಕೆ ಯೇಸು, "ಇಂಥಾ ಕೊಲೆಗೆ ಈಡಾದವರು ಇತರ ಎಲ್ಲ ಗಲಿಲೇಯದವರಿಗಂತ ಹೆಚ್ಚು ಪಾಪಿಗಳೆಂದು ಭಾವಿಸುತ್ತೀರೋ,? ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆ ಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ, ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೆ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸುತ್ತಿರೋ? ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ," ಎಂದರು. ಅನಂತರ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: " ಒಬ್ಬನು ತನ್ನ ದ್ರಾಕ್ಷಿ ತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದ. ಒಮ್ಮೆ ಅವನು ಬಂದು ಅದರಲ್ಲಿ ಹಣ್ಣನ್ನು ಹುಡುಕಲು ಒಂದೂ ಕಾಣಿಸಲಿಲ್ಲ. ತೋಟಗಾರನನ್ನು ಕರೆದು, "ನೋಡು, ಮೂರು ವರ್ಷಗಳಿಂದ ಈ ಮರದಲ್ಲಿ ಹಣ್ಣನ್ನು ‌ಹುಡುಕುತ್ತಾ ಇದ್ದೇನೆ. ಒಂದಾದರೂ ಕಂಡುಬರಲಿಲ್ಲ  ಇನ್ನು ಇದನ್ನು ಕಡಿದು ಹಾಕು. ಭೂಮಿಗೆ ಭಾರವಾಗಿ ಅದರ ಸಾರವನ್ನು ಇದೇಕೆ ವ್ಯರ್ಥ ಮಾಡಬೇಕು?" ಎಂದು ಹೇಳಿದ. ಅದಕ್ಕೆ ತೋಟಗಾರನು, "ಸ್ವಾಮೀ, ಈ ಒಂದು ವರ್ಷ ಇದು ಹಾಗೆಯೇ ಇರಲಿ ಬಿಡಿ. ಅಷ್ಟರಲ್ಲಿ ಸುತ್ತಲೂ ಪಾತಿತೆಗೆದು ಗೊಬ್ಬರ ಹಾಕುತ್ತೇನೆ, ಮುಂದಿನ ವರ್ಷ ಹಣ್ಣುಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದು ಹಾಕೋಣ," ಎಂದನು,"

ಮನಸಿಗೊಂದಿಷ್ಟು : ದೇವರು ನಮಗೆ ನೀಡಿರುವ,  ವಿಸ್ತರಿಸಿರುವ ಅನುಗ್ರಹ ಹಾಗೂ ಕೃಪೆಯನ್ನು ಅರ್ಥ ಮಾಡಿಕೊಳ್ಳದಿದ್ದರೆ ಅಂಜುರ ಮರಕ್ಕೆ ಸಿಕ್ಕ ಎಚ್ಚರಿಕೆ ನಮಗೂ ಸಿಗುತ್ತದೆ. ದೇವರ ಅನುಗ್ರಹ, ಪ್ರೀತಿಯ ಸಾರವನ್ನು  ಉಪಯೋಗಿಸಿಕೊಳ್ಳದೆ, ಉಪಯೋಗಿಸಿಯೂ ಫಲ ಕೊಡದೆ ಹೋದರೆ ನಮ್ಮ ಜೀವನ ವ್ಯರ್ಥವೇ ಸರಿ. ಈ ಲೋಕದ ಲೆಕ್ಕಚಾರದಲ್ಲಿ ನಾವು ಸ್ಥಿರವಾಗಿ ನಿಂತಿರುವೆವು ಎಂದು ಬೆನ್ನು ತಟ್ಟಿಕೊಳ್ಳದೆ ದೇವರ ಎದುರಿನಲ್ಲಿ ನಾವೆಷ್ಟು ಯೋಗ್ಯರು ಎಂಬುದನ್ನು ಯೋಚಿಸೋಣ. ಇಳ್ಳಿ ಮತ್ತೊಂದು ಸಂದೇಶವೂ ಇದೆ. ಜೀವನದಲ್ಲಿ ಕಷ್ಟ ಪಡುವವರು ದೇವರಿಂದ ಶಿಕ್ಷೆ ಪಡುತ್ತಿದ್ದಾರೆ ನಾವು ಭಾಗ್ಯವಂತರು ಎಂದು ಬೆನ್ನು ತಟ್ಟಿಕೊಳ್ಳಬೇಡಿ ಎಂಬ ಸಂದೇಶವನ್ನು ಸಹ ಯೇಸು ಸ್ವಾಮಿ ಸ್ಪಷ್ಟವಾಗಿ ನೀಡುತ್ತಿದ್ದಾರೆ.

ಪ್ರಶ್ನೆ : ದೇವರ ಪ್ರೀತಿ ಅನುಗ್ರಹ ನಮ್ಮಲ್ಲಿ ಎಷ್ಟು ಫಲ ನೀಡಿದೆ ?



 ತಪಸ್ಸು ಕಾಲದಲ್ಲಿನ ಇಲ್ಲಿಯವರೆಗಿನ ಪ್ರಶ್ನೆಗಳು 


 -   ತಪಸ್ಸು ಕಾಲದಲ್ಲಿ ನಮ್ಮ ಅಧ್ಯಾತ್ಮಿಕ ಗುರಿಗಳೇನು?

 -  ಶಿಲುಬೆ ಹೊತ್ತು ಹಿಂಬಾಲಿಸಲು ಸಿದ್ಧವಿದ್ದೇವೆಯೇ

 -  ದೇವರ ಮುಂದೆ ನಾವು ತೋರಬಹುದಾದ ಆಸ್ತಿಗಳಾವುವು

 -  ನಮಗೆ  ದೈವೀಕ ವೈದ್ಯನ ಅವಶ್ಯಕತೆಯಿದೆ ಎಂಬ ಅರಿವು ನಮಗಿದೆಯೇ?

 -  ನಾವಿಂದು ಯಾವುದೆಲ್ಲವುಗಳಿಂದ ಜೀವಿಸುತ್ತಿದ್ದೇವೆ?

 -  ನಮ್ಮ ಜೀವನದಲ್ಲಿ ಹಸಿದವರಿಗೆ ನಾವಾಗೇ ಹೋಗಿ ಊಟವಿತ್ತ ಉದಾಹರಣೆಗಳೆಷ್ಟು

 -  ನಮ್ಮ ಪ್ರಾರ್ಥನೆಯಲ್ಲಿ ನಿರರ್ಥಕ ಪದಗಳೆಷ್ಟುಸ್ವಾರ್ಥ ಬೇಡಿಕೆಗಳೆಷ್ಟು?

 -  ನಮ್ಮ ಹೃದಯವೂ ನೆನೆವೆ ನಗರದಂತಾಗಲು ಸಾಧ್ಯವಿಲ್ಲವೇ?

 -  ನಮಗಾಗಿ ನಾವು ಏನು ಅಪೇಕ್ಷಿಸುತ್ತೇವೆಯೋ ಅದನ್ನು ಇತರರಿಗೂ ಬಯಸುತ್ತಿದ್ದೇವೆಯೇ?

 -  ನಾವು ಮತ್ತೊಬ್ಬರನ್ನು ತುಚ್ಛೀಕರಿಸಿದ ಸಂದರ್ಭಗಳ ಲೆಕ್ಕ ನಮ್ಮಲ್ಲಿದೆಯೇ?   

-ನಾವು ಯೇಸುವಿಗೆ ಸ್ವಂತ ಜನರಾಗಿದ್ದೇವೆಯೇ ಅಥವಾ ಇನ್ನೂ ಅನ್ಯರಾಗೇ ಉಳಿದಿದ್ದೇವೆಯೇ?

-ಯೇಸುವಿನ ಈ ರೂಪಾಂತರದ ಘಟನೆ ನಮ್ಮೊಳಗಿನ ರೂಪಾಂತರಕ್ಕೆ ಸ್ಪೂರ್ತಿಯಾಗಬಲ್ಲದೇ?

                           -ದಾಸನಾಗಿರು’ ಎಂಬ ಯೇಸುವಿನ ವಾಕ್ಯಕ್ಕೆ ನಾವೆಷ್ಟು ಬದ್ಧ?  

- ನಮ್ಮ ಬದುಕಿನ ಅಡಿಪಾಯ ಯಾವುದುದೈವ ನಂಬಿಕೆಯೇಲೌಕಿಕ ಗಳಿಕೆಯೇ?


- ದೇವರಿಂದ ನಮ್ಮ ಲೌಕೀಕ ಜೀವನ ಎಷ್ಟು ದೂರಾ ಸಾಗಿದೆ?





 :: 

19.03.22 - "ಆಕೆಯ ಪತಿ ಜೋಸೆಫನು ನೀತಿವಂತನು"

ಮೊದಲನೇ ವಾಚನ: 2 ಸಮುವೇಲನ 7:4-5, 12-14, 16

ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು: ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ? ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು. ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು. ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು. ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.”

ಕೀರ್ತನೆ: 89:1-4, 26, 28.
ಶ್ಲೋಕ: ಚಿರಶಾಶ್ವತವಾಗಿರುವುದು ಅವನ ಸಂತತಿ. 

ಎರಡನೇ ವಾಚನ: ರೋನರಿಗೆ 4:13, 16-18, 22


ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ. ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ. “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಸ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು. ಆತನ ವಿಶ್ವಾಸ ಮತ್ತು ಭರವಸೆ ಎಷ್ಟರಮಟ್ಟಿಗೆ ಇತ್ತೆಂದರೆ, ಈ ದೈವವಾಗ್ದಾನವು ನೆರವೇರುವ ನಿರೀಕ್ಷೆ ಇಲ್ಲದಿದ್ದರೂ ಆತನು ದೇವರನ್ನು ನಂಬಿದನು. ಆದುದರಿಂದಲೇ “ನಿನ್ನ ಸಂತಾನವು ನಕ್ಷತ್ರಗಳಷ್ಟು ಅಸಂಖ್ಯಾತ ಆಗುವುದು,” ಎಂಬ ಹೇಳಿಕೆಯಂತೆ ಆತನು ಅನೇಕ ಜನಾಂಗಗಳಿಗೆ ಮೂಲಪಿತನಾದನು. ಆದ್ದರಿಂದಲೇ, “ದೇವರು ಆತನನ್ನು ತಮ್ಮೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಲಿಖಿತವಾಗಿದೆ.

ಶುಭಸ೦ದೇಶ: ಮತ್ತಾಯ 1:18-21, 24


ಕ್ರಿಸ್ತ ಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ. ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು. ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, "ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ. ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ," ಎಂದನು. ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹ ಮಾಡಿಕೊಂಡನು.


ಮನಸ್ಸಿಗೊಂದಿಷ್ಟು : "ಈ ಜಗದಲ್ಲಿ ಪ್ರತಿ ಮನುಷ್ಯ ಹೊತ್ತುಕೊಳ್ಳುವ ಜವಬ್ದಾರಿ, ವಹಿಸಿಕೊಳ್ಳುವ ಪಾತ್ರಕ್ಕೆ ತಕ್ಕಂತೆ ದೇವರು ಅವರ ಮೇಲೆ ಕೃಪಾವರಗಳನ್ನು ಸುರಿಸುತ್ತಾರೆ" ಎನ್ನುತ್ತಾರೆ ಸಂತ ಥಾಮಸ್ ಅಕ್ವಿನಾಸ್. ಲೋಕದಲ್ಲಿ ತಮ್ಮ ಮಗನ ಪ್ರಾಂಪಚಿಕ ತಂದೆಯಾಗಿ ಪಾತ್ರವಹಿಸಬೇಕಾದ ಜೋಸೆಫರಿಗೆ ಎಷ್ಟು ಕೃಪಾವರಗಳನ್ನು ಸುರಿಸಬೇಕು. 

ತಮ್ಮಂತೆ ಮನುಷ್ಯರನ್ನು ಉಂಟು ಮಾಡಿದ ದೇವರು, ಅವರಿಂದ ಬಯಸಿದ್ದು ಪಾವಿತ್ರತೆ ಹಾಗು ವಿಧೇಯತೆ ಎನ್ನವುವ ಮಾತಿದೆ. ಸಂತ ಜೋಸೆಫರ ಈ ಎರಡರಲ್ಲೂ ದೇವರ ಮೆಚ್ಚುಗೆಗೆ ಪಾತ್ರರಾದವರೇ. ತಮ್ಮ ನಿದ್ದೆಯಲ್ಲಿ ದೇವರ ಚಿತ್ತದ ಸಂದೇಶ ಪಡೆದ ಜೋಸೆಫರು ಎಚ್ಚರದ ನಂತರ ಜೀವನದುದ್ದಕೂ ಅದಕ್ಕೆ ತಲೆಬಾಗಿದ್ದು ನಮಗೆ ಸದಾ ಪ್ರೇರಣೆಯಾಗಲಿ     


 

18.03.22 - "ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು "

ಮೊದಲನೇ ವಾಚನ: ಆದಿಕಾಂಡ 37: 3-4,12-13,17-28

ಜೋಸೆಫನು ಯಕೋಬನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗ. ಎಂದೇ ಯಕೋಬನಿಗೆ ಅವನ ಮೇಲೆ ಮಿಕ್ಕ ಮಕ್ಕಳಿಗಿಂತ ಮಿಗಿಲಾದ ಪ್ರೀತಿ. ಅಲಂಕೃತವಾದ ಒಂದು ನಿಲುವಂಗಿಯನ್ನೂ ಅವನಿಗೆ ಮಾಡಿಸಿಕೊಟ್ಟಿದ್ದ. ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು, ಅಣ್ಣಂದಿರು ಆ ಜೋಸೆಫನನ್ನು ಹಗೆಮಾಡಿದರು. ಅವನೊಡನೆ ಸ್ನೇಹ ಭಾವದಿಂದಲೂ ಮಾತಾಡದೆ ಹೋದರು. ಒಮ್ಮೆ ಜೋಸೆಫನ ಅಣ್ಣಂದಿರು ತಂದೆಯ ಆಡುಕುರಿಗಳನ್ನು ಮೇಯಿಸಲು ಶೆಕೆಮಿಗೆ ಹೋಗಿದ್ದರು. ಯಕೋಬನು ಜೋಸೆಫನಿಗೆ, "ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ, ಅಲ್ಲವೆ? ಅವರ ಬಳಿಗೆ ನಿನ್ನನ್ನು ಕಳಿಸಬೇಕೆಂದಿದ್ದೇನೆ," ಎಂದನು. ಜೋಸೆಫನು ಅವರನ್ನು ಹುಡುಕುತ್ತಾ ಹೋಗಿ, ದೋತಾನಿನಲ್ಲಿ ಅವರನ್ನು ಕಂಡ. ಅಣ್ಣಂದಿರು ಅವನನ್ನು ದೂರದಿಂದಲೇ ನೋಡಿದರು. ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲಲ್ಲು ಒಳಸಂಚು ಮಾಡಿಕೊಂಡರು. "ಅಗೋ ಆ ಕನಸುಗಾರ  ಬರುತ್ತಾ ಇದ್ದಾನೆ! ನಾವು ಅವನನ್ನು ಕೊಂದು ಈ ಬಾವಿಯೊಂದರಲ್ಲಿ ಹಾಕಿ ಬಿಡೋಣ. "ಕಾಡುಮೃಗ ಅವನನ್ನು ತಿಂದುಬಿಟ್ಟಿತು"; ಎಂದು ಹೇಳಿದರೆ ಆಯಿತು, ಬನ್ನಿ. ಆಗ ಅವನ ಕನಸುಗಳು ಏನಾಗುತ್ತವೋ ನೋಡೋಣ," ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು. ರೂಬೇನನು ಈ ಮಾತನ್ನು ಕೇಳಿಸಿಕೊಂಡು, ಅವನನ್ನು ಅವರ ಕೈಯಿಂದ ತಪ್ಪಿಸುವ ಉದ್ದೇಶದಿಂದ, "ನಾವು ಅವನ ಪ್ರಾಣ ತೆಗೆಯಬೇಕಾಗಿಲ್ಲ , ರಕ್ತಪಾತ ಕೂಡದು.  ಕಾಡಿನಲ್ಲಿರುವ ಈ ಬಾವಿ ಒಂದರಲ್ಲಿ ಹಾಕಿ ಬಿಡಿ, ಅವನ ಮೇಲೆ ಕೈ ಹಾಕಬೇಡಿ," ಎಂದು ಅವರಿಗೆ ಹೇಳಿದ. ಅವನನ್ನು ಅವರಿಂದ ತಪ್ಪಿಸಿ ತಂದೆಗೆ ಮತ್ತೆ ಒಪ್ಪಿಸಬೇಕೆಂಬ ಗುರಿ ರೂಬೇನನದಾಗಿತ್ತು.

ಜೋಸೆಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದುಬಿಟ್ಟರು. ಅವನನ್ನು ಹಿಡಿದು ಬಾವಿಯೊಳಗೆ ಹಾಕಿದರು. ಆ ಬಾವಿ ನೀರಿಲ್ಲದೆ ಬರಿದಾಗಿತ್ತು. ತರುವಾಯ ಅವರು ಊಟಕ್ಕೆ ಕುಳಿತುಕೊಂಡರು. ಅಷ್ಟರಲ್ಲಿ, ಇಷ್ಮಾಯೇಲರ ಗುಂಪೊಂದು ಗಿಲ್ಯಾದಿನಿಂದ ಬರುವುದು ಅವರ ಕಣ್ಣಿಗೆ ಕಾಣಿಸಿತು. ಇವರು ತಮ್ಮ ಒಂಟೆಗಳ ಮೇಲೆ ಪರಿಮಳ ಪದಾರ್ಥ, ಸುಗಂದ ತೈಲ, ರಸಗಂದ ಇವುಗಳನ್ನು ಹೇರಿಕೊಂಡು, ಈಜಿಪ್ಟಿಗೆ ಪ್ರಯಾಣಮಾಡುತ್ತಿದ್ದರು. ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, "ನಾವು ನಮ್ಮ ತಮ್ಮನನ್ನು ಕೊಂದು ಆ ಕೊಲೆಯನ್ನು ಮರೆ ಮಾಡಿದರೆ ಪ್ರಯೋಜನವೇನು? ಅವನನ್ನು ಆ ಇಷ್ಮಾಯೇಲರಿಗೆ ಮಾರಿಬಿಡೋಣ, ಬನ್ನಿ; ನಾವು ಅವನ ಮೇಲೆ ಕೈ ಹಾಕಬಾರದು, ಅವನು ನಮ್ಮ ತಮ್ಮನಲ್ಲವೆ?" ರಕ್ತ ಸಂಬಂಧಿಯಲ್ಲವೆ?" ಎಂದು ಹೇಳಿದ. ಅವನ ಆ ಮಾತಿಗೆ ಅಣ್ಣ ತಮ್ಮಂದಿರು ಒಪ್ಪಿದರು. ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದು ಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿ ಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.

ಕೀರ್ತನೆ: 105:16-17, 18-19, 20-21
ಶ್ಲೋಕ: ನೆನೆಯಿರಿ ಆತನ ಅದ್ಬುತಗಳನು, ಮಹತ್ಕಾರ್ಯಗಳನು

ಶುಭಸಂದೇಶ: ಮತ್ತಾಯ 21:33-43, 45-46

ಯೇಸುಸ್ವಾಮಿ ಮುಖ್ಯ ಯಾಜಕರಿಗೂ ಪ್ರಜಾ ಪ್ರಮುಖರಿಗೂ ಈ ಸಾಮತಿಯನ್ನು ಹೇಳಿದರು: ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ. ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ. ಇವರು ಆ ಆಳುಗಳ ಮೇಲೆ ಬಿದ್ದು ಒಬ್ಬನನ್ನು ಬಡಿದರು, ಇನ್ನೊಬ್ಬನನ್ನು ಕಡಿದರು, ಮತ್ತೊಬ್ಬನ ಮೇಲೆ ಕಲ್ಲುತೂರಿದರು.  ತೋಟದ ಯಜಮಾನ ಮೊದಲಿಗಿಂತಲೂ ಹೆಚ್ಚು ಆಳುಗಳನ್ನು ಕಳುಹಿಸಿದ. ಅವರಿಗೂ ಅದೇ ಗತಿ ಆಯಿತು. ಕಟ್ಟಕಡೆಗೆ ಯಜಮಾನ, "ನನ್ನ ಮಗನಿಗೆ ಇವರು ಮರ್ಯಾದೆ ಕೊಟ್ಟೇಕೊಡುವರು' ಎಂದುಕೊಂಡು ತನ್ನ ಮಗನನ್ನೇ ಕಳುಹಿಸಿದ. ಆದರೆ ಗೇಣಿದಾರರು ಮಗನನ್ನು ಕಂಡೊಡನೇ, "ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿ ಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ," ಎಂದು ತಮ್ಮ ತಮ್ಮಲ್ಲೇ ಒಳಸಂಚು ಮಾಡಿಕೊಂಡರು. ಅಂತೆಯೇ ಅವನನ್ನು ಹಿಡಿದು, ತೋಟದಿಂದ ಹೊರಕ್ಕೆ ದಬ್ಬಿಕೊಂಡು ಹೋಗಿ ಕೊಂದು ಹಾಕಿದರು. . "ಈಗ ನೀವೇ ಹೇಳಿ; ತೋಟದ ಯಜಮಾನ ಬಂದಾಗ ಆಗೇಣಿದಾರರಿಗೆ ಏನು ಮಾಡುವನು?" ಎಂದು ಯೇಸು ಕೇಳಿದರು. "ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು," ಎಂದು ಅಲ್ಲಿದ್ದವರು ಉತ್ತರಕೊಟ್ಟರು. ಬಳಿಕ ಯೇಸು ಇಂತೆಂದರು; "ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!" ಎಂಬ ವಾಕ್ಯವನ್ನು ನೀವು ಪವಿತ್ರ ಗ್ರಂಥದಲ್ಲಿ ಓದಿಲ್ಲವೆ? ಆದುದರಿಂದ ನಾನು ನಿಮಗೆ ಹೇಳುತ್ತೇನೆ, "ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು." ಮುಖ್ಯ ಯಾಜಕರೂ ಫರಿಸಾಯರೂ ಸ್ವಾಮಿ ಹೇಳಿದ ಸಾಮತಿಗಳನ್ನು ಕೇಳಿ, 'ಇವನು ನಮ್ಮನ್ನು ಕುರಿತೇ ಹೀಗೆ ಮಾತನಾಡುತ್ತಿದ್ದಾನೆ," ಎಂದು ಅರ್ಥ ಮಾಡಿಕೊಂಡರು. ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ ಜನರು ಯೇಸುವನ್ನು ಪ್ರವಾದಿ ಎಂದು ಸನ್ಮಾನಿಸುತ್ತಿದ್ದರು.

ಮನಸಿಗೊಂದಿಷ್ಟು : ಮನುಷ್ಯರ ಮೇಲೆ ದೇವರ ನಂಬಿಕೆ, ಸಹನೆ ಹಾಗೂ ನಂತರ ಕೋಪವನ್ನು ಇಂದಿನ ಶುಭಸಂದೇಶದಲ್ಲಿ ನಾವು ಕಾಣಬಹುದು. ದೇವರು ನಂಬಿಕೆಯಿಂದ ಈ ಬದುಕೆಂಬ ತೋಟವನ್ನು ಕೊಟ್ಟಿದ್ದಾರೆ. ನಮ್ಮೆಲ್ಲಾ ಪಾಪಗಳ ನಡುವೆಯೂ ಸಹನೆಯಿಂದ ಯೇಸು ಕ್ರಿಸ್ತರನ್ನೇ ನಮಗೆ ನೀಡಿದ್ದರೂ ನಾವು ಅವರ ವಿರುದ್ಧವಾಗಿ ನಡೆಯುತ್ತಿದ್ದೇವೆ. ಇನ್ನು ದಂಡನೆಯೊಂದೇ ಮಾರ್ಗ ಎಂಬ ಸ್ಥಿತಿಗೆ ನಮ್ಮನ್ನು ನಾವೇ ತಂದುಕೊಳ್ಳಬಾರದು. ಅದೇ ದೇವರ ಆಸೆ ಕೂಡ.

ಪ್ರಶ್ನೆ : ನಮ್ಮ ಬದುಕಿನ ಅಡಿಪಾಯ ಯಾವುದು? ದೈವ ನಂಬಿಕೆಯೇ? ಲೌಕಿಕ ಗಳಿಕೆಯೇ?