ಮೊದಲನೇ ವಾಚನ: 1 ಅರಸುಗಳು 3:4-13
ಒಮ್ಮೆ ಅರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ, ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿನ ಪೀಠದ ಮೇಲೆ ಸಹಸ್ರ ಬಲಿಗಳನ್ನು ಸಮರ್ಪಿಸಿದಾಗ, ದೇವರಾದ ಸರ್ವೇಶ್ವರ ಆ ರಾತ್ರಿ ಕನಸಿನಲ್ಲಿ ಅವನಿಗೆ ಕಾಣಿಸಿಕೊಂಡರು; “ನಿನಗೆ ಯಾವ ವರಬೇಕು ಕೇಳಿಕೋ,” ಎಂದು ಹೇಳಿದರು. ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥ ಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣ ಗೊಳಿಸಿದ್ದೀರಿ. ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು. ವ್ಯವಹಾರಜ್ಞಾನ ಇಲ್ಲದವನು; ನಿಮ್ಮ ದಾಸನಾದ ನಾನು ಅಸಂಖ್ಯಾತ ಮಹಾ ಜನಾಂಗವಾದ ನಿಮ್ಮ ಸ್ವಕೀಯ ಪ್ರಜೆಯ ಮಧ್ಯೆ ಇದ್ದೇನೆ. ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು. ಸೊಲೊಮೋನನ ಈ ಬಿನ್ನಹವನ್ನು ಸರ್ವೇಶ್ವರನಾದ ದೇವರು ಮೆಚ್ಚಿದರು. ಅವರು ಆತನಿಗೆ, “ನೀನು ದೀರ್ಘಾಯುಷ್ಯವನ್ನಾಗಲಿ, ಸಿರಿಸಂಪತ್ತನ್ನಾಗಲಿ, ಶತ್ರುವಿನಾಶವನ್ನಾಗಲಿ ಕೇಳಿಕೊಳ್ಳಲಿಲ್ಲ. ನ್ಯಾಯನಿರ್ಣಯಿಸುವುದಕ್ಕೆ ಬೇಕಾದ ವಿವೇಕವನ್ನು ಬೇಡಿಕೊಂಡೆ. ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ. ಇದಲ್ಲದೆ, ನೀನು ಕೇಳದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಸಿರಿಸಂಪತ್ತಿನಲ್ಲಿಯೂ ಘನತೆ ಗೌರವದಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ." ಎಂದರು.
ಕೀರ್ತನೆ: 119:9, 10, 11, 12, 13, 14
ಶ್ಲೋಕ: ನಿನ್ನ ಆಜ್ಞೆಗಳನು ಕಲಿಸು ಎನಗೆ
ಶುಭಸಂದೇಶ: ಮಾರ್ಕ 6:30-34
ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗೂ ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು. ಜನರು ಗುಂಪು ಗುಂಪಾಗಿ ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟ ಮಾಡಲೂ ಬಿಡುವಿರಲಿಲ್ಲ. ಆದುದರಿಂದ ಯೇಸು, “ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನ ಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ,” ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು. ಆದರೆ ಅವರು ಹೋಗುತ್ತಿರುವುದನ್ನು ಕಂಡು ಗುರುತಿಸಿದ ಅನೇಕರು ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ತ್ವರಿತವಾಗಿ ಸಾಗಿ ಅವರಿಗೆ ಮುಂಚಿತವಾಗಿಯೇ ಆ ಸ್ಥಳವನ್ನು ಸೇರಿದರು. ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು, ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.
No comments:
Post a Comment