ಮೊದಲನೇ ವಾಚನ: ಯೆಶಾಯ 58:9-14
ಸರ್ವೇಶ್ವರ ಇಂತೆನ್ನುತ್ತಾರೆ: "ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು. ಸರ್ವೇಶ್ವರಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ. ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ, ಹಳೆಯ ದಾರಿಗಳನ್ನು ಸರಾಗಮಾಡಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.” ಸಬ್ಬತ್ದಿನದ ಸದಾಚರಣೆ “ನೀವು ಸಬ್ಬತ್ದಿನವನ್ನು ತಾತ್ಸಾರ ಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರಸ್ವಾಮಿಯ ಸಬ್ಬತ್ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ ನೀವು ಸರ್ವೇಶ್ವರಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಂತಕವಾಗಿ ಅನುಭವಿಸುವಂತೆ ಮಾಡುವೆನು,” ಇದು ಸರ್ವೇಶ್ವರಸ್ವಾಮಿಯ ನುಡಿ.
ಕೀರ್ತನೆ: 86:1-2, 3-4, 5-6
ಶ್ಲೋಕ: ನಿನ್ನ ಸತ್ಯಪಥದಲಿ ನಾ ನಡೆವಂತೆ, ಬೋಧಿಸೆನಗೆ ಪ್ರಭೂ, ನಿನ್ನ ಮಾರ್ಗವನು.
ಶುಭಸಂದೇಶ: ಲೂಕ 5:27-32
ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿದ್ದಾಗ ಲೇವಿ ಎಂಬ ಸುಂಕದವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಲೇವಿಯು ಎದ್ದು ಎಲ್ಲವನ್ನೂ ಪರಿತ್ಯಜಿಸಿ, ಯೇಸುವನ್ನು ಹಿಂಬಾಲಿಸಿದನು. ತರುವಾಯ ಆ ಲೇವಿ ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಬಹುಜನ ಸುಂಕದವರೂ ಇತರರೂ ಯೇಸುವಿನ ಪಂಕ್ತಿಯಲ್ಲೇ ಊಟಕ್ಕೆ ಕುಳಿತಿದ್ದರು. ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಧರ್ಮಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, “ನೀವು ಸುಂಕದವರ ಮತ್ತು ಪಾಪಿಷ್ಠರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?” ಎಂದು ಪ್ರಶ್ನಿಸಿದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ವೈದ್ಯನ ಅವಶ್ಯಕತೆಯಿರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ; ನಾನು ಬಂದಿರುವುದು ಧರ್ಮಿಷ್ಠರನ್ನು ಕರೆಯುವುದಕ್ಕಲ್ಲ, ‘ಪಶ್ಚತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ, ದೇವರಿಗೆ ಅಭಿಮುಖಿಗಳಾಗಿರಿ’ ಎಂದು ಪಾಪಿಷ್ಠರನ್ನು ಕರೆಯುವುದಕ್ಕೆ,” ಎಂದರು.
ಮನಸ್ಸಿಗೊಂದಿಷ್ಟು : ’ಹಿಂಬಾಲಿಸು’ ಎಂಬ ಒಂದೇ ಮಾತಿಗೆ ಎಲ್ಲವನ್ನೂ ತ್ಯಜಿಸಿ ಹೊರಟ ಮತ್ತಾಯನ ಆ ಕ್ಷಣದ ನಿರ್ಧಾರ ನಮಗೆಷ್ಟು ಕಠಿಣ. ವೈದ್ಯನ ಅವಶ್ಯಕತೆಯಿರುವ ರೋಗಿಗಳಂತ ನಮ್ಮ ಬದುಕಿಗೆ ಯೇಸುವಿನ ಅವಶ್ಯಕತೆ ಇದ್ದರೂ ನಾವು ಯೇಸುವನ್ನು ಬರಮಾಡಿಕೊಳ್ಳುತ್ತಿಲ್ಲ. ಬರಮಾಡಿಕೊಳ್ಳಲು ಬೇಕಾದ ಹೃದಯ ನಮ್ಮದಾಗಲಿ.
ಪ್ರಶ್ನೆ : ಯೇಸು ನನ್ನ ಬಾಳಿಗೆಷ್ಟು ಅವಶ್ಯ?
ಪ್ರಭುವೇ,
ಬಾ ಹಿಂಬಾಲಿಸು ಎಂದು
ಕರೆದರೂ ನೀನು
ತಡೆಯೊಡ್ಡುತ್ತಿದೆ
ನನ್ನೊಳಗಿನ ನಾನು
ಪಾಪ ಸರಿಸಿ ಏರ್ಪಡಿಸುವೆ
ಮನದಲೊಂದೌತಣ
ಮುಂದಿನದೆಲ್ಲಾ ಸಂಭ್ರಮಕ್ಕೆ
ನೀನೊಬ್ಬನೇ ಆಗು ಕಾರಣ
-ಚಿತ್ತ
No comments:
Post a Comment