ಮೊದಲನೇ ವಾಚನ: 1 ಅರಸುಗಳು 8:1-7, 9-13
ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ದಾವೀದನಗರವಾದ ಸಿಯೋನಿನಿಂದ ದೇವಾಲಯಕ್ಕೆ ತರುವುದಕ್ಕಾಗಿ, ಇಸ್ರಯೇಲರ ಹಿರಿಯರು, ಕುಲಗಳ ನಾಯಕರು, ಇವರೇ ಮೊದಲಾದ ಎಲ್ಲ ಇಸ್ರಯೇಲ್ ಪ್ರಮುಖ ವ್ಯಕ್ತಿಗಳು ಜೆರುಸಲೇಮಿಗೆ, ತನ್ನ ಆಸ್ಥಾನಕ್ಕೆ, ಬರಬೇಕೆಂದು ಅರಸ ಸೊಲೊಮೋನನು ಆಜ್ಞಾಪಿಸಿದನು. ಅಂತೆಯೇ ಆ ಇಸ್ರಯೇಲರೆಲ್ಲರು ಏಳನೆಯ ತಿಂಗಳಾದ ಆಶ್ವಯುಜ ಮಾಸದಲ್ಲಿ ಜಾತ್ರೆಯಾಗಿ ಅರಸ ಸೊಲೊಮೋನನ ಬಳಿಗೆ ಕೂಡಿಬಂದರು. ಇಸ್ರಯೇಲರ ಹಿರಿಯರೆಲ್ಲರು ಹೀಗೆ ಕೂಡಿ ಬಂದಿರಲು ಯಾಜಕರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು. ಉಳಿದ ಯಾಜಕರೂ ಲೇವಿಯರೂ ದೇವದರ್ಶನದ ಗುಡಾರ ಹಾಗು ಅದರಲ್ಲಿದ್ದ ಪವಿತ್ರ ವಸ್ತುಗಳನ್ನು ಹೊತ್ತರು. ಅರಸ ಸೊಲೊಮೋನನು ಹಾಗು ಅಲ್ಲಿ ಕೂಡಿ ಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಬಲಿದಾನ ಮಾಡಿದರು. ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸುವ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆ ನೇಮಕವಾದ ಸ್ಥಳದಲ್ಲಿಟ್ಟರು. ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವು ಹಾಗು ಅದರ ಕೋಲುಗಳು ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು. ಮಂಜೂಷದಲ್ಲಿ ಎರಡು ಶಿಲಾಶಾಸನಗಳನ್ನು ಬಿಟ್ಟರೆ, ಬೇರೇನೂ ಇರಲಿಲ್ಲ. ಸರ್ವೇಶ್ವರ ಈಜಿಪ್ಟಿನಿಂದ ಬಂದ ಇಸ್ರಯೇಲರೊಡನೆ ಹೋರೇಬ್ ಬೆಟ್ಟದ ಬಳಿ ಒಡಂಬಡಿಕೆ ಮಾಡಿಕೊಂಡಮೇಲೆ, ಮೋಶೆ ಆ ಶಾಸನಗಳನ್ನು ಅದರಲ್ಲಿ ಇಟ್ಟಿದ್ದನು. ಯಾಜಕರು ಆ ಪರಿಶುದ್ಧ ಸ್ಥಳದಿಂದ ಹೊರಗೆ ಬಂದಕೂಡಲೆ ಮೇಘವು ಸರ್ವೇಶ್ವರನ ಆಲಯವನ್ನು ತುಂಬಿಕೊಂಡಿತು. ಸರ್ವೇಶ್ವರನ ತೇಜಸ್ವಿನಿಂದ ವ್ಯಾಪ್ತವಾಗಿದ್ದ ಆ ಮೇಘವು ಆಲಯವನ್ನು ಆವರಿಸಿಕೊಂಡಿದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾಗಲಿಲ್ಲ. ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು: “ಹೇ ಸರ್ವೇಶ್ವರ, ರವಿಯನು ಆಗಸದಲ್ಲಿ ಸ್ಥಿರವಿರಿಸಿದ ನೀವು ಆರಿಸಿಕೊಂಡಿರಿ, ಕರಿಮೋಡದಲಿ ವಾಸಿಸಲು ನಾ ನಿರ್ಮಿಸಿರುವ ಈ ಭವ್ಯ ಮಂದಿರ ನಿಮಗಾಗಲಿ ಶಾಶ್ವತವಾದ ನಿವಾಸ.”
ಕೀರ್ತನೆ: 132:6-7, 8-10
ಶ್ಲೋಕ: ಪ್ರಭೂ, ನಿನ್ನ ವಾಸಸ್ಥಾನವನು ಬಂದು ಸೇರು ಬೇಗನೆ.
ಶುಭಸಂದೇಶ: ಮಾರ್ಕ 6:53-56
ಅವರೆಲ್ಲರು ಸರೋವರವನ್ನು ದಾಟಿ ಗೆನಸರೇತ್ ಊರಿನ ದಡ ಸೇರಿದರು. ಅವರು ದೋಣಿಯನ್ನು ಕಟ್ಟಿ, ಅದರಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುಸ್ವಾಮಿಯ ಗುರುತು ಹಚ್ಚಿದರು. ಒಡನೆ ಸುತ್ತಮುತ್ತಲೆಲ್ಲಾ ಓಡಾಡಿ, ರೋಗಿಗಳನ್ನು ಹಾಸಿಗೆಗಳ ಸಹಿತ ಹೊತ್ತುಕೊಂಡು, ಯೇಸು ಎಲ್ಲೆಲ್ಲಿ ಇದ್ದಾರೆಂದು ಕೇಳಿದರೋ ಅಲ್ಲೆಲ್ಲಾ ಹೋಗತೊಡಗಿದರು. ಯೇಸು ಹಳ್ಳಿಗಳಿಗಾಗಲಿ ಪಟ್ಟಣಪಾಳೆಯಗಳಿಗಾಗಲಿ ಹೋದಾಗಲೆಲ್ಲಾ ಜನರು ರೋಗಿಗಳನ್ನು ಅಲ್ಲಿಯ ಸಂತೆಬೀದಿ ಚೌಕಗಳಿಗೆ ಕರೆ ತರುತ್ತಿದ್ದರು. ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು.
No comments:
Post a Comment