ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

07.03.22 - "ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ"

ಮೊದಲನೇ ವಾಚನ: ಯಾಜಕಕಾಂಡ 19:1-2, 11-18

ಸ್ರಯೇಲ್ ಸಮಾಜದವರಿಗೆ ಹೀಗೆ ಆಜ್ಞಾಪಿಸುವಂತೆ ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದರು: "ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವಂತೆ ನೀವು ಕೂಡ ಪರಿಶುದ್ಧರಾಗಿರಬೇಕು. "ಕಳಬೇಡ; ಹುಸಿಯ ನುಡಿಯಲು ಬೇಡ ಒಬ್ಬರನ್ನೊಬ್ಬರು ಮೋಸಗೊಳಿಸುವುದು ಬೇಡ. ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿನ್ನ ದೇವರ ನಾಮಕ್ಕೆ ಅಪಕೀರ್ತಿ ತರಬೇಡ, ನಾನೇ ಸರ್ವೇಶ್ವರ. ಮತ್ತೊಬ್ಬನನ್ನು ಬಲತ್ಕರಿಸಬೇಡ; ಅವನ ಸೊತ್ತನ್ನು ಅಪಹರಿಸಬೇಡ. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಡ. ಕಿವುಡರನ್ನು ದೂಷಿಸಬೇಡ; ಕುರುಡರು ನಡೆಯುವ ದಾರಿಯಲ್ಲಿ ಎದುರು ಕಲ್ಲನ್ನು ಇಡಬೇಡ. ನಿನ್ನ ದೇವರಲ್ಲೀ ಭಯ ಭಕ್ತಿಯಿರಲಿ, ನಾನೇ ಸರ್ವೇಶ್ವರ ವ್ಯಾಜ್ಯ ತೀರಿಸುವಾಗ ಅನ್ಯಾವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ ಮಾಡದೆ ಪಕ್ಷಪಾತವಿಲ್ಲದ ತೀರ್ಪುನ್ನು ಕೊಡು. ನಿನ್ನ ಜನರ ನಡುವೆ ಚಾಡಿಕೋರನ್ನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣ ಶಿಕ್ಷೇ ಆಗಲೇಬೇಕಂದು ಛಲ ಹಿಡಿಯಬೇಡ. ನಾನೇ ಸರ್ವೇಶ್ವರ. ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು. ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.

ಕೀರ್ತನೆ: 19:8, 9, 10, 15

ಶ್ಲೋಕ: ಸ್ವಾಮಿ ಸರ್ವೇಶ್ವರಾ, ನಿಮ್ಮ ಮಾತುಗಳೇ ಅತ್ಮ ಮತ್ತು ಜೀವವಾಗಿವೆ

ಶುಭಸಂದೇಶ: ಮತ್ತಾಯ 25:31-46

"ರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು. ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲೂ ಆಡುಗಳನ್ನು ತನ್ನ ಎಡಗಡೆಯಲ್ಲೂ ಇರಿಸುವನು. ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, 'ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ಥ್ಯವಾಗಿ ಪಡೆಯಿರಿ. ಏಕೆಂದರೆ, ನಾನು ಹಸಿದಿದ್ದೆ ನನಗೆ ಅಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ. ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಟ್ಟಿರಿ ಬಟ್ಟೆಬರೆಯಿಲ್ಲದೆ ಇದ್ದೆ ನನಗೆ ಉಡಲು ಕೊಟ್ಟಿರಿ ರೋಗದಿಂದಿದ್ದೆ, ನನ್ನನ್ನು ಆರೈಕೆ ಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ," ಎಂದು ಹೇಳುವೆನು. ಅದಕ್ಕೆ ಆ ಸಜ್ಜನರು, 'ಸ್ವಾಮೀ, ತಾವು ಯಾವಾಗ ಹಸಿದುದ್ದನ್ನು ಕಂಡು ನಾವು ಅಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವು ಯಾವಾಗ ತಾವು ಅಪರಿಚಿತರಾಗಿದ್ದನ್ನು ಕಂಡು ನಾವು ಆಶ್ರಯ ಕೊಟ್ಟೆವು? ಬಟ್ಟೆಬರೆ ಇಲ್ಲದ್ದನ್ನು ಕಂಡು ಉಡಲು ಕೊಟ್ಟೆವು? ತಾವು ರೋಗಿಯಾಗಿರುವುದನ್ನು ಅಥವಾ ಬಂಧಿಯಾಗಿರುವುದನ್ನು ಕಂಡು ನಾವು ಸಂಧಿಸಲು ಬಂದೆವು?' ಎಂದು ಕೇಳುವರು. ಆಗ ಅರಸನು ಪ್ರತ್ಯುತ್ತರವಾಗಿ 'ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ  ಅದನ್ನು ನನಗೆ ಮಾಡಿದಿರಿ. ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ," ಎನ್ನುವನು. "ಆನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, 'ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ದಮಾಡಿರುವ ಆರದ ಬೆಂಕಿಗೆ ಬೀಳಿರಿ ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಅಹಾರ ಕೊಡಲಿಲ್ಲ; ಬಾಯಾರಿದ್ದೆ,  ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯಕೊಡಲಿಲ್ಲ. ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ," ಎಂದು ಹೇಳುವನು. ಅದಕ್ಕೆ ಅವರು ಕೂಡ, ಸ್ವಾಮೀ ತಾವು ಯಾವಾಗ ಹಸಿದಿದ್ದೀರಿ, ಬಾಯಾರಿದ್ದೀರಿ, ಅಪರಿಚಿತರಾಗಿದ್ದೀರಿ ಮತ್ತು ಬಂಧಿಯಾಗಿದ್ದೀರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರ ಮಾಡದೆ ಹೋದೆವು? ಎಂದು ಪ್ರಶ್ನಿಸುವರು. ಅದಕ್ಕೆ ಪ್ರತ್ಯುತ್ತರವಾಗಿ ಅರಸನು, 'ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆ ಹೋದಾಗ ಅದನ್ನು ನನಗೇ ಮಾಡಲಿಲ್ಲ,' ಎನ್ನುವನು. "ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು," ಎಂದು ಹೇಳಿದರು ಸ್ವಾಮಿ.

ಮನಸಿಗೊಂದಿಷ್ಟು : ಹಸಿದವರಿಗೆ ಆಹಾರ, ಬಾಯಾರಿದವರಿಗೆ ನೀರು, ಬತ್ತಲೆಯಾದವರಿಗೆ ಬಟ್ಟೆ, ಬಂಧಿತರಿಗೆ ಸಾಂತ್ವನ ನೀಡದೆ ಇರುವುದೂ ಒಂದು ರೀತಿಯ ತಟಸ್ಥ ನಿಲುವು. ತಟಸ್ಥರಾಗಿವುದೂ ದೇವರ ಲೆಕ್ಕದಲ್ಲಿ ದಂಡನಾರ್ಹ ಅಪರಾಧ ಎನ್ನುತ್ತದೆ ಇಂದಿನ ಶುಭ ಸಂದೇಶ. ನಮ್ಮ ನಡುವಿನ ಎಷ್ಟೋ ಜನರ ನೋವು ಕೊರತೆಗಳು ನಮಗೆ ತಟ್ಟುವುದೇ ಇಲ್ಲ. ಇದು ದೇವರ ಕಣ್ಣಿನಲ್ಲಿ ಪಾಪವೇ?

ಪ್ರಶ್ನೆ: ನಮ್ಮ ಜೀವನದಲ್ಲಿ ಹಸಿದವರಿಗೆ ನಾವಾಗೇ ಹೋಗಿ ಊಟವಿತ್ತ ಉದಾಹರಣೆಗಳೆಷ್ಟು? 

ಬುದ್ಧಿಗೊಂದಿಷ್ಟು
ಇಂದಿಗೂ ಇಡೀ ವಿಶ್ವವನ್ನು ಕಾಡುತ್ತಿರುವ ಅತಿ ದೊಡ್ಡ ರೋಗ - ಹಸಿವು   
ಇಂದಿಗೂ ಪ್ರತಿ ದಿನ ವಿಶ್ವದಲ್ಲಿ ಹಸಿವಿನಿಂದ ಸಾಯುತ್ತಿರುವವವರ ಸಂಖ್ಯೆ - 20,000 ಆಸುಪಾಸು
ಇಂದಿಗೂ ಪ್ರತಿ ದಿನ ವಿಶ್ವದಲ್ಲಿ 10ರಲ್ಲಿ ಒಬ್ಬ ಆಹಾರವಿಲ್ಲದೆ  ಹಸಿವಿಯಿಂದಲೇ ಮಲಗುತ್ತಾನೆ 

No comments:

Post a Comment