ಮೊದಲನೇ ವಾಚನ: 1 ಅರಸುಗಳು 10:1-10
ಸರ್ವೇಶ್ವರನ ನಾಮ ಮಹತ್ತಿನಿಂದ ಸೊಲೊಮೋನನ ಕೀರ್ತಿ ಹರಡಿತು. ಇದನ್ನು ಕೇಳಿದ ಶೆಬದ ರಾಣಿ ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಬಂದಳು. ಆಕೆ ಸುಗಂಧ ದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು. ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು; ಅರಸನಿಗೆ ಬಿಡಿಸಲು ಕ್ಷಿಷ್ಟವಾದ ಒಗಟು ಒಂದೂ ಇರಲಿಲ್ಲ. ಶೆಬದ ರಾಣಿ ಸೊಲೊಮೋನನ ಹಲವಿಧವಾದ ಜ್ಞಾನೋಕ್ತಿಗಳನ್ನು ಕೇಳಿದಳು; ಅವನು ಕಟ್ಟಿಸಿದ ಅರಮನೆ, ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನು ಮತ್ತು ಸರ್ವೇಶ್ವರನ ಆಲಯದಲ್ಲಿ ಅವನು ಸಮರ್ಪಿಸುತ್ತಿದ್ದ ದಹನಬಲಿಗಳನ್ನು ನೋಡಿದಳು. ಇವುಗಳಿಂದ ಆಶ್ಚರ್ಯಚಕಿತಳಾಗಿ, “ನಾನು ನನ್ನ ದೇಶದಲ್ಲಿ ನಿಮ್ಮ ಜ್ಞಾನವನ್ನೂ ಸಾಧನೆಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ. ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕೆ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿಮ್ಮ ಜ್ಞಾನ ವೈಭವಗಳು, ನಾನು ಕೇಳಿದ್ದಕ್ಕಿಂತ ಮಿಗಿಲಾಗಿವೆ. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ವರದಿ ಮಾಡಿರಲಿಲ್ಲ. ನಿಮ್ಮ ಪ್ರಜೆಗಳು ಭಾಗ್ಯವಂತರು! ಸದಾ ನಿಮ್ಮ ಸನ್ನಿಧಿಯಲ್ಲಿದ್ದು ನಿಮ್ಮ ಜ್ಞಾನ ವಾಕ್ಯಗಳನ್ನು ಕೇಳುವ ನಿಮ್ಮ ಸೇವಕರು ಧನ್ಯರು! ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು. ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.
ಕೀರ್ತನೆ: 37:5-6, 30-31, 39-40
ಶ್ಲೋಕ: ಸಜ್ಜನರ ಬಾಯಿ ಆಡುವುದು ಸುಜ್ಞಾನವನು
ಶುಭಸಂದೇಶ: ಮಾರ್ಕ 7:14-23
ಅನಂತರ ಯೇಸುಸ್ವಾಮಿ ಜನರ ಗುಂಪನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿಗೊಳಿಸುವುದಿಲ್ಲ. ಮನುಷ್ಯನ ಅಂತರಂಗದಿಂದ ಹೊರಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ)” ಎಂದರು. ಯೇಸು ಜನರ ಗುಂಪನ್ನು ಬಿಟ್ಟು ಮನೆ ಸೇರಿದ ಬಳಿಕ ಶಿಷ್ಯರು, ಅವರ ಬಳಿಗೆ ಬಂದು ಆ ಸಾಮತಿಯ ಅರ್ಥವೇನೆಂದು ಕೇಳಿದರು. ಅದಕ್ಕೆ ಅವರು, “ನೀವು ಕೂಡ ಮಂದಮತಿಗಳೋ? ನಿಮಗೂ ಇದು ಅರ್ಥವಾಗದೋ? ಹೊರಗಿನಿಂದ ಮನುಷ್ಯನ ಒಳಕ್ಕೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಅವನು ತಿಂದದ್ದು ಅವನ ಹೃದಯವನ್ನು ಹೊಕ್ಕದೆ, ಹೊಟ್ಟೆಯನ್ನು ಮಾತ್ರ ಸೇರಿ, ಬಳಿಕ ದೇಹದಿಂದ ವಿಸರ್ಜಿತವಾಗುತ್ತದೆ. (ಹೀಗೆ ಆಹಾರ ಪದಾರ್ಥಗಳು ಯಾವುವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದರು.) ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವ ಯೋಚನೆಗಳು ಅವನನ್ನು ಕಲುಷಿತಗೊಳಿಸುತ್ತವೆ. ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ, ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ. ಈ ಎಲ್ಲಾ ಕೇಡುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ, ಅವನನ್ನು ಅಶುದ್ಧ ಮಾಡುತ್ತವೆ,” ಎಂದರು.
No comments:
Post a Comment