ಮೊದಲನೇ ವಾಚನ: ಯೆರೆಮೀಯ 17:5-8
ಇವು ಸರ್ವೇಶ್ವರನ ಮಾತುಗಳು: "ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರ ಜನ್ಮದವರನ್ನೇ ತನ್ನ ಭುಜ ಬಲವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು! ಇಂಥವನು ಅಡವಿಯಲ್ಲಿನ ಜಾಲಿ ಗಿಡಕ್ಕೆ ಸಮಾನನು. ಶುಭ ಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥತಿ ಅವನದು. ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ! ಅಂಥವನಿಗೆ ಸರ್ವೇಶ್ವರನಲ್ಲೇ ವಿಶ್ವಾಸ. ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ ಫಲ ನೀಡುವ ಮರಕ್ಕೆ ಸಮಾನನು ಆತ.
ಕೀರ್ತನೆ: 1:1-2, 3, 4, 6
ಶ್ಲೋಕ: ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳವವನಾರೋ - ಅವನೇ ಧನ್ಯನು
ಎರಡನೇ ವಾಚನ: 1 ಕೊರಿಂಥಿಯರಿಗೆ 15:12, 16-20
ಕ್ರಿಸ್ತಯೇಸು ಮರಣದಿಂದ ಪುನರುತ್ದಾನ ಹೊಂದಿದರು ಎಂದು ನಾವು ಸಾರುತ್ತಿರುವಲ್ಲಿ, ಸತ್ತವರು ಪುನರುತ್ದಾನರಾಗುವುದಿಲ್ಲ ಎಂದು ನಿಮ್ಮಲ್ಲಿ ಕೆಲವರು ವಾದಿಸುವುದು ಹೇಗೆ? ಸತ್ತವರು ಪುನರುತ್ದಾನ ಹೊಂದುವುದಿಲ್ಲ ಎಂದರೆ ಕ್ರಿಸ್ತಯೇಸುವು ಪುನರುತ್ದಾನ ಹೊಂದಲಿಲ್ಲ ಎಂದಂತಾಯಿತು. ಕ್ರಿಸ್ತಯೇಸುವೇ ಪುನರುತ್ದಾನ ಹೊಂದಿಲ್ಲ ಎಂದಮೇಲೆ ನಿಮ್ಮ ವಿಶ್ವಾಸವೇ ನಿರರ್ಥಕ; ಮತ್ತು ನೀವಿನ್ನೂ ನಿಮ್ಮ ಪಾಪಗಳಲ್ಲಿಯೇ ಮುಳುಗಿದ್ದೀರಿ; ಅಷ್ಟೇ ಅಲ್ಲದೆ, ಕ್ರಿಸ್ತಯೇಸುವಿನಲ್ಲಿ ಮೃತರಾದವರೆಲ್ಲರೂ ವಿನಾಶವಾದರು. ಕ್ರಿಸ್ತಯೇಸುವಿನಲ್ಲಿ ನಮಗಿರುವ ನಂಬಿಕೆ ಕೇವಲ ಬದುಕಿಗೆ ಸೀಮಿತವಾಗಿದ್ದರೆ ಜಗತ್ತಿನಲ್ಲಿ ನಮಗಿಂತ ನಿರ್ಭಾಗ್ಯರು ಬೇರೆ ಯಾರೂ ಇಲ್ಲ. ಕ್ರಿಸ್ತಯೇಸು ಪುನರುತ್ದಾನಹೊಂದಿದ್ದೇನೋ ಸತ್ಯಸ್ಯ ಸತ್ಯ ಅವರ ಪುನರುತ್ದಾನವು , ಸತ್ತವರು ಪುನರುತ್ದಾನ ಹೊಂದುತ್ತಾರೆ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.
ಶುಭಸಂದೇಶ: ಲೂಕ 6:17, 10-16
ಅನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮೂದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು. ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: "ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು. ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕು ನಲಿದಾಡುವಿರಿ! ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡುವಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು, "ಆದರೆ ಧನಿಕರೇ, ನಿಮಗೆ ಧಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿ ಆಗಿದೆ. ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕು ನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ. ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು.
No comments:
Post a Comment