ಮೊದಲನೇ ವಾಚನ: ಅಜರ್ಯ 1:2, 11-20
ಅಜರ್ಯನು ಬೆಂಕಿಯ ನಡುವೆ ನಿಂತುಕೊಂಡು ಗಟ್ಟಿಯಾಗಿ ಕೂಗಿ ಹೀಗೆಂದು ಪ್ರಾರ್ಥನೆ ಮಾಡಿದ: ಪ್ರಭುದೇವಾ, ನಿಮ್ಮ ನಾಮದ ಪ್ರಯುಕ್ತ ನಮ್ಮನ್ನು ಎಂದೆಂದಿಗೂ ತ್ಯಜಿಸಬೇಡಿ, ನಿಮ್ಮ ಒಡಂಬಡಿಕೆಯನ್ನು ರದ್ದುಗೊಳಿಸಬೇಡಿ. ನಿಮ್ಮ ಮಿತ್ರ ಅಬ್ರಹಾಮನ ನಿಮಿತ್ತ ನಿಮ್ಮ ದಾಸ ಇಸಾಕನ, ನಿಮ್ಮ ಭಕ್ತ ಯಕೋಬನ ಪ್ರಯುಕ್ತ ನಿಮ್ಮ ಕೃಪೆ ನಮ್ಮನ್ನು ಬಿಟ್ಟಗಲದಿರಲಿ. ಇವರಿಗೆ, "ನಿಮ್ಮ ಸಂತಾನವನ್ನು ಆಕಾಶದ ನಕ್ಷತ್ರಗಳಂತೆ ಸಮುದ್ರ ತೀರದ ಮರಳಿನಂತೆ ಸಂಖ್ಯಾವಾಗಿಸುವೆ" ಎಂದು ನೀವು ವಾಗ್ದಾನ ಮಾಡಿದಿರಲ್ಲವೆ? ಒಡೆಯಾ, ಉಳಿದ ರಾಷ್ಟ್ರಗಳಿಗಿಂತ ನಾವು ಕನಿಷ್ಟರಾಗಿಬಿಟ್ಟೆವು, ನಮ್ಮ ಪಾಪಗಳ ಕಾರಣ ಜಗದಲ್ಲಿನ ಹೀನಸ್ಥಿತಿಗೆ ಇಳಿದುಬಿಟ್ಟೆವು. ನಮಗೀಗ ರಾಜರಿಲ್ಲ, ಪ್ರವಾದಿಗಳಿಲ್ಲ, ನಾಯಕರಿಲ್ಲ; ಹೋಮವಿಲ್ಲ, ಬಲಿದಾನವಿಲ್ಲ, ನೈವೇದ್ಯವಿಲ್ಲ, ಧೂಪವಿಲ್ಲ. ಕಾಣಿಯನ್ನರ್ಪಿಸಿ ನಿಮ್ಮ ಕೃಪೆ ಪಡೆಯಲು ಸ್ಥಳವೂ ಇಲ್ಲ; ಆದರೂ ಪಶ್ಚಾತ್ತಾಪದ ಹೃದಯ, ದೀನ ಮನ ನಿಮಗೆ ಅಂಗೀಕೃತವಾಗಲಿ. ಹೋತಹೋರಿಗಳ, ಸಾವಿರಾರು ಕೊಬ್ಬಿದ ಕುರಿಮರಿಗಳ ದಹನಬಲಿದಾನದಂತೆ ನಮ್ಮ ಅಂತರಂಗದ ಬಲಿ ನಿಮಗಿಂದು ಅಂಗೀಕೃತವಾಗಲಿ. ಪೂರ್ಣ ಹೃದಯದಿಂದ ನಾವು ನಿಮ್ಮನ್ನು ಹಿಂಬಾಲಿಸುವಂತೆ ಅನುಗ್ರಹಿಸಿರಿ. ಏಕೆಂದರೆ ನಿಮ್ಮಲ್ಲಿ ನಂಬಿಕೆಯಿಡುವವರಿಗೆ ಆಶಾಭಂಗವಾಗುವುದಿಲ್ಲ. ಪೂರ್ಣ ಹೃದಯದಿಂದ ನಿಮ್ಮನ್ನೀಗ ಹಿಂಬಾಲಿಸುತ್ತೇವೆ ನಿಮ್ಮಲ್ಲಿ ಭಯಭಕ್ತಿಯಯಿಡುತ್ತೇವೆ, ನಿಮ್ಮ ಸನ್ನಿಧಿಯನ್ನು ಮತ್ತೆ ಅರಸುತ್ತೇವೆ. ನಮ್ಮನ್ನು ನಿರಾಶೆಗೊಳಿಸಬೇಡಿ ನಿಮ್ಮ ಸೈರಣೆಗೆ ತಕ್ಕಂತೆ, ನಿಮ್ಮ ಕೃಪಾತಿಶಯದ ಪ್ರಕಾರ ನಮ್ಮ ಸಂಗಡ ವರ್ತಿಸಿ. ಸರ್ವೇಶ್ವರ, ನಿಮ್ಮ ಮಹತ್ಕಾರ್ಯಗಳ ಮೂಲಕ ನಮ್ಮನ್ನು ಬಿಡುಗಡೆಮಾಡಿ ನಿಮ್ಮ ಹೆಸರಿಗೆ ಹೊಸ ಕೀರ್ತಿ ಬರುವಂತೆ ಮಾಡಿ.
ಕೀರ್ತನೆ: 25:4-5, 6-7, 8-9
ಶ್ಲೋಕ: ನೆನಸಿಕೋ ಪ್ರಭೂ, ನಿನ್ನ ನಿರಂತರ ಕರುಣೆಯನು.
ಶುಭಸಂದೇಶ: ಮತ್ತಾಯ 18:21-35
ಪೇತ್ರನು ಯೇಸುವಿನ ಬಳಿಗೆ ಬಂದು, "ಸ್ವಾಮೀ, ನನಗೆ ವಿರುದ್ದ ದ್ರೋಹಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ? ಎಂದು ಕೇಳಿದನು. "ಏಳುಸಲವಲ್ಲ, ಏಳೆಪ್ಪತ್ತುಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ ಹೇಳುತ್ತೇನೆ" ಎಂದು ಯೇಸು ಉತ್ತರವಿತ್ತರು. ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, "ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ. ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ಚಿನ್ನದ ನಾಣ್ಯಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು. ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ. ಆಗ ಆ ಸೇವಕನು ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: 'ಸ್ವಲ್ಪ ಸೈರಿಸಿಕೊಳ್ಳಿ ಸ್ವಾಮೀ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,' ಎಂದು ಅಂಗಲಾಚಿದ. ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿಬಿಟ್ಟ. ಆದರೆ ಅದೇ ಸೇವಕ ಹೊರಗೆ ಬಂದದ್ದೇ ತನಗ ಕೇವಲ ನೂರು ಬೆಳ್ಳಿಕಾಸು ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ. ಅವನನ್ನು ಹಿಡಿದು, "ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು," ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, 'ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ," ಎಂದು ಕಾಲಿಗೆ ಬಿದ್ದು ಕೇಳಿಕೊಂಡ. ಆದರೂ ಅವನು ಒಪ್ಪಲಿಲ್ಲ. ಅಷ್ಟು ಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ. ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು. ರಾಜನು ಅವನನ್ನು ಕರೆಹಿಸಿ, 'ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಮಾಡಿದೆ. ನಾನು ನಿನಗೆ ದಯೆ ತೋರಿಸಿದಂತೆ ನೀನೂ ನಿನ್ನ ಜೊತೆಗಾರನಿಗೆ ದಯೆ ತೋರಿಸಬೇಕಿತ್ತು ಅಲ್ಲವೇ?' ಎಂದು ಸಿಟ್ಟುಗೊಂಡ. ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು, ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು," ಎಂದರು.
ಮನಸಿಗೊಂದಿಷ್ಟು : ಕ್ಷಮೆ ನೀಡಲು ಕಾರಣವೇ ಇಲ್ಲದಿದ್ದಾಗಲೇ ಕ್ಷಮೆಯ ಮಹತ್ವ ಹೆಚ್ಚು ಎನ್ನಲಾಗುತ್ತದೆ. ಯೇಸು ಶಿಲುಬೆ ಮೇಲೆ ಮಾಡಿದ್ದು ಅದನ್ನೇ. ಹುಲು ಮಾನವರಾದ ನಮಗೇ ಕ್ಷಮೆ ಎಂಬುದು ಸಹಜವಾಗಿ ಬರದೇ ಹೋಗಬಹುದು. ಕ್ಷಮೆ ಎನ್ನುವುದು ಮೊದಲು ಒಂದು ನಿರ್ಧಾರ ಹಾಗೂ ನಂತರ ಅದೊಂದು ಸತತ ಅಭ್ಯಾಸ
ಪ್ರಶ್ನೆ : ಕ್ಷಮಿಸದೆ ನಮ್ಮಲ್ಲೇ ಉಳಿದಿರುವ ಉದಾಹರಣೆಗಳೆಷ್ಟು?
ಮನಸಿಗೊಂದಿಷ್ಟು : ಕ್ಷಮೆ ನೀಡಲು ಕಾರಣವೇ ಇಲ್ಲದಿದ್ದಾಗಲೇ ಕ್ಷಮೆಯ ಮಹತ್ವ ಹೆಚ್ಚು ಎನ್ನಲಾಗುತ್ತದೆ. ಯೇಸು ಶಿಲುಬೆ ಮೇಲೆ ಮಾಡಿದ್ದು ಅದನ್ನೇ. ಹುಲು ಮಾನವರಾದ ನಮಗೇ ಕ್ಷಮೆ ಎಂಬುದು ಸಹಜವಾಗಿ ಬರದೇ ಹೋಗಬಹುದು. ಕ್ಷಮೆ ಎನ್ನುವುದು ಮೊದಲು ಒಂದು ನಿರ್ಧಾರ ಹಾಗೂ ನಂತರ ಅದೊಂದು ಸತತ ಅಭ್ಯಾಸ
ಪ್ರಶ್ನೆ : ಕ್ಷಮಿಸದೆ ನಮ್ಮಲ್ಲೇ ಉಳಿದಿರುವ ಉದಾಹರಣೆಗಳೆಷ್ಟು?
No comments:
Post a Comment