ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

24.03.22 - “ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದುರಿಸುತ್ತಾನೆ,”

ಮೊದಲನೇ ವಾಚನ: ಯೆರೆಮೀಯ: 7: 23-28


ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ. ಆದರೆ ಅವರು ಕೇಳಲಿಲ್ಲ. ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು. ನಿಮ್ಮ ಪೂರ್ವಜರು ಈಜಿಪ್ಟ್ ದೇಶದಿಂದ ಹೊರಟದಿನ ಮೊದಲುಗೊಂಡು ಈ ದಿನದವರೆಗೂ ನನ್ನ ದಾಸರಾದ ಎಲ್ಲ ಪ್ರವಾದಿಗಳನ್ನು ನಿಮ್ಮವರ ಬಳಿಗೆ ಕಳಿಸುತ್ತಾ ಬಂದು ಇದ್ದೇನೆ. ದಿನದಿನವೂ ತಡಮಾಡದೆ ಕಳಿಸಿದ್ದೇನೆ. ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.” “ಯೆರೆವಿೂಯನೇ, ನೀನು ಈ ಮಾತುಗಳನ್ನು ಅವರಿಗೆ ಹೇಳಿದರೂ ಅವರು ಕಿವಿಗೊಡುವುದಿಲ್ಲ, ಕರೆದರೂ ಅವರು ಓಗೊಡುವುದಿಲ್ಲ. ಆದಕರಣ ನೀನು ಅವರಿಗೆ – ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದು ಹೋಗಿದೆ’ ಎಂದು ಹೇಳು.”

ಕೀರ್ತನೆ: 95:1-2, 6-7, 8-9

ಶ್ಲೋಕ: ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ, ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ.

ಬನ್ನಿ, ಸ್ತುತಿಗೀತೆ ಹಾಡೋಣ ಬನ್ನಿ, ಪ್ರಭುವಿಗೆ I
ಜಯಘೋಷ ಮಾಡೋಣ ನಮ್ಮ ರಕ್ಷಕ ದೇವನಿಗೆ II

ಆತನ ಸನ್ನಿಧಿ ಸೇರೋಣ ಕೃತಜ್ಞತಾಸ್ತುತಿಯೊಂದಿಗೆ I
ಜಯಜಯಕಾರ ಮಾಡೋಣ ಕೀರ್ತನೆಗಳಿಂದಾತನಿಗೆ II

ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I
ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II

ಆತನೆಮ್ಮ ದೇವರು, ನಾವು ಆತನ ಕೈಮಂದೆ I
ಆತನಿಂದಲೇ ಪಾಲನೆಪೋಷಣೆ ಪಡೆದ ಜನತೆ II

ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ I
ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ I

ಮೆರಿಬಾದಲಿ, ಮಸ್ಸಾ ಮರುಭೂಮಿಯಲಿ ಅವರು ಮಾಡಿದಂತೆ II
ನೋಡಿದರಾದರೂ ನನ್ನ ಮಹತ್ಕಾರ್ಯಗಳನು I
ಅಲ್ಲವರು ಕೆಣಕಿದರು, ಪರಿಶೋಧಿಸಿದರು ನನ್ನನು II

ಶುಭಸ೦ದೇಶ: ಲೂಕ 11:14-23

ಒಮ್ಮೆ ಯೇಸುಸ್ವಾಮಿ ಒಂದು ಮೂಕ ದೆವ್ವವನ್ನು ಬಿಡಿಸುತ್ತಿದ್ದರು. ಆ ದೆವ್ವ ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು. ಜನರು ಆಶ್ಚರ್ಯಚಕಿತರಾದರು. ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು. ಬೇರೆ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಸ್ವರ್ಗದಿಂದ ಒಂದು ಅದ್ಭುತ ಕಾರ್ಯವನ್ನು ಮಾಡಿ ತೋರಿಸುವಂತೆ ಕೇಳಿದರು. ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು, “ಅಂತಃಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯ ನಾಶವಾಗುವುದು; ಕುಟುಂಬ ಕುಟುಂಬಗಳು ಕಚ್ಚಾಡಿ ಹಾಳಾಗುವುವು. ಅಂತೆಯೇ ಸೈತಾನನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯ ಹೇಗೆ ತಾನೆ ಉಳಿದೀತು? ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. ನಾನು ದೇವರ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ, ಎಂಬುದು ಸ್ಪಷ್ಟ. “ಬಲಿಷ್ಠನೊಬ್ಬನು ಸರ್ವಾಯುಧಗಳಿಂದ ಸಜ್ಜಿತನಾಗಿ ತನ್ನ ಮನೆಗೆ ಕಾವಲಿರುವಾಗ ಅವನ ಆಸ್ತಿಯೆಲ್ಲ ಸುರಕ್ಷಿತವಾಗಿರುತ್ತದೆ. ಆದರೆ ಇವನಿಗಿಂತಲೂ ಬಲಿಷ್ಠನು ಎದುರಿಸಿ ಬಂದು ಇವನನ್ನು ಗೆದ್ದಾಗ, ಇವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಯನ್ನು ಹಂಚಿಕೊಡುತ್ತಾನೆ. “ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದುರಿಸುತ್ತಾನೆ,” ಎಂದರು.

ಮನಸ್ಸಿಗೊಂದಿಷ್ಟು : ಇಂದಿನ ಶುಭಸಂದೇಶದಲ್ಲಿ ಎರಡು ಸಂಗತಿಗಳು ಸ್ಪಷ್ಟವಾಗುತ್ತವೆ. ಒಂದು ಅದೆಷ್ಟೇ ಒಳ್ಳೆಯ ಕಾರ್ಯ ಮಾಡಿದರೂ, ಮಾಡಲು ಪ್ರಯತ್ನಿಸಿದರೂ ಕಾಲೆಳೆಯುವ ಜನರಿದ್ದೇ ಇರುತ್ತಾರೆ. ಯೇಸು ದೆವ್ವ ಹಿಡಿದವನನ್ನು ಗುಣಪಡಿಸಿದರೂ ಅದಕ್ಕೊಂದು ಕೊಂಕು ಮಾತು ಬಂತು. ದಿಟ್ಟವಾಗಿ ಉತ್ತರಿಸಿದ ಯೇಸುವಿನಂತೆ ನಮ್ಮ ಕಾರ್ಯದ ಒಳಿತಿನ ಬಗ್ಗೆ ನಾವು ಸ್ಪಷ್ಟವಾಗಿರಬೇಕಷ್ಟೇ 

ಇನ್ನೊಂದು ನಮ್ಮ ಕ್ರೈಸ್ತ ಜೀವನದಲ್ಲಿ ನಾವು ತಟಸ್ಥರಾಗುವಂತಿಲ್ಲ. ನಾವು ಕ್ರಿಸ್ತನ ಪರ ಅಥವಾ ಕ್ರಿಸ್ತನ ವಿರುದ್ಧ, ಅಷ್ಟೇ ನಮ್ಮ ಆಯ್ಕೆ . ಕ್ರಿಸ್ತ ಕಲಿಸಿದ ಆಶಯಗಳ ಪರ ಅಥವಾ ವಿರುದ್ಧವಷ್ಟೇ ನಾವು ತೆಗೆದುಕೊಳ್ಳಬೇಕಾದ ನಿಲುವು. ಸ್ಪಷ್ಟತೆಗಾಗಿ ಪ್ರಾರ್ಥಿಸೋಣ - ಜೀವವಾಕ್ಯ 

No comments:

Post a Comment