ಮೊದಲನೇ ವಾಚನ: ಸಂಖ್ಯಾಕಾಂಡ 21:4-9
ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು.ಈ ಮಾರ್ಗದ ಆಯಾಸದಿಂದ ಅವರಿಗೆ ಬೇಸರವಾಯಿತು. ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತನಾಡ ತೊಡಗಿದರು: "ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಅಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಅಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ," ಎಂದು ಹೇಳತೊಡಗಿದರು. ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹುಜನ ಸತ್ತುಹೋದರು. ಆಗ ಜನರು ಮೋಶೆಯ ಬಳಿಗೆ ಬಂದು, "ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿರಿ," ಎಂದು ಬೇಡಿಕೊಂಡರು. ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, "ನೀನು ಕಂಚಿನಿಂದ ವಿಷ ಸರ್ಪದ ಆಕಾರವನ್ನು ಮಾಡಿಸಿ, ಧ್ವಜ ಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿಯೊಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು," ಎಂದು ಆಜ್ಞಾಪಿಸಿದರು. ಅಂತೆಯೆ ಮೋಶೆ ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜ ಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ ಸರ್ಪವನ್ನು ಲಕ್ಷವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
ಕೀರ್ತನೆ: 102:2-3, 16-18, 19-21
ಶ್ಲೋಕ: ಕಿವಿಗೊಡು ಪ್ರಭೂ, ನನ್ನ ಪ್ರಾರ್ಥನೆಗೆ ನನ್ನ ಕೂಗು ಸೇರಲಿ ನಿನ್ನ ಬಳಿಗೆ
ಶುಭಸಂದೇಶ: ಯೊವಾನ್ನ 8:21-30
ಯೇಸುಸ್ವಾಮಿ ಯೆಹೂದ್ಯರಿಗೆ "ನಾನು ಹೊರಟು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ," ಎಂದರು. ಅದಕ್ಕೆ ಯೆಹೂದ್ಯರು, "ತಾನು ಹೋಗುವಲ್ಲಿಗೆ ನಮ್ಮಿಂದ ಬರಲಾಗದಂತೆ! ಹಾಗಾದರೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬುದು ಇವನ ಇಂಗಿತವೆ?" ಎಂದು ಮಾತನಾಡಿಕೊಂಡರು. "ನೀವು ನರಲೋಕದವರು, ನಾನು ಪರಲೋಕದವನು. ನಿಮ್ಮಂತೆ ನಾನು ಇಹಲೋಕದವನಲ್ಲ, ನಿಮ್ಮ ಪಾಪಗಳಲ್ಲೇ ನೀವು ಸಾಯುವಿರಿ," ಎಂದು ಯೇಸು ಅವರಿಗೆ ಹೇಳಿದರು. ಅವರು, "ನೀನು ಯಾರು?" ಎಂದು ಪ್ರಶ್ನಿಸಿದರು. ಯೇಸು, "ನಾನು ಯಾರೆಂದು ನಿಮಗೆ ಮೊದಲಿನಿಂದಲೂ ತಿಳಿಸುತ್ತಾ ಬಂದಿದ್ದೇನೆ. ನಿಮ್ಮನ್ನು ಕುರಿತು ನಾನು ಎಷ್ಟೋ ಹೇಳಿಯೇನು; ಎಷ್ಟೋ ಖಂಡಿಸಿಯೇನು. ಆದರೆ ನನ್ನನ್ನು ಕಳುಹಿಸಿದಾತನು ಹೇಳಿದ್ದನ್ನೇ ಲೋಕಕ್ಕೆ ಸಾರುತ್ತೇನೆ. ಆತನು ಸತ್ಯಸ್ವರೂಪಿ," ಎಂದು ಹೇಳಿದರು. ಯೇಸುಸ್ವಾಮಿ ತಮ್ಮ ಪಿತನನ್ನು ಕುರಿತು ಹೀಗೆನ್ನುತ್ತಿದ್ದಾರೆಂದು ಅವರು ಅರಿತುಕೊಳ್ಳಲಿಲ್ಲ. ಎಂದೇ ಯೇಸು ಮತ್ತೆ ಇಂತೆಂದರು: "ನರಪುತ್ರನನ್ನು ನೀವು ಮೇಲಕ್ಕೇರಿಸಿದಾಗ, 'ಇರುವಾತನೇ ನಾನು' ಎಂದು ನಿಮಗೆ ತಿಳಿಯುವುದು. ನಾನಾಗಿಯೇ ಏನನ್ನೂ ಮಾಡುವುದಿಲ್ಲವೆಂದೂ ಪಿತನು ನನಗೆ ಭೋಧಿಸಿದಂತೆ ನಾನು ಮಾತನಾಡುತ್ತೇನೆಂದೂ ನಿಮಗೆ ಆಗ ಅರಿವಾಗುವುದು. ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಂಗಿಯಾಗಿ ಬಿಟ್ಟಿಲ್ಲ." ಯೇಸುಸ್ವಾಮಿ ಹೀಗೆ ಹೇಳಿದ್ದನ್ನು ಕೇಳಿ ಹಲವರಿಗೆ ಅವರಲ್ಲಿ ನಂಬಿಕೆ ಹುಟ್ಟಿತು.
ಮನಸಿಗೊಂದಿಷ್ಟು : "ಮಾನವನನ್ನು ಸೃಷ್ಟಿ ಮಾಡಿದ ಉದ್ದೇಶದಂತೆ ಅವನು ಉಳಿಯಲಿಲ್ಲ" ಎನ್ನುತ್ತಾರೆ ಚಿಂತಕರೊಬ್ಬರು. ತಮ್ಮ ಪ್ರತಿರೂಪದಂತಿರಲಿ ಎಂದು ನಮ್ಮನ್ನು ಸೃಷ್ಟಿ ಮಾಡಿದ ದೇವರನ್ನು ನಾವು ನಿರಾಸೆಗೊಳಿಸುತ್ತಲೇ ಬಂದಿದ್ದೇವೆ ಆದರೂ ದೇವರು ತಮ್ಮ ಆಸೆ, ತಮ್ಮ ಒಳ್ಳೆಯತನ ಬಿಟ್ಟಿಲ್ಲ. ನಮ್ಮನ್ನು ಸರಿ ಮಾಡಲು ಯೇಸುವನ್ನೇ ಕಳುಹಿಸಿದ್ದಾರೆ. ಯೇಸುವಿನ ಮಾರ್ಗದಲ್ಲಿ ನಡೆಯುವ ಜವಾಬ್ದಾರಿ ನಮ್ಮದು
ಪ್ರಶ್ನೆ : ದೇವರ ಪ್ರತಿರೂಪ ನಮ್ಮಲೆಷ್ಟು?
No comments:
Post a Comment