09.06.22

ಮೊದಲನೇ ವಾಚನ: 1 ಅರಸುಗಳು 18:41-46

ಅನಂತರ ಎಲೀಯನು ಆಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ; ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ,” ಎಂದನು. ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ, ಎಲೀಯನು ಕರ್ಮೆಲಿನ ತುದಿಗೆ ಹೋಗಿ, ಅಲ್ಲಿ ನೆಲದ ಮೇಲೆ ಬಿದ್ದುಕೊಂಡು, ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು. ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು,” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ, ನೋಡಿಬಂದು ಏನೂ ತೋರುವುದಿಲ್ಲವೆಂದು ಹೇಳಿದನು. ಹೀಗೆ ಅವನನ್ನು ಏಳುಸಾರಿ ಕಳುಹಿಸಿದನು. ಏಳನೆಯ ಸಾರಿ ಆ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಲಿದೆ,” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು, ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು,” ಎಂದನು. ತುಸು ಹೊತ್ತಿನಲ್ಲಿಯೇ ಆಕಾಶವು ಕಾರ್ಮೋಡಗಾಳಿಗಳಿಂದ ತುಂಬಿ ದೊಡ್ಡ ಮಳೆ ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಜೆಸ್ರೀಲಿಗೆ ಹೋದನು. ಸರ್ವೇಶ್ವರನ ಹಸ್ತ ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಜೆಸ್ರೀಲನ್ನು ಸೇರಿದನು.

ಕೀರ್ತನೆ: 65:10,11, 12-13
ಶ್ಲೋಕ: ಪ್ರಭುವೇ, ಸಿಯೋನಿನಲ್ಲಿ ಸಲ್ಲತಕ್ಕವು ನಿನಗೆ ಸ್ತುತಿಸ್ತೋತ್ರಗಳು. 

ಶುಭಸಂದೇಶ: ಮತ್ತಾಯ 5: 20-26

ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ." ಕೋಪ ಕೊಲೆಗೆ ಮೂಲ "‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ: ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು. ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ, ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು." "ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಂಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೋಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು! ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು."

No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...