ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

18.06.22

ಮೊದಲನೆಯ ವಾಚನ: 2 ಪೂರ್ವಕಾಲ ಇತಿಹಾಸದ: 24:17-25

ಯೆಹೋಯಾದವನು ಮೃತನಾದ ಮೇಲೆ, ಜುದೇಯದ ಪದಾಧಿಕಾರಿಗಳು ಅರಸ ಯೆಹೋವಾಷನ ಬಳಿಗೆ ಬಂದು, ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು. ಅಂದಿನಿಂದ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನ ಆಲಯವನ್ನು ನಿರಾಕರಿಸಿ, ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸತೊಡಗಿದರು. ಅವರ ಈ ಅಪರಾಧದಿಂದ ಜುದೇಯದ ಮೇಲೂ ಜೆರುಸಲೇಮಿನ ಮೇಲೂ ದೈವಕೋಪ ಎರಗಿತು. ಸರ್ವೇಶ್ವರ ಅವರನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ. ಆಗ ಯಾಜಕ ಯೆಹೋಯಾದನ ಮಗ ಜೆಕರ್ಯನು ದೇವಾತ್ಮನಿಂದ ಆವೇಶವುಳ್ಳವನಾದನು. ಅವನು ಜನರ ಎದುರಿಗೆ ಉನ್ನತ ಸ್ಥಾನದಲ್ಲಿ ನಿಂತು, " ದೇವರ ಮಾತನ್ನು ಕೇಳಿರಿ; ನೀವೇಕೆ ಸರ್ವೇಶ್ವರನ ಆಜ್ಞೆಗಳನ್ನು ಮೀರಿ, ನಿಮ್ಮನ್ನೇ ನಾಶಮಾಡಿಕೊಳ್ಳುತ್ತೀರಿ ? ನೀವು ಸರ್ವೇಶ್ವರಸ್ವಾಮಿಯನ್ನು ಬಿಟ್ಟಿದ್ದರಿಂದ ಅವರೂ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ, " ಎಂದನು. ಆಗ ಅವನಿಗೆ ವಿರೋಧವಾಗಿ ಒಳಸಂಚು ಮಾಡಿ, ಸರ್ವೇಶ್ವರನ ಆಲಯದ ಪ್ರಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು. ಜೆಕರ್ಯನ ತಂದೆ ಯಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರ್ಯನು ಸಾಯುವಾಗ, " ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ " ಎಂದನು. ವರ್ಷಾಂತ್ಯದಲ್ಲಿ ಸಿರಿಯಾದ ಸೈನ್ಯ ಯೆಹೋವಾಷನ ಮೇಲೆ ದಾಹಿಮಾಡಲು ಹೊರಟಿತು. ಆ ಸೈನ್ಯದವರು ಜುದೇಯ ನಾಡಿನೊಳಗೆ ನುಗ್ಗಿ ಜೆರುಸಲೇಮಿಗೆ ಬಂದು, ಇಸ್ರಯೇಲರ ಎಲ್ಲ ಜನಾಧಿಪತಿಗಳನ್ನು ನಿರ್ನಾಮ ಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು. ಸಿರಿಯಾದ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟುಬಿಟ್ಟಿದ್ದರಿಂದ ಶಿಕ್ಷೆಗೆ ಗುರಿಯಾದರು. ತಮ್ಮದು ಮಹಾಸೈನ್ಯವಾಗಿದ್ದರೂ ಸಿರಿಯಾದವರ ಕೈಯಲ್ಲಿ ಸೋಲನ್ನು ಅನುಭವಿಸಿದರು; ಯೆಹೋವಾಷನಿಗೆ ದಂಡನೆಯಾಯಿತು. ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಸಿರಿಯಾದವರು ಬಿಟ್ಟುಹೋದರು. ಅವನ ಸೇವಕರೇ, ಯಾಜಕ ಯೆಹೋಯಾದನ ಮಗನ ವಧೆಯ ನಿಮಿತ್ತ, ಅವನಿಗೆ ವಿರೋದವಾಗಿ ಒಳಸಂಚುಮಾಡಿ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಸವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.

ಕೀರ್ತನೆ: 89:3-4, 28-29, 30-32, 33
ಶ್ಲೋಕ: ಇರುವುದು ಎನ್ನಚಲ ಪ್ರೀತಿ ಅವನ ಮೇಲೆ ಶಾಶ್ವತವಾಗಿ.

ನೀನೆಂದೆ, " ನಾನಾರಿಸಿದವನೊಡನೆ ಮಾಡಿರುವೆ ಒಪ್ಪಂದ|
ನನ್ನ ದಾಸ ದಾವೀದನಿಗಿತ್ತಿರುವೆ ಈ ತೆರನಾದ ಶಪಥ:||
ಸ್ಥಾಪಿಸುವೆ ಶಾಶ್ವತವಾಗಿ ನಿನ್ನ ಸಂತತಿಯನು|
ಸ್ಥಿರಪಡಿಸುವೆ ಯುಗಯುಗಕು ನಿನ್ನ ಸಿಂಹಾಸನವನು "||

ಇರುವುದು ಎನ್ನಚಲ ಪ್ರೀತಿ ಅವನ ಮೇಲೆ ಶಾಶ್ವತವಾಗಿ|
ಅವನೊಡನೆ ನಾ ಮಾಡಿದೊಪ್ಪಂದ ಸ್ಥಿರಸ್ಥಾಯಿಯಾಗಿ||
ಉಳಿಸುವೆನು ಅವನ ಸಂತಾನವನು ನಿರಂತರವಾಗಿ|
ಅವನ ಸಿಂಹಾಸನವಿರುವುದು ಗಗನದಂತೆ ಸ್ಥಿರವಾಗಿ||

ಅವನ ಕುವರರು ತೊರೆದರಾದರೆ ನನ್ನ ಧರ್ಮಶಾಸ್ತ್ರವನು|
ಉಲ್ಲಂಘಿಸಿ ನಡೆದರಾದರೆ ನನ್ನ ಆಜ್ಞಾವಿಧಿಗಳನು||
ಮೀರಿ ನಡೆದರಾದರೆ ನನ್ನ ಶಾಸನಗಳನು|
ಪರಿಪಾಲಿಸದೆ ಹೋದರೆ ಎನ್ನ ನಿಯಮಗಳನು||
ದಂಡಿಸುವೆನವರ ದ್ರೋಹವನು ದಂಡದಿಂದ|
ಶಿಕ್ಷಿಸುವೆನವರ ಅಪರಾಧವನು ಚಾಟಿಯಿಂದ||

ಶುಭಸಂದೇಶ: ಮತ್ತಾಯ 6:24-34

ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: " ಯಾರೂ ಇಬ್ಬರು ಯಜಮಾನರಿಗೆ ಜೀತ ಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು. ನಾನು ಹೇಳುವುದನ್ನು ಕೇಳಿ : ' ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು ' ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ, ಉಡುಪಿಗಿಂತ ದೇಹ ಮೇಲಾದುದಲ್ಲವೆ? ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ಗಮನಿಸಿರಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೆ? ಚಿಂತಿಸಿ, ಚಿಂತಿಸಿ ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು? ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ : ಅವು ದುಡಿಯುವುದಿಲ್ಲ, ನೂಲುವುದಿಲ್ಲ. ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ. ಅಲ್ಪ ವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ? ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ. ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ. ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು. ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ; ಇಂದಿನ ಪಾಡೇ ಇಂದಿಗೆ ಸಾಕು."




*✝️ ಪ್ರಭುವಿನ ಶುಭಸಂದೇಶ.*

*🛐ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ.*




*🟩🛐🌻🙏 ಆಮೆನ್🙏🌻🛐🙏☦️🛐☦️🙏

No comments:

Post a Comment