30.06.2022 - "ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು"

ಮೊದಲನೇ ವಾಚನ: ಪ್ರವಾದಿ ಆಮೋಸನ ಗ್ರಂಥ 3:1-8; 4:11-12

ಇಸ್ರಯೇಲಿನ ಜನರೇ, ಕಿವಿಗೊಡಿ. ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡುಗಡೆಮಾಡಿ ಕರೆತಂದ ಸರ್ವೆಶ್ವರ ನಿಮ್ಮ ವಿರುದ್ಧವಾಗಿ ನುಡಿಯುವ ಮಾತುಗಳನ್ನು ಆಲಿಸಿರಿ: “ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.” ಗೊತ್ತುಗುರಿಯಿಲ್ಲದೆ ಯಾರಾದರಿಬ್ಬರು ಜೊತೆಯಾಗಿ ಪ್ರಯಾಣಮಾಡುವುದುಂಟೆ? ಬೇಟೆ ಕಂಡಾಗಲ್ಲದೆ ಸಿಂಹವು ಕಾಡಿನಲ್ಲಿ ಗರ್ಜಿಸುವುದುಂಟೆ? ಏನನ್ನೂ ಹಿಡಿಯದೆ ಯುವಸಿಂಹವು ಗುಹೆಯಲ್ಲೆ ಗುರುಗುಟ್ಟುವುದುಂಟೆ? ಕಾಳಿಲ್ಲದೆ ಪಕ್ಷಿ ಬಲೆಗೆ ಬೀಳುವುದುಂಟೆ? ಏನೂ ಸಿಕ್ಕಿಕೊಳ್ಳದೆ ಬೋನು ಮೇಲಕ್ಕೆ ಏರುವುದುಂಟೆ? ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ? ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ. ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?.” “ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ. ಆದುದರಿಂದ ಇಸ್ರಯೇಲಿನ ಜನರೇ, ನಿಮ್ಮನ್ನು ದಂಡಿಸಿಯೇ ತೀರುವೆನು. ಓ ಇಸ್ರಯೇಲರೇ, ನ್ಯಾಯತೀರ್ಪನ್ನು ಕೊಡಲು ಬರಲಿರುವ ನಿಮ್ಮ ದೇವರನ್ನು ಎದುರಗೊಳ್ಳಲು ಸಿದ್ಧಮಾಡಿಕೊಳ್ಳಿ," ಎನ್ನುತ್ತಾರೆ ಸರ್ವೇಶ್ವರ.

ಕೀರ್ತನೆ: 5:4-6, 6-7, 8
ಶ್ಲೋಕ: ಪ್ರಭೂ, ಸತ್ಯಪಥದಲಿ ನಡೆಸೆನ್ನನು

ಶುಭಸಂದೇಶ: ಮತ್ತಾಯ 8:23-27


ಆಮೇಲೆ ಯೇಸುಸ್ವಾಮಿ ದೋಣಿಯನ್ನು ಹತ್ತಿದರು. ಶಿಷ್ಯರೂ ಹತ್ತಿ ಅವರ ಸಂಗಡಹೋದರು. ಇದ್ದಕ್ಕಿದ್ದ ಹಾಗೆ ಸರೋವರದಲ್ಲಿ ರಭಸವಾದ ಬಿರುಗಾಳಿ ಎದ್ದಿತು. ದೋಣಿ ಅಲೆಗಳಿಂದ ಮುಳುಗಿಹೋಗುವುದರಲ್ಲಿತ್ತು. ಯೇಸುವಾದರೋ ನಿದ್ರಾವಶರಾಗಿದ್ದರು. ಶಿಷ್ಯರು ಹತ್ತಿರಕ್ಕೆ ಬಂದು ಅವರನ್ನು ಎಬ್ಬಿಸಿ, “ಸ್ವಾಮೀ, ಕಾಪಾಡಿ. ನಾವು ನೀರುಪಾಲಾಗುತ್ತಿದ್ದೇವೆ,” ಎಂದರು. ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ವಾತಾವರಣ ಪ್ರಶಾಂತವಾಯಿತು. ಶಿಷ್ಯರು ನಿಬ್ಬೆರಗಾದರು. “ಗಾಳಿಯೂ ಸರೋವರವೂ ಇವರು ಹೇಳಿದ್ದಂತೆ ಕೇಳಬೇಕಾದರೆ ಇವರೆಂತಹ ವ್ಯಕ್ತಿಯಾಗಿರಬೇಕು!” ಎಂದುಕೊಂಡರು.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...