02.08.22 - "ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,"

ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ  30:1-2, 12-15, 18-22


ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ಮತ್ತೊಮ್ಮೆ ಈ ಸಂದೇಶವನ್ನು ದಯಪಾಲಿಸಿದರು: “ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆನ್ನುತ್ತಾರೆ - ‘ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲ ಗ್ರಂಥರೂಪವಾಗಿ ಬರೆ. ಹೌದು, ಸರ್ವೇಶ್ವರ ಹೀಗೆನ್ನುತ್ತಾರೆ: “ನಿನ್ನ ಗಾಯಗಳು ಗುಣಹೊಂದವು ನಿನ್ನ ಹುಣ್ಣನ್ನು ವಾಸಿಮಾಡಲಾಗದು. ನಿನ್ನ ಪರ ವಾದಿಸುವವರಿಲ್ಲ, ನಿನ್ನ ವ್ರಣಕ್ಕೆ ಔಷಧವಿಲ್ಲ ನಿನ್ನನ್ನು ಆರೈಕೆ ಮಾಡುವವರಿಲ್ಲ. ನಿನ್ನ ನಲ್ಲರೆಲ್ಲರು ಮರೆತುಬಿಟ್ಟರು, ನಿನ್ನನ್ನು ಹುಡುಕದಿರುವರು ಶತ್ರುವಿನಂತೆ ನಿನ್ನನ್ನು ಥಳಿಸಿದೆನು, ಕ್ರೂರವಾಗಿ ದಂಡಿಸಿದೆನು. ಏಕೆಂದರೆ, ನಿನ್ನ ಅಪರಾಧ ಹೆಚ್ಚಿದೆ ನಿನ್ನ ಪಾಪಗಳು ಲೆಕ್ಕವಿಲ್ಲದಿವೆ. ‘ಅಯ್ಯೋ ನೋವು ನಿಲ್ಲದಿದೆ,’ ಎಂದು ನಿನ್ನ ಗಾಯಕ್ಕಾಗಿ ಗೋಳಿಡುತ್ತಿರುವೆ ಏಕೆ? ನಿನ್ನ ಅಪರಾಧ ಹೆಚ್ಚಿದೆ, ಪಾಪಗಳು ಬಹಳವಿವೆ ಎಂದೇ ಇದನ್ನೆಲ್ಲ ನಿನಗೆ ಮಾಡಿದೆ. ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು. ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು. ಅವನ ಸಂತಾನ ಹಿಂದಿನ ಸುಸ್ಥಿತಿಯನ್ನು ಹೊಂದುವುದು ಅವರ ಸಮಾಜ ನನ್ನ ಮುಂದೆ ನೆಲೆಯಾಗಿ ನಿಲ್ಲುವುದು ಅವರನ್ನು ಬಾಧಿಸುವವರನ್ನೆಲ್ಲ ನಾನು ದಂಡಿಸುವೆನು. ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ. ನೀವು ನನಗೆ ಪ್ರಜೆಯಾಗಿರುವಿರಿ ನಾನು ನಿಮಗೆ ದೇವರಾಗಿರುವೆನು.

ಕೀರ್ತನೆ: 102:16-18, 19-21, 29, 22-23
ಶ್ಲೋಕ: ಪ್ರಭು ಪುನರುದ್ದರಿಸುವನು ಸಿಯೋನನು

ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು|
ಭಯಪಡುವರು ನಿನ್ನ ಪ್ರತಾಪಕೆ ಭೂ ರಾಜರುಗಳು||
ಏಕೆನೆ ಪುನರುದ್ಧರಿಸುವನು ಸಿಯೋನನು|
ಪ್ರತ್ಯಕ್ಷಮಾಡುವನಾತ ತನ್ನ ಮಹಿಮೆಯನು||
ತಿರಸ್ಕರಿಸನಾತ ನಿರ್ಗತಿಕರ ಮೊರೆಯನು|
ನೆರವೇರಿಸದೆ ಬಿಡನು ಅವರ ಕೋರಿಕೆಯನು||

ಮುಂದಣ ಸಂತತಿಗಿದು ಶಾಸನವಾಗಿರಲಿ|
ಮುಂದೆ ಹುಟ್ಟುವ ಪ್ರಜೆ ಪ್ರಭುವನು ಹೊಗಳಲಿ||
ಭೂಲೋಕವನು ವೀಕ್ಷಿಸಿದನು ಪ್ರಭು ಪರಲೋಕದಿಂದ|
ದೃಷ್ಟಿಸಿದನು ತನ್ನ ಉನ್ನತ ಪವಿತ್ರ ಸ್ಥಾನದಿಂದ||
ಆಲಿಸಿದನಾತನು ಬಂಧಿತರ ಗೋಳಾಟವನು|
ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು||

ಹೀಗೆ ಪಭುವಿಗಾರಾಧನೆ  ಸಲ್ಲಿಸಲು|
ಜನಾಂಗಗಳೂ ರಾಜ್ಯಗಳೂ ಕೂಡಿರಲು||
ಹೊಗಳಲಾಗುವುದು ಪ್ರಭುವಿನ  ನಾಮ  ಸಿಯೋನಿನಲಿ|
ಆತನ ಗುಣಗಾನವಿರುವುದು ಆ  ಜೆರುಸಲೇಮಿನಲಿ||

ಘೋಷಣೆ                   ಕೀರ್ತನೆ 25:4
ಅಲ್ಲೆಲೂಯ, ಅಲ್ಲೆಲೂಯ!
ನಿನ್ನ  ಮಾರ್ಗವನು  ಪ್ರಭೂ,  ನನಗೆ  ತೋರಿಸು,
ನೀನೊಪ್ಪುವ  ಪಥದಲ್ಲಿ  ನಾ  ನಡೆಯ  ಕಲಿಸು,,
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 15:1-2, 10-14


ಜೆರುಸಲೇಮಿನಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯ ಬಳಿಗೆ ಬಂದು, "ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಸಂಪ್ರದಾಯಗಳನ್ನು ಮೀರುವುದೇಕೆ? ಅವರು ಊಟಕ್ಕೆ ಮುಂಚೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟ ಮಾಡುವುದೇಕೆ?" ಎಂದು ಕೇಳಿದರು. ಅನಂತರ ಯೇಸುಸ್ವಾಮಿ ಜನರನ್ನು ತಮ್ಮ ಬಳಿಗೆ ಕರೆದು, "ನಾನು ಹೇಳುವುದನ್ನು ಕೇಳಿ ಚೆನ್ನಾಗಿ ತಿಳಿದುಕೊಳ್ಳಿರಿ: ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಕಲುಷಿತಗೊಳಿಸುವುದಿಲ್ಲ; ಬಾಯೊಳಗಿನಿಂದ ಹೊರಕ್ಕೆ ಬರುವಂಥದ್ದೇ ಮನುಷ್ಯನನ್ನು ಕಲುಷಿತಗೊಳಿಸುತ್ತದೆ," ಎಂದು ಹೇಳಿದರು. ಆಗ ಶಿಷ್ಯರು ಹತ್ತಿರಕ್ಕೆ ಬಂದು, "ನಿಮ್ಮ ಮಾತನ್ನು ಕೇಳಿ ಫರಿಸಾಯರು ಬಹಳ ಬೇಸರಗೊಂಡಿದ್ದಾರೆಂದು ನಿಮಗೆ ತಿಳಿಯಿತೇ?" ಎಂದರು. ಅದಕ್ಕೆ ಯೇಸು, "ನನ್ನ ಪರಮಪಿತನು ನೆಡದ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು. ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ," ಎಂದರು.








No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...