09.08.22 - "ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು"

ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 2:8-3:4

ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿತೆರೆದು ತಿಂದು ಬಿಡು,” ಎಂದರು. ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು; ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು. ಆ ಸುರುಳಿಯನ್ನು ನನ್ನೆದುರಿನಲ್ಲೆ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಬರೆದಿತ್ತು: ಅದು ಪ್ರಲಾಪ, ಶೋಕ, ಶಾಪ ಇವುಗಳ ಬರಹದಿಂದ ಕೂಡಿತ್ತು. ಬಳಿಕ ಸರ್ವೇಶ್ವರ ನನಗೆ, “ನರಪುತ್ರನೇ, ನಿನಗೆ ಕೊಟ್ಟ ಈ ಸುರುಳಿಯನ್ನು ತಿನ್ನು; ಅನಂತರ ಇಸ್ರಯೇಲ್ ವಂಶದವರಿಗೆ ಸಾರು, ಹೋಗು,” ಎಂದು ಆಜ್ಞಾಪಿಸಿದರು. ನಾನು ಬಾಯಿ ತೆರೆದೆ; ಅವರೇ ಆ ಸುರುಳಿಯನ್ನು ನನಗೆ ತಿನ್ನಿಸಿದರು. ತಿನ್ನಿಸುತ್ತಾ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ,” ಎಂದರು. ನಾನು ಅದನ್ನು ತಿಂದು ಬಿಟ್ಟೆ; ಅದು ನನ್ನ ಬಾಯಿಗೆ ಜೇನಿನಂತೆ ಸಿಹಿಯಾಗಿತ್ತು. ಆಮೇಲೆ ಸರ್ವೇಶ್ವರ ನನಗೆ ಹೀಗೆಂದರು: “ನರಪುತ್ರನೇ, ನೀನು ಇಸ್ರಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು."

ಕೀರ್ತನೆ: 119:14, 24, 72, 103, 111, 131

ಶ್ಲೋಕ:  ನಿನ್ನ  ನುಡಿ  ಎನಿತೊ  ರುಚಿ  ನನ್ನ  ನಾಲಿಗೆಗೆ.

1.  ಸಿರಿಸಂಪತ್ತಿಗಿಂತ  ಮಿಗಿಲಾಗಿ
ಆನಂದಿಪೆ  ನಿನ್ನ  ಮಾರ್ಗಿಯಾಗಿ
ನಿನ್ನಾಜ್ಞೆಯು   ಆನಂದದಾಯಕ
ಅವೇ  ನನಗೆ  ಮಂತ್ರಾಲೋಚಕ

2.  ಸಾವಿರಾರು  ಚಿನ್ನ  ಬೆಳ್ಳಿ  ನಾಣ್ಯಗಳಿಗಿಂತ
ನಿನ್ನ  ಬಾಯಿಂದ  ಬಂದ  ಧರ್ಮಶಾಸ್ತ್ರ  ಉಚಿತ
ನಿನ್ನ  ನುಡಿ  ಎನಿತೊ  ರುಚಿ  ನನ್ನ  ನಾಲಿಗೆಗೆ
ಜೇನುತುಪ್ಪಕ್ಕಿಂತ  ಸಿಹಿ  ನನ್ನ  ಬಾಯಿಗೆ

3.  ಹೃದಯಾನಂದಕರ  ನಿನ್ನ  ಕಟ್ಟಳೆಗಳು
ನನಗಮರ  ಸ್ವಾಸ್ಥ್ಯವಾದುವುವು   ಅವುಗಳು
ಬಾಯ್ದೆರೆದು  ಹಾತೊರೆಯುತ್ತಿರುವೆ
ನಿನ್ನ  ಆಜ್ಞೆಗಳನು  ಅರಸುತಿರುವೆ

ಘೋಷಣೆ                   ಕೀರ್ತನೆ 119:34

ಅಲ್ಲೆಲೂಯ, ಅಲ್ಲೆಲೂಯ!
ನೀಡೆನಗೆ  ನಿನ್ನ  ಶಾಸ್ತ್ರದ  ಅರಿವನು,
ಪೂರ್ಣಮನದಿಂದ  ಆಚರಿಸುವೆನದನು,,
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 18:1-5, 10, 12-14


ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರು?” ಎಂದು ಕೇಳಿದರು. ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಹತ್ತಿರಕ್ಕೆ ಕರೆದು, ಅದನ್ನು ಶಿಷ್ಯರ ನಡುವೆ ನಿಲ್ಲಿಸಿ ಹೀಗೆಂದರು: “ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ. ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು. ನನ್ನ ಹೆಸರಿನಲ್ಲಿ ಇಂತಹ ಮಗುವೊಂದನ್ನು ಸ್ವೀಕರಿಸುವವನು ನನ್ನನ್ನೇ ಸ್ವೀಕರಿಸುತ್ತಾನೆ.” “ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.  ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ. “ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡುಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಆ ತೊಂಬತ್ತೊಂಬತ್ತು ಕುರಿಗಳಿಗಿಂತ ಸಿಕ್ಕಿದ ಆ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ."




No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...