ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

14.08.22 - "ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು"

ಮೊದಲನೇ ವಾಚನ: ಯೆರೆಮೀಯ 38:4-6, 8-10

ಪದಾಧಿಕಾರಿಗಳು ಅರಸನ ಬಳಿಗೆ ಬಂದು, "ಒಡೆಯಾ, ಈ ಯೆರೆಮೀಯನಿಗೆ ಮರಣ ದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ  ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ," ಎಂದು ದೂರಿತ್ತನು. ಅದಕ್ಕೆ ಅರಸ ಚಿದ್ಕೀಯನು, "ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ. ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ," ಎಂದನು. ಅವರು ಯೆರೆಮೀಯನನ್ನು ಹಿಡಿದು   ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು ಆ ಬಾವಿಯಲ್ಲಿ ನೀರಿರಲಿಲ್ಲ. ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು. ಇದನ್ನು ತಿಳಿದುಕೊಂಡ ಅರಮನೆಯ ಕಂಚುಕಿಯು ಅರಮನೆಯಿಂದ ಹೊರಟು, ಬೆನ್ಯಾಮೀನಿನ ಬಾಗಿಲಿನಲ್ಲಿ ಕುಳಿತುಕೊಂಡಿದ್ದ ಅರಸನ ಬಳಿಗೆ ಬಂದು, "ನನ್ನೊಡೆಯಾ, ಅರಸರೇ, ಈ ಜನರು ಪ್ರವಾದಿ ಯೆರೆಮೀಯನಿಗೆ ಮಾಡಿರುವುದೆಲ್ಲಾ ದುಷ್ಟ ಕಾರ್ಯವೇ ಸರಿ. ಅವನನು ಬಾವಿಯಲ್ಲಿ ಹಾಕಿದ್ದಾರೆ. ಆಹಾರವಿಲ್ಲದೆ ಅವನು ಬಿದ್ದಲ್ಲೇ ಸಾಯುವುದು ಖಚಿತ. ಏಕೆಂದರೆ ನಗರದಲ್ಲಿ ರೊಟ್ಟಿಯಲ್ಲಾ ತೀರಿಹೋಗದೆ," ಎಂದು ಅರಿಕೆ ಮಾಡಿದನು . ಇದನ್ನು ಕೇಳಿದ ಅರಸನು ಸುಡಾನಿನ ಎಬೆದ್ಮೆಲೆಕನಿಗೆ, "ನೀನು ಇಲ್ಲಿಂದ ಮೂವತ್ತು ಮಂದಿ ಆಳುಗಳನ್ನು ಕರೆದುಕೊಂಡು ಹೋಗಿ ಪ್ರವಾದಿ ಯೆರೆಮೀಯನು ಸಾಯುವ ಮೊದಲೇ, ಅವನನ್ನು ಬಾವಿಯಿಂದ ಎತ್ತಿಸು," ಎಂದು ಅಪ್ಪಣೆಕೊಟ್ಟನು.

ಕೀರ್ತನೆ: 40:2, 3, 4, 18

ಶ್ಲೋಕ: ನನಗೊತ್ತಾಸೆ ಮಾಡಲು ಪ್ರಭೂ, ಬೇಗ ಬಾ

ಎರಡನೇ ವಾಚನ: ಹಿಬ್ರಿಯರಿಗೆ 12:1-4

ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು ಸ್ಥಿರಚಿತ್ತದಿಂದ ಭಾಗವಹಿಸೋಣ. ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ. ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ.  ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ.

 ಶುಭಸಂದೇಶ: ಲೂಕ 12:49-53


ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದೇನೆಂದರೆ, "ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ. ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕನನಗೆ ನೆಮ್ಮದಿಯಿಲ್ಲ. ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ. ಹೇಗೆಂದರೆ, ಒಂದೇ ಮನೆಯಲ್ಲಿರುವ ಐವರಲ್ಲಿ,  ಇಬ್ಬರಿಗೆ ವಿರುದ್ಧ ಮೂವರು ಮೂವರಿಗೆ ವಿರುದ್ಧ ಇಬ್ಬರು ವಿಭಾಗವಾಗುವರು. ಮಗನಿಗೆ ವಿರುದ್ಧವಾಗಿ ತಂದೆ, ಮಗಳಿಗೆ, ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು."

No comments:

Post a Comment