ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

03.11.22

ಮೊದಲನೇ ವಾಚನ: ಫಿಲಿಪ್ಪಿಯರಿಗೆ 3:3-8

ಸಹೋದರರೇ, ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ. ಇಂಥ ಬಾಹ್ಯಾಚರಣೆಯಲ್ಲಿ ನಂಬಿಕೆ ಇಡಲು ತಮಗೆ ಹಕ್ಕು ಇದೆಯೆಂದು ಯಾರಾದರೂ ಭಾವಿಸಿದರೆ, ನನ್ನ ಹಕ್ಕು ಅದಕ್ಕೂ ಮಿಗಿಲಾದುದು ಎಂದೇ ಹೇಳುತ್ತೇನೆ. ಹುಟ್ಟಿದ ಎಂಟನೆಯ ದಿನ ನನಗೆ ಸುನ್ನತಿಯಾಯಿತು; ಹುಟ್ಟಿನಿಂದ ನಾನು ಇಸ್ರಯೇಲನು, ಬೆನ್ಯಮೀನ ಕುಲದವನು; ಅಪ್ಪಟ ಹಿಬ್ರಿಯನು, ಧರ್ಮಶಾಸ್ತ್ರದ ದೃಷ್ಟಿಯಲ್ಲಿ ನಿಷ್ಠಾವಂತ ಫರಿಸಾಯನು; ಮತಾಶಕ್ತಿಯ ಹಿತದೃಷ್ಟಿಯಿಂದ ಧರ್ಮಸಭೆಯ ಹಿಂಸಕನು; ಧರ್ಮಶಾಸ್ತ್ರ ವಿಧಿನಿಯಮಗಳ ಪಾಲನೆಯಲ್ಲಿ ನಿಂದಾರಹಿತನು. ಇವನ್ನೆಲ್ಲಾ ಲಾಭವೆಂದು ಪರಿಗಣಿಸಿದ್ದ ನಾನು ಈಗ ಕ್ರಿಸ್ತಯೇಸುವಿನ ಸಲುವಾಗಿ ನಷ್ಟವೆಂದೇ ಎಣಿಸುತ್ತೇನೆ. ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ. 

ಕೀರ್ತನೆ: 105:2-3, 4-5, 6-7
ಶ್ಲೋಕ: ಹಿಗ್ಗಲಿ ಹೃದಯ, ಕೋರಿ ಪ್ರಭುವಿನ ದರ್ಶನ 

ಶುಭಸಂದೇಶ: ಲೂಕ 15:1-10

ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳೂ ಬರುತ್ತಿದ್ದರು. ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು. ಆ ಸಂದರ್ಭದಲ್ಲಿ ಯೇಸು ಈ ಸಾಮತಿಯನ್ನು ಹೇಳಿದರು: “ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲೇ ಬಿಟ್ಟು ಕಾಣದೆಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ? ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ; ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ. ‘ಕಳೆದುಹೋಗಿದ್ದ ಕುರಿ ಸಿಕ್ಕಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾನೆ, ಅಲ್ಲವೆ? “ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. “ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿ ಒಂದನ್ನು ಕಳೆದುಕೊಂಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದುಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೇ? ಅದು ಸಿಕ್ಕಿದಾಗ ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ‘ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾಳಲ್ಲವೆ? “ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.

02.11.22 - "ಹೀಗೆ ಈ ದುರ್ಜನರು ನಿತ್ಯ ಶಿಕ್ಷೆಗೂ, ಆ ಸಜ್ಜನರು ನಿತ್ಯ ಜೀವಕ್ಕೂ ಹೋಗುವರು"

 ಮೊದಲನೇ ವಾಚನ: ಜ್ಞಾನಗ್ರಂಥ 3:1-9 

ಸಜ್ಜನರ ಆತ್ಮಗಳಿರುವುವು ದೇವರ ಕೈಯೊಳು ಅವರನ್ನು ಮುಟ್ಟದು ಮಹಾಯಾತನೆ ಯಾವುದೂ. ಮಂದಮತಿಯ ಕಣ್ಣಿಗೆ ಸತ್ತವರಂತೆ ಅವರು ಕಾಣಿಸಿಕೊಂಡರು ಅವರು ಗತಿಸಿಹೋದುದು ಅವನಿಂದ ತೊಲಗಿದ ಕೇಡಂತಿತ್ತು. ಸಜ್ಜನರಿಗಾದ ಸಾವು ಮಹಾ ವಿಪತ್ತು ಎಂದವನಿಗೆ ತೋರಿತು. ಅವರಾದರೋ ಶಾಂತಿ ಸಮಾಧಾನದಿಂದ ನೆಮ್ಮದಿಯಾಗಿರುವರು. ಮಾನವನ ದೃಷ್ಟಿಯಲ್ಲಿ ಅವರು ಕಂಡು ಬಂದರು ಶಿಕ್ಷಿಸಲ್ಪಟ್ಟವರಂತೆ ಅವರಲ್ಲಾದರೋ ತುಂಬಿತ್ತು ಅಮರತ್ವದ ನಂಬಿಕೆ ನಿರೀಕ್ಷೆ, ಅವರು ಅನುಭವಿಸಿದ ಶಿಕ್ಷೆ ಅಲ್ಪ, ಹೊಂದುವ ಸೌಭಾಗ್ಯ ಅಪಾರ. ಶೋಧಿಸಿದ ತರುವಾಯ ದೇವರಿಗೆ ಅವರು ಕಂಡು ಬಂದರು ಯೋಗ್ಯಾರ್ಹ. ಶೋಧಿಸಿದರವರನು ಪುಟಕ್ಕಿಟ್ಟ ಚಿನ್ನದಂತೆ, ಅಂಗೀಕೃತರಾದರು ಪೂರ್ಣ ದಹನ ಬಲಿಯಂತೆ. ಪ್ರಕಾಶಿಸುವರು ದೇವರನು ಸಂದರ್ಶಿಸುವ ಕಾಲದಲ್ಲಿ ಹೊಳೆಯುವರು ಒಣ ಹುಲ್ಲಿನೊಳಗಿನ ಕಿಡಿಗಳೋಪಾದಿ. ನ್ಯಾಯ ತೀರಿಸುರವರು ಜನಾಂಗಗಳಿಗೆ ದೊರೆತನ ಮಾಡುವರವರು ಜನಗಳ ಮೇಲೆ ದೇವರ ಪ್ರಜೆಗಳಾಗಿರುವರು ಸದಾಕಾಲಕ್ಕೆ. ಸತ್ಯವನ್ನು ಅರಿವರು ದೇವರಲ್ಲಿ ಭರವಸಯಿಡುವವರು ಅವರೊಂದಿಗೆ ಪ್ರೀತಿಯಿಂದ ಬಾಳುವರು ನಂಬಿಗಸ್ತರು. ದೇವರಿಂದ ಆಯ್ಕೆಯಾದವರಿಗಿರುವುದು ಕೃಪಾನುಗ್ರಹವು ದೇವರೇ ಕಾಪಾಡುವರು ಸಜ್ಜನರನು .

ಕೀರ್ತನೆ: 23:1-3, 3-4, 5, 6 
ಶ್ಲೋಕ:, ಪ್ರಭು ಕುರಿಗಾಹಿಯಾಗಿರಲು ನನಗೆ ಕುಂದುಕೊರತೆಗಳೆಲ್ಲಿಯವು ಎನಗೆ? 

ಎರಡನೇ ವಾಚನ: ರೋಮನರಿಗೆ 6:3-9 

ಸಹೋದರರೇ, ಕ್ರಿಸ್ತ ಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೇ? ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ದೇವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತ ಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವೂ ಸಹ ಹೊಸ ಜೀವವನ್ನು ಹೊಂದಿ ಬಾಳುತ್ತೇವೆ. ಅವರು ಮರಣ ಹೊಂದಿದಂತೆ ನಾವೂ ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. ಅಂತೆಯೇ, ಅವರು ಪುನರುತ್ಥಾನವಾದಂತೆ ನಾವೂ ಅವರೊಡನೆ ಐಕ್ಯವಾಗಿ ಪುನರುತ್ಥಾನ ಹೊಂದುತ್ತೇವೆ. ನಮಗೆ ತಿಳಿದಿರುವಂತೆ ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ. ಹೀಗೆ ಸತ್ತವನು ಪಾಪ ಬಂಧದಿಂದ ಬಿಡುಗಡೆ ಹೊಂದಿದವನು. ಕ್ರಿಸ್ತ ಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ  ವಿಶ್ವಾಸ. ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು  ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ. 

ಶುಭಸಂದೇಶ: ಮತ್ತಾಯ 25:31-46  

"ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು. ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲೂ ಆಡುಗಳನ್ನು ತನ್ನ ಎಡಗಡೆಯಲ್ಲೂ ಇರಿಸುವನು. ಆಗ ಆರಸನು ತನ್ನ ಬಲಗಡೆಯಿರುವ ಜನರಿಗೆ, "ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ, ಲೋಕಾದಿಯಿಂದ ನಿಮಗಾಗಿ ಸಿದ್ಧ ಮಾಡಿದ ಸಾಮ್ರಾಜ್ಯವನ್ನು ಸ್ವಾಸ್ಥ್ಯವಾಗಿ ಪಡೆಯಿರಿ. ಏಕೆಂದರೆ, ನಾನು ಹಸಿದಿದ್ದೆ, ನನಗೆ ಆಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಟ್ಟಿರಿ. ಬಟ್ಟೆಬರೆ ಇಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆ ಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ," ಎಂದು ಹೇಳುವನು. ಅದಕ್ಕೆ ಆ ಸಜ್ಜನರು "ಸ್ವಾಮಿಾ, ತಾವು ಯಾವಾಗ ಹಸಿದಿದ್ದನ್ನು ಕಂಡು ನಾವು ಆಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವು? ಯಾವಾಗ ತಾವು ಅಪರಿಚಿತರಾಗಿದ್ದನ್ನು ಕಂಡು ನಾವು ಆಶ್ರಯ ಕೊಟ್ಟೆವು? ಬಟ್ಟೆಬರೆಯಿಲ್ಲದ್ದನ್ನು ಕಂಡು ಉಡಲು ಕೊಟ್ಟೆವು? ತಾವು ರೋಗಿಯಾಗಿರುವುದನ್ನು ಅಥವಾ ಬಂಧಿಯಾಗಿರುವುದನ್ನು ಕಂಡು ನಾವು ಸಂಧಿಸಲು ಬಂದೆವು?" ಎಂದು ಕೇಳುವರು. ಆಗ ಅರಸನು ಪ್ರತ್ಯುತ್ತರವಾಗಿ, "ಈ ನನ್ನ ಸಹೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ," ಎನ್ನುವನು. "ಆನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, "ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ. ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರ ಕೊಡಲಿಲ್ಲ; ಬಾಯಾರಿದ್ದೆ, ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ," ಎಂದು ಹೇಳುವನು. ಅದಕ್ಕೆ ಅವರು ಕೂಡ, "ಸ್ವಾಮಿಾ, ತಾವು ಯಾವಾಗ ಹಸಿದಿದ್ದೀರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಬಂಧಿಯಾಗಿದ್ದಿರಿ, ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆ ಹೋದೆವು? ಎಂದು ಪ್ರಶ್ನಿಸುವರು. ಅದಕ್ಕೆ ಪ್ರತ್ಯುತ್ತರವಾಗಿ ಅರಸನು, "ಇವರಲ್ಲ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆ ಹೋದಾಗ ಅದನ್ನು ನನಗೇ ಮಾಡಲಿಲ್ಲ," ಎನ್ನುವನು. "ಹೀಗೆ ಈ ದುರ್ಜನರು ನಿತ್ಯ ಶಿಕ್ಷೆಗೂ, ಆ ಸಜ್ಜನರು ನಿತ್ಯ ಜೀವಕ್ಕೂ ಹೋಗುವರು," ಎಂದು ಹೇಳಿದರು ಸ್ವಾಮಿ.

01.11.22 - "ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು"

ಮೊದಲನೇ ವಾಚನ: ಪ್ರಕಟನಾ ಗ್ರಂಥ 7:2-4, 9-14 

ಪೂರ್ವದಿಕ್ಕಿನಿಂದ ಒಬ್ಬ ದೇವದೂತನು ಏರಿಬಂದದ್ದನ್ನು ಕಂಡೆನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ: "ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ," ಎಂದು ಗಟ್ಟಿಯಾಗಿ ಕೂಗಿ ಹೇಳಿದನು. ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕಾಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ. ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ: ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲ ಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು. ಅವರು ಗಟ್ಟಿಯಾದ ಧ್ವನಿಯಿಂದ: "ಸಿಂಹಾಸನರೂಢರಾದ ದೇವರಿಂದ, ಬಲಿಯರ್ಪಿತವಾದ ಯಜ್ಞದ ಕುರಿಮರಿಯಿಂದ ಲಭಿಸುತ್ತದೆಮಗೆ ಜೀವೋದ್ಧಾರ," ಎಂದು ಹಾಡಿದರು. ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರ ಮಾಡಿ, "ಆಮೆನ್, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ ಆಮೆನ್," ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು. ಸಭಾಪ್ರಮುಖರಲ್ಲಿ ಒಬ್ಬನು, "ಶ್ವೇತಾಂಬರರಾದ ಇವರೆಲ್ಲರೂ ಯಾರು? ಎಲ್ಲಿಂದ ಬಂದವರು? ಎಂದು ನನ್ನನ್ನು ಪ್ರಶ್ನಿಸಿದರು. ಅದಕ್ಕೆ ನಾನು, "ಸ್ವಾಮಿಾ ನೀವೇ ಬಲ್ಲಿರಿ," ಎಂದು ಉತ್ತರಕೊಟ್ಟೆ, ಆಗ ಆತನು ನನಗೆ ಹೀಗೆಂದನು; "ಇವರು ಆ ಭೀಕರ ಹಿಂಸೆ ಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ. 

ಕೀರ್ತನೆ: 24:1-2, 3-4,5-6 

ಶ್ಲೋಕ: ಇಂಥವರೇ ದೇವರ ದರ್ಶನಾಭ್ಯರ್ಥಿಗಳು 

ಎರಡನೇ ವಾಚನ: 1 ಯೊವಾನ್ನ 3:1-3 

ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ, ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ. ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥ ರೂಪದಲ್ಲೇ ಕಾಣುತ್ತೇವೆ. ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ. 

ಶುಭಸಂದೇಶ: ಮತ್ತಾಯ 5:1-12 

ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು.  ಆಗ ಯೇಸು ಇಂತೆಂದು ಪ್ರಬೋಧಿಸಿದರು: "ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು. ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು. ನ್ಯಾಯ ನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು. ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು. ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು. ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು. ನ್ಯಾಯ ನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು,  ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು. ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು.

31.10.22

ಮೊದಲನೇ ವಾಚನ: ಫಿಲಿಪ್ಪಯರಿಗೆ: 2:1-4

ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನತೆ, ದೀನದಯಾಳತೆ ಇರುವುದಾದರೆ ಐಕ್ಯಮತ್ಯದಿಂದ ಬಾಳಿರಿ. ನಿಮ್ಮೆಲ್ಲರಲ್ಲಿ ಒಂದೇ ಮನಸ್ಸು, ಒಂದೇ ಪ್ರೀತಿ ಇರಲಿ. ನಿಮ್ಮ ಗುರಿಧ್ಯೇಯಗಳು  ಒಂದೇ ಆಗಿರಲಿ. ಆಗ ನನ್ನ ಸಂತೋಷವು ಸಂಪೂರ್ಣಗೊಳ್ಳುವುದು. ಸ್ವಾರ್ಥ ಸಾಧನೆಗಾಗಲಿ, ಡಂಬಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ. ಸ್ವಹಿತವನ್ನೇ ಗಮನಿಸದೆ ಪರರ ಹಿತವನ್ನೂ ಬಯಸಿರಿ.

ಕೀರ್ತನೆ: 131:1, 2, 3
ಶ್ಲೋಕ: ಎಂದೇ ನನ್ನಾತ್ಮ ಸಮಾಧಾನದಿಂದಿದೆ.

ಶುಭಸಂದೇಶ: ಲೂಕ 14:12-14

ಅನಂತರ ತಮ್ಮನ್ನು ಊಟಕ್ಕೆ ಆಮಂತ್ರಿಸಿದವನನ್ನು ನೋಡಿ ಯೇಸುಸ್ವಾಮಿ, "ನೀನು ಊಟ ಅಥವಾ ಔತಣವನ್ನು ಏರ್ಪಡಿಸುವಾಗ ನಿನ್ನ ಸ್ನೇಹಿತರನ್ನಾಗಲಿ, ಸೋದರರನ್ನಾಗಲಿ, ಬಂಧು ಬಳಗದವರನ್ನಾಗಲಿ, ಧನಿಕರಾದ ನೆರೆಯವರನ್ನಾಗಲಿ ಕರೆಯಬೇಡ. ಏಕೆಂದರೆ, ಅವರು ನಿನ್ನನ್ನು ಪ್ರತಿಯಾಗಿ ಕರೆದು ಮುಯ್ಯಿ ತೀರಿಸಿಬಿಡಬಹುದು. ಆದ್ದರಿಂದ ಔತಣವನ್ನು ಏರ್ಪಡಿಸುವಾಗ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆ; ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ  ಪ್ರತಿಯಾಗಿ ಏನೂ ಮಾಡಲು ಇಲ್ಲದವರು. ಸತ್ಪುರುಷರು ಪುನರುತ್ದಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು." ಎಂದರು.

30.10.22 - "ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ"

ಮೊದಲನೇ ವಾಚನ: ಜ್ಞಾನಗ್ರಂಥ ಗ್ರಂಥ  11:22-12:2 

ಕರ್ತರೇ, ನಿಮ್ಮ ದೃಷ್ಟಿಯಲ್ಲಿ ಇಡೀ ವಿಶ್ವವು ತಕ್ಕಡಿಯಲ್ಲಿನ ಒಂದು ಅಣುವಿನಂತೆ ಮುಂಜಾನೆ ನೆಲಕ್ಕೆ ಬೀಳುವ ಮಂಜಿನ ಒಂದು ಹನಿಯಂತೆ. ಏನು ಮಾಡಲೂ ನಿನಗೆ ಶಕ್ತಿಯಿದೆ, ಆದರೂ ಎಲ್ಲರಿಗೂ ಕರುಣೆ ತೋರುತ್ತೀರಿ. ಜನರು ನಿಮಗೆ ಅಭಿಮುಖರಾಗಲೆಂದೇ, ಅವರ ಪಾಪಗಳನ್ನು ಕಂಡರೂ ಕಾಣದಂತಿದ್ದೀರಿ. ಪ್ರೀತಿಸುತ್ತೀರಿ ಸೃಷ್ಟಿಯನ್ನೆಲ್ಲಾ; ನೀವುಂಟು ಮಾಡಿದ್ದನ್ನು ಹೇಸುವುದಿಲ್ಲ ಹೇಸುತ್ತಿದ್ದರೆ ಉಂಟುಮಾಡುತ್ತಿರಲಿಲ್ಲ. ನಿಮ್ಮ ಚಿತ್ತ ಇದ್ದ ಹೊರತು, ಯಾವುದು ಬಾಳೀತು? ನಿಮ್ಮ ಕರೆ ಇಲ್ಲದಿದ್ದರೆ, ಇದ್ದುದು ಹೇಗೆ ಉಳಿದೀತು? ಹೇ ಸರ್ವೇಶ್ವರಾ, ಜೀವಾತ್ಮಗಳ ಪ್ರಿಯನೇ ಎಲ್ಲವೂ ನಿಮ್ಮವಾದುದರಿಂದ, ಎಲ್ಲಕ್ಕೂ ಇದೆ ನಿಮ್ಮ ರಕ್ಷಣೆ ಅಮರವಾದ ನಿಮ್ಮ ಚೈತನ್ಯವು ಇರುವುದು ಪ್ರತಿಯೊಂದರಲ್ಲೂ. ಎಂದೇ ಸನ್ಮಾರ್ಗದಿಂದ ತಪ್ಪಿಹೋದವರನ್ನು ಸ್ವಲ್ಪಸ್ವಲ್ಪವಾಗಿ ತಿದ್ದುತ್ತೀರಿ ಮಾಡಿದ ಅಪರಾಧಗಳನ್ನು ನೆನಪಿಗೆ ತಂದುಕೊಟ್ಟು ಎಚ್ಚರಿಸುತ್ತೀರಿ. ಸರ್ವೇಶ್ವರಾ, ದುಷ್ಟತನ ಬಿಟ್ಟು ನಿಮ್ಮನ್ನವರು ನಂಬಲೆಂದೇ ಹೀಗೆ ಮಾಡುತ್ತೀರಿ. 

ಕೀರ್ತನೆ: 145:1-2, 8-9, 10-11, 14-15 
ಶ್ಲೋಕ: ದೇವಾ, ಮಾಡುವೆ ಯುಗಯುಗಾಂತರಕ್ಕೂ ನಿನ್ನ ನಾಮಕೆ ನಮನ 

ಎರಡನೇ ವಾಚನ: 2 ಥೆಸಲೋನಿಯರಿಗೆ 1:11-2:2 

ಸಹೋದರರೇ, ನಿಮಗೋಸ್ಕರ ನಾವು ಸದಾ ಪ್ರಾರ್ಥಿಸುತ್ತೇವೆ. ದೇವರೇ ನೀಡಿರುವ ಕರೆಗೆ ನೀವು ಯೋಗ್ಯವಾಗಿ ಬಾಳುವಂತಾಗಲಿ; ದೇವರ ಮಹಿಮಾಶಕ್ತಿಯಿಂದ ನಿಮ್ಮ ಶುಭಾಕಾಂಕ್ಷೆಗಳು ಮತ್ತು ವಿಶ್ವಾಸಪ್ರೇರಿತ ಕಾರ್ಯಗಳು ಪೂರ್ಣವಾಗಲಿ. ಹೀಗೆ ನಿಮ್ಮ ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಿಮ್ಮ ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ. ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ; ಪ್ರಭುವಿನ ದಿನವು ಬಂದೇಬಿಟ್ಟಿತೆಂದು ಪ್ರವಾದನೆಯಿಂದಾಗಲಿ, ಪ್ರವಚನದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದು ಬಂದಿದೆಯೆಂದು ಯಾರಾದರೂ ಹೇಳಿದರೆ, ಒಮ್ಮೆಗೇ ನೀವು ತಳಮಳಗೊಳ್ಳದಿರಿ. 

ಶುಭಸಂದೇಶ: ಲೂಕ 19:1-10 


ಯೇಸುಸ್ವಾಮಿ ಜೆರಿಕೊ ಪಟ್ಟಣವನ್ನು ಪ್ರವೇಶಿಸಿ ಅದರ ಬೀದಿಗಳಲ್ಲಿ ಹಾದು ಹೋಗುತ್ತಿದ್ದರು. ಅಲ್ಲಿ ಜಕ್ಕಾಯ ಎಂಬುವನಿದ್ದನು. ಅವನು ಸುಂಕವಸೂಲಿಯವರ ಮುಖಂಡ ಹಾಗೂ ಧನಾಢ್ಯ. ಯೇಸು ಯಾರೆಂದು ನೋಡಬೇಕೆಂಬ ಅಪೇಕ್ಷೆ ಅವನದು. ಆದರೆ ಅವನು ಗಿಡ್ಡ ವ್ಯಕ್ತಿ. ಜನಜಂಗುಳಿಯ ಮಧ್ಯೆ ಯೇಸುವನ್ನು ನೋಡಲು ಪ್ರಯತ್ನಿಸಿದರೂ ಅವನಿಂದಾಗಲಿಲ್ಲ. ಆದಕಾರಣ ಮುಂದಕ್ಕೆ ಓಡಿಹೋಗಿ ಯೇಸು ಬರುತ್ತಿದ್ದ ಆ ಮಾರ್ಗದಲ್ಲಿ ಒಂದು ಆಲದ ಮರವನ್ನು ಕಂಡು ಅದನ್ನು ಹತ್ತಿದನು. ಯೇಸು ಆ ಸ್ಥಳಕ್ಕೆ ಬಂದು, ತಲೆಯೆತ್ತಿ ನೋಡಿ, "ಜಕ್ಕಾಯಾ, ಒಡನೆ ಇಳಿದು ಬಾ; ಈ ದಿನ  ನಿನ್ನ ಮನೆಯಲ್ಲಿ ನಾನು  ತಂಗಬೇಕು," ಎಂದರು. ಜಕ್ಕಾಯನು ತಕ್ಷಣವೇ ಇಳಿದು ಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು. ಇದನ್ನು ನೋಡಿದವರೆಲ್ಲರು, "ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?" ಎಂದು ಗೊಣಗುಟ್ಟಿದರು. ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, "ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ," ಎಂದನು. ಆಗ ಯೇಸು, "ಇಂದು ಈ ಮನೆ ಉದ್ಧಾರವಾಯಿತು. ಇವನು ಕೂಡ ಅಬ್ರಹಾಮನ ವಂಶಕ್ಕೆ ಸೇರಿದವನಲ್ಲವೇ? ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ," ಎಂದು ಹೇಳಿದರು.

29.10.22 - "ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು"

 ಮೊದಲನೇ ವಾಚನ: ಫಿಲಿಪ್ಪಿಯರಿಗೆ 1:18-26 

ಸಹೋದರರೇ, ಶುಭಸಂದೇಶಪ್ರಚಾರಕರ ಉದ್ದೇಶ ಏನೇ ಆಗಿರಲಿ, ನನಗದು ಮುಖ್ಯವಲ್ಲ. ಕ್ರಿಸ್ತಯೇಸುವನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ. ಹೌದು, ನನಗದು ತುಂಬಾ ಸಂತೋಷದ ವಿಷಯ. ನಿಮ್ಮ ಪ್ರಾರ್ಥನಾ ಫಲದಿಂದಲೂ ಯೇಸುಕ್ರಿಸ್ತರು ಕೊಡುವ ಆತ್ಮದ ನೆರವಿನಿಂದಲೂ ನನಗೆ ಬಿಡುಗಡೆ ಖಚಿತವೆಂದು ಬಲ್ಲೆ. ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ. ನನಗಂತೂ ಬದುಕುವುದೆಂದರೆ ಕ್ರಿಸ್ತಯೇಸುವೇ; ಸಾಯುವುದು ಲಾಭವೇ. ದೈಹಿಕವಾಗಿ ಬದುಕುವುದು ಫಲಪ್ರದವಾಗಿದ್ದರೆ, ನಾನು ಬದುಕುವುದು ಉತ್ತಮವೋ ಅಥವಾ ಸಾಯುವುದು ಸೂಕ್ತವೋ ನನಗೆ ತಿಳಿಯದು. ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು. ಮತ್ತೊಂದು ಕಡೆ, ನಿಮಗೋಸ್ಕರ ಇಹದಲ್ಲಿದ್ದು ಜೀವಿಸುವುದು ಅತ್ಯವಶ್ಯಕವಾಗಿದೆ. ಇದರಲ್ಲಿ ನನಗೆ ಎಳ್ಳಷ್ಟೂ ಸಂದೇಹವಿಲ್ಲ. ಈ ಕಾರಣ, ನಾನು ಇಹದಲ್ಲಿ ಉಳಿಯುವೆನೆಂದು ಬಲ್ಲೆ. ನಿಮ್ಮೆಲ್ಲರೊಡನಿದ್ದು, ಕ್ರೈಸ್ತವಿಶ್ವಾಸದಲ್ಲಿ ನೀವು ವೃದ್ಧಿಯಾಗಿ ಆನಂದಿಸುವಂತೆ ನಿಮಗೆ ನೆರವಾಗುತ್ತೇನೆ. ನಿಮ್ಮಲ್ಲಿಗೆ ನಾನು ಮರಳಿಬಂದಾಗ ಕ್ರಿಸ್ತಯೇಸುವಿನಲ್ಲಿ ನೀವು ಹಿರಿಹಿಗ್ಗುವುದಕ್ಕೆ ಮಹದವಕಾಶ ದೊರಕುವುದು. 

ಕೀರ್ತನೆ: 42:2, 3, 5 

ಶ್ಲೋಕ: ಜೀವಂತ ದೇವನಿಗಾಗಿ ದಾಹದಿಂದಿದೆ ನ್ನ ಮನ 

ಶುಭಸಂದೇಶ: ಲೂಕ 14:1, 7-11 


ಅಂದು ಸಬ್ಬತ್‍ದಿನ. ಯೇಸುಸ್ವಾಮಿ ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು. ಅಲ್ಲದೆ, ಅಲ್ಲಿಗೆ ಬಂದಿದ್ದ ಅತಿಥಿಗಳು ಪಂಕ್ತಿಯಲ್ಲಿ ಉತ್ತಮ ಸ್ಥಾನಗಳನ್ನು ಆರಿಸಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಯೇಸು ಸಾಮತಿ ರೂಪದಲ್ಲಿ ಹೀಗೆಂದರು: “ಮದುವೆಯ ಔತಣಕ್ಕೆ ನಿನ್ನನ್ನು ಯಾರಾದರೂ ಆಹ್ವಾನಿಸಿದಾಗ ಪ್ರಧಾನ ಆಸನದಲ್ಲಿ ಹೋಗಿ ಕುಳಿತುಕೊಳ್ಳಬೇಡ. ಏಕೆಂದರೆ, ನಿನಗಿಂತ ಗೌರವಸ್ಥನನ್ನು ಆಹ್ವಾನಿಸಿರಬಹುದು. ನಿಮ್ಮಿಬ್ಬರನ್ನು ಕರೆದಾತ ನಿನ್ನ ಹತ್ತಿರಬಂದು, ‘ಇವನಿಗೆ ನಿನ್ನ ಸ್ಥಳವನ್ನು ಬಿಟ್ಟುಕೊಡು,’ ಎನ್ನಬಹುದು. ಆಗ ನೀನು ನಾಚಿಕೆಪಟ್ಟುಕೊಂಡು ಕಡೆಯ ಸ್ಥಾನದಲ್ಲಿ ಹೋಗಿ ಕುಳಿತುಕೊಳ್ಳಬೇಕಾಗಬಹುದು. ಅದಕ್ಕೆ ಬದಲಾಗಿ ನಿನ್ನನ್ನು ಆಹ್ವಾನಿಸಿದಾಗ ಕಡೆಯ ಸ್ಥಳದಲ್ಲಿ ಹೋಗಿ ಕುಳಿತುಕೋ. ಕರೆದವನು ಬಂದು, ‘ಗೆಳೆಯಾ, ಮೇಲೆ ಬಾ’ ಎಂದು ಹೇಳುವನು. ಆಗ ಜೊತೆಗೆ ಕುಳಿತಿರುವ ಅತಿಥಿಗಳೆಲ್ಲರ ಮುಂದೆ ನಿನಗೆ ಗೌರವ ಸಿಗುವುದು. ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.

28.10.22 - ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು

 ಮೊದಲನೇ ವಾಚನ: ಎಫೆಸಿಯರಿಗೆ 2:19-22 


ಸಹೋದರರೇ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ.  ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.  ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ.  ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ. 

ಕೀರ್ತನೆ: 19:2-3, 4-5 

ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ. 

ಶುಭಸಂದೇಶ: ಲೂಕ 6:12-16 


ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.  ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು.  ಹೀಗೆ ಆಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,  ಮತ್ತಾಯ ಮತ್ತು ತೋಮ, ಅಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,  ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ. 

27.10.22

ಮೊದಲನೆಯ ವಾಚನ: ಎಫೆಸಿಯರಿಗೆ 6:10-20

ಸಹೋದರರೇ, ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ. ಸೈತಾನನು ನಿಮಗೆ ಒಡ್ಡುವ ಕುತಂತ್ರಗಳ ವಿರುದ್ಧ ಅಚಲರಾಗಿ ನಿಲ್ಲಲು ನೀವು ಸಮರ್ಥರಾಗುವಂತೆ ದೇವರು ನೀಡುವ ಸಕಲ ಶಸ್ತ್ರಾಸ್ತ್ರಗಳನ್ನು ಧರಿಸಿಕೊಳ್ಳಿರಿ. ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರ ಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ. ಎಂದೇ ದೇವರು ಕೋಡುವ ಸಕಲ ಶಸ್ತ್ರಾಸ್ತ್ರಗಳೊಂದಿಗೆ ಸುಸಜ್ಜಿತರಾಗಿರಿ. ಆ ದುರ್ದಿನದಂದು ವೈರಿಗಳನ್ನು ಎದುರಿಸಲು ಆಗ ನೀವು ಶಕ್ತರಾಗುತ್ತೀರಿ. ಮಾತ್ರವಲ್ಲ, ಕಟ್ಟಕಡೆಯವರೆಗೆ ಹಿಮ್ಮಟ್ಟದೆ ನಿಲ್ಲುತ್ತೀರಿ; ಹಿಮ್ಮಟ್ಟದೆ ನಿಲ್ಲಲೇ ಬೇಕು. ಇದಕ್ಕಾಗಿ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಳ್ಳಿ, ನೀತಿಯೆಂಬ ರಕ್ಷಾಕವಚವನ್ನು ತೊಟ್ಟುಕೊಳ್ಳಿರಿ. ಶಾಂತಿಯ ಶುಭಸಂದೇಶವನ್ನು ಸಾರಲು ಶ್ರದ್ಧೆಯೆಂಬ ಪಾದರಕ್ಷೆಯನ್ನು ಮೆಟ್ಟಿಕೊಳ್ಳಿರಿ. ಸತತವೂ ವಿಶ್ವಾಸವೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಹೀಗೆ ಸೈತಾನನ ಅಗ್ನಿಬಾಣಗಳನ್ನೆಲ್ಲಾ ನಂದಿಸಲು ಶಕ್ತರಾಗುವಿರಿ. ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿ ; ಪವಿತ್ರಾತ್ಮರ ಕೊಡುಗೆಯಾದ ದೇವರ ವಾಕ್ಯವು ನಿಮಗೆ ಖಡ್ಗವಾಗಿರಲಿ. ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ. ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ತವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನಿನಗೋಸ್ಕರ ಪ್ರಾರ್ಥಿಸಿರಿ. ಶುಭಸಂದೇಶದ ನಿಮಿತ್ತ ನಾನು ಸೆರೆಯಾಳಾಗಿದ್ದರೂ ಪ್ರಭುವಿನ ರಾಯಭಾರಿಯಾಗಿದ್ದೇನೆ. ಎಂತಲೇ, ಈ ಶುಭಸಂದೇಶವನ್ನು ಧೈರ್ಯದಿಂದ ಸೂಕ್ತ ರೀತಿಯಲ್ಲಿ ಸಾರಲಾಗುವಂತೆ ನನಗಾಗಿ ಪ್ರಾರ್ಥಿಸಿರಿ.

ಕೀರ್ತನೆ 144:1, 2, 9-10
ಶ್ಲೋಕ: ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕ್ಕೆ

ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕ್ಕೆ|
ಕಲಿಸಿಹನು ಕದನ ಕೈಗೆ, ಕಾಳಗ ನನ್ನ ಬೆರಳಿಗೆ||

ಆತನೇ ನಮಗೆ ಬಂಡೆ, ಕೋಟೆ, ದುರ್ಗ, ಉದ್ಧಾರಕ|
ನನಗೆ ರಕ್ಷಾಕವಚ, ಆಶ್ರಯ, ಶತ್ರುವಿಧ್ವಂಸಕ||

ಹಾಡುವೆ ದೇವಾ, ನಿನಗೆ ನೂತನ ಕೀರ್ತನೆಯನು|
ಪಾಡುವೆ ನುಡಿಸುತ್ತಾ ದಶತಂತಿಯ ವೀಣೆಯನು||
ನೀನೆ ಅರಸುಗಳಿಗೆ ಜಯಪ್ರದನು|
ದಾಸ ದಾವೀದನನು ಬಿಡಿಸಿದವನು||

ಶುಭಸಂದೇಶ: ಲೂಕ 13:31-35

ಆ ಕಾಲದಲ್ಲಿ ಕೆಲವು ಮಂದಿ ಫರಿಸಾಯರು ಯೇಸುವಿನ ಬಳಿಗೆ ಬಂದು, " ಇಲ್ಲಿಂದ ಹೊರಟು ಹೋಗಿಬಿಡಿ, ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿದ್ದಾನೆ, " ಎಂದರು. ಅದಕ್ಕೆ ಯೇಸು, "ನೀವು ಹೋಗಿ ಆ ನರಿಗೆ ಹೀಗೆಂದು ತಿಳಿಸಿರಿ: ಇಂದು ಮತ್ತು ನಾಳೆ ದೆವ್ವಗಳನ್ನು ಬಿಡಿಸುತ್ತೇನೆ, ರೋಗಿಗಳನ್ನು ಗುಣಪಡಿಸುತ್ತೇನೆ, ಮೂರನೆಯ ದಿನ ನನ್ನ ಕಾರ್ಯ ಸಿದ್ಧಿಗೆ ಬರುವುದು. ಹೇಗೂ ಇಂದು, ನಾಳೆ ಮತ್ತು ನಾಡಿದ್ದು ನಾನು ನನ್ನ ಮಾರ್ಗವನ್ನು ಮುಂದುವರಿಸಬೇಕು. ಪ್ರವಾದಿಯಾದವನು ಜೆರುಸಲೇಮಿನ ಹೊರಗೆ ಕೊಲೆಗೀಡಾಗುವುದು ಸಲ್ಲದು. ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ‌. ಆದರೆ ನೀನು ಒಪ್ಪಲಿಲ್ಲ. ಇಗೋ, ನಿಮ್ಮ ದೇವಾಲಯ ಪಾಳು ಬೀಳುವುದು. 'ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು, ' ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಕಾಣಲಾರಿರಿ, ಎಂಬುದು ನಿಶ್ಚಯ, " ಎಂದರು.

18.10.22 - ಸಂತ ಸ್ಮರಣೆ - ಸಂತ ಲೂಕ - St.Luke


ಹೊಸ ಒಡಂಬಡಿಕೆಯ  ಬಹುದೊಡ್ಡ ಭಾಗವನ್ನು ಬರೆದವನು ಸಂತ ಲೂಕ. "ನಮ್ಮ ಪ್ರಿಯ ವೈದ್ಯನಾದ ಲೂಕ ಎಂಬ ಸಂತ ಪೌಲನ ಮಾತಿನ ಮೂಲಕ ಲೂಕನ ಪರಿಚಯವಾಗುತ್ತದೆ.

(ಕೊಲೊಸ್ಸೆ 04:14). ಲೂಕ ಗ್ರೀಕ್ ಮೂಲದವ, ಅನ್ಯಮತಸ್ಥನಾಗಿದ್ದ ಎನ್ನಲಾಗಿದೆ. ಅಂತಿಯೋಕ್ಯ ಅವನ ಜನ್ಮಸ್ಥಳ ಎಂದೂ ಹೇಳಲಾಗಿದೆ.  ಸಂತ ಪೌಲ ತನ್ನ ಎರಡನೇ ಧರ್ಮಪ್ರಸಾರ ಪ್ರಯಾಣದಲ್ಲಿ ಅನಾರೋಗ್ಯದ ಸಂದರ್ಭದಲ್ಲಿ ಈ ವೈದ್ಯನನ್ನು ಬೇಟಿಯಾದ. ಈ ಬೇಟಿಯ ನಂತರ  ಲೂಕನನ್ನು 51ರಲ್ಲಿ ಟ್ರೊವಾಸ್ ಎಂಬ ಸ್ಥಳದಲ್ಲಿ ಕ್ರೈಸ್ತಧರ್ಮಕ್ಕೆ ಮಾನಸಾಂತ ರಿಸಿದ ಎಂಬ ನಂಬಿಕೆಯಿದೆ.

ಪ್ರೇಷಿತರ ಕಾರ್ಯಕಲಾಪಗಳಲ್ಲಿ ಉಲ್ಲೇಖವಾಗಿರುವ ಪೌಲನ ಎರಡನೇ ಧರ್ಮಪ್ರಸಾರ ಪ್ರಯಾಣದಲ್ಲಿ ಲೂಕನು ಅವನನ್ನು ಭೇಟಿಯಾಗಿ ಅವರೊಂದಿಗೆ ಫಿಲಿಪ್ಪಿಯಲ್ಲಿ ಕೆಲವು ವರ್ಷ ಇರುತ್ತಾನೆ. ಪೌಲ ಮೂರನೇ ಧರ್ಮಪ್ರಸಾರ ಪ್ರಯಾಣ ಆರಂಭಿಸಿದಾಗ ಅವರೊಂದಿಗೆ ಜೆರುಸಲೇಮಿಗೆ ಬಂದು ಸೆಜರೀಯದಲ್ಲಿ ಪೌಲ್ ಬಂಧನ ಕ್ಕೊಳಗಾದಾಗ ಅವನೊಂದಿಗೆ ಇರುತ್ತಾನೆ. ಈ ಎರಡು ವರ್ಷಗಳ ಕಾಲದಲ್ಲಿ, ಯೇಸುವನ್ನು ಕಂಡಿದ್ದ, ಅವರೊಂದಿಗೆ ಒಡನಾಡಿದ್ದ ಜನರನ್ನು ಕಂಡು, ಅವರನ್ನು ಸಂದರ್ಶಿಸಿ ಏಸುವಿನ ಬಗ್ಗೆ ಸಾಕಷ್ಟು ಮಾಹಿತಿ ಕಲೆಹಾಕಿರಬೇಕು. ಪೌಲ್ ರೋಮ್ ಗೆ ಬೆಳೆಸಿದ ಅಪಾಯಕಾರಿ ಪ್ರಯಾಣದಲ್ಲೂ ಲೂಕ ಅವನೊಂದಿಗೆ ಇರುತ್ತಾನೆ. ಕ್ರಿ.ಶ. 61 ರಲ್ಲಿ ಪೌಲ ರೋಮ್ನಲ್ಲಿ ಬಂಧಿತನಾದಾಗಲೂ ಎಲ್ಲರೂ ಪೌಲನನ್ನು ತೊರೆದಾಗ ಲೂಕ ಮಾತ್ರ ಅವನನ್ನು ಬಿಟ್ಟು ಹೋಗುವುದಿಲ್ಲ. "ಲೂಕ ಮಾತ್ರ ನನ್ನ ಜೊತೆಯಿದ್ದಾನೆ ಎಂದು ಪೌಲನೇ ಹೇಳುತ್ತಾನೆ" ಎಂದು ಪೌಲನೇ ಹೇಳುತ್ತಾನೆ. (2ತಿಮೋಥಿ4:11).

 ಲೂಕ ಅನ್ಯಮತಸ್ಥನಾಗಿದ್ದರಿಂದಲೋ ಏನೋ ಅನ್ಯಜನರೊಂದಿಗೆ ದುಡಿದು ಪೌಲನನ್ನು ಸೇರಿಕೊಂಡಿರಬೇಕು. ತನ್ನ ಶುಭಸಂದೇಶವನ್ನು ಅನ್ಯಜನರಿಗೆ ಗ್ರೀಕ್ ಭಾಷೆಯಲ್ಲಿ ಉತ್ತಮ ಶೈಲಿ ಮತ್ತು ನಾಜೂಕಾದ ರೀತಿಯಲ್ಲಿ ಬರೆಯುತ್ತಾರೆ. ಈತ ಪೌಲನಿಂದ ಎಷ್ಟು ಪ್ರಭಾವಗೊಂಡಿದ್ದ ಎಂದರೆ ಸಂತ ಜೆರೋಂ ಮತ್ತು ಜಾನ್ ಕ್ರಿಸಾಸ್ಟಮ್ ಲೂಕನ ಶುಭ ಸಂದೇಶವನ್ನು 'ಸಂತ ಪೌಲರ ಶುಭ ಸಂದೇಶ' ಎಂದು ಕರೆಯುತ್ತಾರೆ.

ಲೂಕ ಶುಭ ಸಂದೇಶ ಬರೆಯುವಷ್ಟರಲ್ಲಿ ಮತ್ತಾಯ ಮತ್ತು ಮಾರ್ಕನ ಶುಭಸಂದೇಶ ಈಗಾಗಲೇ ಚಾಲ್ತಿಯಲ್ಲಿತ್ತು. ಹಲವು ಜನರ ಅನುಭವ, ಮಾತೆ ಮೇರಿಯದೇ ಅನುಭವ ಈ ಶುಭಸಂದೇಶದಲ್ಲಿದೆ ಎನ್ನಲಾಗಿದೆ. ಸಂತ ಲೂಕ ಮಾತೆ ಮೇರಿಯ ಭಾವಚಿತ್ರ ಚಿತ್ರಸಿದ್ದ ಎಂಬ ಪ್ರತೀತಿಯೂ ಇದೆ. ಲೂಕನ ಈ ವಿಶಿಷ್ಟ ಬರವಣಿಗೆ ಮತ್ತು ಅನುಭವವನ್ನು ಅವನ ಶುಭಸಂದೇಶದಲ್ಲಿಯೇ ಕಾಣಬಹುದು‌.

ಲೂಕನ ಶುಭ ಸಂದೇಶದಲ್ಲಿ ಹೆಚ್ಚುವರಿಯಾಗಿ ಆರು ಪವಾಡಗಳು ಮತ್ತು 15 ಸಾಮತಿಗಳ ಉಲ್ಲೇಖವಿದೆ. ಬಡವರು ಮತ್ತು ಸಾಮಾಜಿಕ ಕಾಳಜಿ ಯಿರುವ ಲೂಕನಲ್ಲಿ ಲಾಜರ್ ಮತ್ತು ಶ್ರೀಮಂತನ ಕಥೆ ಬರುತ್ತದೆ. ದೇವ ಮಾತೆಯ ಸಾಮಾಜಿಕ ನ್ಯಾಯದ 'ಸ್ತುತಿಗೀತೆ' ಬರುತ್ತದೆ. ಲೂಕ ಮಹಿಳೆಯರ ಬಗ್ಗೆ ವಿಶೇಷ ಕಾಳಜಿ ಇದ್ದುದ್ದರಿಂದ ಮಾತೆಮೇರಿ,ಎಲಿಜಬೆತ್

ಇವರ ಉಲ್ಲೇಖವಿದೆ. 'ನಮೋ ಮರಿಯಾ ವರಪ್ರಸಾದ ಪೂರ್ಣೆ' ಎಂಬ ಘೋಷಣೆ ಇದೆ. ದೇವರ ಕ್ಷಮೆ ಮತ್ತು ಪ್ರೀತಿಯ ಬಗ್ಗೆ ಲೂಕನದು ಅಪಾರ ನಂಬಿಕೆ. ಇಲ್ಲಿ ದುಂದುಗಾರ ಮಗನ ಬಗ್ಗೆ ಬರುತ್ತದೆ. ಸಿಮೋನ್ ಮನೆಯಲ್ಲಿ ಯೇಸುವಿನ ಪಾದ ಅಂಭ್ಯಂಜಿಸಿದ ಮಹಿಳೆಯ ಬಗ್ಗೆ ಬರೆಯುತ್ತಾರೆ.

 ಲೂಕನ ಮರಣದ ಬಗ್ಗೆ ನಮಗೆ ಸಾಕಷ್ಟು ಮಾಹಿತಿ ಇಲ್ಲ. ಪೌಲನು ಸಾವಿನ ನಂತರ ಲೂಕ ಏನು ಮಾಡಿದ, ಎಲ್ಲಿದ್ದ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಕೆಲವು ಬರಹಗಾರರು, ಲೂಕ  ಕೂಡ ರಕ್ತಸಾಕ್ಷಿಯಾದ ಎಂದರೆ, ಇನ್ನೂ ಕೆಲವರು ಆತ ಗ್ರೀಸ್ ನಲ್ಲಿ ಗಾ ಪ್ರದೇಶದಲ್ಲಿ ಬೋಧಿಸಿದ ಎನ್ನುತ್ತಾರೆ. ಮೊದಲ ಪರಂಪರೆಯ ಪ್ರಕಾರ ಲೂಕ ಗ್ರೀಸ್ ನಲ್ಲಿದ್ದು ತನ್ನ ಶುಭಸಂದೇಶ ಬರೆದ ನಂತರ 84ರಲ್ಲಿ ತೀರಿಕೊಂಡ. ಇನ್ನೊಂದು ಪರಂಪರೆಯ ಪ್ರಕಾರ ಲೂಕ ಡಾಲ್ ಮೇಷಿಯಾದಲ್ಲಿ (ಯುಗೋಸ್ಲಾವಿಯಾ) ಬೋಧನೆ ಮಾಡಿದ ನಂತರ ಗ್ರೀಸ್ನಲ್ಲಿ ರಕ್ತ ಸಾಕ್ಷಿಯಾದ. ಅವನ ಅವಶೇಷಗಳನ್ನು 360ರಲ್ಲಿ ಕಾನ್ಸ್ಟಾಂಟಿನೋಪಲ್ ಗೆ ತರಲಾಯಿತು.

 ಲೂಕನ ಚಿತ್ರ ಒಂದು ಎತ್ತು ಮತ್ತು ಕರುವಿನ ಜೊತೆಗೂಡಿ ಇರುತ್ತದೆ. ಕ್ರಿಸ್ತ ಬಲಿಯರ್ಪಣೆಯಾದ ಸಂಕೇತವಿದು. ಲೂಕ ವೈದ್ಯರುಗಳ ಪಾಲಕ.

17.10.22 - ಸಂತ ಸ್ಮರಣೆ - ಅಂತಿಯೋಕ್ಯದ ಸಂತ ಇಗ್ನೇಷಿಯಸ್ - St. Ignatius of Antioch


ಪ್ರಥಮ ಧರ್ಮಸಭೆಯ ಪ್ರೇಷಿತ, ಪ್ರೇಷಿತರ ಸಮಕಾಲೀನ ಮತ್ತು ಉತ್ತರಾಧಿಕಾರಿ, ಶುಭಸಂದೇಶ ಕರ್ತೃ ಯೊವಾನ್ನನ ಶಿಷ್ಯನಾಗಿದ್ದ ಅಂತಿಯೋಕ್ಯದ ಸಂತ ಇಗ್ನೇಷಿಯಸ್ ಹುಟ್ಟಿದ್ದು ಬೆಳೆದದ್ದು ಸಿರಿಯಾ ದೇಶದಲ್ಲಿ. ಜೆರುಸಲೇಮಿನಿಂದ ಪ್ರಭುವಿನ ಶುಭಸಂದೇಶ ಮೊದಲು ತಲುಪಿದ್ದು ಅಂತಿಯೋಕ್ಯಕ್ಕೆ. ರೋಮ್ ಕ್ರೈಸ್ತಧರ್ಮದ ಕೇಂದ್ರವಾಗುವ ಮೊದಲು ಮತ್ತು ನಂತರವೂ ಅಂತಿಯೋಕ್ಯ ಪ್ರಮುಖ ಕೇಂದ್ರವಾಗಿತ್ತು. ಈ ಅಂತಿಯೋಕ್ಯದ ಮೂರನೇ ಧರ್ಮಧ್ಯಕ್ಷರಾಗಿ ಸಂತ ಇಗ್ನೇಷಿಯಸ್ ನೇಮಿಸಲ್ಪಟ್ಟಿದ್ದರು. ಕ್ರಿ.ಶ. 69ರಲ್ಲಿ ಪ್ರೇಷಿತ ಜಗದ್ಗುರು ಪೇತ್ರರೇ ಇವರಿಗೆ ಧರ್ಮಾಧ್ಯಕ್ಷ ದೀಕ್ಷೆ ನೀಡಿದ್ದರು.

ಕ್ರಿ.ಶ. 94ರಿಂದ 96ರ ತನಕ ಚಕ್ರವರ್ತಿ ಡೊಮಿಷಿಯನ್ ಕ್ರೈಸ್ತರಿಗೆ ಚಿತ್ರಹಿಂಸೆ ನೀಡಲಾರಂಭಿಸಿದ. ಆಗಷ್ಟೇ ಕ್ರೈಸ್ತರಾಗಿ ವಿಶ್ವಾಸದಲ್ಲಿ ಬೇರೂರುತ್ತಿದ್ದ ಕ್ರೈಸ್ತರು ಛಿದ್ರಗೊಳ್ಳಲಾರಂಭಿಸಿದರು. ಈ ಸಂದರ್ಭದಲ್ಲಿ ಸಂತ ಇಗ್ನೇಷಿಯಸ್ ಅವರಿಗೆ ಸಾಂತ್ವನ ನೀಡುತ್ತಾ, ಧೈರ್ಯ ಮತ್ತು ಭರವಸೆಯನ್ನು ತುಂಬಿ ಅವರನ್ನು ಮುನ್ನಡೆಸಿದರು. ಪ್ರಾಣ ಹೋದರೂ ಧರ್ಮಬಿಡಬಾರದೆಂಬುದು ಅವರ ನಂಬಿಕೆಯಾಗಿತ್ತು. ಇವರ ಧೈರ್ಯ ಮತ್ತು ಕ್ರೈಸ್ತರ ಒಗ್ಗಟ್ಟಿನಿಂದ ಕೆಲಕಾಲ ಹಿಂಸೆ ನಿಂತು ಶಾಂತಿ ನೆಲೆಸಿತ್ತು.

ಚಕ್ರವರ್ತಿ ಟ್ರಾಜನ್ ಅಧಿಕಾರಕ್ಕೆ ಬಂದ ಕೂಡಲೇ ಕ್ರಿ.ಶ. 98ರಲ್ಲಿ ಮತ್ತೆ ಕ್ರೈಸ್ತರ ಚಿತ್ರಹಿಂಸೆ ಪ್ರಾರಂಭವಾಯಿತು. ಮತ್ತೆ ಸಂತ ಇಗ್ನೇಷಿಯಸ್ ರ ಮೇಷ ಪಾಲಕ ಕರ್ತವ್ಯಗಳು ಚುರುಕುಗೊಂಡವು. ಜನರಲ್ಲಿ ಹುಮ್ಮಸ್ಸು ತುಂಬುತ್ತಾ ಕ್ರೈಸ್ತ ಸಮುದಾಯದ ಒಗ್ಗಟ್ಟು ಕಾಯ್ದುಕೊಳ್ಳುವ ಕೆಲಸದಲ್ಲಿ ಸಂಪೂರ್ಣ ನಿರತರಾಗಿ ಹೋದರು. ಈ ಜನರಲ್ಲಿ ದೈವ ವಿಶ್ವಾಸ ತುಂಬುತ್ತಾ ಅವರು ಹೇಳಿದ್ದೇನೆಂದರೆ: "ಒಬ್ಬ ಕ್ರೈಸ್ತ ತನಗಾಗಿ ಮಾತ್ರ ಜೀವಿಸುವುದಿಲ್ಲ, ಆತ ದೇವರಿಗೆ ಸೇರಿದವನಾಗಿ ಬಾಳುತ್ತಾನೆ."

ಈ ಚಿತ್ರಹಿಂಸೆ ಹೀಗೆ ಮುಂದುವರೆದ ಸಂದರ್ಭದಲ್ಲಿ ಚಕ್ರವರ್ತಿಯ ಒಂದು ಆಜ್ಞೆಯನ್ನು ಕ್ರೈಸ್ತರು ಧಿಕ್ಕರಿಸಬೇಕೆಂದು ಧರ್ಮಾಧ್ಯಕ್ಷರು ಆದೇಶಿಸುತ್ತಾರೆ. ಇದರಿಂದ ಕುಪಿತರಾದ ಆಡಳಿತವರ್ಗ ಧರ್ಮಧ್ಯಕ್ಷರನ್ನು ಬಂಧಿಸಿ, ಆಗ ಅಂತಿಯೋಕ್ಯಕ್ಕೆ ಬಂದಿದ್ದ ಚಕ್ರವರ್ತಿ ಟ್ರಾಜನ್ ಬಳಿ ಕರೆದೊಯ್ಯುತ್ತಾರೆ. ಯಾವುದೇ ಭಯ ಭೀತಿ ಇಲ್ಲದ ಇಗ್ನೇಶಿಯಸ್ ಅರಸನ ತುಚ್ಛ ಮತ್ತೊಂದಕ್ಕೆ ಉತ್ತರಿಸುತ್ತಾ ಹೀಗೆನ್ನುತ್ತಾರೆ: "ಕ್ಷುದ್ರ ಮನುಷ್ಯ ಎಂದು ಎಂದಿಗೂ ನನ್ನ ಕರೆಯಬೇಡಿ, ಯಾಕೆಂದರೆ ನನ್ನೊಳಗೆ ದೇವರಿದ್ದಾರೆ." ಇವರ ದಿಟ್ಟ ಉತ್ತರ, ಅಂಜಿಕೆಯಿಲ್ಲದ  ಮಾತನ್ನು ಕೇಳಿಸಿಕೊಂಡ ಟ್ರಾಜನ್ ಇವರನ್ನು ರೋಮ್ ಗೆ ಕೊಂಡೊಯ್ದು ಕೊಲೆಸ್ಸಿಯಮ್ ನಲ್ಲಿ ಹುಲಿ ಸಿಂಹಗಳ ಬಾಯಿಗೆ ಹಾಕಿರಿ ಎಂದು ಆಜ್ಞಾಪಿಸುತ್ತಾನೆ.

62ನೇ ವಯಸ್ಸಿನಲ್ಲಿ ಇಗ್ನೇಷಿಯಸ್ ರನ್ನು ದೂರದ ರೋಮ್ ಗೆ ಕೊಂಡೊಯ್ಯಲಾಗುತ್ತದೆ. ದೀರ್ಘ ಪ್ರಯಾಣ, ದಿನಗಟ್ಟಲೆ ನಡೆ ಸಂತ ಇಗ್ನೇಷಿಯಸ್ ರಿಗೆ ಸೌಭಾಗ್ಯವಾಗಿ ಮಾರ್ಪಡುತ್ತದೆ. ದಾರಿಯುದ್ದಕ್ಕೂ ನೂರಾರು ಊರು ಮತ್ತು ಹಳ್ಳಿಗಳಿಂದ ಕ್ರೈಸ್ತರು ಬಂದು ಧರ್ಮಧ್ಯಕ್ಷರನ್ನು ಕಾಣುತ್ತಾರೆ. ಏಷಿಯಾ ಮೈನರ್, ಉತ್ತರ ಗ್ರೀಸ್ ಪ್ರದೇಶಗಳ ಊರೂರೇ ದಾರಿಯಲ್ಲಿ ಸೇರಿಕೊಳ್ಳುತ್ತದೆ. ದೂರದ ಊರುಗಳಿಂದ ಕ್ರೈಸ್ತ ಧರ್ಮ ಸಭೆಗಳು ಇವರಿಗೆ ವಂದನೆ ಸಲ್ಲಿಸಲು, ಸಾಂತ್ವನ ಹೇಳಿ ಕ್ರೈಸ್ತ ವಿಶ್ವಾಸ ಪ್ರಕಟಿಸಲು ಪ್ರತಿನಿಧಿಗಳನ್ನು ಕಳಿಸಿಕೊಡುತ್ತದೆ. ಸ್ಮರ್ನಾ ಎಂಬ ಊರಿನಲ್ಲಿ ಸಂತ ಪೋಲಿಕಾಪ್೯ ಇವರನ್ನು ಭೇಟಿ ಯಾಗುತ್ತಾರೆ. ಹೀಗೆ ಇದೊಂದು ಬಂಧಿಯೊಬ್ಬನ ಪ್ರಯಾಣ ಆಗುವುದಿಲ್ಲ, ಕ್ರಿಸ್ತನ ಶುಭಸಂದೇಶ ಪ್ರಸಾರದ ಪ್ರಯಾಣವಾಗುತ್ತದೆ.

ಈ ಪ್ರಯಾಣದಲ್ಲಿ ಸಂತ ಇಗ್ನೇಷಿಯಸ್ ಬರೆದ 7 ಪತ್ರಗಳು ಪ್ರಸಿದ್ಧವಾಗಿವೆ. ಏಷಿಯಾ ಮೈನರ್ ಗೆ ಬರೆದ 5 ಪತ್ರಗಳು ಅಲ್ಲಿನ ಕ್ರೈಸ್ತ ಭಕ್ತರನ್ನು ಉದ್ದೇಶಿಸಿ ಬರೆದ ಪಾಲನಾ ಪತ್ರಗಳಾಗಿವೆ. ಕ್ರೈಸ್ತರು ತಾವು ನಂಬಿದ್ದ ದೇವರಿಗೆ ಮತ್ತು ಆತ ಕಳುಹಿಸಿದ ಪ್ರತಿನಿಧಿಗಳಿಗೆ ತೋರಿಸಬೇಕಾದ ನಿಷ್ಠೆಯ ಬಗ್ಗೆ ಬರೆಯುತ್ತಾರೆ. ಆರನೆಯ ಪತ್ರ ಮತ್ತು ಏಳನೆಯ ಪತ್ರ ರೋಮ್ ನಲ್ಲಿರುವ ಕ್ರೈಸ್ತರಿಗೆ ಬರೆಯಲ್ಪಟ್ಟಿದ್ದು. ಯಾವುದೇ ಕಾರಣಕ್ಕೂ ತಾವು ರಕ್ತಸಾಕ್ಷಿ ಯಾಗುವುದನ್ನು ತಪ್ಪಿಸಿ, ಬಿಡುಗಡೆ ಮಾಡಿಸಲು ಪ್ರಯತ್ನಿಸಬಾರದು ಎಂದು ಮನವಿ ಮಾಡಿದ ಪತ್ರ ಇದು.

ಧರ್ಮ ಮತ್ತು ವಿಶ್ವಾಸಕ್ಕಾಗಿ ಹುತಾತ್ಮರಾಗಲು ಸಂತ ಇಗ್ನೇಷಿಯಸ್ ಸಿದ್ಧರಾಗುತ್ತಾರೆ. 'ತಾನು ದೇವರ ಗೋಧಿ ಕಾಳಾಗಿದ್ದು, ಕಾಡು ಪ್ರಾಣಿಗಳ ಹಲ್ಲುಗಳಿಂದ ಅರೆಯಲ್ಪಟ್ಟು, ಯೇಸುವಿನ ಪೂಜ್ಯ ರೊಟ್ಟಿ ಯಾಗುವುದು' ತನ್ನ ಬಯಕೆಯೆಂದು  ಹೇಳುತ್ತಾರೆ. ಸಂತ ಇಗ್ನೇಷಿಯಸ್ ರ ಹಬ್ಬದ ಪರಮ ಪ್ರಸಾದ ಪ್ರಾರ್ಥನೆಯಲ್ಲಿ ಅವರ ಈ ಮಾತಿದೆ. ಕೊನೆಗೆ ಮ್ಯಾಕ್ಸಿಮಸ್ ಸರ್ಕಸ್ ನಲ್ಲಿ ಎರಡು ಸಿಂಹಗಳ ಬಾಯಿಗೆ ತಳ್ಳಲ್ಪಟ್ಟು 🕯️ಸಂತ ಇಗ್ನೇಷಿಯಸ್ ಆಹಾರವಾಗುತ್ತಾರೆ. ಅವರ ಶಿಷ್ಯರು ಅವರ ಅಳಿದುಳಿದ ದೇಹದ ಭಾಗಗಳನ್ನು ತಂದು ಸಮಾಧಿ ಮಾಡುತ್ತಾರೆ. ಗಂಟಲು ಬೇನೆಯುಳ್ಳವರು ಸಂತ ಇಗ್ನೇಷಿಯಸರ ಬಳಿ ಪ್ರಾರ್ಥನೆ ಮಾಡುತ್ತಾರೆ.

26.10.22

ಮೊದಲನೇ ವಾಚನ: ಎಫೆಸಿಯರಿಗೆ: 6: 1-9

ಮಕ್ಕಳೇ, ಪ್ರಭುವಿನಲ್ಲಿ ನಿಮ್ಮ ತಂದೆತಾಯಿಗಳ ಮಾತಿಗೆ ಕಿವಿಗೊಡಿ. ಇದು ಧರ್ಮಸಮ್ಮತವಾದುದು. ’ನಿನ್ನ ತಂದೆತಾಯಿಯನ್ನು ಗೌರವಿಸು’ ಎಂಬುದು ವಾಗ್ದಾನದಿಂದ ಕೂಡಿದ ಮೊದಲನೇಯ ಆಜ್ನೆ. ಇದನ್ನು ಪಾಲಿಸಿದರೆ ನಿನಗೆ ಶುಭವಾಗುವುದು; ನೀನು ಬಹುಕಾಲ ಬಾಳುವೆ. ತಂದೆತಾಯಿಗಳೇ ನಿಮ್ಮ ಮಕ್ಕಳನ್ನು ಕೆಣಕಿ ಕೆರಳಿಸ ಬೇಡಿ. ಪ್ರತಿಯಾಗಿ ಪ್ರಭುವಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಅವರಿಗೆ ಶಿಕ್ಷಣವನ್ನು ಕೊಟ್ಟು ಶಿಸ್ತಿನಿಂದ ಸಾಕಿಸಲಹಿರಿ. ಸೇವಕರೇ, ನೀವು ಮಾಡುತ್ತಿರುವುದು ಕ್ರಿಸ್ತಯೇಸುವಿನ ಸೇವೆಯನ್ನೇ ಎಂದು ಭಾವಿಸಿ, ನಿಮ್ಮ ಲೌಕಿಕ ಧಣಿಗಳಿಗೆ ಭಯಭಕ್ತಿಯಿಂದಲೂ ಏಕ ಮನಸ್ಸಿನಿಂದಲೂ ವಿಧೇಯರಾಗಿರಿ. ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಯನ್ನು ಮಾಡದಿರಿ. ಕ್ರಿಸ್ತಯೇಸುವಿನ ದಾಸರಂತೆ ದೈವೇಚ್ಚೆಯನ್ನು ಹೃದಯ ಪೂರ್ವಕವಾಗಿ ಈಡೇರಿಸಿರಿ. ನೀವು ಮಾಡುವುದು ಜನಸೇವೆಯಲ್ಲ, ಪ್ರಭುಸೇವೆ ಎಂದೇ ಭಾವಿಸಿ ನಗುಮುಖದಿಂದ ಸೇವೆಮಾಡಿ. ದಾಸ್ಯದಲ್ಲಿರುವವನಾಗಲಿ, ಸ್ವತಂತ್ರ ಉಳ್ಳವನಾಗಿರಲಿ ಸತ್ಕಾರ್ಯವನ್ನು ಮಾಡುವವನು ಪ್ರಭುವಿನಿಂದ ತಕ್ಕ ಪ್ರತಿಫಲವನ್ನು ಪಡೆದೇ ತೀರುವನೆಂದು ನೀವು ಬಲ್ಲಿರಿ. ಯಜಮಾನರೇ, ನೀವು ಕೂಡ ನಿಮ್ಮ ಸೇವಕರೊಡನೆ ಯೋಗ್ಯವಾದ ರೀತಿಯಲ್ಲಿ ವರ್ತಿಸಿರಿ. ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿ. ಸ್ವರ್ಗ ಲೋಕದಲ್ಲಿ ನಿಮಗೂ ಅವರಿಗೂ ಒಬ್ಬ ಯಜಮಾನ ಇರುತ್ತಾನೆ. ಆತ ಪಕ್ಷಪಾತಿಯಲ್ಲ ಎಂಬುದನ್ನು ಮರೆಯದಿರಿ.

ಕೀರ್ತನೆ: 145: 10-13ಎಬಿ, 13ಸಿಡಿ-14
ಶ್ಲೋಕ: ನುಡಿಯಲಿ ಪ್ರಭು ಸದಾ ಪ್ರಾಮಾಣಿಕರು.

ಶುಭಸಂದೇಶ: ಲೂಕ: 13: 22-30

ಯೇಸುಸ್ವಾಮಿ ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಉಪದೇಶಮಾಡಿಕೊಂಡು ಜೆರುಸಲೇಮಿನತ್ತಾ ಪ್ರಯಾಣ ಮಾಡುತ್ತಿದ್ದರು. ಆಗ ಒಬ್ಬನು, "ಸ್ವಾಮಿ, ಜೀವೋದ್ಧಾರ ಹೊಂದುವವರು ಕೆಲವರು ಮಾತ್ರವೋ?" ಎಂದು ವಿಚಾರಿಸಿದನು. ಆಗ ಯೇಸು ಜನರಿಗೆ, "ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವ ಪ್ರಯತ್ನ ಮಾಡಿ. ಏಕೆಂದರೆ ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು. ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ’ಸ್ವಾಮಿ, ನಮಗೆ ಬಾಗಿಲು ತೆರೆಯಿರಿ, ಎಂದು ನೀವು ಕೇಳುವಿರಿ. ಅದಕ್ಕೆ ಅವನು, ’ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು. ಆಗ ನೀವು, ’ನಿಮ್ಮೊಂದಿಗೆ ನಾವು ಊಟ ಮಾಡಿದ್ದೇವೆ, ಪಾನಮಾಡಿದ್ದೇವೆ; ನೀವು ನಮ್ಮ ಬೀದಿಗಳಲ್ಲಿ ಉಪದೇಶ ಮಾಡಿದ್ದೀರಿ,’ ಎಂದು ಹೇಳಲಾರಂಭಿಸುವಿರಿ. ಆದರೆ ಅವನು ಪುನಃ, ’ನೀವು ಎಲ್ಲಿಯವರೋ ನಾನರಿಯೇ. ಅಕ್ರಮಿಗಳೇ, ಎಲ್ಲರೂ ನನ್ನಿಂದ ತೊಲಗಿರಿ,’ ಎಂದು ಸ್ಪಷ್ಟವಾಗಿ ನುಡಿಯುವನು. ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲುಕಡಿತವೇನು! ಚತುರ್ದಿಕ್ಕುಗಳಿಂದಲೂ ಜನರು ಬಂದು, ದೇವರ ಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು. "ಇಗೋ, ಕಡೆಯವರಲ್ಲಿ ಕೆಲವರು ಮೊದಲಿಗರಾಗುವರು. ಮೊದಲಿಗರಲ್ಲಿ ಕೆಲವರು ಕಡೆಯವರಾಗುವರು," ಎಂದರು.

25.10.22 - “ದೇವರ ಸಾಮ್ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ಯಾವುದಕ್ಕೆ ಹೋಲಿಸಲಿ?"

 ಮೊದಲನೇ ವಾಚನ: ಎಫೆಸಿಯರಿಗೆ 5:21-33 

ಮಹಿಳೆಯರೇ, ನೀವು ಪ್ರಭುವಿಗೆ ಹೇಗೋ ಹಾಗೆ ನಿಮ್ಮ ನಿಮ್ಮ ಪತಿಯರಿಗೆ ವಿಧೇಯರಾಗಿರಿ.  ಕ್ರಿಸ್ತಯೇಸು ಧರ್ಮಸಭೆಯೆಂಬ ದೇಹಕ್ಕೆ ಶಿರಸ್ಸಾಗಿರುವ ಹಾಗೆಯೇ, ಪತಿಯಾದವನು ತನ್ನ ಪತ್ನಿಗೆ ಶಿರಸ್ಸಾಗಿರುತ್ತಾನೆ. ಕ್ರಿಸ್ತಯೇಸುವೇ ಧರ್ಮಸಭೆಯ ಉದ್ಧಾರಕ.  ಧರ್ಮಸಭೆ ಕ್ರಿಸ್ತಯೇಸುವಿನ ಆಡಳಿತಕ್ಕೆ ಒಳಪಟ್ಟಿರುವಂತೆ ಪತ್ನಿಯೂ ಸಹ ಎಲ್ಲಾ ವಿಷಯಗಳಲ್ಲೂ ತನ್ನ ಪತಿಯ ಆಡಳಿತಕ್ಕೆ ಒಳಪಟ್ಟಿರಬೇಕು. ಪುರುಷರೇ, ಕ್ರಿಸ್ತಯೇಸು ಧರ್ಮಸಭೆಯನ್ನು ಪ್ರೀತಿಸಿದ ಪ್ರಕಾರ ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಧರ್ಮಸಭೆಯನ್ನು ಪಾವನಗೊಳಿಸುವುದಕ್ಕಾಗಿ ಕ್ರಿಸ್ತಯೇಸು ತಮ್ಮ ಪ್ರಾಣವನ್ನೇ ಕೊಟ್ಟರು. ವಾಕ್ಯೋಪದೇಶದಿಂದಲೂ ಜಲಸ್ನಾನದಿಂದಲೂ ಅದನ್ನು ಶುದ್ಧೀಕರಿಸಿದರು.  ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.  ಹಾಗೆಯೇ ಪುರುಷನು ಸಹ ತನ್ನ ಶರೀರವನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನು ಪ್ರೀತಿಸಲಿ. ತನ್ನ ಪತ್ನಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.  ಸ್ವಂತ ಶರೀರವನ್ನು ಯಾರೂ ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ಅದನ್ನು ಪೋಷಿಸಿ ಪಾಲನೆ ಮಾಡುತ್ತಾನೆ. ಧರ್ಮಸಭೆಯನ್ನು ಸಹ ಕ್ರಿಸ್ತಯೇಸು ಹೀಗೆಯೇ ಕಾಪಾಡುತ್ತಾರೆ.  ನಾವು ಆ ಸಭೆಯ ಅಂಗಗಳು.  ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಈ ಕಾರಣದಿಂದ ಪುರುಷನಾದವನು ತನ್ನ ತಂದೆತಾಯನ್ನು ಬಿಟ್ಟು ತನ್ನ ಪತ್ನಿಯೊಡನೆ ಒಂದು ಕೂಡುವನು ಮತ್ತು ಅವರಿಬ್ಬರೂ ಒಂದೇ ಶರೀರವಾಗಿರುವರು.”  ಈ ಗಹನವಾದ ರಹಸ್ಯವು ಯೇಸುಕ್ರಿಸ್ತರಿಗೂ ಧರ್ಮಸಭೆಗೂ ಇರುವ ಸಂಬಂಧವನ್ನು ಸೂಚಿಸುತ್ತದೆ ಎಂಬುದೇ ನನ್ನ ಅಭಿಪ್ರಾಯ.  ಆದರೆ ಇದು ನಿಮಗೂ ಅನ್ವಯಿಸುತ್ತದೆ. ಪ್ರತಿಯೊಬ್ಬ ಪುರುಷನು ತನ್ನನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನೂ ಪ್ರೀತಿಸಲಿ ಮತ್ತು ಪ್ರತಿಯೊಬ್ಬ ಸ್ತ್ರೀಯು ತನ್ನ ಪತಿಯ ವಿಷಯದಲ್ಲಿ ಗೌರವದಿಂದ ನಡೆದುಕೊಳ್ಳಲಿ. 

ಕೀರ್ತನೆ: 128:1-2, 3, 4-5 

ಶ್ಲೋಕ: ಹೊಂದುವನು ಆಶೀರ್ವಾದವನು, ಪ್ರಭುವಿನಲಿ ಭಯಭಕ್ತಿಯುಳ್ಳವನು. 

ಶುಭಸಂದೇಶ: ಲೂಕ 13:18-21 

ಆಗ ಯೇಸುಸ್ವಾಮಿ, “ದೇವರ ಸಾಮ್ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ಯಾವುದಕ್ಕೆ ಹೋಲಿಸಲಿ? ಅದು ಒಂದು ಸಾಸಿವೆಕಾಳಿನಂತೆ ಇದೆ. ಒಬ್ಬನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಬಿತ್ತಿದನು. ಅದು ಬೆಳೆದು ಮರವಾಯಿತು. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಮಾಡತೊಡಗಿದವು,” ಎಂದರು. ಪುನಃ ಯೇಸುಸ್ವಾಮಿ, “ದೇವರ ಸಾಮ್ರಾಜ್ಯವನ್ನು ಯಾವುದಕ್ಕೆ ಹೋಲಿಸಲಿ?  ಅದು ಹುಳಿಹಿಟ್ಟಿನಂತೆ ಇದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು,” ಎಂದರು. 

24.10.22 - “ನೋಡಮ್ಮ, ನೀನು ವ್ಯಾಧಿಯಿಂದ ಬಿಡುಗಡೆಯಾದೆ,”

 ಮೊದಲನೇ ವಾಚನ: ಎಫೆಸಿಯರಿಗೆ  4:32--5:8 


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ. ದೇವರ ಅಕ್ಕರೆಯ ಮಕ್ಕಳು ನೀವು. ಆದ್ದರಿಂದ ದೇವರನ್ನೇ ಅನುಸರಿಸಿ ಬಾಳಿರಿ. ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ. ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು. ಹೊಲಸು ಮಾತುಗಳು, ಬರಡು ನುಡಿಗಳು, ಕುಚೋದ್ಯ ಪದಗಳು ಯಾವುವೂ ನಿಮಗೆ ತರವಲ್ಲ. ಪ್ರತಿಯಾಗಿ, ದೇವರಿಗೆ ನೀವು ಕೃತಜ್ಞತಾ ಸ್ತುತಿಮಾಡಿರಿ. ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತ ಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ. ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ. ಅಂಥವರ ಸಹವಾಸವೇ ನಿಮಗೆ ಬೇಡ. ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ; ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ. 

ಕೀರ್ತನೆ: 1:1-2, 3, 4, 6 

ಶ್ಲೋಕ: ಪ್ರಭುವಿನಲ್ಲೇ ಭರವಸೆ ಇತ್ತು ನಡೆವಾತನು ಧನ್ಯನು. 

ಶುಭಸಂದೇಶ: ಲೂಕ 13:10-17 

ಒಂದು ಸಬ್ಬತ್‍ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರದಲ್ಲಿ ಬೋಧಿಸುತ್ತಿದ್ದರು.  ಹದಿನೆಂಟು ವರ್ಷಗಳಿಂದ ದೆವ್ವಪೀಡಿತಳಾಗಿ ನರಳುತ್ತಿದ್ದ ಒಬ್ಬ ಮಹಿಳೆ ಅಲ್ಲಿದ್ದಳು. ಆಕೆ ಒಬ್ಬ ಗೂನಿ; ನೆಟ್ಟಗೆ ನಿಲ್ಲಲು ಸ್ವಲ್ಪವೂ ಆಗುತ್ತಿರಲಿಲ್ಲ.  ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು, “ನೋಡಮ್ಮ, ನೀನು ವ್ಯಾಧಿಯಿಂದ ಬಿಡುಗಡೆಯಾದೆ,” ಎಂದು ಹೇಳಿ,  ಆಕೆಯ ಮೇಲೆ ತಮ್ಮ ಹಸ್ತಗಳನ್ನಿಟ್ಟರು. ತಕ್ಷಣವೇ ಆಕೆ ನೆಟ್ಟಗಾದಳು ಮತ್ತು ದೇವರಿಗೆ ಸ್ತುತಿಸ್ತೋತ್ರ ಸಲ್ಲಿಸಿದಳು. ಯೇಸು ಸಬ್ಬತ್‍ದಿನದಲ್ಲಿ ಗುಣಮಾಡಿದ್ದನ್ನು ಕಂಡು, ಪ್ರಾರ್ಥನಾಮಂದಿರದ ಅಧಿಕಾರಿ ಕುಪಿತನಾದನು. ಕೂಡಿದ್ದ ಜನರನ್ನು ಉದ್ದೇಶಿಸಿ, “ಕೆಲಸ ಮಾಡಲು ಆರು ದಿನಗಳಿವೆ, ಆ ದಿನಗಳಲ್ಲಿ ಬಂದು ಗುಣಮಾಡಿಸಿಕೊಳ್ಳಿರಿ; ಸಬ್ಬತ್‍ದಿನದಲ್ಲಿ ಮಾತ್ರ ಕೂಡದು,” ಎಂದನು.  ಪ್ರಭು, ಅವನಿಗೆ ಪ್ರತ್ಯುತ್ತರವಾಗಿ, “ಕಪಟಿಗಳೇ, ಸಬ್ಬತ್‍ದಿನ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಕತ್ತೆಯನ್ನಾಗಲಿ, ಎತ್ತನ್ನಾಗಲಿ ಕೊಟ್ಟಿಗೆಯಿಂದ ಬಿಚ್ಚಿ ನೀರಿಗೆ ಹಿಡಿದುಕೊಂಡು ಹೋಗುವುದಿಲ್ಲವೆ?  ಅಬ್ರಹಾಮನ ವಂಶಜಳಾದ ಈಕೆಯನ್ನು ಸೈತಾನನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು; ಈ ಕಟ್ಟಿನಿಂದ ಈಕೆಯನ್ನು ಸಬ್ಬತ್‍ದಿನ ಬಿಡಿಸಬಾರದಿತ್ತೆ?” ಎಂದರು. ಈ ಉತ್ತರವನ್ನು ಕೇಳಿ ಯೇಸುವಿನ ವಿರೋಧಿಗಳೆಲ್ಲರೂ ನಾಚಿದರು. ಜನರ ಕೂಟವಾದರೋ ಅವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಕಂಡು ಸಂತೋಷಪಟ್ಟಿತು. 

23.10.22

ಮೊದಲನೇ ವಾಚನ: ಸಿರಾಖ 35:12-14, 16-18

ಲಂಚದೋಪಾದಿ ಕಾಣಿಕೆ ತರಬೇಡ, ಆತನು ಅವುಗಳನ್ನು ಅಂಗೀಕರಿಸುವುದಿಲ್ಲ ಅಕ್ರಮವಾದ ಬಲಿಯ ಮೇಲೆ ಮನಸ್ಸಿಡಬೇಡ, ಆತ ನ್ಯಾಯಾಧೀಶ, ಆತನಲ್ಲಿ ಮುಖದಾಕ್ಷಿಣ್ಯವಿಲ್ಲ ಬಡವನ ವಿರೋಧವಾಗಿ ಯಾರನ್ನೂ ಅಂಗೀಕರಿಸನಾತ ಅನ್ಯಾಯಕ್ಕೀಡಾದವನ ಮೊರೆಯನು ಆಲಿಸುವನಾತ. ತಿರಸ್ಕರಿಸನಾತ ಯಾವ ದಿಕ್ಕುದೆಸೆಯಿಲ್ಲದವರ ವಿನಂತಿಯನು ಅಂಗೀಕೃತನಾಗುವನು ಇಂಥವನ ಪ್ರಾರ್ಥನೆ ಮುಟ್ಟುವುದು ಗಗನಮಂಡಲವನು. ಮೇಘಮಂಡಲವನು ದಾಟುವುದು ದೀನನ ಪ್ರಾರ್ಥನೆ ಅವನಿಗೆ ಉಪಶಮನವೇ ಇರದು ಅದು ದೇವರ ಸನ್ನಿದಿ ಸೇರುವವರೆಗೆ. ಅವನು ಅಲ್ಲಿಂದ ಏಳುವುದಿಲ್ಲ ಮಹೋನ್ನತನು ಸದುತ್ತರ ಕೊಡುವವರೆಗೆ ಆತ ಉತ್ತರ ಕೊಡುವುದು ನ್ಯಾಯತೀರಿಸಿದ ನಂತರವೇ.

ಕೀರ್ತನೆ: 34:2-3, 17-18, 19, 23
ಶ್ಲೋಕ: ನಿರ್ಗತಿಗನು ಮೊರೆಯಿಡಲು ಪ್ರಭು ಕಿವಿಗೊಟ್ಟನು

ಎರಡನೇ ವಾಚನ: 2 ತಿಮೊಥೇಯನಿಗೆ 4:6-8, 16-18

ಅತಿ ಪ್ರಿಯನೇ, ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ. ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ. ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗು ಕೊಡುವರು. ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ. ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮಿಾಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು. ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ. ಆಮೆನ್.

ಶುಭಸಂದೇಶ: ಲೂಕ 18:9-14

ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: "ಒಮ್ಮೆ, ಇಬ್ಬರು ಪ್ರಾರ್ಥನೆಮಾಡಲು ದೇವಾಲಯಕ್ಕೆ ಹೋದರು. ಇವರಲ್ಲಿ ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕವಸೂಲಿಯವನು. ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: "ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು.ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ. ನಾನಾದರೋ ವಾರಕ್ಕೆ ಎರಡು ದಿನ ಉಪವಾಸವ್ರತವನ್ನು ಕೈಗೊಳ್ಳುತ್ತೇನೆ; ನನ್ನ ಆದಾಯದಲ್ಲಿ ಹತ್ತನೆಯ ಒಂದು ಪಾಲನ್ನು ನಿಮಗೆ ಸಲ್ಲಿಸುತ್ತೇನೆ." ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, "ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ," ಎನ್ನುತ್ತಾ ಎದೆಬಡಿದುಕೊಂಡ. ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕ ವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು.

22.10.22 - "ಮುಂದಿನ ವರ್ಷ ಹಣ್ಣು ಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದು ಹಾಕೋಣ"

 ಮೊದಲನೇ ವಾಚನ:  ಎಫೆಸಿಯರಿಗೆ 4:7-16 


ಸಹೋದರರೇ, ನಮ್ಮಲ್ಲಿ ಪ್ರತಿಯೊಬ್ಬನೂ ಕ್ರಿಸ್ತಯೇಸು ಅನುಗ್ರಹಿಸುವ ಪ್ರಕಾರವೇ ವರಗಳನ್ನು ಪಡೆದಿದ್ದಾನೆ. ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: “ಆತನು ಉನ್ನತಿಗೇರಿದನು ಶತ್ರುಗಳನು ಸೆರೆಯಾಳಾಗಿ ಕೊಂಡೊಯ್ದನು ನರಮಾನವರಿಗಿತ್ತನು ವರದಾನಗಳನು.” ‘ಏರಿದನು’ ಎನ್ನುವುದರ ಅರ್ಥವಾದರೂ ಏನು? ಆತನು ಮೊದಲು ಭೂಗರ್ಭಕ್ಕೂ ಇಳಿದಿದ್ದನು ಎಂಬ ಅರ್ಥವನ್ನೂ ಒಳಗೊಂಡಿದೆ.  ಇಳಿದು ಬಂದಿದ್ದಾತನೇ ಲೋಕಗಳಿಗೆಲ್ಲ ಮೇಲೇರಿಹೋಗಿದ್ದಾನೆ. ತನ್ನ ಪ್ರಸನ್ನತೆಯಿಂದ ಇಡೀ ಜಗತ್ತನ್ನೇ ಆವರಿಸಿದ್ದಾನೆ.  ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು. ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು.  ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ. ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.  ಬದಲಾಗಿ, ಪ್ರೀತಿಯಿಂದ ಸತ್ಯವನ್ನೇ ನುಡಿಯುತ್ತೇವೆ. ಶಿರಸ್ಸಾದ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಸರ್ವತೋಮುಖವಾಗಿ ಬೆಳೆಯುತ್ತೇವೆ.  ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ. 

ಕೀರ್ತನೆ: 122:1-2, 3-4, 4-5 

ಶ್ಲೋಕ: ಪ್ರಭುವಿನಾಲಯಕೆ ಹೋಗೋಣ ಬಾ ಎಂದು ಜಾನರೆನ್ನ ಕರೆದಾಗ ಆಯಿತೆನಗೆ ಆನಂದ. 

ಶುಭಸಂದೇಶ: ಲೂಕ 13:1-9 


ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, ಬಲಿಯರ್ಪಿಸುತ್ತಾ ಇದ್ದ ಗಲಿಲೇಯದವರನ್ನು ಪಿಲಾತನು ಕೊಲ್ಲಿಸಿದನೆಂಬ ವಿಷಯವನ್ನು ತಿಳಿಸಿದರು.  ಅದಕ್ಕೆ ಯೇಸು, “ಇಂಥಾ ಕೊಲೆಗೆ ಈಡಾದವರು ಇತರ ಎಲ್ಲ ಗಲಿಲೇಯದವರಿಗಿಂತ ಹೆಚ್ಚು ಪಾಪಿಗಳೆಂದು ಭಾವಿಸುತ್ತೀರೋ?  ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ. ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೆ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸಿತ್ತೀರೋ? ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ,” ಎಂದರು. ಅನಂತರ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: “ಒಬ್ಬನು ತನ್ನ ದ್ರಾಕ್ಷಿತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದ. ಒಮ್ಮೆ ಅವನು ಬಂದು ಅದರಲ್ಲಿ ಹಣ್ಣನ್ನು ಹುಡುಕಲು ಒಂದೂ ಕಾಣಿಸಲಿಲ್ಲ. ತೋಟಗಾರನನ್ನು ಕರೆದು, ‘ನೋಡು, ಮೂರು ವರ್ಷಗಳಿಂದ ಈ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಇದ್ದೇನೆ. ಒಂದಾದರೂ ಕಂಡುಬರಲಿಲ್ಲ. ಇನ್ನು ಇದನ್ನು ಕಡಿದುಹಾಕು. ಭೂಮಿಗೆ ಭಾರವಾಗಿ ಅದರ ಸಾರವನ್ನು ಇದೇಕೆ ವ್ಯರ್ಥ ಮಾಡಬೇಕು?’ ಎಂದು ಹೇಳಿದ. ಅದಕ್ಕೆ ತೋಟಗಾರನು, ‘ಸ್ವಾಮೀ, ಈ ಒಂದು ವರ್ಷ ಇದು ಹಾಗೆಯೇ ಇರಲಿ ಬಿಡಿ. ಅಷ್ಟರಲ್ಲಿ ಸುತ್ತಲೂ ಪಾತಿ ತೆಗೆದು ಗೊಬ್ಬರ ಹಾಕುತ್ತೇನೆ. ಮುಂದಿನ ವರ್ಷ ಹಣ್ಣು ಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದು ಹಾಕೋಣ,’ ಎಂದನು.” 

21.10.22 - “ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು?"

 ಮೊದಲನೇ ವಾಚನ: ಎಫೆಸಿಯರಿಗೆ   4:1-6 


ಸಹೋದರರೇ, ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ. ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ. ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು. ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು. ನಮ್ಮೆಲ್ಲರಿಗೂ ಪ್ರಭು ಒಬ್ಬರೇ; ವಿಶ್ವಾಸವೂ ಒಂದೇ; ದೀಕ್ಷಾಸ್ನಾನವೂ ಒಂದೇ. ದೇವರು ಒಬ್ಬರೇ, ಸರ್ವರ ತಂದೆಯು ಅವರೇ; ಸರ್ವಶ್ರೇಷ್ಠರೂ ಅವರೇ; ಸರ್ವರ ಮೂಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ. 

ಕೀರ್ತನೆ: 24:1-2, 3-4, 5-6 

ಶ್ಲೋಕ: ಇಂಥವರೇ ದೇವರ ದರ್ಶನಾಭ್ಯರ್ಥಿಗಳು 

ಶುಭಸಂದೇಶ: ಲೂಕ 12:54-59 


ಯೇಸುಸ್ವಾಮಿ ಜನಸಮೂಹವನ್ನು ನೋಡಿ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೇ, ‘ಭಾರಿ ಮಳೆ ಬರುತ್ತದೆ’ ಎನ್ನುತ್ತೀರಿ; ಹಾಗೆಯೇ ಆಗುತ್ತದೆ.  ದಕ್ಷಿಣ ದಿಕ್ಕಿನ ಗಾಳಿ ಬೀಸಿದಾಗ ಉರಿಬಿಸಿಲು ಎನ್ನುತ್ತೀರಿ; ಅಂತೆಯೇ ಇರುತ್ತದೆ.  ಆಷಾಢಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ. ಆದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ? “ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು? ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು.  ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಕಡೇ ಕಾಸನ್ನೂ ಬಿಡದೆ ಎಲ್ಲವನ್ನೂ ಸಲ್ಲಿಸಬೇಕಾಗುವುದೆಂಬುದು ನಿಶ್ಚಯ,” ಎಂದರು. 

20.10.22 - “ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ.

ಮೊದಲನೇ ವಾಚನ: ಎಫೆಸಿಯರಿಗೆ  3:14-21 

ಸಹೋದರರೇ, ಈ ಕಾರಣ ನಾನು ಮೊಣಕಾಲೂರಿ ಪಿತನಲ್ಲಿ ಪ್ರಾರ್ಥಿಸುತ್ತೇನೆ:  ಸ್ವರ್ಗಲೋಕದಲ್ಲೂ ಭೂಲೋಕದಲ್ಲೂ ಪ್ರತಿ ಕುಟುಂಬವು ತನ್ನ ಹೆಸರನ್ನು ಪಡೆದಿರುವುದು ಅವರಿಂದಲೇ.  ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;  ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.  ಹೀಗೆ ದೇವಜನರೆಲ್ಲರೊಡನೆ, ಕ್ರಿಸ್ತಯೇಸುವಿನ ಅಗಾಧ ಪ್ರೀತಿಯ ಉದ್ದ-ಅಗಲ, ಆಳ-ಎತ್ತರ ಎಷ್ಟೆಂಬುದನ್ನು ನೀವು ಗ್ರಹಿಸಿಕೊಳ್ಳುವಂತಾಗಲಿ.  ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ. ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್!

ಕೀರ್ತನೆ: 33:1-2, 4-5, 11-12, 18-19 

ಶ್ಲೋಕ: ಪ್ರಭು ಅಚಲ ಪ್ರೀತಿಯಿಂದ ಜಗವನು ತುಂಬಿಹನು 

ಶುಭಸಂದೇಶ: ಲೂಕ 12:49-53 

ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ.  ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ.  ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.  ಹೇಗೆಂದರೆ, ಒಂದೇ ಮನೆಯಲ್ಲಿರುವ ಐವರಲ್ಲಿ, ಇಂದಿನಿಂದ ಇಬ್ಬರಿಗೆ ವಿರುದ್ಧ ಮೂವರು, ಮೂವರಿಗೆ ವಿರುದ್ಧ ಇಬ್ಬರು ವಿಭಾಗವಾಗುವರು.  ಮಗನಿಗೆ ವಿರುದ್ಧವಾಗಿ ತಂದೆ, ಮಗಳಿಗೆ ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು,” ಎಂದರು. 

19.10.22 - "ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು"

 ಮೊದಲನೇ ವಾಚನ: ಎಫೆಸಿಯರಿಗೆ 3:2-12 

ಸಹೋದರರೇ, ದೇವರು ತಮ್ಮ ಕೃಪಾತಿಶಯದ ಬಗ್ಗೆ ಸಾರುವ ಹೊಣೆಯನ್ನು ನಿಮ್ಮ ಸಲುವಾಗಿ ನನಗೆ ಕೊಟ್ಟಿರುತ್ತಾರೆಂಬುದನ್ನು ನೀವೇ ಬಲ್ಲಿರಿ. ದೇವರು ತಮ್ಮ ನಿಗೂಢ ಯೋಜನೆಯನ್ನು ನನಗೆ ಪ್ರಕಟಗೊಳಿಸಿದ್ದಾರೆ. ಇದರ ಬಗ್ಗೆ ನಾನು ಮೊದಲೇ ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ. ಅದನ್ನು ಲಕ್ಷ್ಯವಿಟ್ಟು ಓದಿದರೆ, ಆಗ ಯೇಸುಕ್ರಿಸ್ತರ ರಹಸ್ಯವನ್ನು ಎಷ್ಟರಮಟ್ಟಿಗೆ ನಾನು ಮನಗಂಡಿದ್ದೇನೆ ಎಂದು ನಿಮಗೇ ತಿಳಿಯುತ್ತದೆ. ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ. ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ. ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ. ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು. ಸಮಸ್ತವನ್ನು ಸೃಷ್ಟಿಸಿದ ದೇವರು ಆದಿಯಿಂದಲೂ ಗುಪ್ತವಾಗಿಟ್ಟಿದ್ದ ತಮ್ಮ ಯೋಜನೆಯನ್ನು ಈಡೇರಿಸುವ ವಿಧಾನವನ್ನು ಸರ್ವಜನರಿಗೆ ತಿಳಿಯಪಡಿಸುವುದಕ್ಕಾಗಿ ನನ್ನನ್ನು ಆರಿಸಿಕೊಂಡಿರುವರು.  ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.  ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು.  ಯೇಸುಕ್ರಿಸ್ತರಲ್ಲಿ ನಾವಿಟ್ಟಿರುವ ವಿಶ್ವಾಸದ ಮೂಲಕ ಅವರಲ್ಲಿ ಒಂದಾಗಿ, ದೇವರ ಸಾನ್ನಿಧ್ಯವನ್ನು ಸೇರುವ ಧೈರ್ಯ ಹಾಗೂ ಭರವಸೆ ನಮಗಿದೆ.  

ಯೆಶಾಯ: 12:2-3, 4, 5-6 

ಶ್ಲೋಕ: ಉದ್ಧರಿಸುವ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ. 

ಶುಭಸಂದೇಶ: ಲೂಕ 12:39-48 


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ.  ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು,” ಎಂದರು. ಆಗ ಪೇತ್ರನು, “ಪ್ರಭೂ, ನೀವು ಹೇಳಿದ ಈ ಸಾಮತಿ ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ” ಎಂದು ಕೇಳಿದನು.  ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ. ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು.  ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ. “ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸವಿಹೀನರ ದುರ್ಗತಿಗೂ ಗುರಿಮಾಡುವನು. “ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ.  ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು." 

18.10.22

ಮೊದಲನೆಯ ವಾಚನ: 2 ತಿಮೋಥೆಯ 4:10-17

ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ. ಲೂಕನು ಮಾತ್ರ ನನ್ನ ಜೊತೆಯಿದ್ದಾನೆ. ನೀನು ಬರುವಾಗ ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನ ಸೇವೆ ನನಗೆ ಅಗತ್ಯವಾಗಿದೆ. ತುಖಿಕನನ್ನು ನಾನು ಎಫೆಸಕ್ಕೆ ಕಳುಹಿಸಿದ್ದೇನೆ. ನೀನು ಬರುವಾಗ ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ನನ್ನ ಮೇಲಂಗಿಯನ್ನು ತೆಗೆದುಕೊಂಡು ಬಾ. ನನ್ನ ಕೆಲವು ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಸುರುಳಿಗಳನ್ನೂ ತಪ್ಪದೆ ತೆಗೆದುಕೊಂಡು ಬಾ. ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು. ನೀನು ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಮ್ಮ ಬೋಧನೆಗೆ ಅವನು ಕಟುವಾದ ವಿರೋಧಿಯಾಗಿದ್ದಾನೆ. ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ. ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮಿಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು.

ಕೀರ್ತನೆ 145:11, 12-13, 17-18
ಶ್ಲೋಕ: ಪ್ರಭೂ, ನಿನ್ನ ಭಕ್ತಸಮೂಹವು ಪ್ರಸಿದ್ಧಪಡಿಸುವುದು, ನಿನ್ನ ರಾಜ್ಯದ ಮಹತ್ವವನು.

ಪ್ರಭೂ, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು|
ಕೊಂಡಾಡುವುದು ನಿನ್ನನು ಭಕ್ತಸಮೂಹವು||
ಪ್ರಸಿದ್ದಪಡಿಸುವರು ನಿನ್ನ ರಾಜ್ಯದ ಮಹತ್ವವನು|
ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು||

ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು|
ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು||
ಶಾಶ್ವತವಾದುದು ನಿನ್ನ ರಾಜ್ಯವು|
ಇರುವುದೆಂದಿಗು ನಿನ್ನ ಆಳ್ವಿಕೆಯು||

ನುಡಿಯಲಿ ಪ್ರಭು ಸದಾ ಪ್ರಮಾಣಿಕನು|
ನಡೆಯಲಿ ಆತನು ಸದಾ ಪ್ರೀತಿಮಯನು||
ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ|
ಯಥಾರ್ಥವಾಗಿ ಆತನನು ಅರಸುವವರಿಗೆ||

ಶುಭಸಂದೇಶ: ಲೂಕ 10:1-9


ಆ ಕಾಲದಲ್ಲಿ ಯೇಸು ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು. ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, " ಬೆಳೆಯೇನೋ ಹೇರಳವಾಗಿದೆ, ಕೊಯ್ಲುಗಾರರೋ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ. ನೀವು ಯಾವ ಮನೆಗೆ ಹೋದರೂ, ' ಮನೆಗೆ ಶಾಂತಿ, ' ಎಂದು ಆಶೀರ್ವಾದ ಮಾಡಿ, ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು. ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ' ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ, ' ಎಂದು ತಿಳಿಸಿರಿ.

17.10.22 - "ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?"

 ಮೊದಲನೇ ವಾಚನ: ಎಫೆಸಿಯರಿಗೆ 2:1-10 

ಸಹೋದರರೇ, ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಹಿಂದೊಮ್ಮೆ ನೀವು ಆಧ್ಯಾತ್ಮಿಕವಾಗಿ ಮೃತರಾಗಿದ್ದಿರಿ. ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ. ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು. ಆದರೆ ಕರುಣಾಮಯ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿ,ನಮ್ಮ ಅಪರಾಧಗಳ ನಿಮಿತ್ತ ಆಧ್ಯಾತ್ಮಿಕವಾಗಿ ಮೃತರಾಗಿದ್ದ ನಮ್ಮನ್ನು ಕ್ರಿಸ್ತಯೇಸುವಿನೊಡನೆ ಜೀವಂತರನ್ನಾಗಿ ಮಾಡಿದರು. (ದೈವಾನುಗ್ರಹದಿಂದಲೇ ನೀವೀಗ ಜೀವೋದ್ಧಾರ ಹೊಂದಿದ್ದೀರಿ). ಯೇಸುಕ್ರಿಸ್ತರೊಡನೆ ನಮ್ಮನ್ನೂ ಎಬ್ಬಿಸಿ, ಸ್ವರ್ಗಲೋಕದಲ್ಲಿ ಅವರ ಸನ್ನಿಧಿಯಲ್ಲಿಯೇ ಮಂಡಿಸುವ ಅವಕಾಶ ಮಾಡಿಕೊಟ್ಟರು. ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು. ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ. ಇದು ಮಾನವರ ಪುಣ್ಯಕಾರ್ಯಗಳ ಪರಿಣಾಮವೂ ಅಲ್ಲ. ಆದುದರಿಂದ ಯಾರೂ ಹೆಮ್ಮೆಪಡಲು ಆಸ್ಪದವಿಲ್ಲ.  ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ. 

ಕೀರ್ತನೆ: 100:2, 3, 4, 5 

ಶ್ಲೋಕ: ಪ್ರಭುವಿನ ಜನ, ಆತನೇ ಮೇಯಿಸುವ ಕುರಿಗಳು ನಾವು. 

ಶುಭಸಂದೇಶ: ಲೂಕ 12:13-21 


ಜನಸಮೂಹದಿಂದ ಒಬ್ಬನು, “ಬೋಧಕರೇ, ನಮ್ಮ ಪಿತ್ರಾರ್ಜಿತ ಸೊತ್ತನ್ನು ನನಗೆ ಭಾಗಮಾಡಿಕೊಡುವಂತೆ ನನ್ನ ಸೋದರನಿಗೆ ಹೇಳಿ,” ಎಂದು ಕೇಳಿಕೊಂಡನು.  ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು.  ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು. ಅನಂತರ ಅವರಿಗೆ ಈ ಸಾಮತಿಯನ್ನು ಹೇಳಿದರು: “ಒಬ್ಬ ಧನಿಕನಿದ್ದ. ಅವನ ಭೂಮಿ ಒಮ್ಮೆ ಸಮೃದ್ಧಿಯಾದ ಬೆಳೆ ಕೊಟ್ಟಿತು.  ಆಗ ಅವನು, ‘ನನ್ನ ಬೆಳೆಯನ್ನೆಲ್ಲಾ ತುಂಬಿಡಲು ಸ್ಥಳವಿಲ್ಲವಲ್ಲಾ, ಏನು ಮಾಡಲಿ?’ ಎಂದು ತನ್ನಲ್ಲೇ ಆಲೋಚಿಸುತ್ತಾ,  ‘ಹೌದು, ಹೀಗೆ ಮಾಡುತ್ತೇನೆ: ಇರುವ ಕಣಜಗಳನ್ನು ಕಿತ್ತುಹಾಕಿಸಿ, ಇನ್ನೂ ದೊಡ್ಡವುಗಳನ್ನು ಕಟ್ಟಿಸುತ್ತೇನೆ. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಸಾಮಗ್ರಿಗಳನ್ನೂ ತುಂಬಿಸಿಡುತ್ತೇನೆ.  ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.  ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.  “ತನಗೋಸ್ಕರ ಸಂಪತ್ತನ್ನು ಶೇಖರಿಸಿ ಇಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು,” ಎಂದರು ಯೇಸು. 

16.10.22

ಮೊದಲನೇ ವಾಚನ: ವಿಮೋಚನಕಾಂಡ 17:8-13

ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಯೇಲರ ಮೇಲೆ ಯುದ್ಧ ಮಾಡುವುದಕ್ಕೆ ಬಂದರು. ಮೋಶೆ ಯೆಹೋಶುವನಿಗೆ, "ನೀನು ಯೋಧರನ್ನು ಆರಿಸಿಕೊಂಡು ನಾಳೆ ನಮ್ಮ ಪರವಾಗಿ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ದೇವರ ದಂಡವನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು," ಎಂದು ಹೇಳಿದನು. ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರ ಸಂಗಡ ಯುದ್ಧಮಾಡಲು ಹೊರಟನು. ಮೋಶೆ, ಆರೋನ ಹಾಗೂ ಹೂರ ಈ ಮೂವರು ಗುಡ್ಡದ ತುದಿಗೆ ಏರಿದರು. ಮೋಶೆ ತನ್ನ ಕೈಗಳನ್ನು ಮೇಲಕ್ಕೆ ಎತ್ತಿರುವಾಗಲೆಲ್ಲಾ ಇಸ್ರಯೇಲರು ಜಯಶೀಲರಾಗುತ್ತಿದ್ದರು, ಇಳಿಸುವಾಗಲೆಲ್ಲ ಅಮಾಲೇಕ್ಯರು ಜಯಶೀಲರಾಗುತ್ತಿದ್ದರು. ಹೀಗಿರಲು ಮೋಶೆಯ ಕೈಗಳು ಆಯಾಸಗೊಳ್ಳುತ್ತಿದ್ದುದರಿಂದ ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದಿಟ್ಟು, ಅದರ ಮೇಲೆ ಮೋಶೆಯನ್ನು ಕುಳ್ಳರಿಸಿದರು. ಅಲ್ಲದೆ ಬಲಗಡೆ ಒಬ್ಬನು ಎಡಗಡೆ ಒಬ್ಬನು ನಿಂತು ಅವನ ಕೈಗಳಿಗೆ ಆಧಾರಕೊಟ್ಟರು. ಈ ರೀತಿಯಾಗಿ ಅವನ ಕೈಗಳು ಹೊತ್ತು ಮುಳುಗುವ ತನಕ ಇಳಿಯದೆ ನಿಂತೇ ಇರುವಂತೆ ಮಾಡಿದರು. ಹೀಗೆ ಯೆಹೋಶುವನು ಅಮಾಲೇಕ್ಯರ ಯೋಧರನ್ನು ಕತ್ತಿಗೆ ತುತ್ತಾಗಿಸಿ ಅವರನ್ನು ಸೋಲಿಸಿದನು.

ಕೀರ್ತನೆ: 121:1-2, 3-4, 5-6, 7-8
ಶ್ಲೋಕ: ನನಗೆ ಒತ್ತಾಸೆ ಪ್ರಭುವಿನಿಂದ; ಭೂಮ್ಯಾಕಾಶ ಸೃಜಿಸಿದವನಿಂದ

ಎರಡನೇ ವಾಚನ: 2 ತಿಮೊಥೇಯನಿಗೆ  3:14-4:2

ಅತಿ ಪ್ರಿಯನೇ, ನೀನಾದರೋ ನನಗೆ ಬೊಧಿಸಲಾಗಿರುವ ಹಾಗೂ ನೀನು ದೃಡವಾಗಿ ನಂಬಿರುವ ಸತ್ಯಗಳನ್ನು ಅನುಸರಿಸು. ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯ ಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ. ಪವಿತ್ರಗ್ರಂಥ ದೈವಪ್ರೇರಣೆಯಿಂದ ರಚಿತವಾದುದು. ಆದ್ದರಿಂದ ಅದು ಪ್ರಬೋಧನೆಗೂ ಖಂಡನೆಗೂ ತಿದ್ದುಪಾಟಿಗೂ ನೀತಿಬೋಧನೆಗೂ ಉಪಯುಕ್ತವಾಗಿದೆ. ಅದರ ಮೂಲಕ ದೈವಭಕಕ್ತರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು. ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತ ಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ  ಆಜ್ಞಾಪಿಸುವುದೇನೆಂದರೆ: ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು; ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.

ಶುಭಸಂದೇಶ: ಲೂಕ 18:1-8

ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: "ಒಂದು ನಗರದಲ್ಲಿ ಒಬ್ಬ ನ್ನಾಯಾಧೀಶನಿದ್ದ. ಅವನು ದೇವರಿಗೂ ಭಯಪಡುತ್ತಿರಲಿಲ್ಲ; ಮಾನವರಿಗೂ ಲಕ್ಷ್ಯಕೊಡುತ್ತಿರಲಿಲ್ಲ. ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಅವಳು ಪದೇಪದೇ ಅವನ ಬಳಿಗೆ ಬಂದು, ನನ್ನ ವಿರೋಧಿ ಅನ್ನಾಯ ಮಾಡಿದ್ದಾನೆ; ನನಗೆ ನ್ಯಾಯ ದೊರಕಿಸಿಕೊಡಿ," ಎಂದು ಕೇಳಿಕೊಳ್ಳುತ್ತಿದ್ದಳು. ಬಹುಕಾಲ ನ್ನಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, "ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ; ಇಷ್ಟಾದರೂ ಈ ವಿಧವೆಯ ಕಾಟವನ್ನು ತಪ್ಪಿಸಿಕೊಳ್ಳಲು, ಈಕೆಯ ನ್ಯಾಯ ತೀರಿಸಿಬಿಡುತ್ತೇನೆ. ಇಲ್ಲವಾದರೆ, ಈಕೆ ಪದೇಪದೇ ಬಂದು ನನ್ನ ತಲೆಕೆಡಿಸಿಬಿಟ್ಟಾಳು,", ಎಂದುಕೊಂಡ." ಆನಂತರ ಪ್ರಭು ಯೇಸು, "ಈ ನೀತಿಕೆಟ್ಟ ನ್ಯಾಯಾಧೀಶ ಹೇಳಿಕೊಂಡ ಮಾತುಗಳನ್ನು ಕೇಳಿದಿರಲ್ಲವೆ? ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲು ರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯತೀರಿಸದೆ ಹೋಗುವರೆ? ತಡಮಾಡಿಯಾರೆ? ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?" ಎಂದರು.

14.10.22 - ಸಂತ ಸಂತ ಒಂದನೇ ಕಲಿಸ್ತಸ್ St.Callistus🙏


ಸಂತ ಕಲಿಸ್ತಸ್ ಅತಿ ರೋಚಕ ಸಂತ. ಅವರ ಬದುಕಿನದು ವಿಚಿತ್ರ ತಿರುವು ಮತ್ತು ಬೆಳವಣಿಗೆ. ಬಹುಶಃ ಒಬ್ಬ ಗುಲಾಮ ಮತ್ತು ಮಾಜಿ ಅಪರಾಧಿ ಜಗದ್ಗುರುವಾಗಿದ್ದು ಅಧಿಕೃತವಾಗಿ ಚುನಾಯಿತರಾದದ್ದು ಧರ್ಮಸಭೆಯ ಇತಿಹಾಸದಲ್ಲೇ ಮೊದಲಿರಬೇಕು.

ಕಲಿಸ್ತಸ್ ರ ಜೀವನ ಚರಿತ್ರೆಯ ಇನ್ನೊಂದು ವಿಚಿತ್ರವೆಂದರೆ, ಅವರ ಜೀವನ ಚರಿತ್ರೆಯನ್ನು ಬರೆದದ್ದು ಅವರ ವಿರೋಧಿ ಮತ್ತು ಶತ್ರು ಸಂತ ಹಿಪ್ಪೊಲಿಟಸ್. ಇನ್ನೂ ವಿಚಿತ್ರವೆಂದರೆ ಈ ಶತ್ರು ಮುಂದೆ ಒಬ್ಬ ಬಂಡಾಯ ಜಗದ್ಗುರುವಾಗಿ ಕಲಿಸ್ತಸ್ ರನ್ನು ವಿರೋಧಿಸಿದ್ದು ಮತ್ತು ಇವರೂ ಒಬ್ಬ ಸಂತರೆಂದು ಘೋಷಿಸಲ್ಪಟ್ಟದ್ದು. 

ಈ ಎಲ್ಲಾ ದೃಷ್ಟಿಕೋನಗಳಿಂದ ನೋಡಿದಾಗ ಸಂತ ಕಲಿಸ್ತಸ್ ಬಗೆಗೆ ಸಂತ ಹಿಪ್ಪೊಲಿಟಸ್ ಬರದ ಜೀವನ ಚರಿತ್ರೆ ಸತ್ಯಕ್ಕೆ ಹೆಚ್ಚು ಹತ್ತಿರವಾಗಿರಬೇಕು. ರೋಮ್ ನ ಕುಲೀನ ಕುಟುಂಬ ವೊಂದರಲ್ಲಿ ಗುಲಾಮನಾಗಿದ್ದ ಕಲಿಸ್ತಸ್. ಆತನ ಒಡೆಯ ಕಾರ್ ಫೋರ್ ಫೊರುಸ್ ಈತನನ್ನು ತನ್ನ ಬ್ಯಾಂಕಿನ ಅಧಿಕಾರಿಯನ್ನಾಗಿ ನೇಮಿಸಿದ. ದುರದೃಷ್ಟವೆಂಬಂತೆ ಬ್ಯಾಂಕ್ ಸಾಲದಿಂದ ಮುಳುಗಿ ಹೋಯಿತು. ಆದರೆ ಸಮಸ್ಯೆಗಳು ಮಾತ್ರ ಕಲಿಸ್ತಸ್ ತಲೆಗೆ ಬಂತು. ಆ ಕ್ಷಣದ ದಂಡನೆ ತಪ್ಪಿಸಿಕೊಳ್ಳಲು ರೋಮ್ ಬಿಟ್ಟು ಹಡಗೊಂದರಲ್ಲಿ ಓಡಿಹೋದ ಕಲಿಸ್ತಸ್. ಹಡಗಿನಲ್ಲೂ ತನ್ನ ಒಡೆಯನ ಕೈಗೆ ಸಿಕ್ಕಿಬೀಳುವ ಸಂದರ್ಭದಲ್ಲಿ, ಸಮುದ್ರದೊಳಕ್ಕೆ ಹಾರಿಬಿಟ್ಟ. ಆದರೆ ಅದೃಷ್ಟ ಅಲ್ಲಿಯೂ ಗೆಲ್ಲಲಿಲ್ಲ. ಅವನನ್ನು ಹಿಡಿದು ರೋಮ್ ಗೆ ಕರೆತರಲಾಯಿತು. ಪರಿಣಾಮವಾಗಿ ಯಂತ್ರ ತುಳಿಯುವ ಕಾರ್ಖಾನೆಯೊಂದರಲ್ಲಿ ಬಲವಂತ ಕೂಲಿಗೆ ಕಳುಹಿಸಲಾಯಿತು. ಆದರೆ ಒಡೆಯನಿಗೆ ತನ್ನ ಗುಲಾಮನ ಬಗ್ಗೆ ಕರುಣೆ ಬಂದು ಅವನನ್ನು ಬಿಡಿಸಿಕೊಂಡ. ಸಾಲಗಾರರಿಂದ ಹಣ ಪಡೆಯಲು ಶ್ರಮಿಸುವುದಾಗಿ ಕಲಿಸ್ತಸ್ ಒಡೆಯನಿಗೆ ಮಾತು ಕೊಟ್ಟ.

ಈ ಸಾಲ ವಸೂಲಿಯ ಸಂಬಂಧದಲ್ಲಿ ಕಲಿಸ್ತಸ್ ಒಮ್ಮೆ ಯೆಹೂದಿ ದೇವಾಲಯದ ಪ್ರಾರ್ಥನಾ ಸಂದರ್ಭದಲ್ಲಿ ಕೂಗಾಡಿ, ಅಡಚಣೆಯನ್ನುಂಟು ಮಾಡಿ ಮತ್ತೆ ಬಂಧಿತನಾಗಿ ಈ ಬಾರಿ ಸಾಡಿ೯ನಿಯಾ ಗಣಿಗಳಲ್ಲಿ ಜೀತಕ್ಕೆ ತಳ್ಳಲ್ಪಟ್ಟ. ಆದರೆ ಇವನ ಅದೃಷ್ಟ ಚೆನ್ನಾಗಿತ್ತು. ಈ ಸಮಯದಲ್ಲಿ ಅರಸ ಮತ್ತು ಜಗದ್ಗುರುಗಳ ನಡುವೆ ಒಳ್ಳೆಯ ಸಂಬಂಧವಿತ್ತು. ಅರಸನ ಹೆಂಡತಿಗೆ ಕ್ರೈಸ್ತರ ಬಗ್ಗೆ ಅನುಕಂಪವಿತ್ತು. ಈ ಕಾರಣದಿಂದ ಬಂಧಿತರಾಗಿದ್ದ ಅನೇಕ ಕ್ರೈಸ್ತರನ್ನು ಬಿಡುಗಡೆ ಮಾಡಿದ ಸಂದರ್ಭದಲ್ಲಿ ಅಚಾತುರ್ಯವಾಗಿ ಕಲಿಸ್ತಸ್ ಹೆಸರೂ ಆ ಪಟ್ಟಿಯಲ್ಲಿ ಸೇರಿಕೊಂಡಿತ್ತು. ಕಲಿಸ್ತಸ್ ಬಿಡುಗಡೆಯಾದ ಮೇಲೆ ಆತನನ್ನು ಕ್ರೈಸ್ತ ಸ್ಮಶಾನದ ಮೇಲ್ವಿಚಾರಕನನ್ನಾಗಿ ನೇಮಿಸಲಾಯಿತು.

ಕಲಿಸ್ತಸ್ ಬದುಕು ತಿರುವು ಪಡೆದದ್ದು ಈ ಸಂದರ್ಭದಲ್ಲಿ. ನೂತನ ಜಗದ್ಗುರು ಜೆಫಿರುನುಸ್ ಕಲಿಸ್ತಸ್ ರನ್ನು ಉಪಯಾಜಕರನ್ನಾಗಿ ಮಾಡಿ ರೋಮ್ಗೆ ಕರೆಸಿಕೊಂಡರು. ಈ ಸಂದರ್ಭದಲ್ಲಿ ಧರ್ಮಸಭೆಯಲ್ಲಿ ಸಾಕಷ್ಟು ಪಾಷಾಂಡಿ ನಿಲುವುಗಳು ತಲೆದೋರಿದವು. ಇದರಲ್ಲಿ ಕಲಿಸ್ತಸ್ ಜಗದ್ಗುರುಗಳಿಗೆ ಸಲಹೆಗಾರರಾಗಿ ನಿಂತರು. ಕ್ರಿ.ಶ.219 ರಲ್ಲಿ ಜಗದ್ಗುರು ಮರಣಹೊಂದಿದಾಗ, ಹಿಪ್ಪೊಲಿಟಸ್ ನೇತೃತ್ವದ ಒಂದು ವರ್ಗದ ವಿರೋಧದ ನಡುವೆಯೂ ಕಲಿಸ್ತಸ್ ಜಗದ್ಗುರುವಾಗಿ ನೇಮಕಗೊಂಡರು.

ಇವರ ಸಡಿಲ ನಿಲುವುಗಳು ಮತ್ತು ನೇಮಕಾತಿಯನ್ನು ಮೊದಲಿನಿಂದಲೂ ವಿರೋಧಿಸುತ್ತಿದ್ದ ಹಿಪ್ಪೊಲಿಟಸ್ ಈಗ ಬಂಡಾಯ ಜಗದ್ಗುರುವಾಗಿದ್ದರು. ಮುಂದೆ 18 ವರ್ಷಗಳ ಕಾಲ ಬಂಡಾಯ ಇದ್ದು ಅನಂತರ ರಾಜಿಯಾಗುತ್ತದೆ. ಸಂತ ಹಿಪ್ಪೊಲಿಟಸ್ ಮೂಲತಃವಾಗಿ ತೀರಾ ಸಂಪ್ರದಾಯವಾದಿ ಮತ್ತು ಕರ್ಮಠ ನಿಲುವುಗಳನ್ನು ತಾಳಿದವರು. ಆದರೆ ಕಲಿಸ್ತಸ್ ಯೇಸು ನುಡಿದ 'ನಾನು ಬಂದಿರುವುದು ಪಾಪಿಷ್ಠರಿಗೆ, ಪುಣ್ಯತ್ಮರಿಗಲ್ಲ' ಎಂಬ ಮಾತನ್ನು ಅನುಸರಿಸಿ ಉದಾರವಾದವನ್ನು ಪ್ರದರ್ಶಿಸುತ್ತಾರೆ. ಈ ಇಬ್ಬರು ಸಮಕಾಲೀನ ಜಗದ್ಗುರುಗಳ ನಡುವೆ ಸಂಘರ್ಷಕ್ಕೆ ಇದೇ ಕಾರಣವಾಗುತ್ತದೆ.

 ಸಂತ ಹಿಪ್ಪೊಲಿಟಸ್ ಕಲಿಸ್ತಸ್ ಮೇಲೆ ಐದು ಪ್ರಮುಖ ಆರೋಪಗಳನ್ನು ಮಾಡುತ್ತಾರೆ.

1. ಕೊಲೆ, ಹಾದರ ಮತ್ತು ವ್ಯಭಿಚಾರಿಗಳು ಬಹಿರಂಗ ಕ್ಷಮೆಯಾಚಿಸಿದಾಗ ಅವರನ್ನು ಪರಮ ಪ್ರಸಾದಕ್ಕೆ ಪುನಃ ಸೇರಿಸಿಕೊಳ್ಳಲಾಗುತ್ತಿತ್ತು.

2.ಕುಲೀನ ಜಾತಿಗಳು ಮತ್ತು ಗುಲಾಮರ ನಡುವೆ ರೋಮನ್ ಕಾನೂನು ಸಹ ನಿಷೇಧಿಸಿದ್ದ ವಿವಾಹಗಳನ್ನು ಇವರು ನಡೆಸುತ್ತಿದ್ದರು.

3.ಎರಡು ಮೂರು ಸಾರಿ ಮದುವೆಯಾಗಿ ನಂತರ ಬಂದವರಿಗೂ ಇವರು ಗುರು ದೀಕ್ಷೆಯನ್ನು ನೀಡುತ್ತಿದ್ದರು.

4. ಸಾವಾದ ಪಾಪದ ಏಕೈಕ ಕಾರಣಕ್ಕಾಗಿ ಒಬ್ಬ ಧರ್ಮಧ್ಯಕ್ಷರನ್ನು ಪದಚ್ಯುತಿಗೊಳಿಸಲು ಸಾಧ್ಯವಿಲ್ಲ.

5.ಚಿತ್ರಹಿಂಸೆ ಸಂದರ್ಭದಲ್ಲಿ ಕ್ರೈಸ್ತ ಧರ್ಮ ಬಿಟ್ಟುಹೋದವರ ಬಗ್ಗೆ ತೀರಾ ಸಡಿಲವಾದ ನಿಲುವು ತೆಗೆದುಕೊಳ್ಳುತ್ತಿದ್ದರು.

ಯಾವುದೇ ದೃಷ್ಟಿಕೋನದಿಂದ ನೋಡಿದರೂ ಕಲಿಸ್ತಸ್ ರದು ಕ್ರಿಸ್ತನಿಗೆ ಹತ್ತಿರವಾದ ಹಾಗೂ ಪ್ರಗತಿಪರ ಧೋರಣೆ ಎಂದು ಯಾರೇ ಹೇಳಬಹುದು. ಇವರ ಆಡಳಿತದಲ್ಲೇ ರೋಮ್ ನಲ್ಲಿ ನಡೆದ ಸ್ಥಳೀಯ ದಂಗೆಯ ಸಂದರ್ಭವೊಂದರಲ್ಲಿ ಜಗದ್ಗುರು ಕಲಿಸ್ತಸ್ ರಕ್ತಸಾಕ್ಷಿಯಾದರು.

15.10.22 - "ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,”

 ಮೊದಲನೇ ವಾಚನ: ಎಫೆಸಿಯರಿಗೆ 1:15-23 

ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ಞತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ.  ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.  ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.  ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು. ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೆಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು.  ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ.  ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ. 

 ಕೀರ್ತನೆ: 8:2-3, 4-5, 6-7 

ಶ್ಲೋಕ: ಒಡೆಯನಾಗಿಸಿದೆ ಪ್ರಭೂ ಮಾನವನನು ನಿನ್ನಯ ಕರಕೃತಿಗಳಿಗೆ  

ಶುಭಸಂದೇಶ: ಲೂಕ 12:8-12 


“ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು. ಆದರೆ ಯಾವನು ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸುತ್ತಾನೋ, ಅವನನ್ನು ದೇವದೂತರ ಮುಂದೆ ನಿರಾಕರಿಸಲಾಗುವುದೆಂಬುದು ನಿಶ್ಚಯ. “ಯಾವನಾದರೂ ನರಪುತ್ರನ ವಿರುದ್ಧ ಮಾತನಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಕ್ಷಮೆಯೇ ದೊರಕದು. “ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,” ಎಂದರು. 

14.10.22

 ಮೊದಲನೇ ವಾಚನ: ಎಫೆಸಿಯರಿಗೆ1:11-14 

ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು. ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ. ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ. 

ಕೀರ್ತನೆ: 33:1-2, 4-5, 12-13 

ಶ್ಲೋಕ: ಸ್ವಜನರಾಗಿ ಪ್ರಭು ಅಯ್ದುಕೊಂಡ ಜನತೆ ಧನ್ಯ.  

ಶುಭಸಂದೇಶ: ಲೂಕ 12:1-7 

ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ. ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟಬಯಲಾಗುವುದು; ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು. ನೀವು ಕತ್ತಲಲ್ಲಿ ಹೇಳಿದ್ದೆಲ್ಲವನ್ನು ಬೆಳಕಿನಲ್ಲಿ ಕೇಳಲಾಗುವುದು; ಒಳಕೋಣೆಗಳಲ್ಲಿ ಕಿವಿಮಾತಾಗಿ ನೀವು ಹೇಳಿದ್ದೆಲ್ಲವನ್ನು ಮನೆಮಾಳಿಗೆಗಳ ಮೇಲಿಂದ ಸಾರಲಾಗುವುದು,” ಎಂದರು. “ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ; ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ. “ಎರಡು ಕಾಸಿಗೆ ಐದು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ. ಅಷ್ಟುಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು. 

11.10.22 - ಸಂತ 23ನೇ ಜಾನ್ St. 23rd John

"ಧರ್ಮಸಭೆಯ ಬಾಗಿಲುಗಳನ್ನು ತೆರೆಯಿರಿ, ಹೊರಗಿನಿಂದ ಹೊಸಗಾಳಿ ಬೀಸಲಿ" ಎಂದು ಸಾಂಕೇತಿಕವಾಗಿ ವ್ಯಾಟಿಕನ್ ಸಭಾಂಗಣದ ಕಿಟಕಿಯನ್ನು ತೆರೆದ, ಪ್ರಗತಿಪರ ಜಗದ್ಗುರು ಆಂಜೆಲೋ ಗುಯ್ ಸೆಪ್ಪೆ ರೋಸ್ ಕಾಲಿ. ಎರಡನೇ ವ್ಯಾಟಿಕನ್ ಸಮ್ಮೇಳನವನ್ನು ಆಯೋಜಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಸಾಮಾನ್ಯ ರೈತ ಕುಟುಂಬದ ಮಗನಾಗಿ, ಇಟಲಿಯ ಬೆಗಾ೯ಮೊ ಬಾಲ್ಯದಿಂದಲೇ ತನ್ನ ಸರಳತೆ ಮತ್ತು ನೇರನುಡಿಗೆ ಹೆಸರುವಾಸಿ. ದೂರದೃಷ್ಟಿ ಇವರ ಹುಟ್ಟುಗುಣ. ಈ ದೂರ ದೃಷ್ಟಿಯಿಂದಲೇ ಸೆಮಿನಾರಿಗೆ ಸೇರಿ 1904ರಲ್ಲಿ ಧರ್ಮಗುರುಗಳಾದರು. ಧರ್ಮಗುರು ದೀಕ್ಷೆ ಪಡೆದ ಕೂಡಲೇ ಧರ್ಮಶಾಸನ ಕಲಿಯಲು ರೋಮ್ಗೆ ತೆರಳಿದರು. ನಂತರ ತಮ್ಮ ಧರ್ಮಾಧ್ಯಕ್ಷರ ಕಾರ್ಯದರ್ಶಿಯಾಗಿ, ಸೆಮಿನರಿಯಲ್ಲಿ ಚರ್ಚ್ ಇತಿಹಾಸದ ಉಪನ್ಯಾಸಕರಾಗಿ, ಧರ್ಮಕ್ಷೇತ್ರದ ಪ್ರಗತಿಪರ ಪ್ರಕಾಶಕರಾಗಿ ದುಡಿದರು.

ಮೊದಲ ಮಹಾಯುದ್ಧದಲ್ಲಿ ಗಾಯಾಳುಗಳನ್ನು ಸಾಗಿಸುವ ಕೈ ಮಂಚವನ್ನು ಹೊರುವ ಕೆಲಸವೊಂದನ್ನು ಬಿಟ್ಟರೆ ಅಂಥಾ ರೋಚಕ ಘಟನೆಗಳಾವುದನ್ನೂ ಇವರ ಬದುಕಿನಲ್ಲಿ ಕಾಣಲು ಸಾಧ್ಯವಿಲ್ಲ. ಆದರೆ ದೂರದೃಷ್ಟಿಯ ಚಿಂತಕ ಮತ್ತು ವಿನ್ಯಾಸಕ, ಪ್ರಬುದ್ಧ ರಾಜಕೀಯ ಪ್ರಜ್ಞೆವುಳ್ಳ ಸಂಧಾನಕಾರ. ಆಡಳಿತದೊಳಕ್ಕೆ ಎಲ್ಲರನ್ನೂ ಕೂಡಿಸಿಕೊಂಡು ಧರ್ಮಸಭೆಯ ನಿರ್ಧಾರಗಳನ್ನು, ನಿರ್ದೇಶನಗಳನ್ನು ಸ್ಪಷ್ಟವಾಗಿ ರೂಪಿಸಬಲ್ಲ ಗುಣಗಳ ಮೊತ್ತವೇ ಇವರಲ್ಲಿತ್ತು.

1921ರಲ್ಲಿ ವಿಶ್ವಾಸ ಪ್ರಸಾರ ಸಂಸ್ಥೆಗೆ (Propagation of Faith) ರಾಷ್ಟ್ರೀಯ ನಿರ್ದೇಶಕರಾಗಿ ನೇಮಕವಾಗುವುದರಿಂದಿಗೆ ಇವರಿಗೆ ರೋಮ್ ಮತ್ತು ವ್ಯಾಟಿಕನ್ ಜೊತೆಗೆ ನಿಕಟ ಸಂಬಂಧ ಪ್ರಾರಂಭವಾಯಿತು. ಧರ್ಮಸಭೆಯ ಒಳ ಆಡಳಿತ ನೈಪುಣ್ಯತೆ ಅರಿವಾಯಿತು. ಈ ಎಲ್ಲಾ ಗುಣಗಳು ಇವರನ್ನು ರಾಜತಾಂತ್ರಿಕ ಹುದ್ದೆಗಳಿಗೆ ಕರೆದೊಯ್ದವು. 1925 ಇವರು ಬಲ್ಗೇರಿಯಾಗೆ ರೋಮ್ ರಾಯಭಾರಿಯಾದರು. ಅನಂತರ ಟರ್ಕಿ ಮತ್ತು ಫ್ರಾನ್ಸ್ ರಾಷ್ಟ್ರಗಳಿಗೆ (1944- 1953) ರಾಯಭಾರಿಯಾಗಿ ಕೆಲಸ ಮಾಡಿದರು. ಅದು ಭೀಕರ ಮಹಾಯುದ್ಧಗಳ ಕಾಲ. ಈ ಸಂದರ್ಭದಲ್ಲಿ ಎಲ್ಲರೂ ಯುದ್ಧ, ವಿನಾಶ, ಗೆಲುವಿನ ಬಗೆಗೆ ಯೋಚಿಸುತ್ತಿದ್ದಾಗ ಇವರು ಸಂಧಾನದ ಬಗ್ಗೆ ಯೋಚಿಸುತ್ತಿದ್ದರು.

ಈ ರಾಯಬಾರಿ ಕೆಲಸ ಇವರನ್ನು ಅನೇಕ ಸಂಧಾನ ಕಾರ್ಯಗಳಿಗೆ ಒಯ್ಯಿತು. ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಸಾಂಪ್ರದಾಯಿಕ ಧರ್ಮಸಭೆಯ (Orthodox Church) ನಾಯಕರೊಂದಿಗೆ ಒಳ್ಳೆಯ ಸಂಪರ್ಕವೇರ್ಪಡಿಸಿ ಕೊಂಡರು. ಟರ್ಕಿಯ ಜರ್ಮನಿ ರಾಯಭಾರಿಯ ಸಹಾಯದಿಂದ 24,000 ಯೆಹೂದ್ಯರು ನಿರ್ನಾಮವಾಗುವುದನ್ನು ತಡೆದು ಅವರ ಬಿಡುಗಡೆಗೆ ಕಾರಣರಾದರು.

1953ರಲ್ಲಿ ಕಾರ್ಡಿನಲ್ಲಾಗಿ ನೇಮಕಗೊಂಡು ವೆನಿಸ್ ನ ಅಧಿಪತಿಯಾಗಿ ನೇಮಕಗೊಂಡರು. ಕೊನೆಯ ಹುದ್ದೆಯೆಂಬಂತೆ 78ವರ್ಷ ವಾಗಲು ಒಂದು ತಿಂಗಳಿರುವಾಗ ಜಗದ್ಗುರುಗಳಾಗಿ ಚುನಾಯಿತರಾದರು. ಜಗದ್ಗುರುಗಳಾಗಿ ತಮ್ಮ ತಂದೆಯ ಹೆಸರು ಮತ್ತು ಎರಡು ಪ್ರಧಾನಾಲಯ ಗಳ (ಸಂತ ಸ್ನಾನಿಕ ಯೊವಾನ್ನ ಶುಭಸಂದೇಶ ಕರ್ತೃ ಹಾಗೂ ಪ್ರೇಷಿತ ಸಂತ ಯೊವಾನ್ನ) ಸಂತರ ಹೆಸರುಗಳನ್ನು ತಮ್ಮ ಹೆಸರಿಗೆ ಸೇರಿಸಿಕೊಂಡರು.

ಜಗದ್ಗುರುಗಳಾದ ಮೇಲೆ ರಾಜತಾಂತ್ರಿಕ ಕಾರ್ಯ ಇನ್ನಷ್ಟು ಶಕ್ತಿ ಪಡೆಯಿತು. 1962ರಲ್ಲಿ ಕ್ಯೂಬಾದ ಕ್ಷಿಪಣಿಗಳ ಸಮಸ್ಯೆಯನ್ನು ಬಗೆಹರಿಸಿದರು. ಕಾರ್ಡಿನಲರ ಆಯ್ಕೆಯನ್ನು ಅಂತರ್ರಾಷ್ಟ್ರೀಯ ವ್ಯಾಪ್ತಿಯ ಒಯ್ದರು. ಧರ್ಮಸಭೆಗೆ ಹೊಸಗಾಳಿ ಬೀಸಲು ಸಾಂಪ್ರದಾಯಿಕ ಕಿಟಕಿ-ಬಾಗಿಲುಗಳನ್ನು ತೆಗೆದುಹಾಕಿ ಹೊಸ ಅವಮಾನಕ್ಕೆ ಕಾರಣರಾದರು.

ಅವರು ಅಂದು ತೆರೆದ ಬಾಗಿಲು, ಕಿಟಕಿಗಳು ಮತ್ತೆಂದೂ ಮುಚ್ಚಲ್ಪಡದೆ, ಅತ್ಯಂತ ಮಹತ್ವ ಹಾಗೂ ಪ್ರಗತಿಪರದ ಕಾರ್ಯಗಳು ಇಂದಿಗೂ ಮುನ್ನೆಡೆಯುತ್ತಿದ್ದರೆ ಅದಕ್ಕೆ ಈ ಜಗದ್ಗುರು ಸಂತರೇ ಕಾರಣ.

ಇವರ ಎರಡು ಪ್ರಖ್ಯಾತ ಸುತ್ತೋಲೆ ಎಂದರೆ ತಾಯಿ ಮತ್ತು ಶಿಕ್ಷಕಿ (1961) ಭುವಿಯಲ್ಲಿ ಶಾಂತಿ (1960) ಇವರು ಜಗದ್ಗುರುಗಳಾದಾಗ ಸ್ವೀಕರಿಸಿದ ಧ್ಯೇಯವಾಕ್ಯವೆಂದರೆ ವಿಜಯತೆ ಮತ್ತು ಶಾಂತಿ (Obedentia Et Pax).

13.10.22 - "ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ"

ಮೊದಲನೇ ವಾಚನ: ಎಫೆಸಿಯರಿಗೆ 1:3-10

ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ. ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮಗೆ ಲಭಿಸಲಿ! ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ. ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು. ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು. ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ. ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ. ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು. ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ. 

ಕೀರ್ತನೆ:  98:1, 2-3, 3-4, 5-6

ಶ್ಲೋಕ: ಪ್ರಕಟಿಸಿಹನು ಪ್ರಭು ತನ್ನ ಮುಕ್ತಿ ವಿಧಾನವನು  

ಶುಭಸಂದೇಶ: ಲೂಕ 11:47-54




ಯೇಸು ಧರ್ಮಶಾಸ್ತ್ರಜ್ಞರನ್ನುದ್ದೇಶಿಸಿ ಹೀಗೆಂದರು: "ಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ನಿಮ್ಮ ಪಿತೃಗಳು ಕೊಂದುಹಾಕಿದ ಪ್ರವಾದಿಗಳಿಗೆ ನೀವು ಅಂದದ ಗೋರಿಗಳನ್ನು ನಿರ್ಮಿಸುತ್ತೀರಿ. ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಅನುಮೋದಿಸುತ್ತೀರಿ ಎಂಬುದಕ್ಕೆ ಇದೇ ಸಾಕ್ಷಿ. ಏಕೆಂದರೆ, ಪ್ರವಾದಿಗಳನ್ನು ಕೊಂದವರು ಅವರಾದರೆ, ಗೋರಿ ನಿರ್ಮಿಸುತ್ತಿರುವವರು ನೀವು. ಈ ಕಾರಣದಿಂದಲೇ ‘ದೇವರ ಜ್ಞಾನವು’ ಹೇಳಿರುವುದೇನೆಂದರೆ - ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಪ್ರೇಷಿತರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲೆಮಾಡುವರು; ಕೆಲವರನ್ನು ಚಿತ್ರಹಿಂಸೆಪಡಿಸುವರು.  ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲ್ಗೊಂಡು, ಬಲಿಪೀಠಕ್ಕೂ ದೇವಾಲಯಕ್ಕೂ ನಡುವೆ ಹತನಾದ ಜಕರೀಯನ ರಕ್ತದವರೆಗೂ ಈ ಪೀಳಿಗೆಯವರು ಲೆಕ್ಕಕೊಡಬೇಕಾಗುವುದು.’ ಹೌದು, ಈ ಪೀಳಿಗೆಯವರೇ ಲೆಕ್ಕಕೊಡಬೇಕಾಗುವುದೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.  ಧರ್ಮಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ,” ಎಂದರು. ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಅವರನ್ನು ಉಗ್ರವಾಗಿ ಪ್ರತಿಭಟಿಸಲಾರಂಭಿಸಿದರು. ಹಲವಾರು ವಿಷಯಗಳನ್ನು ಕುರಿತು ಮಾತಾಡುವಂತೆ ಕೆಣಕಿ, ಅವರ ಮಾತಿನಲ್ಲಿ ಏನಾದರೂ ತಪ್ಪು ಕಂಡು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.