ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

10.12.22 - "ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,"

ಮೊದಲನೇ ವಾಚನ: ಸಿರಾಖ 48:1-4, 9-11

ಆಮೇಲೆ ಪ್ರವಾದಿ ಎಲೀಯನೆದ್ದನು ಬೆಂಕಿಯಂತೆ ಉರಿಯಿತವನ ನುಡಿ ಪಂಜಿನಂತೆ, ಕ್ಷಾಮವನ್ನು ಬರಮಾಡಿದನಿವನು ಜನರ ಮೇಲೆ ಅವರನ್ನು ಕುಂದಿಸಿದನು ತನ್ನ ರೋಷದಿಂದಲೆ, ಆಕಾಶವನ್ನೇ ಮುಚ್ಚಿಬಿಟ್ಟನು ಸರ್ವೇಶ್ವರನ ಹೆಸರಿನಲ್ಲಿ ಬೆಂಕಿಯಿಳಿಯುವಂತೆ ಮಾಡಿದನು ಮೂರುಸಾರಿ. ಎಲೈ ಎಲೀಯನೇ, ಮಹತ್ಕಾರ್ಯಗಳಲ್ಲಿ ನೀನು  ಎಷ್ಟು ಘನವಂತನಾಗಿದ್ದೆ! ನಿನ್ನಂತೆ ಹೆಚ್ಚಳಪಡುವವರು ಯಾರಿದ್ದಾರೆ? ನೀ ಒಯ್ಯಲ್ಪಟ್ಟೆ ಬೆಂಕಿಯ ಬಿರುಗಾಳಿಯಲ್ಲಿ ಅಗ್ನಿಮಯ ಕುದುರುಗಳೆಳೆದ ರಥದಲ್ಲಿ. ಕೋಪ ರೌದ್ರಕ್ಕೇರುವುದಕ್ಕೆ ಮುಂಚೆ ಅದನ್ನು ಶಾಂತಪಡಿಸುವುದಕ್ಕಾಗಿ ತಂದೆಯ ಹೃದಯವನ್ನು ಮಗನ ಕಡೆಗೆ ತಿರುಗಿಸುವುದಕ್ಕಾಗಿ ಇಸ್ರಯೇಲಿನ ಕುಲಗಳನ್ನು ಯಥಾಸ್ಥಿತಿಗೆ ತರುವುದಕ್ಕಾಗಿ ತಕ್ಕಕಾಲದಲ್ಲಿ ಗದರಿಸುವಾತ ನೀನೆಂದು ಬರೆದಿದೆ ನಿನ್ನ ವಿಷಯವಾಗಿ. ನಿನ್ನನ್ನು ನೋಡುವವರು ಧನ್ಯರು ಪ್ರೀತಿಯಿಂದ ನಿಧನರಾದವರು ಧನ್ಯರು! ಕಾರಣ, ನಾವು ಸಹ ನಿಜವಾಗಿ ಜೀವಿಸುವೆವು.

ಕೀರ್ತನೆ: 80:2, 3, 15-16, 18, 19
ಶ್ಲೋಕ: ಸರ್ವಶಕ್ತನಾದ ದೇವನೇ, ಉದ್ಧರಿಸೆಮ್ಮನು ಬೆಳಗಲಿ ನಿನ್ನ ಮುಖಕಾಂತಿ, ಪಡೆದೆವು ರಕ್ಷಣೆಯನು

ಶುಭಸಂದೇಶ: ಮತ್ತಾಯ 17:9, 10-13

ಅವರೆಲ್ಲರು ಬೆಟ್ಟದಿಂದ ಇಳಿದು ಬರುವಾಗ ಯೇಸು, "ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ," ಎಂದು ಆಜ್ಞಾಪಿಸಿದರು. ಶಿಷ್ಯರು, "ಎಲೀಯನೇ ಮೊದಲು ಬರಬೇಕಾಗಿದೆ ಎಂದು ಶಾಸ್ತ್ರಜ್ಞರು ಹೇಳುತ್ತಾರಲ್ಲಾ, ಅದು ಹೇಗೆ?", ಎಂದು ಯೇಸುವನ್ನು ಕೇಳಿದರು ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ಎಲೀಯನು ಬಂದು  ಎಲ್ಲವನ್ನೂ ಸಜ್ಜುಗೊಳಿಸುವನು ಎಂಬುದು ನಿಜ, ಆದರೆ ನಾನು ನಿಮಗೆ ಹೇಳುತ್ತೇನೆ; ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸದೇ ತಮಗೆ ಇಷ್ಟ ಬಂದ ಹಾಗೆ ಹಿಂಸಿಸಿದ್ದೂ ಆಗಿದೆ. ಅಂತೆಯೇ ನರಪುತ್ರನೂ ಅವರ ಕೈಯಿಂದ ಯಾತನೆಯನ್ನು ಅನುಭವಿಸುವನು," ಎಂದರು. ಅವರು ಹೇಳುತ್ತಿರುವುದು ಸ್ನಾನಿಕ ಯೊವಾನ್ನನನ್ನು ಕುರಿತೇ ಎಂದು ಪ್ರೇಷಿತರು ಆಗ ಅರ್ಥಮಾಡಿಕೊಂಡರು.

09.12.22 - "ದೈವಜ್ಞಾನವೇ ನಿಜವಾದ ಜ್ಞಾನ"

 ಮೊದಲನೇ ವಾಚನ ಯೆಶಾಯ 48:17-19

ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರಸ್ವಾಮಿಯೆ ನುಡಿದಿಹನು: "ನಿನಗೆ ಕ್ಷೇಮಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರಸ್ವಾಮಿ ದೇವರು ನಾನು. ಎಷ್ಟೋ ಚೆನ್ನಾಗಿರುತ್ತಿತ್ತು ನೀ ನನ್ನ ಆಜ್ಞೆಗಳನ್ನು ಪಾಲಿಸಿದ್ದರೆ ಇರುತಿತ್ತು ನಿನಗೆ ಸುಖಶಾಂತಿ ಮಹಾನದಿಯಂತೆ ನಿನ್ನ ಸತ್ಯಸಂಧತೆ ಸಮುದ್ರ ಅಲೆಗಳಂತೆ. ಆಗಣಿತವಾಗಿರುತಿತ್ತು ನಿನ್ನ ಸಂತತಿ ಕಡಲ ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ."

ಕೀರ್ತನೆ: 1:1-2, 3, 4, 6

ಶ್ಲೋಕ: ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ, ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ

ಶುಭಸಂದೇಶ: ಮತ್ತಾಯ 11:16-19
"ಈ ಪೀಳಿಗೆಯನ್ನು ನಾನು  ಯಾರಿಗೆ ಹೋಲಿಸಲಿ? ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ," ಎಂದು ಪೇಟೆಬೀದಿಗಳಲ್ಲಿ ಕುಳಿತು, ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಇವರು ಹೋಲುತ್ತಾರೆ. ಏಕೆಂದರೆ, ಯೊವಾನ್ನನು ಬಂದನು; ಅವನು ಅನ್ನಪಾನೀಯಗಳನ್ನು ಸೇವಿಸಲಿಲ್ಲ. ಅದಕ್ಕೆ "ಇವನಿಗೆ ದೆವ್ವ ಹಿಡಿದಿದೆ" ಎಂದರು. ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ," ಎಂದರು.

08.12.22 - "ಇಗೋ, ನಾನು ದೇವರ ದಾಸಿ, ನೀವು ಹೇಳಿದಂತೆ ನನಗಾಗಲಿ,"

ಮೊದಲನೇ ವಾಚನ: ಆದಿಕಾಂಡ 3:9-15, 20


ಸರ್ವೇಶ್ವರನಾದ ದೇವರು, "ಎಲ್ಲಿರುತ್ತೀಯಾ?" ಎಂದು ಆದಾಮನನ್ನು ಕೂಗಿ ಕೇಳಿದರು. ಅದಕ್ಕೆ ಅವನು, "ತಾವು ತೋಟದಲ್ಲಿ ಸಂಚರಿಸುವ ಸಪ್ಪಳವು ಕೇಳಿಸಿತು; ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅವಿತುಕೊಂಡೆ," ಎಂದನು. "ನೀನು ಬೆತ್ತಲೆಯಾಗಿರುವಿಯೆಂದು ನಿನಗೆ ತಿಳಿಸಿದವರು ಯಾರು?" ಎಂದು ಕೇಳಿದರು. ಅದಕ್ಕೆ ಆದಾಮನು, "ನನ್ನ ಜೊತೆಯಲ್ಲಿ ಇರಲು ತಾವು ಕೊಟ್ಟ ಮಹಿಳೆ, ಆ ಮರದ ಹಣ್ಣನ್ನು ನನಗೆ ಕೊಟ್ಟಳು: ನಾನು ತಿಂದೆ," ಎಂದನು. ಸರ್ವೇಶ್ವರನಾದ ದೇವರು ಈ ಮಹಿಳೆಯನ್ನು, "ಇದೇನು ನೀನು ಮಾಡಿದ್ದು?" ಎಂದು ಕೇಳಲು ಆಕೆ, "ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು," ಎಂದು ಉತ್ತರಕೊಟ್ಟಳು. ಆಗ ಸರ್ವೇಶ್ವರನಾದ ದೇವರು, ಇಂತೆಂದರು ಸರ್ಪಕ್ಕೆ: "ಈ ಪರಿಯ ಕೃತ್ಯವನ್ನು ನೀನೆಸಗಿದುದರಿಂದ ಶಾಪಗ್ರಸ್ತನಾದೆ ಎಲ್ಲ ಪಶುಪ್ರಾಣಿಗಳಿಗಿಂತ: ಹರಿದಾಡುವೆ ಹೊಟ್ಟೆಯ ಮೇಲೆ ಇಂದಿನಿಂದ ತಿನ್ನುವೆ ಮಣ್ಣನ್ನೇ ಜೀವಮಾನ ಪರಿಯಂತ. ಹಗೆತನವಿರುಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ. ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನು." ಆದಾಮನು ತನ್ನ ಹೆಂಡತಿಗೆ "ಹವ್ವ" ಎಂದು ಹೆಸರಿಟ್ಟನು. ಏಕೆಂದರೆ ಮಾನವಕುಲಕ್ಕೆ ಮೂಲಮಾತೆ ಆಕೆ.

ಕೀರ್ತನೆ:98:2-3, 3-4
ಶ್ಲೋಕ: ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು ಎಸಗಿಹನಾತನು ಪವಾಡಕಾರ್ಯಗಳನು

ಎರಡನೇ ವಾಚನ: ಎಫೆಸಿಯರಿಗೆ 1:3-6, 11-12

ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ. ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು. ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು. ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿ ಸಲ್ಲಿಸೋಣ. ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತ ಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.

ಶುಭಸಂದೇಶ: ಲೂಕ 1:26-38


ಎಲಿಜಬೇತಳು ಗರ್ಭಿಣಿಯಾದ ಆರನೇ ತಿಂಗಳಲ್ಲಿ, ದೇವರು ಗಬ್ರಿಯೇಲ್ ದೂತನನ್ನು ಗಲಿಲೇಯ ಪ್ರಾಂತ್ಯದ ನಜರೇತೆಂಬ ಊರಿನಲ್ಲಿದ್ದ ಒಬ್ಬ ಕನ್ನಿಕೆಯಲ್ಲಿಗೆ ಕಳುಹಿಸಿದರು. ಆಕೆಗೆ ದಾವೀದರಸನ ವಂಶಜನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ. ದೇವದೂತನು ಆಕೆಯ ಬಳಿಗೆ ಬಂದು "ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ ನಿನ್ನೊಡನೆ ಇದ್ದಾರೆ!" ಎಂದನು. ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು. "ಇದೆಂಥ ಶುಭಾಶಯ" ಎಂದು ಅವಳು ಯೋಚಿಸತೊಡಗಿದಳು. ದೂತನು ಆಕೆಗೆ, "ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ; ಇಗೋ, ನೀನು  ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ ಆತನಿಗೆ "ಯೇಸು" ಎಂಬ ಹೆಸರಿಡಬೇಕು; ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು, ಯಕೋಬನ ವಂಶವನ್ನು ಅವನು ಚಿರಕಾಲ ಆಳುವನು; ಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು," ಎಂದನು. ಅದಕ್ಕೆ ಮರಿಯಳು, "ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ  ಇಲ್ಲವಲ್ಲಾ?" ಎಂದು ವಿಚಾರಿಸಿದಳು. ದೂತನು ಪ್ರತ್ಯುತ್ತರವಾಗಿ, "ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು "ದೇವರ ಪುತ್ರ ಎನಿಸಿಕೊಳ್ಳುವನು. ನಿನ್ನ ಸಂಬಂಧಿಕಳಾದ ಎಲಿಜಬೇತಳ ವಿಷಯವನ್ನು ಕೇಳು; ಆಕೆ ತನ್ನ ಮುಪ್ಪಿನಲ್ಲೂ ಒಬ್ಬ ಮಗನನ್ನು ಹೆರಲಿದ್ದಾಳೆ; ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿ. ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ," ಎಂದನು. ಆಗ ಮರಿಯಳು, "ಇಗೋ, ನಾನು ದೇವರ ದಾಸಿ, ನೀವು ಹೇಳಿದಂತೆ ನನಗಾಗಲಿ," ಎಂದಳು.  ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು.


07.12.22 - "ನನ್ನ ನೊಗ ಹಗುರ, ನನ್ನ ಹೊರೆ ಸುಗಮ,"

ಮೊದಲನೇ ವಾಚನ: ಯೆಶಾಯ 40: 25-31 


ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನಸ್ವಾಮಿ. ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆಗ! ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯ ಬೀಳದಿದೆ’ ಎನ್ನುತ್ತಿರುವಿರಿ ಏಕೆ? ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮಥ್ರ್ಯ ಅಗಮ್ಯ ಪರಿಶೋಧನೆಗೆ. ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ. ಯುವಕರೂ ದಣಿದು ಬಳಲುವರು ತರುಣರೂ ಸೊರಗಿ ಮುಗ್ಗರಿಸುವರು. ಸರ್ವೇಶ್ವರನನ್ನು ಎದುರು ನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿದರು, ನಡೆದರೂ ಬಳಲರು.

ಕೀರ್ತನೆ: 103: 1-2, 3-4, 8, 10

ಶ್ಲೋಕ: "ನನ್ನ ಅಂತರಂಗವೇ, ಭಜಿಸು ಪ್ರಭುವನು."


ಶುಭಸಂದೇಶ: ಮತ್ತಾಯ 11: 28-30 


ಈ ಸಮಯದಲ್ಲಿ ಯೇಸು ಹೀಗೆಂದರು: "ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ. ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು. ನನ್ನ ನೊಗ ಹಗುರ, ನನ್ನ ಹೊರೆ ಸುಗಮ,".

06.12.22 - "ಸಿಕ್ಕಿದ ಈ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ"

ಮೊದಲನೇ ವಾಚನ: ಯೆಶಾಯ 40:1-11

ನಿಮ್ಮ ದೇವರು ಇಂತೆನ್ನುತ್ತಾರೆ: "ಸಂತೈಸಿ, ನನ್ನ ಜನರನ್ನು ಸಂತೈಸಿರಿ. ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ: ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕ್ಕೆ ಸರ್ವೇಶ್ವರಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ" ಇಗೋ, ಈ ವಾಣಿಯನ್ನು. ಕೇಳಿ: "ಸರ್ವೇಶ್ವರಸ್ವಾಮಿಗೆ ಮಾರ್ಗವನ್ನು ಸಿದ್ಧ ಮಾಡಿ ಅರಣ್ಯದಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಾಗ ಮಾಡಿ ಅಡವಿಯಲ್ಲಿ. ತುಂಬಬೇಕು ಎಲ್ಲ ಹಳ್ಳಕೊಳ್ಳಗಳನ್ನು ಮಟ್ಟಮಾಡಬೇಕು ಎಲ್ಲ ಬೆಟ್ಟಗುಡ್ಡಗಳನ್ನು. ನೆಲಸಮ ಮಾಡಬೇಕು ದಿಬ್ಬ ದಿಣ್ಣೆಗಳನ್ನು. ಸಮತಲಗೊಳಿಸಬೇಕು ತಗ್ಗುಮುಗ್ಗಾದ ಸ್ಥಳಗಳನ್ನು. ಗೋಚರವಾಗುವುದಾಗ ಸರ್ವೇಶ್ವರಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ." ಆ ವಾಣಿ ಮತ್ತೆ ಕೇಳಿಸಿತು: "ಗಟ್ಟಿಯಾಗಿ ಕೂಗು" ಎಂದಿತು. ನಾನೇನೆಂದು ಕೂಗಲಿ ಎನ್ನಲು ಈ ಪರಿಯಾಗಿ ಉತ್ತರಿಸಿತು: "ನರಮಾನವರೆಲ್ಲ ಬರೀ ಹುಲ್ಲಿನಂತೆ ಅವರ ಸೊಬಗೆಲ್ಲಾ ಬಯಲಿನ ಕುಸುಮದಂತೆ. ಪ್ರಭುವಿನ ಶ್ವಾಸ ಬೀಸಲು ಒಣಗಿ ಹೋಗುವುದಾ ಹುಲ್ಲು ಬಾಡಿ ಹೋಗುವುದಾ ಹೂವು ಮಾನವರೆಲ್ಲ ಹುಲ್ಲೇ ಹುಲ್ಲು, ಒಣಗಿ ಹೋಗುವುದಾ ಹುಲ್ಲು, ಬಾಡಿ ಹೋಗುವುದಾ ಹೂವು, ನಮ್ಮ ದೇವರ ನುಡಿಯಾದರೋ ಇರುವುದು ಚಿರಕಾಲವು." ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು "ಇಗೋ, ನಿಮ್ಮ ದೇವರು" ಎಂದು ಜೂದ ನಗರಗಳಿಗೆ ಸಾರು. ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ,  ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ. ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.

ಕೀರ್ತನೆ: 96:1-2, 3, 10, 11-12, 13
ಶ್ಲೋಕ: ಇಗೋ, ಸರ್ವೇಶ್ವರಸ್ವಾಮಿ ಬರುತಿಹನು ಶೂರನಂತೆ

ಹೊಸಗೀತೆಯನು ಹಾಡಿರಿ ಪ್ರಭುವಿಗೆ|
ವಿಶ್ವವೆಲ್ಲವು ಹಾಡಲಿ ಆತನಿಗೆ||
ಪ್ರಭುವಿಗೆ ಹಾಡಿರಿ, ಆತನ ನಾಮವನು ಕೊಂಡಾಡಿರಿ|
ಆತನ ಮುಕ್ತಿಮಾರ್ಗವನು ಪ್ರತಿನಿತ್ಯವೂ ಸಾರಿರಿ||

ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ|
ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ||
ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ|
ನ್ಯಾಯತೀರ್ಪು ಕೊಡುವನು ಜನಾಂಗಕೆ||

ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು|
ಗರ್ಜಿಸಲಿ ಸಮುದ್ರವು ಮತ್ತು ಅದರೊಳಿರುವುದೆಲ್ಲವು||
ಉಲ್ಲಾಸಿಸಲಿ ಹೊಲಗದ್ದೆಗಳು, ಪೈರುಪಚ್ಚೆಗಳು|
ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು||

ಪ್ರಭು ಧರೆಗೆ ನ್ಯಾಯತೀರಿಸಲು|
ಬಂದೇ ಬರುವನು ಖರೆಯಾಗಿ||
ಜಗಕು ಜನತೆಗು ತೀರ್ಪಿಡುವನು|
ನೀತಿ ನಿಯಮಾನುಸಾರವಾಗಿ||

ಘೋಷಣೆ:
ಅಲ್ಲೆಲೂಯ, ಅಲ್ಲೆಲೂಯ!
ಸ್ವಾಮಿ ಸರ್ವೇಶ್ವರಾ, ತಡಮಾಡಬೇಡಿ | ನಿಮ್ಮ ಜನರ ಪಾಪಗಳನ್ನು ಕ್ಷಮಿಸಿರಿ ||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 18:12-14


"ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ, ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ, ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಈ ತೊಂಭತ್ತೊಂಭತ್ತು ಕುರಿಗಳಿಗಿಂತ ಸಿಕ್ಕಿದ ಈ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ," ಎಂದರು ಯೇಸುಸ್ವಾಮಿ.

05.12.22 - 'ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ," ಎನ್ನುವುದು ಸುಲಭವೋ ಅಥವಾ 'ಎದ್ದು ನಡೆ' ಎನ್ನುವುದು ಸುಲಭವೋ?

ಮೊದಲನೇ ವಾಚನ: ಯೆಶಾಯ  35:1-10

ಆನಂದಿಸಲಿ ಅರಣ್ಯವೂ ಮರಭೂಮಿಯೂ, ಹೂಗಳಂತೆ ಅರಳಿ ಹರ್ಷಿಸಲಿ ಒಣನೆಲವು. ಉಲ್ಲಾಷಿಸಲಿ ಅದು ಹುಲುಸಾಗಿ ಹೂಬಿಟ್ಟು, ಹೌದು, ಸಂತಸ ಸಂಗೀತ ಹಾಡುವಷ್ಟು. ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು; ಕರ್ಮೆಲಿನ ಮತ್ತು ಶಾರೋನಿನ ವೈಭವವು.  ಕಾಣುವುವು ಸರ್ವೇಶ್ವರನ ಮಹಿಮೆಯನು, ನೋಡುವುವು ಇವೆಲ್ಲ ನಮ್ಮ ದೇವರ ವೈಭವವನ್ನು. ಜೋಲುಬಿದ್ದ ಕೈಗಳನ್ನು ಬಲಗೊಳಿಸಿರಿ. ನಡುಗುವ ಕಾಲುಗಳನ್ನು ದೃಢಗೊಳಿಸಿರಿ. ಚಂಚಲ ಹೃದಯರಿಗೆ ಹೀಗೆಂದು ಹೇಳಿ: "ಭಯಪಡಬೇಡಿ, ಎದೆಗುಂದಬೇಡಿ, ಬರುವನು ಆ ದೇವನು ಮುಯ್ಯಿತೀರಿಸಲು; ಬರುವನು ಆ ದೇವನು ಪ್ರತೀಕಾರವೆಸಗಲು; ತಾನೇ ಬರುವನು ನಿಮ್ಮನ್ನು ರಕ್ಷಿಸಲು." ಕುರುಡರ ಕಣ್ಣು ಕಾಣುವುದಾಗ, ಕಿವುಡರ ಕಿವಿ ತೆರೆಯುವುದಾಗ, ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ, ಒರತೆಗಳು ಒಡೆಯುವುವು ಅರಣ್ಯದಲ್ಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲ್ಲಿ. ಸರೋವರವಾಗುವುದಾ ಉರಿಗಾಡು ಬುಗ್ಗೆಯಾಗುವುದಾ ಬುವಿ ಬರಡು, ನರಿಗಳು ನಿವಾಸಿಸುವ ಗುಹೆಗಳು ಆಗುವುವು ಹುಲುಸಾದ  ಹುಲ್ಲುಗಾವಲುಗಳು. ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲ ನಡೆಯುವ ಮೂಢನು. ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ, ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ. ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖ ದುಗುಡದ ಕಹಿ.

ಕೀರ್ತನೆ: 85:9, 10, 11-12, 13-14
ಶ್ಲೋಕ: ಅಗೋ, ದೇವನು ತಾನೇ ಬರುವನು ನಿಮ್ಮನ್ನು ರಕ್ಷಿಸಲು.

ಶುಭಸಂದೇಶ: ಲೂಕ 5:17-26

ಒಮ್ಮೆ ಯೇಸುಸ್ವಾಮಿ ಬೋಧನೆ ಮಾಡುತ್ತಾ ಇದ್ದಾಗ, ಫರಿಸಾಯರೂ ಧರ್ಮಶಾಸ್ತ್ರಜ್ಞರೂ ಅವರ ಹತ್ತಿರ ಕುಳಿತ್ತಿದ್ದರು. ಇವರು ಗಲಿಲೇಯ ಹಾಗೂ ಜುದೇಯ ಪ್ರಾಂತ್ಯದ ಊರೂರುಗಳಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಬಂದಿದ್ದರು. ಗುಣಪಡಿಸುವಂತಹ ದೈವಶಕ್ತಿ ಯೇಸುವಿನಲ್ಲಿತ್ತು. ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅಲ್ಲಿಗೆ ಬಂದರು. ರೋಗಿಯನ್ನು ಒಳಕ್ಕೆ ತೆಗೆದುಕೊಂಡು ಹೋಗಿ ಯೇಸುವಿನ ಮುಂದೆ ಇಡಬೇಕೆಂದು ಪ್ರಯತ್ನಿಸಿದರು. ಆದರೆ ಜನಸಂದಣಿಯ ನಿಮಿತ್ತ ದಾರಿ ಮಾಡಲಾಗಲಿಲ್ಲ. ಆಗ ಅವರು ಮನೆಯ ಮೇಲೆ ಹತ್ತಿ , ಹೆಂಚುಗಳನ್ನು ತೆಗೆದು, ಅಲ್ಲಿಂದ ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು. ಯೇಸು ಅವರ ವಿಶ್ವಾಸವನ್ನು ಮೇಚ್ಚಿ,  "ತಮ್ಮಾ, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ," ಎಂದರು. ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, "ದೇವದೂಷಣೆ ಆಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?" ಎಂದು ತಮ್ಮಲ್ಲೇ ಹೇಳಿಕೊಳ್ಳಲು  ಆರಂಭಿಸಿದರು. ಯೇಸು ಅವರ ಆಲೋಚನೆಗಳನ್ನು ಗ್ರಹಿಸಿಕೊಂಡು, "ನೀವು ನಿಮ್ಮ ಮನಸ್ಸಿನಲ್ಲಿ ಆಲೋಚಿಸುತ್ತಾ ಇರುವುದೇನು? 'ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ," ಎನ್ನುವುದು ಸುಲಭವೋ ಅಥವಾ 'ಎದ್ದು ನಡೆ' ಎನ್ನುವುದು ಸುಲಭವೋ? ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು," ಎಂದು ಹೇಳಿ, ಅ ಪಾರ್ಶ್ವವಾಯು ರೋಗಿಯ ಕಡೆ ನೋಡಿ,  'ಏಳು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೊರಡು,' ಎಂದು ನಿನಗೆ ಆಜ್ಞಾಪಿಸುತ್ತೇನೆ" ಎಂದರು. ತಕ್ಷಣವೇ ಅವರೆಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದು, ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೋದನು. ಎಲ್ಲರೂ ನಿಬ್ಬೆರಗಾಗಿ, ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!" ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು.

04.12.22 - "ಸರ್ವೇಶ್ವರನಿಗೆ ಮಾರ್ಗವನ್ನು ಸಿದ್ಧಪಡಿಸಿರಿ"

ಮೊದಲನೇ ವಾಚನ: ಯೆಶಾಯ 11:1-10 


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು. ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ ಸರ್ವೇಶ್ವರನ ಭಯಭಕ್ತಿ ಆತನಿಗೆ ಪರಿಮಳದಂತೆ ತೀರ್ಪಿಡನಾತ ಕಣ್ಣಿಗೆ ತೋಚಿದಂತೆ, ನಿರ್ಣಯಿಸನಾತ ಕಿವಿಗೆ ಬಿದ್ದಂತೆ. ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯ ನೀತಿಯಿಂದ; ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ; ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ; ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ. ಸದ್ಧರ್ಮವೇ. ಆತನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟ-ಪಟ್ಟಿ. ಬಾಳುವುವು ತೋಳ ಕುರಿಮರಿಗಳು ಒಂದಿಗೆ, ಮಲಗುವುವು ಮೇಕೆ ಚಿರತೆಗಳು ಜೊತೆಗೆ; ಮೊಲೆಯುಣ್ಣುವುವು ಕರು ಕೇಸರಿಗಳು ಒಟ್ಟಿಗೆ, ನಡೆಸುವುದವುಗಳನು ಚಿಕ್ಕ ಮಗು ಮೇಯಿಸುವುದಕೆ ಮೇಯುವುವು ಕರಡಿ, ಆಕಳುಗಳು ಒಟ್ಟಿಗೆ, ಮಲಗುವುವು ಅವುಗಳ ಮರಿಗಳು ಜೊತೆಗೆ; ಎತ್ತಿನ ಹುಲ್ಲು ಮೇವಾಗುವುದು ಸಿಂಹಕ್ಕೆ. ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ, ಕೈ ಹಾಕುವುದು ಮೊಲೆ ಬಿಟ್ಟ ಮಗು ಹಾವಿನ ಬಿಲದ ಒಳಗೆ, ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ ಧರೆಯ ಮೇಲೆ. ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವ ಜನಾಂಗಗಳಿಗೆ ಧ್ಯಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿ ನಿಲಯವು.

ಕೀರ್ತನೆ:1-2, 7-8, 12-13, 17 

ಶ್ಲೋಕ: ಬೆಳೆಯಲಿ ಆತನ ಪಾಲನೆಯಲಿ ನ್ಯಾಯ ನೀತಿ ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ  ಶಾಂತಿ 

1. ತಿಳಿಸು ನಿನ್ನ ನ್ಯಾಯವನು ದೇವಾ, ರಾಜನಿಗೆ |
    ಕಲಿಸು ನಿನ್ನ ನೀತಿಯನು ರಾಜಕುವರನಿಗೆ ||
    ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ |
    ಪರಿಪಾಲಿಸಲಿ ದೀನ ದಲಿತರನು ನ್ಯಾಯದಿಂದ ||

2. ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ |
    ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ ||
    ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ |
    ಮಹಾನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ ||

3. ಏಕೆನೆ ಕಾಪಾಡುವನಾತ ಮೊರೆಯಿಡುವ ಬಡವರನು |
    ಉದ್ಧರಿಸುವನಾತ  ದಿಕ್ಕಿಲ್ಲದ ದೀನದಲಿತರನು ||
    ದೀನದರಿದ್ರರಿಗೆ ದಯೆಯ ತೋರುವನು |
   ದಲಿತರ ಪ್ರಾಣವನು ಕಾಪಾಡುವನು ||

4. ಶಾಶ್ವತವಾಗಲಿ ಶ್ರೀನಾಮ ಆತನಿಗೆ |
    ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ ||
    ಆತನಾಶೀರ್ವಾದ ಕೋರಲಿ ಸರ್ವರು ತಮಗೆ |
    ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ ||

ಎರಡನೇ ವಾಚನ: ರೋಮನರಿಗೆ 15:4-9 

ಸಹೋದರರೇ, ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರ ಗ್ರಂಥ ಪಠಣದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ. ಆ ಸ್ಥೈರಣೆ ಮತ್ತು ಉತ್ತೇಜನದ ಮೂಲವಾಗಿರುವ ದೇವರು, ನೀವೆಲ್ಲರು ಕ್ರಿಸ್ತ ಯೇಸುವನ್ನು ಅನುಸರಿಸುತ್ತಾ ಒಮ್ಮನಸ್ಸಿನಿಂದ ಬಾಳುವಂತೆ ಮಾಡಲಿ. ಹೀಗೆ ಒಮ್ಮನಸ್ಸಿನಿಂದಲೂ ಒಕ್ಕೊರಲಿನಿಂದಲೂ ನಮ್ಮ ಪ್ರಭು ಯೇಸುಕ್ರಿಸ್ತರತಂದೆಯಾದ ದೇವರನ್ನು ಕೊಂಡಾಡುವಂತಾಗಲಿ. ಕ್ರಿಸ್ತ ಯೇಸು ನಿಮ್ಮನ್ನು ಅಂಗೀಕರಿಸಿದಂತೆ ದೇವರ ಮಹಿಮೆಗಾಗಿ ನೀವು ಸಹ ಒಬ್ಬರನ್ನು ಒಬ್ಬರು ಅಂಗೀಕರಿಸಿರಿ. ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ ಮತ್ತು ದೇವರು ತೋರಿದ ಕರುಣೆಗಾಗಿ ಅವರನ್ನು ಯೆಹೂದ್ಯರಲ್ಲದವರು ಸಹ ಸ್ತುತಿಸಲು ಸಾಧ್ಯವಾಗುವಂತೆ ಕ್ರಿಸ್ತ ಯೇಸು ಯೇಹೂದ್ಯರಿಗೆ ಅಧೀನರಾದರು. ಇದಕ್ಕೆ ಸಾದೃಶ್ಯವಾಗಿ ಪವಿತ್ರ ಗ್ರಂಥದಲ್ಲಿ ಹೀಗೆಂದು ಹೇಳಲಾಗಿದೆ: "ಈ ಕಾರಣದಿಂದ ನಾನು ಯೆಹೂದ್ಯರಲ್ಲದವರ  ನಡುವೆ ನಿಮ್ಮನ್ನು ಕೊಂಡಾಡುವೆನು, ನಿಮ್ಮ ನಾಮವನ್ನು ಸಂಕೀರ್ತಿಸುವೆನು." 

ಶುಭಸಂದೇಶ: ಮತ್ತಾಯ 3:1-12 

ಆ ಕಾಲದಲ್ಲಿ ಸ್ನಾನಿಕ ಯೊವಾನ್ನನು ಜುದೇಯ ಪ್ರಾಂತ್ಯದ ಬೆಂಗಾಡಿಗೆ ಹೋಗಿ ಬೋಧನೆ ಮಾಡಲು ಪ್ರಾರಂಭಿಸಿದನು. "ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮಿಾಪಿಸಿತು," ಎಂದು ಸಾರಿ ಹೇಳುತ್ತಾ ಬಂದನು. "ಸರ್ವೇಶ್ವರನಿಗೆ ಮಾರ್ಗವನ್ನು ಸಿದ್ಧಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು  ಸರಾಗ ಮಾಡಿರಿ, ಎಂದು ಬೆಂಗಾಡಿನಲ್ಲೊಬ್ಬನು ಘೋಷಿಸುತ್ತಿದ್ದಾನೆ," ಎಂದು ಪ್ರವಾದಿ ಯೆಶಾಯನು ಸೂಚಿಸಿದ ವ್ಯಕ್ತಿ ಈತನೇ. ಒಂಟೆ ತುಪ್ಪಟದ ಹೊದಿಕೆ, ಸೊಂಟದಲ್ಲಿ ತೊಗಲಿನ ನಡುಕಟ್ಟು - ಇವೆ ಈತನ ಉಡುಗೆ. ಮಿಡತೆ ಮತ್ತು ಕಾಡು ಜೇನು ಇವೇ ಈತನ ಆಹಾರ. ಜನರು ಜೆರುಸಲೇಮಿನಿಂದಲೂ  ಇಡೀ ಜುದೇಯ ಪ್ರಾಂತ್ಯದಿಂದಲೂ ಜೋರ್ಡಾನ್ ನದಿಯ ಸುತ್ತಮುತ್ತಲಿನ ಪ್ರದೇಶಗಳಿಂದಲೂ ಈತನ ಬಳಿಗೆ ಬಳಿಗೆ ಬರುತ್ತಿದ್ದರು; ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಳ್ಳುತ್ತಾ ನದಿಯಲ್ಲಿ ಈತನಿಂದ ಸ್ನಾನ ದೀಕ್ಷೆಯನ್ನು ಪಡೆಯುತ್ತಿದ್ದರು. ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು.  ಅವರನ್ನು ಉದ್ದೇಶಿಸಿ, "ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು? ನೀವು ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ. "ಅಬ್ರಹಾಮನೇ ನಮ್ಮ ಪಿತಮಹ" ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ  ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ. ಈಗಾಗಲೇ ಮರದ ಬಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು. ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಆಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಸಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಆರ್ಹನಲ್ಲ. ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿ ಕಾಳನ್ನು ಮಾತ್ರ ಕಣಜಕ್ಕೆ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟು ಹಾಕುವರು," ಎಂದು ಎಚ್ಚರಿಸಿದನು.




02.12.22 - "ನೀವು ವಿಶ್ವಾಸವಿಟ್ಟ ಪ್ರಕಾರವೇ ನಿಮಗೆ ಗುಣವಾಗಲಿ,"

ಮೊದಲನೇ ವಾಚನ: ಯೆಶಾಯ 29: 17-24 


ಕೊಂಚ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು. ಈಗಿನ ತೋಟವಾದರೋ ಅರಣ್ಯವಾಗಿ ಕಾಣಿಸುವುದು. ಆ ದಿನದಂದು ಕಿವುಡರು ಗ್ರಂಥ ವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು. ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮ ಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು. ಏಕೆಂದರೆ ಭಯೋತ್ಪಾದಕರು ನಿಶ್ಯೇಷರಾಗುವರು, ಧರ್ಮನಿಂದಕರು ನಿರ್ನಾಮವಾಗುವರು. ಸುಳ್ಳು ಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯ ಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು. ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಸರ್ವೇಶ್ವರಸ್ವಾಮಿ ಯಕೋಬನ ಮನೆತನದ ವಿಷಯವಾಗಿ ಹೀಗೆನ್ನುತ್ತಾರೆ: “ಯಕೋಬ ವಂಶದವರೇ, ಇನ್ನು ಮೇಲೆ ನೀವು ನಾಚಿಕೆಗೀಡಾಗುವುದಿಲ್ಲ, ನಿಮ್ಮ ಮುಖ ಇನ್ನು ಬಾಡುವುದಿಲ್ಲ. ನಿಮ್ಮ ವಂಶಜರು ತಮ್ಮ ಮಧ್ಯದಲ್ಲಿ ನಾನು ಎಸಗುವ ಕಾರ್ಯಗಳನ್ನು ನೋಡಿ, ನನ್ನ ನಾಮವೇ ಪರಮಪೂಜಿತವೆಂದು ಸ್ಥಿರಪಡಿಸುವರು. ಹೌದು, ಯಕೋಬ ವಂಶದ ಪರಮಪಾವನ ಸ್ವಾಮಿಯಾದ ನನ್ನನ್ನು ಪ್ರತಿಷ್ಠಾಪಿಸುವರು. ಇಸ್ರಯೇಲರ ದೇವರಾದ ನನ್ನಲ್ಲಿ ಭಯಭಕ್ತಿಯಿಂದಿರುವರು. ಚಂಚಲಚಿತ್ತರು ಬುದ್ಧಿವಂತರಾಗುವರು. ಗೊಣಗುಟ್ಟುವವರು ಧ್ಯಾನ ಮಗ್ನರಾಗುವರು.

ಕೀರ್ತನೆ: 27: 1, 4, 13-14

ಶ್ಲೋಕ: ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೇ. 

ಶುಭಸಂದೇಶ: ಮತ್ತಾಯ 9: 27-31



ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, "ಸ್ವಾವಿೂ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ," ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆ ಹೋದರು. ಯೇಸು ಮನೆ ಸೇರಿದಾಗ ಆ ಕುರುಡರು ಸಮೀಪಕ್ಕೆ ಬಂದರು. "ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ವಿಶ್ವಾಸವಿಡುತ್ತೀರೋ?" ಎಂದು ಯೇಸು ಪ್ರಶ್ನಿಸಿದರು. "ಹೌದು ಸ್ವಾವಿೂ, ಹೌದು," ಎಂದು ಅವರು ಉತ್ತರವಿತ್ತರು. ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, "ನೀವು ವಿಶ್ವಾಸವಿಟ್ಟ ಪ್ರಕಾರವೇ ನಿಮಗೆ ಗುಣವಾಗಲಿ," ಎಂದರು. ಅವರಿಗೆ ದೃಷ್ಟಿ ಬಂದಿತು. "ಈ ವಿಷಯ ಯಾರಿಗೂ ತಿಳಿಯಬಾರದು, ಎಚ್ಚರಿಕೆ!" ಎಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಆದರೂ ಅವರು ಹೋಗಿ ಆ ಪ್ರಾಂತ್ಯದಲ್ಲೆಲ್ಲಾ ಸ್ವಾಮಿಯ ಕೀರ್ತಿಯನ್ನು ಹರಡಿದರು.

03.12.22 - "ಬೆಳೆಯೇನೋ ಹೇರಳ; ಕೊಯಿಲಿಗಾರರೋ ವಿರಳ;"

ಮೊದಲನೇ ವಾಚನ: ಯೆಶಾಯ 30: 19-21, 23-26 


ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು. ಅವರು ನಿಮಗೆ ಕಷ್ಟಸಂಕಟವನ್ನು ಅನ್ನಪಾನವಾಗಿ ಕೊಟ್ಟರೂ ನಿಮ್ಮ ಬೋಧಕರು ಇನ್ನು ನಿಮಗೆ ಮರೆಯಾಗಿ ಇರುವುದಿಲ್ಲ. ನೀವು ಅವರನ್ನು ಕಣ್ಣಾರೆ ಕಾಣುವಿರಿ. ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು. ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲು ಗಾವಲುಗಳಲ್ಲಿ ಮೇಯುವುವು. ಹೊಲಗೇಯುವ ನಿಮ್ಮ ಎತ್ತು ಕತ್ತೆಗಳು ಮೊರದಿಂದಲೂ ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು. ಕೋಟೆಕೊತ್ತಲಗಳು ಬಿದ್ದುಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು. ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು. 

ಕೀರ್ತನೆ: 147: 1-2, 3-4, 5-6

ಶ್ಲೋಕ: ಪ್ರಭುವಿನಲ್ಲಿ ವಿಶ್ವಾಸವಿಡುವವರು ಉಲ್ಲಾಸಿಸುತ್ತಾರೆ  

ಶುಭಸಂದೇಶ: ಮತ್ತಾಯ 9: 35 – 10: 1, 5a, 6-8 


ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀ ಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾ ತರಹದ ರೋಗರುಜಿನಗಳನ್ನು ಗುಣಪಡಿಸಿದರು. ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು. ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು. ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, "ಬೆಳೆಯೇನೋ ಹೇರಳ; ಕೊಯಿಲಿಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ," ಎಂದರು. ಯೇಸುಸ್ವಾಮಿ ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ, ದೆವ್ವಗಳನ್ನು ಬಿಡಿಸಿರಿ. ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.

01.12.22 - "ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ದಿವಂತನನ್ನು ಹೋಲುತ್ತಾನೆ"

ಮೊದಲನೇ ವಾಚನ: ಯೆಶಾಯ 26: 1-6 


ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು: ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ. ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು. ನಿನ್ನ ನೆಚ್ಚಿದವರಿಗೆ, ಸ್ಥಿರ ಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ. ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ. ತಗ್ಗಿಸುವನಾತ ಎತ್ತರದಲಿ ವಾಸಿಸುವವರನು, ಕೆಡವಿ, ನೆಲಸಮಮಾಡಿ, ಧೂಳಾಗಿಸುವನು ಅವರು ವಾಸಮಾಡುವಾ ಉನ್ನತ ನಗರವನು. ಈಡಾಗುವುದದು ಕಾಲತುಳಿತಕೆ ದೀನದಲಿತರ ಪಾದತುಳಿತಕೆ.

ಕೀರ್ತನೆ: 118: 1 8-9, 19-21, 25-27a 

ಶ್ಲೋಕ: ಪ್ರಭುವಿನ ನಾಮದಲ್ಲಿ ಬರುವವನಿಗೆ ಜಯಮಂಗಳ 

ಶುಭಸಂದೇಶ: ಮತ್ತಾಯ 7: 21, 24-27 

ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ನನ್ನನ್ನು "ಸ್ವಾವಿೂ, ಸ್ವಾವಿೂ," ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು. "ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ದಿವಂತನನ್ನು ಹೋಲುತ್ತಾನೆ. ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು. ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ದಿಹೀನನನ್ನು ಹೋಲುತ್ತಾನೆ. ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!".

30.11.22

ಮೊದಲನೇ ವಾಚನ: ರೋಮನ್ನರಿಗೆ  10: 9-18

"ಯೇಸುಸ್ವಾಮಿಯೇ ಪ್ರಭು" ಎಂದು ನೀನು ಬಾಯಿಂದ ನಿವೇದಿಸಿಅವರನ್ನು ದೇವರು ಸಾವಿನಿಂದ ಪುನರುತ್ದಾನಗೊಳಿಸಿದ್ದಾರೆಂದು ಹೃದಯದಿಂದ ವಿಶ್ವಾಸಿಸಿದರೆ ಜೀವೋದ್ಧಾರವನ್ನು ಹೊಂದುತ್ತೀಯೆ. ಹೌದುಹೃದಯಪೂರ್ವಕವಾಗಿ ವಿಶ್ವಾಸಿಸುವವನು ದೇವರೊಡನೆ ಸತ್ಸಂಬಂದವನ್ನು ಪಡೆಯುತ್ತಾನೆಬಾಯಿಂದ ನಿವೇದಿಸುವವನು ಜೀವೋದ್ಧಾರ ಹೊಂದುತ್ತಾನೆ. ಏಕೆಂದರೆ, "ಅವರಲ್ಲಿ ವಿಶ್ವಾಸ ಇಡುವ ಯಾರಿಗೂ ಆಶಾಭಂಗವಾಗುವುದಿಲ್ಲ." ಎಂದು ಪವಿತ್ರಗ್ರಂಥದಲ್ಲೇ ಹೇಳಲಾಗಿದೆ. ಈ ವಿಷಯದಲ್ಲಿ ಯೆಹೂದ್ಯರುಯೆಹೂದ್ಯರಲ್ಲದವರು ಎಂಬ ಭೇದಭಾವವಿಲ್ಲಸರ್ವರಿಗೂ ಒಬ್ಬರೇ ಪ್ರಭು. ತಮ್ಮನ್ನು ಬೇಡಿಕೊಳ್ಳುವ ಎಲ್ಲರಿಗೂ ಅವರು ಧಾರಾಳವಾಗಿ ವರದಾನವನ್ನು ನೀಡುತ್ತಾರೆ. "ಪ್ರಭುವಿನ ನಾಮಸ್ಮರಣೆ ಮಾಡುವ ಪ್ರತಿಯೊಬ್ಬನೂ ಜೀವೋದ್ಧಾರವನ್ನು ಹೊಂದುತ್ತಾನೆ," ಎಂದು ಲಿಖಿತವಾಗಿದೆ. ಪ್ರಭುವಿನಲ್ಲಿ ವಿಶ್ವಾಸವಿಲ್ಲದಿದ್ದರೆ ಅವರ ನಾಮಸ್ಮರಣೆ ಮಾಡುವುದಾದರೂ ಹೇಗೆಅವರ ವಿಷಯವನ್ನು ಕುರಿತು ಕೇಳದಿದ್ದರೆ ಅವರನ್ನು ವಿಶ್ವಾಸಿಸುವುದಾದರೂ ಹೇಗೆಭೋಧಿಸುವವರು ಇಲ್ಲದಿದ್ದರೆ ಅವರ ವಿಷಯಗಳನ್ನು ಕುರಿತು ಕೇಳುವುದಾದರೂ ಹೇಗೆಭೋಧಿಸುವವರನ್ನು ಕಳುಹಿಸದೆ ಹೋದರೆಅವರು ಶುಭಸಂದೇಶವನ್ನು ಭೋಧಿಸುವುದಾದರೂ ಹೇಗೆ? "ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ," ಎಂದು ಪವಿತ್ರ ಗ್ರಂಥದಲ್ಲೇ ಬರೆಯಲಾಗಿದೆ. ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಃಗೀಕರಿಸಲಿಲ್ಲ. ಆದ್ದರಿಂದಲೇ ಯೆಶಾಯನು, "ಪ್ರಭುವೇನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?"  ಎಂದು ಮೊರೆಯಿಟ್ಟಿದ್ದಾನೆ. ಇಂತಿರಲುಶುಭಸಂದೇಶವನ್ನು ಆಲಿಸುವುದರಿಂದ ವಿಶ್ವಾಸ ಮೂಡುತ್ತದೆ. ಶುಭಸಂದೇಶ ಕ್ರಿಸ್ತಯೇಸುವನ್ನು ಭೋಧಿಸುವುದರ ಮೂಲಕ ಪ್ರಕಟವಾಗುತ್ತದೆ. ಈಗ ನನ್ನದೊಂದು ಪ್ರಶ್ನೆ; "ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೇ?" ನಿಶ್ಚಯವಾಗಿ ಇತ್ತು. ಪವಿತ್ರ ಗ್ರಂಥದಲ್ಲಿ ಹೇಳಿರುವಂತೆ: "ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು,"

ಕೀರ್ತನೆ: 19:2-3, 4-5
ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ.


ಆಕಾಶಮಂಡಲ ಸಾರುತಿದೆ ದೇವರ ಮಹಿಮೆಯನು|
ತಾರಮಂಡಲ ತೋರುತಿದೆ ದೇವರ ಕೈಕೃತಿಗಳನು||
ದಿನವು ಮರುದಿನಕೆ ಈ ಪ್ರಕಟನೆಯನು|
ರಾತ್ರಿ ಮರುರಾತ್ರಿಗೆ ನೀಡುತಿದೆ ಈ ಪ್ರಚಾರವನು||

ಅವುಗಳಿಗೆ ಮಾತಿಲ್ಲ, ಅವುಗಳಿಗೆ ಶಬ್ದವಿಲ್ಲ|
ಅವುಗಳ ಸ್ವರವಂತೂ ಕೇಳಿ ಬರುವುದಿಲ್ಲ||
ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ|
ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ||

ಘೋಷಣೆ: ಮತ್ತಾಯ 4:19

ಅಲ್ಲೆಲೂಯ, ಅಲ್ಲೆಲೂಯ!
ನನ್ನನ್ನು ಹಿಂಬಾಲಿಸಿ ಬನ್ನಿ; ನಿಮ್ಮನ್ನು ಮನುಷ್ಯರನೇ ಹಿಡಿಯುವವರನ್ನಾಗಿ ಮಾಡುವೆನು.
ಅಲ್ಲೆಲೂಯ!


ಶುಭಸಂದೇಶ: ಮತ್ತಾಯ  4:18-22

ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದರು ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ 'ಪೇತ್ರಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಆಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು. "ನನ್ನನ್ನು ಹಿಂಬಾಲಿಸಿ ಬನ್ನಿ. ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು," ಎಂದು ಹೇಳಿ ಯೇಸು ಅವರನ್ನು ಕರೆದರು. ತಕ್ಷಣವೇಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು. ಅಲ್ಲಿಂದ ಮುಂದಕ್ಕೆ ಹೋಗುತ್ತಿದ್ದಾಗ ಯೇಸು ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಎಂಬ ಇನ್ನಿಬ್ಬರು ಸಹೋದರರನ್ನು ಕಂಡರು. ಇವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯಲ್ಲಿ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಇವರನ್ನೂ ಕರೆದರು. ಕೂಡಲೇ ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

29.11.22 - “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು"

ಮೊದಲನೇ ವಾಚನ: ಯೆಶಾಯ 11: 1-10 


ಜೆಸ್ಸೆಯನ ಬುಡದಿಂದ ಒಡೆಯುವು ದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು. ನೆಲಸುವುದಾತನ ಮೇಲೆ ಜ್ಞಾನವಿವೇಕ ದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ ಸರ್ವೇಶ್ವರನ ಭಯಭಕ್ತಿ ಅವಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆ ನಿರ್ಣಯಿಸನಾತ ಕಿವಿಗೆ ಬಿದ್ದಂತೆ. ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ. ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ. ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆ ಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆ ನಡೆಸುವುದವುಗಳನು ಚಿಕ್ಕಮಗು ಮೇಯಿಸುವುದಕೆ. ಮೇಯುವುವು ಕರಡಿ, ಆಕಳುಗಳು ಒಟ್ಟಿಗೆ ಮಲಗುವುವು ಅವುಗಳ ಮರಿಗಳು ಜೊತೆಗೆ ಎತ್ತಿನ ಹುಲ್ಲು ಮೇವಾಗುವುದು ಸಿಂಹಕೆ. ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ ಕೈ ಹಾಕುವುದು ಮೊಲೆಬಿಟ್ಟ ಮಗು ಹಾವಿನಬಿಲದ ಒಳಗೆ. ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ. ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿ ನಿಲಯವು.

ಕೀರ್ತನೆ: 72: 1-2, 7-8, 12-13, 17 
ಶ್ಲೋಕ: ಬೆಳೆಯಲಿ ಆತನ ಪಾಲನೆಯಲ್ಲಿ ನ್ಯಾಯನೀತಿ, ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ. 

ಶುಭಸಂದೇಶ: ಲೂಕ 10: 21-24 

ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ. ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವರೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು. ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು. ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.

28.11.22 - "ತಾವು ಒಂದೇ ಒಂದು ಮಾತು ಹೇಳಿದರೆ ಸಾಕು"

ಮೊದಲನೇ ವಾಚನ: ಯೆಶಾಯ 4:2-6 


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆಯುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು. ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು. ಆಗ ಒಡೆಯರಾದ ಸ್ವಾಮಿ ನ್ಯಾಯ ನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿ ಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದು ಹಾಕುವರು. ಸಿಯೋನ್ ಪರ್ವತದ ಮೇಲೆಲ್ಲಾ, ಅಲ್ಲಿನ ಸಭಾ ಕೂಟಗಳ ಮೇಲೆಲ್ಲಾ ಹಗಲಲ್ಲಿ ಧೂಮ ಮೇಘವನ್ನು, ರಾತ್ರಿಯಲ್ಲಿ ಪ್ರಜ್ವಲಿಸುವ ಅಗ್ನಿ ಪ್ರಕಾಶವನ್ನು ಉಂಟು ಮಾಡುವರು. ದೇವರ ಮಹಿಮೆ ಛತ್ರಿಯಂತೆಯೂ ಚಪ್ಪರದಂತೆಯೂ ಎಲ್ಲರನ್ನು ಆವರಿಸುವುದು. ಅದು ಹಗಲಿನ ಬಿಸಿಲಲ್ಲಿ ನೆರಳನ್ನೂ ಮಳೆ ಗಾಳಿ ಬಂದಾಗ ಆಶ್ರಯವನ್ನೂ ಕೊಡುವ ಮಂಟಪವಾಗಿರುವುದು. 

ಕೀರ್ತನೆ: 122:1-2, 3-4, 4-5, 6-7, 8-9 

ಶ್ಲೋಕ: ಪ್ರಭುವಿನಾಲಯಕ್ಕೆ ಹೋಗೋಣ ಬಾ ಎಂದಾಗ ಆಯಿತೆನಗೆ ಆನಂದ, ಜನರೆನ್ನ ಕರೆದಾಗ 

ಶುಭಸಂದೇಶ: ಮತ್ತಾಯ 8:5-11 

ಯೇಸುಸ್ವಾಮಿ ಕಫೆರ್ನವುಮ್ ಊರಿಗೆ ಬಂದಾಗ ಶತಾಧಿಪತಿಯೊಬ್ಬನು ಅವರನ್ನು ಎದುರುಗೊಂಡನು. "ಪ್ರಭೂ, ನನ್ನ ಸೇವಕ ಮನೆಯಲ್ಲಿ ಪಾರ್ಶ್ವವಾಯು ರೋಗದಿಂದ ಹಾಸಿಗೆ ಹಿಡಿದಿದ್ದಾನೆ. ಬಹಳವಾಗಿ ನರಳುತ್ತಿದ್ದಾನೆ," ಎಂದು ವಿನಂತಿಸಿದನು. ಯೇಸು, "ನಾನೇ ಬಂದು ಅವನನ್ನು ಗುಣಪಡಿಸುತ್ತೇನೆ," ಎಂದರು. ಅದಕ್ಕೆ ಆ ಶತಾಧಿಪತಿ, "ಪ್ರಭುವೇ, ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು. ಏಕೆಂದರೆ, ನಾನೂ ಮತ್ತೊಬ್ಬರ ಕೈ ಕೆಳಗಿರುವವನು, ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು, "ಬಾ"  ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ, "ಹೋಗು" ಎಂದರೆ ಹೋಗುತ್ತಾನೆ. ಸೇವಕನಿಗೆ, "ಇಂಥದ್ದನ್ನು ಮಾಡು" ಎಂದರೆ  ಮಾಡುತ್ತಾನೆ," ಎಂದನು. ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: "ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಪೂರ್ವ ಪಶ್ಚಿಮ ದಿಕ್ಕುಗಳಿಂದ ಆನೇಕ ಜನರು ಬಂದು ಅಬ್ರಾಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯ ಹಬ್ಬದೂಟದಲ್ಲಿ ಭಾಗಿಗಳಾಗುವರು.

27.11.22 - "ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು."

ಮೊದಲನೇ ವಾಚನ: ಯೆಶಾಯ 2:1-5 

ಜುದೇಯ ಮತ್ತು ಜೆರುಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನು ಕಂಡ ದರ್ಶನದಲ್ಲಿ ಕೇಳಿಬಂದ ದೈವೋಕ್ತಿ: ಸರ್ವೇಶ್ವರನ ಶ್ರೀ ನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು. ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದುಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದುಬರುವುವು. ದೇಶವಿದೇಶಗಳವರು ಬಂದು ಹೇಳುವರು ಹೀಗೆ: "ಬನ್ನಿ, ಹೋಗೊಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ಆತನ ಮಾರ್ಗಗಳನು. ನಾವು ಹಿಡಿದುನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ; ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ. ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು. ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ, ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ; ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ, ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ." 

ಕೀರ್ತನೆ: 122:1-2, 3-4, 4-5, 6-7, 8-9 

ಶ್ಲೋಕ: ಪ್ರಭುವಿನಾಲಾಯಕೆ ಬಾ ಹೋಗೋಣ ಎಂದಾಗ ಆಯಿತೆನಗೆ ಆನಂದ, ಜನರೆನ್ನ ಕರೆದಾಗ 


1. ಪ್ರಭುವಿನಾಲಾಯಕೆ ಬಾ ಹೋಗೋಣ ಎಂದಾಗ |
ಆಯಿತೆನಗೆ ಆನಂದ, ಜನರೆನ್ನ ಕರೆದಾಗ ||
ನಮ್ಮ ಕಾಲುಗಳು ಓ ಜೆರುಸಲೇಮೇ |
ತಲುಪಿವೆ ನಿನ್ನ ಪುರದ್ವಾರಗಳನೇ ||

2. ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ |
ಮಾಡುವರಿಲ್ಲಿಯೆ ಪ್ರಭುವಿನ ನಾಮಕೀರ್ತನೆ |
ಪಾಲಿಪರಿಂತು ಇಸ್ರಯೇಲರಿಗೆ ವಿಧಿಸಿದಾಜ್ಞೆ ||
ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು |
ದಾವೀದನ ಮನೆತನದವರ ಸಿಂಹಾಸನಗಳು ||

3. ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ |
"ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ ||
ಶುಭವಿರಲಿ ನಿನ್ನೀ - ಪೌಳಿಗೋಡೆಗಳೊಳಗೆ |
ಸಂರಕ್ಷಣೇ ಇರಲಿ ನಿನ್ನ ಅರಮನೆಯೊಳಗೆ" ||

4. ನನ್ನ ಬಂಧುಬಳಗದವರ ನಿಮಿತ್ತ |
"ನಿನಗೆ ಶುಭವಿರಲಿ" ಎಂಬುದು ನನ್ನ ಮತ ||
ನಮ್ಮ ಸ್ವಾಮಿದೇವರ ಮಂದಿರದ ನಿಮಿತ್ತ |
ಹರಸುವೆ ನಿನ್ನ ಸುಕ್ಷೇಮವನು ಹಾರೈಸುತ ||

ಎರಡನೇ ವಾಚನ: ರೋಮನರಿಗೆ 13:11-14 

ಸಹೋದರರೇ, ಇದೆಂತಹ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತ ಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ. ಇರುಳು ಬಹುಮಟ್ಟಿಗೆ ಕಳೆಯಿತು, ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕ್ರತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ. ದುಂದೌತಣ - ಕುಡಿತನಗಳಲ್ಲಾಗಲೀ, ಕಾಮವಿಲಾಸ - ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ - ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ. ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ. 

ಶುಭಸಂದೇಶ: ಮತ್ತಾಯ 24:37-44 

ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ನೋವನ ಕಾಲದಲ್ಲಿ ಆದಂತೆಯೇ ನರಪುತ್ರನು ಬರುವಾಗಲೂ ಆಗುವುದು. ಜಲಪ್ರಳಯಕ್ಕೆ ಹಿಂದಿನ ದಿನಗಳಲ್ಲಿ ನೋವನು ನಾವೆಯನ್ನು ಹತ್ತುವ ದಿನದವರೆಗೆ ಜನರು ತಿನ್ನುತ್ತಲೇ ಇದ್ದರು ಕುಡಿಯುತ್ತಲೇ ಇದ್ದರು; ಮದುವೆ ಮಾಡಿಕೊಡುವುದರಲ್ಲೂ ಮಾಡಿಕೊಡುವುದರಲ್ಲೂ ನಿರತರಾಗಿದ್ದರು. ಜಲಪ್ರಳಯ ಬಂದು ಅವರನ್ನು ಕೊಚ್ಚಿಕೊಂಡು ಹೋಗುವ ತನಕ ಅದರ ಅರಿವೇ ಅವರಿಗಿರಲಿಲ್ಲ. ನರಪುತ್ರನು ಆಗಮಿಸುವಾಗಲೂ ಹಾಗೆಯೇ ನಡೆಯುವುದು. ಆಗ ಹೊಲದಲ್ಲಿದ್ದ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು. ಇನ್ನೊಬ್ಬನನ್ನು ಬಿಡಲಾಗುವುದು. ಒಂದೆ ಕಲ್ಲಿನಲ್ಲಿ ಬೀಸುತ್ತ ಇರುವ ಇಬ್ಬರು ಮಹಿಳೆಯರಲ್ಲಿ ಒಬ್ಬಳನ್ನು ತೆಗೆದುಕೊಂಡು ಹೋಗಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು. ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು. ಆದ್ದರಿಂದ ಎಚ್ಚರವಾಗಿರಿ. ಕಳ್ಳನು ಬರುವ ಗಳಿಗೆ ಮನೆಯ ಯಾಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಹಾಕಲು ಬಿಡನು ಅಲ್ಲವೆ? ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಎಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು.

26.11.22 - “ಮಿತಿ ಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ"

ಮೊದಲನೇ ವಾಚನಪ್ರಕಟಣಾ ಗ್ರಂಥ 22:1-7


ಬಳಿಕ  ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನುಅದು ಸ್ಫಟಿಕದಂತೆ ಮಿನುಗುತ್ತಿತ್ತುಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತುಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದುಪ್ರತೀ ತಿಂಗಳೂ ಫಸಲನ್ನೀಯುವಂಥದ್ದು ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದುಶಾಪಗ್ರಸ್ತವಾದುದು ಯಾವುದೂ  ನಗರದಲ್ಲಿ ಇರದುದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದುಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು ಹೆಸರು  ದಾಸರ ಹಣೆಗಳ ಮೇಲೆ ಲಿಖಿತವಾಗಿರುವುದುರಾತ್ರಿ ಎಂಬುದೇ ಅಲ್ಲಿ ಇರದುದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದುದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರುಯುಗಯುಗಾಂತರಕ್ಕೂ ಅವರು ರಾಜ್ಯವಾಳುವರುಅನಂತರ  ದೇವದೂತನು ನನಗೆ, “ ಮಾತುಗಳು ಸತ್ಯವಾದುವುನಂಬಲರ್ಹವಾದುವುಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆಯೇಸುಸ್ವಾಮಿ ನುಡಿಯುವುದನ್ನು ಕೇಳು ಇಗೋ ನಾನು ಬೇಗನೆ ಬರುತ್ತೇನೆ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!” ಎಂದು ಹೇಳಿದನು.

ಕೀರ್ತನೆ95:1-2, 3-5, 6-7

ಶ್ಲೋಕ: ಪ್ರಭು ಯೇಸುವೇ, ಬನ್ನಿ  

ಶುಭಸಂದೇಶ: ಲೂಕ 21:34-36 

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಮಿತಿ ಮೀರಿದ ಭೋಜನದಿಂದಾಗಲಿಕುಡಿತದಿಂದಾಗಲಿಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತುಜಾಗರೂಕರಾಗಿರಿ!  ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕುಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.