ಮೊದಲನೇ ವಾಚನ: ಪ್ರಕಟಣಾ ಗ್ರಂಥ 15:1-4
ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು. ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ :
ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ !ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ !
ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ
ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.
ಹೇ ಪ್ರಭೂ, ನಿನಗಂಜದವರಾರು?
ನಿನ್ನ ನಾಮಸ್ತುತಿ ಮಾಡದವರಾರು?
ಪರಮಪವಿತ್ರ ನೀನಲ್ಲದಿನ್ಯಾರು
ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು
ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”
ಕೀರ್ತನೆ: 98:1, 2-3, 7-8, 9
ಶುಭಸಂದೇಶ: ಲೂಕ 21:12-19
ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು. ಶುಭಸಂದೇಶಕ್ಕೆ ಸಾಕ್ಷಿಕೊಡಲು ಇದು ನಿಮಗೆ ಸದವಕಾಶವಾಗಿರುತ್ತದೆ. ಆಗ ವಾದಿಸುವುದು ಹೇಗೆಂದು ನೀವು ಮುಂಚಿತವಾಗಿ ಚಿಂತಿಸಬೇಕಾಗಿಲ್ಲ; ಇದು ನಿಮಗೆ ಮನದಟ್ಟಾಗಿರಲಿ. ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು. ನಿಮ್ಮ ತಂದೆತಾಯಿಗಳೇ, ಒಡಹುಟ್ಟಿದವರೇ, ಬಂಧುಮಿತ್ರರೇ, ನಿಮ್ಮನ್ನು ಪರಾಧೀನ ಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದುಹಾಕಿಸುವರು. ನೀವು ನನ್ನವರು ಆದುದರಿಂದಲೇ ಎಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೂ ನಿಮ್ಮ ತಲೆಕೂದಲೊಂದೂ ನಾಶವಾಗುವುದಿಲ್ಲ. ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ.


No comments:
Post a Comment