24.11.22 - "ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು"

ಮೊದಲನೇ ವಾಚನಪ್ರಕಟಣಾ ಗ್ರಂಥ 18:1-2, 21-23; 19:1-3, 9

ಇವುಗಳಾದ ಬಳಿಕ ನಾನು ಮತ್ತೂ ಒಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಮತ್ತೊಬ್ಬ ದೇವದೂತನು ಬಂದನು. ಅವನು ವಿಶೇಷ ಅಧಿಕಾರ ಪಡೆದಿದ್ದನು. ಅವನ ತೇಜಸ್ಸು ಭೂಮಿಯನ್ನು ಬೆಳಗಿತು. ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು. ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು : “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.” “ಎಲೈ ಬಾಬಿಲೋನೇ , ಕಿನ್ನರಿಗಾರರ, ಸಂಗೀತಗಾರರ ಕೊಳಲ ನುಡಿಸುವವರ, ತುತೂರಿಯನೂದುವವರ ಮಧುರ ಗಾನವು ಕೇಳಿಬರದು ನಿನ್ನಲಿ ಮತ್ತೆಂದೂ, ಕುಶಲಕರ್ಮಿಗಳಾರೂ ಕಾಣಸಿಗರು ಇನ್ನೆಂದೂ, ಬೀಸುವ ಕಲ್ಲಿನ ಶಬ್ದವೇ ಇರದು ನಿನ್ನಲ್ಲಿ ಎಂದೆಂದೂ! “ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ. ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಬಂದ ಒಂದು ಮಹಾಶಬ್ದವನ್ನು ಆಲಿಸಿದೆ. ಅದು ದೊಡ್ಡ ಜನಸಮೂಹದ ಆರ್ಭಟದಂತಿತ್ತು. “ಅಲ್ಲೆಲೂಯ! ಜೀವೋದ್ಧಾರವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲುಂಟು. ಆತನ ನ್ಯಾಯತೀರ್ಪು ಸತ್ಯವಾದುದು ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಣಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು. ಅವರು ಮತ್ತೊಮ್ಮೆ, “ಅಲ್ಲೆಲೂಯ! ಅವಳ ದಹನದಿಂದ ಹೊಗೆ ಸತತ ಮೇಲೇರುತಿಹುದು ಒಂದೇಸಮನೆ” ಎಂದು ಕೂಗಿದರು. ಅನಂತರ ದೇವದೂತನು “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು.

 

ಕೀರ್ತನೆ100:2, 3, 4, 5

ಶ್ಲೋಕ: ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು 

 

ಶುಭಸಂದೇಶ: ಲೂಕ 21:20-28

 

ಯೇಸು ಶಿಷ್ಯರಿಗೆ ಹೀಗೆಂದರು: “ಜೆರುಸಲೇಮ್ ಪಟ್ಟಣವನ್ನು ಸೈನ್ಯಗಳು ಸುತ್ತುಗಟ್ಟುತ್ತಿರುವುದನ್ನು ನೀವು ಕಾಣುವಾಗ ಅದರ ವಿನಾಶ ಸಮೀಪಿಸಿತೆಂದು ತಿಳಿದುಕೊಳ್ಳಿ. ಆಗ ಜುದೇಯದಲ್ಲಿರುವವರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ; ಪಟ್ಟಣದೊಳಗಿರುವವರು ಅಲ್ಲಿಂದ ಹೊರಟುಹೋಗಲಿ; ಹಳ್ಳಿಗಾಡಿನಲ್ಲಿರುವವರು ಪಟ್ಟಣಕ್ಕೆ ಬಾರದಿರಲಿ. ಏಕೆಂದರೆ, ದಂಡನೆಯ ಕಾಲ ಅದು. ಅದನ್ನು ಕುರಿತು ಪವಿತ್ರಗ್ರಂಥದಲ್ಲಿ ಬರೆದಿರುವುದೆಲ್ಲಾ ಆಗ ನೆರವೇರಬೇಕು. ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು! ಈ ನಾಡು ಮಹಾವಿಪತ್ತಿಗೆ ಈಡಾಗುವುದು. ಈ ಜನತೆ ದೈವಕೋಪಕ್ಕೆ ಗುರಿಯಾಗುವುದು. ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು. “ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು. ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು. ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು. ಇವೆಲ್ಲವೂ ಸಂಭವಿಸಲು ತೊಗುವಾಗ ನೀವು ನಿರೀಕ್ಷಿಸುತ್ತಾ ತಲೆಯೆತ್ತಿ ನಿಲ್ಲಿರಿ; ಏಕೆಂದರೆ, ನಿಮ್ಮ ಉದ್ಧಾರವು ಸಮೀಪಿಸಿತು.”

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...