04.01.23 - "ನಮಗೆ "ಮೆಸ್ಸೀಯ" ಸಿಕ್ಕಿದ್ದಾರೆ"

ಮೊದಲನೇ ವಾಚನ: 1 ಯೊವಾನ್ನ 3:7-10 

ಪ್ರಿಯ ಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವುದಕ್ಕೆ ಯಾರಿಗೂ ಅವಕಾಶ ಕೊಡಬೇಡಿ. ಕ್ರಿಸ್ತಯೇಸು ಸತ್ಯ ಸ್ವರೂಪಿಯಾಗಿರುವಂತೆಯೇ ಸತ್ಯಕ್ಕನುಸಾರ ನಡೆಯುವ ಪ್ರತಿ ಒಬ್ಬನೂ ಸತ್ಯವಂತನೇ. ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕ್ರತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡದ್ದು. ದೇವರಿಂದ ಜನಿಸಿದ ಯಾವನೂ ಪಾಪಮಾಡನು. ದೇವರ ಜೀವದ ಕುಡಿ ಅವನಲ್ಲಿರುವುದು. ಅವನು ಪಾಪದಲ್ಲಿ ಜೀವಿಸನು. ಏಕೆಂದರೆ, ಅವನು ದೇವರಿಂದ ಜನಿಸಿದವನು. ಸನ್ಮಾರ್ಗದಲ್ಲಿ ನಡೆಯದವನೂ ಸಹೋದರರನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು. 

ಕೀರ್ತನೆ: 98:1, 7-9 
ಶ್ಲೋಕ: ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ ನಮ್ಮ ದೇವ ಸಾಧಿಸಿದ ಜಯಗಳಿಕೆ. 

ಶುಭಸಂದೇಶ: ಯೊವಾನ್ನ 1:35-42 

ಮಾರನೆಯ ದಿನ ಯೊವಾನ್ನನು ತನ್ನಿಬ್ಬರು ಶಿಷ್ಯರ ಸಂಗಡ ನಿಂತುಕೊಂಡಿರುವಾಗ, ಯೇಸುಸ್ವಾಮಿ ಆ ಮಾರ್ಗವಾಗಿ ಹೋಗುತ್ತಿದ್ದರು. ಅವರನ್ನು ನೋಡುತ್ತಲೇ ಯೊವಾನ್ನನು ತನ್ನ ಆ ಶಿಷ್ಯರಿಗೆ, "ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ  ಕುರಿಮರಿ," ಎಂದು ಹೇಳಿದನು. ಇದನ್ನು ಕೇಳಿ ಆ ಶಿಷ್ಯರು ಯೇಸುವನ್ನು ಹಿಂಬಾಲಿಸಿದರು. ಯೇಸುಸ್ವಾಮಿ, ತಮ್ಮನ್ನು ಹಿಂಬಾಲಿಸಿ ಬರುತ್ತಿರುವುದನ್ನು ನೋಡಿ, "ನಿಮಗೆ ಏನು ಬೇಕು?" ಎಂದು ಕೇಳಿದರು. ಅವರು, "ರಬ್ಬಿ, ತಾವು ವಾಸ ಮಾಡುವುದೆಲ್ಲಿ?" ಎಂದು ವಿಚಾರಿಸಿದರು. ('ರಬ್ಬಿ'  ಎಂದರೆ ಗುರುದೇವ ಎಂದು ಅರ್ಥ.) ಯೇಸು ಉತ್ತರವಾಗಿ, "ಬಂದು ನೋಡಿ" ಎನ್ನಲು ಅವರು ಹೋಗಿ ಯೇಸುಸ್ವಾಮಿ ಇದ್ದ ಸ್ಥಳವನ್ನು ಕಂಡು ಆ ದಿನವನ್ನು ಅವರೊಡನೆ ಕಳೆದರು. ಆಗ ಸಾಯಂಕಾಲ ಸುಮಾರು ನಾಲ್ಕು ಗಂಟೆಯಾಗಿತ್ತು. ಯೊವಾನ್ನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ್ದ ಇಬ್ಬರು ಶಿಷ್ಯರಲ್ಲಿ ಸಿಮೋನ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನು. ಇವನು ಮೊದಲು ತನ್ನ ಸಹೋದರ ಸಿಮೋನನನ್ನು ಕಂಡು, "ನಮಗೆ "ಮೆಸ್ಸೀಯ" ಸಿಕ್ಕಿದ್ದಾರೆ," ಎಂದು ತಿಳಿಸಿ ಅವನನ್ನು ಯೇಸುವಿನ ಬಳಿಗೆ ಕರೆತಂದನು. ('ಮೆಸ್ಸೀಯ' ಎಂದರೆ ಅಭಿಷಿಕ್ತನಾದ ಲೋಕೋದ್ಧಾರಕ ಎಂದು ಅರ್ಥ). ಯೇಸು ಸಿಮೋನನನ್ನು ನೋಡಿ, "ಯೊವಾನ್ನನ ಮಗನಾದ ಸಿಮೋನನೇ, ಇನ್ನು ಮುಂದೆ ನಿನ್ನನ್ನು ಕೇಫನೆಂದು ಕರೆಯುವರು," ಎಂದು ನುಡಿದರು. ('ಕೇಫ' ಎಂದರೆ 'ಪೇತ್ರ' ಇಲ್ಲವೇ 'ಬಂಡೆ' ಎಂದರ್ಥ).

No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...