ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

01.02.23

ಮೊದಲನೆಯ ವಾಚನ - ಹಿಬ್ರಿಯರಿಗೆ 12: 4-7, 11-15

ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ. ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? “ಸುಕುಮಾರಾ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು ಸರ್ವೇಶ್ವರ ತಾವು ಪ್ರೀತಿಸುವವನನ್ನು ಶಿಕ್ಷಿಸುವರು; 
ತಮಗೆ ಮಗನೆಂದು ಬರಮಾಡಿಕೊಳ್ಳುವವನನ್ನು ದಂಡಿಸುವರು.” ಶಿಸ್ತಿಗಾಗಿ ಶಿಕ್ಷೆಯನ್ನು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ತಂದೆಯಿಂದ ಶಿಕ್ಷೆಯನ್ನು ಪಡೆಯದ ಮಗನಿದ್ದಾನೆಯೇ? ಯಾವ ಶಿಕ್ಷೆಯಾದರೂ ತಕ್ಷಣಕ್ಕೆ ಸಿಹಿಯಾಗಿರದೆ ಕಹಿಯಾಗಿಯೇ ಇರುತ್ತದೆ. ಹೀಗೆ ಶಿಸ್ತಿನ ಕ್ರಮಕ್ಕೆ ಒಳಗಾದವರು ಮುಂದಕ್ಕೆ ನ್ಯಾಯನೀತಿಯನ್ನೂ ಶಾಂತಿಸಮಾಧಾನವನ್ನೂ ಪ್ರತಿಫಲವಾಗಿ ಪಡೆಯುತ್ತಾರೆ. ಆದ್ದರಿಂದ, ಜೋತುಬೀಳುವ ನಿಮ್ಮ ಕೈಗಳನ್ನು ಮೇಲೆತ್ತಿ, ಕುಸಿದುಬೀಳುವ ನಿಮ್ಮ ಮೊಣಕಾಲುಗಳನ್ನು ಚೇತರಿಸಿಕೊಳ್ಳಿ. ನೀವು ಹಿಡಿದಿರುವ ಹಾದಿಯನ್ನು ಸರಿಪಡಿಸಿಕೊಳ್ಳಿ. ಆಗ ಕುಂಟುವ ಕಾಲು ಉಳುಕದೆ ವಾಸಿಯಾಗುತ್ತದೆ. ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ. ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.
ಪ್ರಭುವಿನ ವಾಕ್ಯ

ಕೀರ್ತನೆ - 103: 1-2, 13-14, 17-18
ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I

ಭಜಿಸು ನನ್ನ ಮನವೇ, ಭಜಿಸು ಪ್ರಭುವನು I
ನನ್ನ ಅಂತರಂಗವೇ, ಭಜಿಸು ಆತನನು I

ನೆನೆ ಆತನ ಪರಮಪಾವನ ನಾಮವನು II
ಭಜಿಸು ನನ್ನ ಮನವೇ, ಭಜಿಸು ಪ್ರಭುವನು I

ಮರೆಯದಿರು ಆತನ ಉಪಕಾರಗಳೊಂದನು II
ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ I

ಕನಿಕರಿಸುವನಾತ ತನಗೆ ಅಂಜುವವರಿಗೆ II
ಏಕೆನೆ, ನಮ್ಮ ಸ್ವಭಾವವನು ಆತನು ಬಲ್ಲ I

ನಾವು ಹುಡಿಮಣ್ಣೆಂದವನಿಗೆ ತಿಳಿದಿದೆಯಲ್ಲಾ II
ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I

ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II
ಅಂತೆಯೇ ಆತನ ನಿಬಂಧನೆಗಳನು ಕೈಗೊಳ್ಳುವವರಿಗೆ I
ಆತನ ವಿಧಿನಿಯಮಗಳು ನೆನಪಿನಲ್ಲಿಟ್ಟು ನಡೆವವರಿಗೆ II

ಶುಭಸಂದೇಶ - ಮಾರ್ಕ 6: 1-6

ಯೇಸುಸ್ವಾಮಿ ಅಲ್ಲಿಂದ ಹೊರಟು ತಮ್ಮ ಸ್ವಂತ ಊರಿಗೆ ಹೋದರು. ಶಿಷ್ಯರು ಅವರನ್ನು ಹಿಂಬಾಲಿಸಿದರು. ಸಬ್ಬತ್‍ದಿನ ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಉಪದೇಶ ಮಾಡತೊಡಗಿದರು. ಕಿಕ್ಕಿರಿದು ನೆರೆದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಇದೆಲ್ಲಾ ಇವನಿಗೆ ಎಲ್ಲಿಂದ ಬಂದಿತು? ಇವನು ಪಡೆದಿರುವ ಜ್ಞಾನವಾದರೂ ಎಂಥಾದ್ದು? ಇವನಿಂದ ಮಹತ್ಕಾರ್ಯಗಳು ಆಗುವುದಾದರೂ ಹೇಗೆ? ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು. ಆಗ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು. ಆದರೆ ಸ್ವಗ್ರಾಮದಲ್ಲಿ, ಸ್ವಜನರಲ್ಲಿ, ಸ್ವಗೃಹದಲ್ಲಿ ಗೌರವ ದೊರಕದು,” ಎಂದರು. ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ, ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ. ಆ ಜನರ ಅವಿಶ್ವಾಸವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು
ಪ್ರಭುವಿನ ಶುಭಸಂದೇಶ

No comments:

Post a Comment