ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

02.02.23 - “ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು"

ಮೊದಲನೆಯ ವಾಚನ - ಮಲಾಕಿ 3: 1-4

ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.” “ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು? ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನು ಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು. ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಇದ್ದಂತೆ ಜೂದಾ ಮತ್ತು ಜೆರುಸಲೇಮಿನ ಜನರ ಕಾಣಿಕೆಗಳು ಆ ಸ್ವಾಮಿಗೆ ಮೆಚ್ಚುಗೆಯಾಗಿರುವುವು.”
ಪ್ರಭುವಿನ ವಾಕ್ಯ

ಕೀರ್ತನೆ: 24: 7-10
ಶ್ಲೋಕ: ಯಾರಿವನು ಮಹಿಮಾವಂತ ರಾಜಾಧಿರಾಜನು? ಇವನೇ ಪ್ರಭು.

ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I
ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II

ಯಾರಿವನು ಮಹಿಮಾವಂತ ರಾಜಾಧಿರಾಜನು? I
ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು! II

ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I
ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II

ಯಾರಿವನು ಮಹಿಮಾವಂತ ರಾಜಾಧಿರಾಜನು? I
ಇವನೇ ಸೇನಾಧೀಶ್ವರನು, ಮಹಿಮಾರಾಜನು II

ಎರಡನೆಯ ವಾಚನ - ಹಿಬ್ರಿಯರಿಗೆ 2: 14-18

ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು. ಅವರು ಉದ್ಧಾರ ಮಾಡಬಂದುದು ಖಂಡಿತವಾಗಿ ದೇವದೂತರನ್ನಲ್ಲ, ಅಬ್ರಹಾಮನ ಸಂತತಿಯನ್ನು. ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು. ಸ್ವತಃ ತಾವೇ ಶೋಧನೆಗೊಳಗಾಗಿ ಯಾತನೆಯನ್ನು ಅನುಭವಿಸಿದ್ದರಿಂದ ಶೋಧನೆಗೊಳಗಾಗುವವರಿಗೆ ನೆರವಾಗಲು ಯೇಸು ಸಮರ್ಥರಾದರು.
ಪ್ರಭುವಿನ ವಾಕ್ಯ

ಶುಭಸಂದೇಶ - ಲೂಕ 2: 22-40 


ಮೋಶೆಯ ನಿಯಮದ ಪ್ರಕಾರ ಸೂತಕ ದಿನಗಳು ಮುಗಿದು ಶುದ್ಧೀಕರಣ ದಿನ ಬಂದಾಗ, ತಂದೆತಾಯಿಗಳು ಆ ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು. ಏಕೆಂದರೆ, ‘ಮೊದಲು ಜನಿಸಿದ ಪ್ರತಿಯೊಂದು ಗಂಡು ಮಗುವನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕಾಗಿತ್ತು. ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು. ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು. ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು. ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮ ಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಯಕ್ಕೆ ತಂದಾಗ, ಸಿಮೆಯೋನನು ಆ ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರನ್ನು ಹೀಗೆಂದು ಸ್ತುತಿಸಿದನು:
“ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು
ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.
ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ
ಜನರೆಲ್ಲರ ಸಮ್ಮುಖದಲ್ಲಿ ನೀನೀತನನು ಪ್ರತ್ಯಕ್ಷ ಮಾಡಿರುವೆ.
ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ
ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”
ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳನ್ನು ಕೇಳಿ ತಂದೆತಾಯಿಗಳು ಆಶ್ಚರ್ಯಪಟ್ಟರು. ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು. ನಿನ್ನ ವಿಷಯದಲ್ಲಿ ಹೇಳುವುದಾದರೆ, ದುಃಖವೆಂಬ ಅಲಗೊಂದು ನಿನ್ನ ಅಂತರಂಗವನ್ನು ಸೀಳುವುದು,” ಎಂದು ಹೇಳಿದನು. ಇದಲ್ಲದೆ ಅಲ್ಲಿ ಅಶೇರನ ವಂಶಕ್ಕೆ ಸೇರಿದ ಫನುವೇಲನ ಮಗಳಾದ ಅನ್ನಳೆಂಬ ಪ್ರವಾದಿನಿಯಿದ್ದಳು. ಅವಳು ಮುದಿಪ್ರಾಯದವಳು, ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು. ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು. ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು. ಸರ್ವೇಶ್ವರನ ಧರ್ಮಶಾಸ್ತ್ರಕ್ಕನುಸಾರ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಜೋಸೆಫ್ ಮತ್ತು ಮರಿಯಳು ಗಲಿಲೇಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಗ್ರಾಮವಾದ ನಜರೇತಿಗೆ ಹಿಂದಿರುಗಿದರು. ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನ ಸಂಪೂರ್ಣರೂ ಆದರು. ಇದಲ್ಲದೆ ದೈವಾನುಗ್ರಹ ಅವರ ಮೇಲಿತ್ತು.

ಪ್ರಭುವಿನ ಶುಭಸಂದೇಶ

No comments:

Post a Comment