ಮೊದಲನೇ ವಾಚನ: ಯೆಶಾಯ 58:7-10
ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತ ಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ? “ಇದನ್ನು ಆಚರಿಸುವಾಗ ನೀವು ಉದಯ ಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು. ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು.
ಕೀರ್ತನೆ: 112:4-5, 6-7, 8-9
ಶ್ಲೋಕ: ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು.
ಎರಡನೇ ವಾಚನ: 1 ಕೊರಿಂಥಿಯರಿಗೆ 2:1-5
ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ. ನಾನು ನಿಮ್ಮೊಡನೆ ಇದ್ದಾಗ, ಯೇಸುಕ್ರಿಸ್ತರನ್ನು, ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ. ಈ ಕಾರಣ, ನಾನು ನಿಮ್ಮ ನಡುವೆ ದುರ್ಬಲನೂ ಭಯಭೀತನೂ ಆಗಿದ್ದೆ. ನನ್ನ ಬೋಧನೆ ಹಾಗೂ ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು, ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು. ಅಂತೆಯೇ ನಿಮ್ಮ ವಿಶ್ವಾಸವು ಮನುಷ್ಯ ಜ್ಞಾನವನ್ನು ಆಧರಿಸದೆ, ದೇವರ ಶಕ್ತಿಯನ್ನು ಆಧರಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.
ಶುಭಸಂದೇಶ: ಮತ್ತಾಯ 5:13-16
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಇಂತೆಂದರು: "ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ. ದಾರಿಗರು ಅದನ್ನು ತುಳಿದುಬಿಡುತ್ತಾರಷ್ಟೆ." "ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು. ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ. ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ."
No comments:
Post a Comment