ಮೊದಲನೆಯ ವಾಚನ - ಅದಿಕಾಂಡ 1: 1-19
ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು. ಭೂಮಿ ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕಗ್ಗತ್ತಲು ಕವಿದಿತ್ತು. ದೇವರಾತ್ಮ ಜಲರಾಶಿಯ ಮೇಲೆ ಚಲಿಸುತ್ತಿತ್ತು. ಆಗ ದೇವರು, “ಬೆಳಕಾಗಲಿ” ಎನ್ನಲು ಬೆಳಕಾಯಿತು. ದೇವರ ಕಣ್ಣಿಗೆ ಅದು ಚೆನ್ನಾಗಿ ಕಂಡಿತು. ಅವರು ಬೆಳಕನ್ನೂ ಕತ್ತಲೆಯನ್ನೂ ಬೇರೆಬೇರೆ ಮಾಡಿ ಬೆಳಕಿಗೆ ಹಗಲೆಂದೂ ಕತ್ತಲೆಗೆ ಇರುಳೆಂದೂ ಹೆಸರಿಟ್ಟರು. ಹೀಗೆ ಬೈಗೂ ಬೆಳಗೂ ಆಗಿ ಮೊದಲನೆಯ ದಿನವಾಯಿತು. ಬಳಿಕ ದೇವರು, “ಜಲರಾಶಿಯ ನಡುವೆ ವಿಸ್ತಾರವಾದ ಒಂದು ಗುಮ್ಮಟವು ಉಂಟಾಗಲಿ, ಅದು ಕೆಳಗಿನ ನೀರನ್ನೂ ಮೇಲಿನ ನೀರನ್ನೂ ಬೇರೆಬೇರೆ ಮಾಡಲಿ,” ಎಂದರು. ಹಾಗೆಯೇ ಆಯಿತು. ಹೀಗೆ ದೇವರು ವಿಸ್ತಾರವಾದ ಗುಮ್ಮಟವೊಂದನ್ನು ಮಾಡಿ ಕೆಳಗಿದ್ದ ನೀರನ್ನು ಮೇಲಿದ್ದ ನೀರಿನಿಂದ ವಿಂಗಡಿಸಿದರು. ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟರು. ಹೀಗೆ ಬೈಗೂ ಬೆಳಗೂ ಆಗಿ ಎರಡನೆಯ ದಿನ ಆಯಿತು. ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲ ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ; ಒಣನೆಲವು ಕಾಣಿಸಿಕೊಳ್ಳಲಿ,” ಎಂದರು. ಹಾಗೆಯೇ ಆಯಿತು. ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು. ತರುವಾಯ ದೇವರು, “ಭೂಮಿಯಲ್ಲಿ ಸಸ್ಯಗಳನ್ನೂ - ಎಲ್ಲ ತರದ ದವಸಧಾನ್ಯ, ಹಣ್ಣು ಹಂಪಲು ಇವುಗಳನ್ನು ಬಿಡುವ ಗಿಡಮರಬಳ್ಳಿಗಳನ್ನೂ ಬೆಳೆಯಿಸಲಿ,” ಎಂದರು. ಅದು ಹಾಗೆಯೇ ಆಯಿತು. ಭೂಮಿಯಲ್ಲಿ ಸಸ್ಯಗಳು ಬೆಳೆದವು; ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ಬಿಡುವ ಗಿಡಮರಬಳ್ಳಿಗಳು ಕಾಣಿಸಿಕೊಂಡವು. ದೇವರ ಕಣ್ಣಿಗೆ ಅವು ಚೆನ್ನಾಗಿ ಕಂಡವು. ಹೀಗೆ ಬೈಗೂ ಬೆಳಗೂ ಆಗಿ ಮೂರನೆಯ ದಿನವಾಯಿತು. ಅದಾದನಂತರ ದೇವರು,“ಹಗಲು ಇರುಳುಗಳನ್ನು ಬೇರೆಬೇರೆ ಮಾಡಲು ಋತುಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸಲು, ಹಾಗು ಭೂಮಿಗೆ ಬೆಳಕನ್ನೀಯಲು, ಆಕಾಶ ದೀಪಗಳು ಉಂಟಾಗಲಿ,” ಎಂದರು. ಹಾಗೆಯೇ ಆಯಿತು. ಹಗಲನ್ನಾಳುವುದಕ್ಕೆ ಸೂರ್ಯನನ್ನೂ ಇರುಳನ್ನಾಳುವುದಕ್ಕೆ ಚಂದ್ರನನ್ನೂ, ಹೀಗೆ ಎರಡು ದೀವಿಗೆಗಳನ್ನು ಸೃಷ್ಟಿ ಮಾಡಿದರು. ಅದು ಮಾತ್ರವಲ್ಲ, ನಕ್ಷತ್ರಗಳನ್ನೂ ಅವರು ಸೃಷ್ಟಿಮಾಡಿದರು. ಆ ದೀವಿಗೆಗಳನ್ನು ಆಕಾಶದಲ್ಲಿ ಇಟ್ಟು ಭೂಮಿಗೆ ಬೆಳಕನ್ನೀಯುವಂತೆ ಮಾಡಿದರು. ಹಾಗೂ ಹಗಲಿರುಳುಗಳನ್ನು ಆಳುವುದಕ್ಕೂ, ಬೆಳಕನ್ನೂ ಕತ್ತಲನ್ನೂ ಬೇರೆಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು. ಹೀಗೆ ಬೈಗೂ ಬೆಳಗೂ ಆಗಿ ನಾಲ್ಕನೆಯ ದಿನ ಆಯಿತು.
ಪ್ರಭುವಿನ ವಾಕ್ಯ
ಕೀರ್ತನೆ – 104:1-2, 5-6, 10, 12, 24, 34. V.31
ಪ್ರಭು ಸಂತೋಷಿಸಲಿ ತನ್ನ ಸುಕೃತ್ಯಗಳಿಗಾಗಿ II
ಭಜಿಸು ನನ್ನ ಮನವೇ, ಭಜಿಸು, ಪ್ರಭುವನು I
ಪ್ರಭು, ನನ್ನ ದೇವಾ, ನೀ ಸರ್ವೋತ್ತಮನು I
ಮಹಿಮೆ ಪ್ರತಾಪಗಳಿಂದ ಭೂಷಿತನು II
ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I
ಹರಡಿಸಿರುವೆ ಆಗಸವನು ಗುಡಾರದಂತೆ II
ಬುವಿಯನು ತಳಹದಿಯ ಮೇಲೆ ಸ್ಥಾಪಿಸಿರುವೆ I
ಅದೆಂದಿಗೂ ಕದಲದಂತೆ ಮಾಡಿರುವೆ II
ಅದಕ್ಕೆ ಹೊದಿಸಿರುವೆ ಸಾಗರವೆಂಬ ವಸ್ತ್ರವನು I
ಆ ಜಲರಾಶಿಗಳು ಮುಳುಗಿಸಿವೆ ಬೆಟ್ಟಗಳನು II
ಬುಗ್ಗೆಗಳು ಚಿಮ್ಮಿ ಓಡಮಾಡುವೆ ತಗ್ಗುಗಳಲಿ I
ನದಿಗಳ ಹರಿಯಮಾಡುವೆ ಗುಡ್ಡಗಳ ನಡುವೆಯಲಿ II
ಅವುಗಳ ಅರುಗಲ್ಲೇ ಇವೆ ಹಕ್ಕಿಗಳ ಗೂಡುಗಳು I
ಕೇಳುತಿವೆ ಕೊಂಬೆಗಳಿಂದಾ ಪಕ್ಷಿಗಳ ಕಲರವಗಳು I
ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I
ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II
ಆತನಿಗೊಲಿಯಲಿ ನನ್ನ ಧ್ಯಾನ I
ಆತನಲೇ ಹರ್ಷಿಸಲಿ ನನ್ನ ಮನ II
ಶುಭಸಂದೇಶ - ಮಾರ್ಕ 6: 53-56
ಆ ಕಾಲದಲ್ಲಿ ಯೇಸು ಮತ್ತು ಶಿಷ್ಯರು ಸರೋವರವನ್ನು ದಾಟಿ ಗೆನಸರೇತ್ ಊರಿನ ದಡ ಸೇರಿದರು. ಅವರು ದೋಣಿಯನ್ನು ಕಟ್ಟಿ, ಅದರಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುಸ್ವಾಮಿಯ ಗುರುತು ಹಚ್ಚಿದರು. ಒಡನೆ ಸುತ್ತಮುತ್ತಲೆಲ್ಲಾ ಓಡಾಡಿ, ರೋಗಿಗಳನ್ನು ಹಾಸಿಗೆಗಳ ಸಹಿತ ಹೊತ್ತುಕೊಂಡು, ಯೇಸು ಎಲ್ಲೆಲ್ಲಿ ಇದ್ದಾರೆಂದು ಕೇಳಿದರೋ ಅಲ್ಲೆಲ್ಲಾ ಹೋಗತೊಡಗಿದರು.ಯೇಸು ಹಳ್ಳಿಗಳಿಗಾಗಲಿ, ಪಟ್ಟಣಪಾಳೆಯಗಳಿಗಾಗಲಿ ಹೋದಾಗಲೆಲ್ಲಾ ಜನರು ರೋಗಿಗಳನ್ನು ಅಲ್ಲಿಯ ಸಂತೆಬೀದಿ ಚೌಕಗಳಿಗೆ ಕರೆತರುತ್ತಿದ್ದರು. ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು.
ಪ್ರಭುವಿನ ಶುಭಸಂದೇಶ
No comments:
Post a Comment