ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

07.02.23 - "ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ!"

ಮೊದಲನೆಯ ವಾಚನ - ಅದಿಕಾಂಡ 1: 20-2:4

ಆ ಬಳಿಕ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು. ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲ ವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು. ಅವುಗಳಿಗೆ ದೇವರು, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ,” ಎಂದು ಹೇಳಿ ಆಶೀರ್ವದಿಸಿದರು. ಹೀಗೆ ಬೈಗೂ ಬೆಳಗೂ ಆಗಿ ಐದನೆಯ ದಿನ ಆಯಿತು. ಆ ಬಳಿಕ ದೇವರು, “ಭೂಮಿಯಿಂದ ಎಲ್ಲ ತರದ ಜೀವಜಂತುಗಳು ಸೃಷ್ಟಿಯಾಗಲಿ. ದೊಡ್ಡ - ಚಿಕ್ಕ ಸಾಕುಪ್ರಾಣಿಗಳೂ ಕಾಡುಮೃಗಗಳೂ ಹುಟ್ಟಲಿ,“ ಎಂದರು. ಅಂತೆಯೇ ಆಯಿತು. ಎಲ್ಲ ತರದ ದೊಡ್ಡ - ಚಿಕ್ಕ ಕಾಡುಮೃಗಗಳನ್ನೂ ಸಾಕುಪ್ರಾಣಿಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನು ದೇವರು ಸೃಷ್ಟಿಮಾಡಿದರು. ಅವರ ನೋಟಕ್ಕೆ ಅದು ಚೆನ್ನಾಗಿ ಕಂಡಿತು. ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು: ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ. ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ. ಇನ್ನೂ, ಭೂಮಿಯಲ್ಲಿರುವ ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ. ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ,” ಎಂದು ಹೇಳಿದರು. ಹಾಗೆಯೇ ಆಯಿತು. ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು. ಪರಲೋಕ-ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು. ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು. ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ.
ಪ್ರಭುವಿನ ವಾಕ್ಯ

ಕೀರ್ತನೆ - 8: 3-4, 5-6, 7-8
ಹರಡಿದೆ ಪ್ರಭೂ, ನಿನ್ನ ಸಿರಿನಾಮ ಜಗದಾದ್ಯಂತ I

ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I
ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II

ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I
ಏತರದವನು ನರಮಾನವನು ನೀನವನನು ಪರಾಮರಿಸಲು? II

ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I
ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II

ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I
ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II

ಕುರಿಗಳನು, ಕರುಗಳನು, ಕಾಡುಮೃಗಗಳನು I
ಗರಿಗಳನು, ಮೀನುಗಳನು, ಜಲಚರಗಳನು I
ಕರಗತ ಮಾಡಿದೆ ನೀ ಅವನಿಗೆಲ್ಲವನು II

ಘೋಷಣೆ                  ಕೀರ್ತನೆ 145:14

ಅಲ್ಲೆಲೂಯ, ಅಲ್ಲೆಲೂಯ!
ನುಡಿಯಲಿ  ಪ್ರಭು  ಸದಾ  ಪ್ರಾಮಾಣಿಕನು,  ನಡೆಯಲಿ  ಆತನು  ಸದಾ  ಪ್ರೀತಿಮಯನು,,
ಅಲ್ಲೆಲೂಯ!

ಶುಭಸಂದೇಶ - ಮಾರ್ಕ 7: 1-13


ಆ ಕಾಲದಲ್ಲಿ ಫರಿಸಾಯರು ಮತ್ತು ಜೆರುಸಲೇಮಿನಿಂದ ಕೆಲವು ಮಂದಿ ಧರ್ಮಶಾಸ್ತ್ರಿಗಳು ಯೇಸುಸ್ವಾಮಿಯ ಬಳಿಗೆ ಬಂದು ಸೇರಿದರು. ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟ ಮಾಡುವುದನ್ನು ಅವರು ನೋಡಿದರು. ಫರಿಸಾಯರು ಇತರ ಯೆಹೂದ್ಯರಂತೆ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಊಟ ಮಾಡುವುದಿಲ್ಲ. ಇದು ಅವರ ಪೂರ್ವಜರಿಂದ ಬಂದ ಸಂಪ್ರದಾಯ. ಪೇಟೆ ಬೀದಿಗಳಿಗೆ ಹೋಗಿ ಬಂದರೆ ಸ್ನಾನ ಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ಸೂತ್ರಬದ್ಧವಾಗಿ ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದವು. ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?" ಎಂದು ಯೇಸುವನ್ನು ಕೇಳಿದರು. ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’ “ನೀವು ದೇವರ ಆಜ್ಞೆಯನ್ನು ತೊರೆದು ಮಾನವ ನಿರ್ಮಿತ ಸಂಪ್ರದಾಯಗಳನ್ನು ನಿಷ್ಠೆಯಿಂದ ಪರಿಪಾಲಿಸುತ್ತಿದ್ದೀರಿ. ಸಂಪ್ರದಾಯದ ನೆವದಲ್ಲಿ ದೇವರ ಆಜ್ಞೆಗಳನ್ನು ನೀವು ಜಾಣ್ಮೆಯಿಂದ ಬದಿಗೊತ್ತಿರುವುದು ಬಲು ಚೆನ್ನಾಗಿದೆ! ‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು,’ ಎಂಬುದು ಮೋಶೆ ವಿಧಿಸಿದ ಆಜ್ಞೆ. ನೀವಾದರೋ, ಒಬ್ಬನು ತನ್ನ ತಂದೆಗೆ ಅಥವಾ ತಾಯಿಗೆ ‘ನನ್ನಿಂದ ನಿಮಗೆ ಸಲ್ಲತಕ್ಕದ್ದು “ಕೊರ್ಬಾನ್” (ಎಂದರೆ ದೇವರಿಗೆ ಮುಡಿಪು) ಎಂದು ಹೇಳಿ ಬಿಟ್ಟರೆ ಸಾಕು, ಮುಂದೆ ಅವನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನೂ ಮಾಡುವುದಕ್ಕೆ ನೀವು ಬಿಡುವುದಿಲ್ಲ. “ಹೀಗೆ ನೀವು ಬೋಧಿಸುವ ಸಂಪ್ರದಾಯಗಳಿಂದಾಗಿ ದೇವರ ವಾಕ್ಯವನ್ನೇ ನಿರರ್ಥಕಗೊಳಿಸುತ್ತೀರಿ. ಇಂಥಾ ಕೃತ್ಯಗಳು ಇನ್ನೆಷ್ಟೋ!” ಎಂದರು.
ಪ್ರಭುವಿನ ಶುಭಸಂದೇಶ

No comments:

Post a Comment