ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

09.02.23 - "ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?”

ಮೊದಲನೆಯ ವಾಚನ - ಆದಿಕಾಂಡ 2: 18-25


ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು. ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರು ಆಯಿತು. ಹೀಗೆ ಮನುಷ್ಯನು ಎಲ್ಲ ಸಾಕುಪ್ರಾಣಿಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು; ಆದರೆ ಅವನಿಗೆ ಸರಿಬೀಳುವ ಜೊತೆಗಾತಿ ಅವುಗಳಲ್ಲಿ ಕಾಣಿಸಲಿಲ್ಲ. ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು. ಆ ಎಲುಬನ್ನು ಮಹಿಳೆಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಬರಮಾಡಿದರು. 23ಅವನು ಆಕೆಯನ್ನು ನೋಡಿ ಹೀಗೆಂದನು: ಸರಿ, ನನಗೀಗ ಇವಳು ನನ್ನೆಲುಬಿನ ಎಲುಬು ನನ್ನೊಡಲಿನ ಒಡಲು ನರನಿಂದ ಉತ್ಪತ್ತಿಯಾದಿವಳನ್ನು ನಾರಿಯೆಂದೇ ಕರೆವರು. ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು. ಆ ಸ್ತ್ರೀಪುರುಷರಿಬ್ಬರೂ ಬೆತ್ತಲೆ ಆಗಿದ್ದರೂ ನಾಚಿಕೊಳ್ಳಲಿಲ್ಲ.  
ಪ್ರಭುವಿನ ವಾಕ್ಯ

ಕೀರ್ತನೆ - 128: 1, 2-3, 4-5
ಶ್ಲೋಕ: ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I

ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II
ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I

ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II
ಇರುವಳು ನಿನ್ನ ಪತ್ನಿ ಮನೆಯಲ್ಲಿ 
ಫಲಭರಿತ ದ್ರಾಕ್ಷಾಲತೆಯಂತೆ I

ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ ಓಲಿವ್ ಸಸಿಗಳಂತೆ II
ಹೊಂದುವನು ಅಂತಹ ಆಶೀರ್ವಾದವನು I

ಪ್ರಭುವಿನಲಿ ಭಯಭಕ್ತಿಯುಳ್ಳವನು II
ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಲಿ I
ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ II

ಶುಭಸಂದೇಶ - ಮಾರ್ಕ 7: 24-30


ಆ ಕಾಲದಲ್ಲಿ ಯೇಸು ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪಟ್ಟಣಗಳ ಸಮೀಪವಿದ್ದ ಪ್ರದೇಶಕ್ಕೆ ಹೋಗಿ ಒಂದು ಮನೆಯಲ್ಲಿ ಇಳಿದುಕೊಂಡರು. ತಾವು ಜನರ ಕಣ್ಣಿಗೆ ಬೀಳಬಾರದೆಂಬುದು ಅವರ ಇಚ್ಛೆಯಾಗಿದ್ದರೂ ಅದು ಸಾಧ್ಯವಾಗಲಿಲ್ಲ. ಹೊರನಾಡಾದ ಸಿರಿಯ ದೇಶದ ಫೆನಿಷ್ಯ ಪ್ರಾಂತ್ಯಕ್ಕೆ ಸೇರಿದ ಗ್ರೀಕ್ ಮಹಿಳೆ ಒಬ್ಬಳು ಅವರ ವಿಷಯವನ್ನು ಕೇಳಿ, ಒಡನೆ ಅಲ್ಲಿಗೆ ಬಂದು ಅವರ ಪಾದಕ್ಕೆರಗಿದಳು ಆಕೆಯ‍ ಚಿಕ್ಕಮಗಳಿಗೆ ದೆವ್ವ ಹಿಡಿದಿತ್ತು. ತನ್ನ ಮಗಳಿಂದ ಪಿಶಾಚಿಯನ್ನು ಹೊರಗಟ್ಟಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು. ಆದರೆ ಯೇಸು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಪಡೆಯಲಿ, ಮಕ್ಕಳ ಆಹಾರವನ್ನು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು. ಅದಕ್ಕೆ ಆಕೆ, “ಅದು ನಿಜ ಸ್ವಾಮೀ; ಆದರೂ ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?” ಎಂದಳು. ಆಕೆಯ ಮಾತುಗಳನ್ನು ಕೇಳಿ ಯೇಸು, “ಚೆನ್ನಾಗಿ ಹೇಳಿದೆ, ನಿಶ್ಚಿಂತೆಯಿಂದ ಮನೆಗೆ ಹಿಂದಿರುಗು. ದೆವ್ವ ನಿನ್ನ ಮಗಳನ್ನು ಬಿಟ್ಟು ತೊಲಗಿದೆ,” ಎಂದರು. ಆಕೆ ಮನೆಗೆ ಹೋದಾಗ, ಮಗಳು ಹಾಸಿಗೆಯ ಮೇಲೆ ಸುಖವಾಗಿ ಮಲಗಿರುವುದನ್ನು ಕಂಡಳು. ದೆವ್ವ ಅವಳನ್ನು ಬಿಟ್ಟುಹೋಗಿತ್ತು.
ಪ್ರಭುವಿನ ಶುಭಸಂದೇಶ

No comments:

Post a Comment