ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

11.01.23 - “ಅಕ್ಕಪಕ್ಕದ ಊರುಗಳಿಗೆ ಹೋಗೋಣ. ಅಲ್ಲೂ ನಾನು ಶುಭಸಂದೇಶವನ್ನು ಸಾರಬೇಕು"

ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 2:14-18

ಸಹೋದರರೇ, ಮಕ್ಕಳು ರಕ್ತಮಾಂಸಧಾರಿ-ಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು. ಅವರು ಉದ್ಧಾರ ಮಾಡಬಂದುದು ಖಂಡಿತವಾಗಿ ದೇವದೂತರನ್ನಲ್ಲ, ಅಬ್ರಹಾಮನ ಸಂತತಿಯನ್ನು. ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು. ಸ್ವತಃ ತಾವೇ ಶೋಧನೆಗೊಳಗಾಗಿ ಯಾತನೆಯನ್ನು ಅನುಭವಿಸಿದ್ದರಿಂದ ಶೋಧನೆಗೊಳಗಾಗುವವರಿಗೆ ನೆರವಾಗಲು ಯೇಸು ಸಮರ್ಥರಾದರು. 

ಕೀರ್ತನೆ: 105:1-2, 3-4, 6-7, 8-9 
ಶ್ಲೋಕ: ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು. 

ಸಲ್ಲಿಸಿ ಪ್ರಭುವಿಗೆ ಕೃತಜ್ಞತಾಸ್ತೋತ್ರವನು I
ಮಾಡಿರಿ ಆತನ ನಾಮಸ್ಮರಣೆಯನು I
ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II
ಹಾಡಿ ಪಾಡಿ ಹೊಗಳಿರಿ ಪ್ರಭುವನು I

ಧ್ಯಾನಿಸಿ ನೀವು ಆತನ ಪವಾಡಗಳನು II
ಹೆಮ್ಮೆಪಡಿ, ನೆನೆದಾತನ ಶ್ರೀನಾಮ I
ಹಿಗ್ಗಲಿ ಹೃದಯ, ಕೋರಿ ಆತನ ದರ್ಶನ II

ಅರಸಿರಿ ಪ್ರಭುವನೂ ಆತನ ಶಕ್ತಿಯನೂ I
ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II
ನೆನೆಯಿರಿ ಆತನದ್ಭುತಗಳನು, ಮಹತ್ಕಾರ್ಯಗಳನು I
ಆತನ ವದನ ವಿಧಿಸಿದಾ ನ್ಯಾಯನಿರ್ಣಯಗಳನು II

ಪ್ರಭು ನಮ್ಮ ದೇವನೆಂಬುದು ಶ್ರುತ I
ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ II
ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು I

ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು II
ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I
ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು II

ಮಾರ್ಕನು ಬರೆದ ಶುಭಸ೦ದೇಶ 1:29-39 


ಆ ಕಾಲದಲ್ಲಿ ಯೇಸುಸ್ವಾಮಿ ಪ್ರಾರ್ಥನಾಮಂದಿರದಿಂದ ಹೊರಟು ಯಕೋಬ ಮತ್ತು ಯೊವಾನ್ನನ ಸಂಗಡ ಸಿಮೋನ ಹಾಗೂ ಅಂದ್ರೆಯನ ಮನೆಗೆ ಹೋದರು. ಸಿಮೋನನ ಅತ್ತೆ ಜ್ವರದಿಂದ ಮಲಗಿದ್ದಳು. ಇದನ್ನು ಯೇಸುವಿಗೆ ತಿಳಿಸಿದರು. ಯೇಸು ಆಕೆಯ ಬಳಿಗೆ ಹೋಗಿ ಕೈಹಿಡಿದು ಎಬ್ಬಿಸಿದರು. ಜ್ವರ ಬಿಟ್ಟುಹೋಯಿತು. ಆಕೆ ಅವರೆಲ್ಲರನ್ನು ಸತ್ಕರಿಸಿದಳು. ಸಂಜೆ ಸೂರ್ಯ ಮುಳುಗಿದ ಮೇಲೆ ಜನರು ರೋಗಿಗಳನ್ನೂ ದೆವ್ವಹಿಡಿದವರನ್ನೂ ಯೇಸುವಿನ ಬಳಿಗೆ ಕರೆತಂದರು. ಊರಿಗೆ ಊರೇ ಆ ಮನೆಯ ಬಾಗಿಲಲ್ಲಿ ನೆರೆಯಿತು. ನಾನಾ ರೋಗಗಳಿಂದ ನರಳುತ್ತಿದ್ದವರನ್ನು ಯೇಸು ಗುಣಪಡಿಸಿದರು. ದೆವ್ವ ಹಿಡಿದವರಿಂದ ದೆವ್ವ ಬಿಡಿಸಿದರು. ತಾವು ಯಾರೆಂಬುದನ್ನು ದೆವ್ವಗಳು ಅರಿತಿದ್ದುದರಿಂದ ಯೇಸು ಅವುಗಳಿಗೆ ಮಾತನಾಡಲು ಅವಕಾಶಕೊಡಲಿಲ್ಲ.ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು. ಇತ್ತ, ಸಿಮೋನನೂ ಅವನ ಜೊತೆಗಾರರೂ ಯೇಸುವನ್ನು ಹುಡುಕಿಕೊಂಡು ಹೋದರು. ಅವರನ್ನು ಕಂಡಕೂಡಲೇ, “ಎಲ್ಲರು ತಮ್ಮನ್ನೇ ಹುಡುಕುತ್ತಿದ್ದಾರೆ,” ಎಂದು ತಿಳಿಸಿದರು. ಅದಕ್ಕೆ ಯೇಸು, “ಅಕ್ಕಪಕ್ಕದ ಊರುಗಳಿಗೆ ಹೋಗೋಣ. ಅಲ್ಲೂ ನಾನು ಶುಭಸಂದೇಶವನ್ನು ಸಾರಬೇಕು. ನಾನು ಬಂದಿರುವುದು ಈ ಉದ್ದೇಶಕ್ಕಾಗಿಯೇ,” ಎಂದರು. ಅನಂತರ ಯೇಸು ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾಮಂದಿರಗಳಲ್ಲಿ ಪ್ರಬೋಧಿಸುತ್ತಾ ದೆವ್ವಗಳನ್ನು ಬಿಡಿಸುತ್ತಾ ಬಂದರು. 

No comments:

Post a Comment