ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

11.02.23 - "ಊಟ ಮಾಡಿದವರ ಸಂಖ್ಯೆ ನಾಲ್ಕು ಸಾವಿರ"

ಮೊದಲನೆಯ ವಾಚನ - ಆದಿಕಾಂಡ 3: 9-24


ಸರ್ವೇಶ್ವರನಾದ ದೇವರು, “ಎಲ್ಲಿರುತ್ತೀಯಾ?” ಎಂದು ಆದಾಮನನ್ನು ಕೂಗಿ ಕೇಳಿದರು. ಅದಕ್ಕೆ ಅವನು, “ತಾವು ತೋಟದಲ್ಲಿ ಸಂಚರಿಸುವ ಸಪ್ಪಳವು ಕೇಳಿಸಿತು; ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅವಿತುಕೊಂಡೆ,” ಎಂದನು. “ನೀನು ಬೆತ್ತಲೆಯಾಗಿರುತ್ತಿಯೆಂದು ನಿನಗೆ ತಿಳಿಸಿದವರು ಯಾರು?” ಎಂದು ಕೇಳಿದರು. ಅದಕ್ಕೆ ಆದಾಮನು, “ನನ್ನ ಜೊತೆಯಲ್ಲಿ ಇರಲು ತಾವು ಕೊಟ್ಟ ಮಹಿಳೆ ಆ ಮರದ ಹಣ್ಣನ್ನು ನನಗೆ ಕೊಟ್ಟಳು; ನಾನು ತಿಂದೆ,” ಎಂದನು. ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಆಕೆ, “ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು,” ಎಂದು ಉತ್ತರಕೊಟ್ಟಳು. ಆಗ. ಸರ್ವೇಶ್ವರರಾದ ದೇವರು, ಇಂತೆಂದರು ಸರ್ಪಕ್ಕೆ: “ಈ ಪರಿಯ ಕೃತ್ಯವನ್ನು ನೀನೆಸಗಿದುದರಿಂದ ಶಾಪಗ್ರಸ್ತನಾದೆ ಎಲ್ಲ ಪಶು ಪ್ರಾಣಿಗಳಿಗಿಂತ; ಹರಿದಾಡುವೆ ಹೊಟ್ಟೆಯ ಮೇಲೆ ಇಂದಿನಿಂದ ತಿನ್ನುವೆ ಮಣ್ಣನೆ ಜೀವಮಾನ ಪರಿಯಂತ ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.” ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ." ಅನಂತರ ಆದಾಮನಿಗೆ: “ತಿನ್ನಬಾರದೆಂದು ನಾ ವಿಧಿಸಿದ ಮರದ ಹಣ್ಣನ್ನು ತಿಂದೆ ನೀನು, ಕೇಳಿ ನಿನ್ನಾ ಮಡದಿಯ ಮಾತನ್ನು. ಇದಕಾರಣ ಹಾಕಿರುವೆನು ಶಾಪ ಹೊಲನೆಲಕ್ಕೆ ದುಡಿವೆ ನೀನು ಜೀವಮಾನವಿಡೀ ಅದರ ಕೃಷಿಗೆ. ಬೆಳಸುವುದದು ಅತುಳ ಕಳೆಯನ್ನು, ಮುಳ್ಳುಗಿಡಗಳನ್ನು ತಿನ್ನಬೇಕಾಗುವುದು ನೀನು ಬೈಲಿನ ಬೆಳೆಯನ್ನು. ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು." ಆದಾಮನು ತನ್ನ ಹೆಂಡತಿಗೆ “ಹವ್ವ" ಎಂದು ಹೆಸರಿಟ್ಟನು. ಏಕೆಂದರೆ ಮಾನವಕುಲಕ್ಕೆ ಮೂಲಮಾತೆ ಆಕೆ . ಸರ್ವೇಶ್ವರನಾದ ದೇವರು ಆದಾಮನಿಗೂ ಆತನ ಹೆಂಡತಿಗೂ ಚರ್ಮದ ಅಂಗಿಗಳನ್ನು ತೊಡಿಸಿದರು. ಸರ್ವೇಶ್ವರನಾದ ದೇವರು, “ಮನುಷ್ಯನು ಈಗ ನಮ್ಮಲ್ಲಿ ಒಬ್ಬರಂತೆ ಒಳಿತು - ಕೆಡುಕುಗಳ ಜ್ಞಾನವನ್ನು ಪಡೆದುಬಿಟ್ಟಿದ್ದಾನೆ. ಇನ್ನು ಅಮರ ಜೀವಿಯಾಗಲು ಜೀವವೃಕ್ಷದ ಹಣ್ಣಿಗೆ ಕೈ ಚಾಚಿಬಿಡಬಾರದು,” ಎಂದುಕೊಂಡರು. ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡಲೆಂದು ಏದೆನ್ ತೋಟದಿಂದ ಹೊರಡಿಸಿಬಿಟ್ಟರು. ಅದಲ್ಲದೆ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕಾಗಿ ಆ ವನದ ಪೂರ್ವದಿಕ್ಕಿನಲ್ಲೆ ‘ಕೆರೂಬಿ’ಯರನ್ನೂ ಪ್ರಜ್ವಲಿಸುತ್ತಾ ಎಲ್ಲ ಕಡೆ ಸುತ್ತುವ ಕತ್ತಿಯನ್ನೂ ಇರಿಸಿದರು.
ಪ್ರಭುವಿನ ವಾಕ್ಯ

ಕೀರ್ತನೆ - 90: 2, 3-4, 5-6, 12-13
ಶ್ಲೋಕ: ಪ್ರಭೂ ತಲತಲಾಂತರಕ್ಕೆ ಶ್ರೀ ನಿವಾಸ ನೀನೆಮಗೆ.

ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I
ಭೂದೇಶಗಳು ಆಗುವುದಕೆ ಮೊದಲಿಂದ I

ನೀನೆಮಗೆ ದೇವರು ಯುಗಯುಗಗಳಿಂದ II
ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ I

‘ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ’ ಎನ್ನುತಿಹೆ II
ನಿನ್ನ ದೃಷ್ಟಿಯಲ್ಲಿ ಪ್ರಭೂ, ಸಹಸ್ರ ವರುಷ I

ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ II
ಮನುಜರು ನೀ ಹರಿದೋಡಿಸುವ ಹೊಯಿಲು I

ಇರುಳಿನ ಕನಸು, ಹಗಲಿನ ಗರಿಹುಲ್ಲು II
ಚಿಗುರಿ ಹೂಬಿಡುವುದದು ಬೆಳಗಿನಲಿ I

ಸೊರಗಿ ತರಗಾಗುವುದು ಬೈಗಿನಲಿ II
ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು I

ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು II
ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I
ನಿನ್ನೀ ಸೇವಕರ ಮೇಲಿರಲಿ ಮರುಕ II

ಶುಭಸಂದೇಶ - ಮಾರ್ಕ 8: 1-10


ಆ ಕಾಲದಲ್ಲಿ ಜನರು ಪುನಃ ದೊಡ್ಡ ಸಂಖ್ಯೆಯಲ್ಲಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸುಸ್ವಾಮಿ ಶಿಷ್ಯರನ್ನು ಕರೆದು, “ಈ ಜನರು ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದ್ದಾರೆ; ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡಾಗ ನನ್ನ ಹೃದಯ ಕರಗುತ್ತದೆ. ಬರೀ ಹೊಟ್ಟೆಯಲ್ಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಕೆಲವರಂತೂ ಬಹುದೂರದಿಂದ ಬಂದಿದ್ದಾರೆ,” ಎಂದರು. ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಮರುನುಡಿದರು. ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಲು ಅವರು, “ಏಳು ಇವೆ,” ಎಂದರು. ಯೇಸು ಜನರ ಗುಂಪಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಆಜ್ಞಾಪಿಸಿದರು. ಅನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಸಲ್ಲಿಸಿ, ಅವುಗಳನ್ನು ಮುರಿದು, ಜನರ ಗುಂಪಿಗೆ ಬಡಿಸಲು ಶಿಷ್ಯರಿಗೆ ಕೊಟ್ಟರು. ಅವರು ಬಡಿಸಿದರು. ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳಿಗಾಗಿಯೂ ದೇವಸ್ತುತಿ ಮಾಡಿ ಅವುಗಳನ್ನು ಹಂಚಬೇಕೆಂದು ಆಜ್ಞಾಪಿಸಿದರು. ಜನರೆಲ್ಲರೂ ಉಂಡು ತೃಪ್ತರಾದರು. ಉಳಿದ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಏಳು ಕುಕ್ಕೆಗಳ ತುಂಬ ಆದುವು. ಊಟ ಮಾಡಿದವರ ಸಂಖ್ಯೆ ನಾಲ್ಕು ಸಾವಿರ. ಊಟವಾದ ಬಳಿಕ ಯೇಸು ಜನರನ್ನು ಕಳುಹಿಸಿಕೊಟ್ಟು, ವಿಳಂಬಮಾಡದೆ ದೋಣಿಯನ್ನು ಹತ್ತಿ, ಶಿಷ್ಯರೊಡನೆ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು.
ಪ್ರಭುವಿನ ಶುಭಸಂದೇಶ

No comments:

Post a Comment