ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 4:12-16
ಸಹೋದರರೇ, ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು. ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು. ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ. ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ. ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.
ಪ್ರಭುವಿನ ವಾಕ್ಯ
ಕೀರ್ತನೆ: 19:8, 9, 10, 15
ಶ್ಲೋಕ: ಪ್ರಭೂ, ನಿತ್ಯ ಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.
ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ I
ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ II
ಪ್ರಭುವಿನ ಭೀತಿ ಪವಿತ್ರ; ಅದೆಂದಿಗೂ ಶಾಶ್ವತ I
ಪ್ರಭುವಿನ ತೀರ್ಪು ಯಥಾರ್ಥ; ಪರಿಪೂರ್ಣ ನ್ಯಾಯಯುತ II
ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ I
ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ II
ಮಾರ್ಕನು ಬರೆದ ಶುಭಸ೦ದೇಶ 2:13-17
ಯೇಸುಸ್ವಾಮಿ ಪುನಃ ಗಲಿಲೇಯ ಸರೋವರದ ತೀರಕ್ಕೆ ಹೋದರು. ಜನರ ಗುಂಪು ಅವರನ್ನು ಸುತ್ತುಗಟ್ಟಿತು. ಯೇಸು ಅವರಿಗೆ ಪ್ರಬೋಧಿಸಿದರು. ಅಲ್ಲಿಂದ ಹೊರಟುಹೋಗುತ್ತಿರುವಾಗ ಅಲ್ಫಾಯನ ಮಗನಾದ ಲೇವಿಯು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿರುವುದನ್ನು ಯೇಸು ಕಂಡರು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಕರೆದರು. ಲೇವಿ ಎದ್ದು ಅವರನ್ನು ಹಿಂಬಾಲಿಸಿದನು. ತದನಂತರ ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ಸುಂಕದವರು, ಪಾಪಿಷ್ಠರು, ಅಲ್ಲಿಗೆ ಬಂದರು. ಇವರೆಲ್ಲರೂ ಯೇಸು ಮತ್ತು ಅವರ ಶಿಷ್ಯರ ಪಂಕ್ತಿಯಲ್ಲೇ ಊಟಕ್ಕೆ ಕುಳಿತರು. ಇಂಥವರು ಬಹುಮಂದಿ ಯೇಸುವನ್ನು ಹಿಂಬಾಲಿಸುತ್ತಿದ್ದರು. ಫರಿಸಾಯ ಪಂಥಕ್ಕೆ ಸೇರಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, ಸುಂಕದವರ ಮತ್ತು ಇತರ ಪಾಪಿಗಳ ಪಂಕ್ತಿಯಲ್ಲಿ ಯೇಸು ಊಟಮಾಡುವುದನ್ನು ಕಂಡು, “ಈತನು ಇಂಥಾ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇಕೆ?” ಎಂದು ಯೇಸುವಿನ ಶಿಷ್ಯರೊಡನೆ ಆಕ್ಷೇಪಿಸಿದರು. ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ, ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.
ಪ್ರಭು ಕ್ರಿಸ್ತರ ಶುಭಸ೦ದೇಶ
No comments:
Post a Comment