ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

29.01.23 - " ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು."

ಮೊದಲನೆಯ ವಾಚನ:  ಜೆಫನ್ಯನ 2:3, 3:12-13

ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ. ದೀನರೂ ನಮ್ರರೂ ಆದ ಜನರನ್ನು ನಿಮ್ಮಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿ ಹೊಂದಿದವರು. ಇಸ್ರಾಯೇಲಿನಲ್ಲಿ ಅಳಿದುಳಿದವರು ಅನ್ಯಾಯ ಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು, ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.

ಕೀರ್ತನೆ: 146:6-10 ಮತ್ತಾಯ 5:3
ಶ್ಲೋಕ: ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.

ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೇ|
ದೊರಕಿಸುವನು ನ್ಯಾಯ ಬಡಬಗ್ಗರಿಗೆ||
ಒದಗಿಸುವನು ಆಹಾರ ಹಸಿದವರಿಗೆ|
ನೀಡುವನು ಬಿಡುಗಡೆ ಬಂಧಿತರಿಗೆ||

ಕಣ್ಣನ್ನೀಯುವನು ಪ್ರಭು ಕುರುಡರಿಗೆ|
ಉದ್ಧಾರಕನಾ ಪ್ರಭು ಕುಗ್ಗಿದವರಿಗೆ||
ರಕ್ಷಿಸುವನು ಪ್ರಭು ಪರದೇಶಿಗಳನು|
ಆದರಿಸುವನು ಅನಾಥರನು, ವಿಧವೆಯರನು||

ಆತನ ಒಲವಿರುವುದು ಸಾಧುಸಜ್ಜನರಿಗೆ|
ನಿರ್ಮೂಲಮಾಡುವನು ದುರ್ಜನರ ಮಾರ್ಗವನು||
ಪ್ರಭುವೇ ಆರಸನು ಸದಾಕಾಲಕು|
ಸಿಯೋನ್, ನಿನ್ನ ದೇವನಾಳ್ವನು ತಲತಲಾಂತರಕು||

ಎರಡನೆಯ ವಾಚನ: 1 ಕೊರಿಂಥಿಯರಿಗೆ  1:26-31

ಸಹೋದರರೇ, ನಿಮ್ಮನ್ನು ದೇವರು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿ. ಲೋಕದ ಎಣಿಕೆಯಲ್ಲಿ ನಿಮ್ಮೊಳಗೆ ಜ್ಞಾನಿಗಳು ಅನೇಕರಿಲ್ಲ, ಪರಾಕ್ರಮಿಗಳು ಅನೇಕರಿಲ್ಲ, ಕುಲೀನರು ಅನೇಕರಿಲ್ಲ. ಜ್ಞಾನಿಗಳನ್ನು ನಾಚಿಕೆಗೀಡು ಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮುರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು. ಯಾವ ಮಾನವನೂ ತಮ್ಮ ಸಮ್ಮುಖದಲ್ಲಿ ಅಹಂಕಾರಪಡದಂತೆ ದೇವರು ಹೀಗೆ ಮಾಡಿದರು. ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ. ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: ' ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ '.

ಘೋಷಣೆ ಯೊವಾನ್ನ 1:12
ಅಲ್ಲೆಲೂಯ, ಅಲ್ಲೆಲೂಯ!
ಆ ದಿವ್ಯವಾಣಿ ಮನುಷ್ಯ ಆದರು; ಅವರಲ್ಲಿ ವಿಶ್ವಾಸ ಇಟ್ಟವರಿಗೆ ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು,,
ಅಲ್ಲೆಲೂಯ!

ಶುಭಸಂದೇಶ ವಾಚನ: ಮತ್ತಾಯ 5:1-12

ಆ ಕಾಲದಲ್ಲಿ ಜನರ ದೊಡ್ಡ ಗುಂಪನ್ನು ಕಂಡು ಯೇಸು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು. ಆಗ ಯೇಸು ಇಂತೆಂದು ಪ್ರಬೋಧಿಸಿದರು. " ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು. ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು. ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು. ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು. ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು. ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು. ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು. ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು. ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು."

No comments:

Post a Comment