ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

08.05.23 - “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 14:5-18

ಅನ್ಯಧರ್ಮದವರು ಮತ್ತು ಯೆಹೂದ್ಯರು ತಮ್ಮ ಅಧಿಕಾರಿಗಳೊಡನೆ ಸೇರಿ ಪ್ರೇಷಿತರಿಗೆ ಕಿರುಕುಳಕೊಡಲು ಹಾಗೂ ಅವರ ಮೇಲೆ ಕಲ್ಲು ತೂರಲು ಪ್ರಯತ್ನಿಸಿದರು. ಇದನ್ನರಿತುಕೊಂಡ ಪ್ರೇಷಿತರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆಗೂ ಅದರ ಸುತ್ತಮುತ್ತಲ ಪ್ರದೇಶಗಳಿಗೂ ಹೊರಟುಹೋದರು. ಅಲ್ಲೂ ಶುಭಸಂದೇಶವನ್ನು ಸಾರತೊಡಗಿದರು. ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದ. ಅವನೊಬ್ಬ ಹುಟ್ಟುಕುಂಟ. ಎಂದೂ ಕಾಲೂರಿ ನಡೆದವನಲ್ಲ. ಒಮ್ಮೆ, ಅವನು ಕುಳಿತಲ್ಲೇ ಪೌಲನ ಮಾತುಗಳನ್ನು ಆಲಿಸುತ್ತಿದ್ದನು. ಆಗ ಪೌಲನು ಅವನನ್ನೇ ದಿಟ್ಟಿಸಿ ನೋಡಿದನು. ಅವನಲ್ಲಿ ಸ್ವಸ್ಥ ಪಡೆಯುವಷ್ಟು ವಿಶ್ವಾಸವನ್ನು ಕಂಡು ಸ್ವರವೆತ್ತಿ, “ಎದ್ದೇಳು, ಕಾಲೂರಿ ನೆಟ್ಟಗೆ ನಿಲ್ಲು,” ಎಂದು ಹೇಳಿದನು. ಆ ಮನುಷ್ಯನು ನೆಗೆದುನಿಂತು ನಡೆಯಲಾರಂಭಿಸಿದನು. ಪೌಲನು ಮಾಡಿದ ಈ ಮಹತ್ಕಾರ್ಯವನ್ನು ಜನಸಮೂಹವು ನೋಡಿತು. “ದೇವರುಗಳೇ ಮನುಷ್ಯರೂಪದಲ್ಲಿ ನಮ್ಮಲ್ಲಿಗೆ ಬಂದಿದ್ದಾರೆ,” ಎಂದು ತಮ್ಮ ಲುಕವೋನಿಯ ಭಾಷೆಯಲ್ಲಿ ಗಟ್ಟಿಯಾಗಿ ಕೂಗಲಾರಂಭಿಸಿದರು. ಆ ಜನರು ಬಾರ್ನಬನನ್ನು ‘ಜೆಯುಸ್’ ದೇವರೆಂದೂ ಪೌಲನು ಮುಖ್ಯ ಭಾಷಣಕಾರನಾದುದರಿಂದ, ಅವನನ್ನು ‘ಹೆರ್ಮೆ’ ದೇವರೆಂದೂ ಕರೆಯಲಾರಂಭಿಸಿದರು. ಆ ಜೆಯುಸ್ ದೇವರ ಗುಡಿ ಪಟ್ಟಣದ ಮುಂದೆಯೇ ಇತ್ತು. ಅಲ್ಲಿಯ ಅರ್ಚಕನು ದ್ವಾರದ ಬಳಿಗೆ ಹೋರಿಗಳನ್ನೂ ಹೂವಿನ ಹಾರಗಳನ್ನೂ ತೆಗೆದುಕೊಂಡು ಬಂದನು. ಜನರೊಡನೆ ಸೇರಿ ಪ್ರೇಷಿತರಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು. ಇದನ್ನು ಕೇಳಿದ ಬಾರ್ನಬ ಮತ್ತು ಪೌಲರು ಸಿಟ್ಟಿನಿಂದ ತಮ್ಮ ಮೇಲಂಗಿಗಳನ್ನು ಹರಿದು, ಜನಸಂದಣಿಯತ್ತ ಧಾವಿಸಿ ಹೀಗೆಂದು ಕೂಗಿಹೇಳಿದರು: “ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು. ಹಿಂದಿನ ಕಾಲದಲ್ಲಿ ಸಮಸ್ತ ಜನಾಂಗಗಳು ತಮಗೆ ಇಷ್ಟಬಂದಂತೆ ನಡೆಯಲೆಂದು ದೇವರು ಬಿಟ್ಟುಬಿಟ್ಟರು. ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.” ಪ್ರೇಷಿತರು ಇಷ್ಟು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯುವುದು ಕಷ್ಟಸಾಧ್ಯವಾಯಿತು.

ಕೀರ್ತನೆ: 115:1-2, 3-4, 15-16

ಶ್ಲೋಕ: ನಮಗಲ್ಲ ಹೇ ಪ್ರಭೂ, ನಮಗಲ್ಲ ಮಹಿಮೆ, ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ.


ನಮಗಲ್ಲ ಹೇ ಪ್ರಭುನಮಗಲ್ಲ ಮಹಿಮೆ 
ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ 
ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ 
ಅನ್ಯಜನರು ನುಡಿಯುವುದೆಂತು
ಅವರ ದೇವರೆಲ್ಲಿ?” ಎಂದು

ಪರದಲ್ಲಿಹನು ನಮ್ಮ ದೇವನು
ಗೈವನು ತನಗಿಷ್ಟ ಬಂದುದನು
ಅವರ ವಿಗ್ರಹ ಬರೀ ಬೆಳ್ಳಿ ಬಂಗಾರ
ಅವು ಮಾನವನ ಕೈ ಕೆಲಸಗಳು ಮಾತ್ರ

ಇಹಪರಗಳನು ಉಂಟುಮಾಡಿದ ಪ್ರಭುವಿಂದ
ಲಭಿಸುವಂತಾಗಲಿ ನಿಮಗೆ ಆಶೀರ್ವಾದ
ಪ್ರಭುವಿಗೆ ಸ್ವಂತವಾದುದು ಪರಲೋಕ 
ನರರಿಗೆ ಕೊಟ್ಟಿಹನಾತನು ಭೂಲೋಕ

ಶುಭಸಂದೇಶ: ಯೊವಾನ್ನ 14:21-26

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ: "ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.” ಆಗ ಯೂದನು, (ಈತ ಇಸ್ಕರಿಯೋತಿನ ಯೂದನಲ್ಲ) “ಪ್ರಭೂ, ನೀವು ಈ ಲೋಕಕ್ಕೆ ನಿಮ್ಮನ್ನು ಸಾಕ್ಷಾತ್ಕರಿಸಿಕೊಳ್ಳದೆ ನಮಗೆ ಮಾತ್ರ ಸಾಕ್ಷಾತ್ಕರಿಸಿಕೊಳ್ಳುತ್ತೀರಲ್ಲಾ, ಏಕೆ?” ಎಂದು ಕೇಳಿದನು. ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು. ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತನ್ನು ಕೈಗೊಂಡು ನಡೆಯುವುದಿಲ್ಲ. ನೀವು ಕೇಳುತ್ತಿರುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ಪಿತನದೇ. ನಾನು ನಿಮ್ಮೊಡನೆ ಇರುವಾಗಲೇ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು." ಎಂದರು.

07.05.23 - “ಪ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 6:1-7

ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾಡುತ್ತಿದ್ದವರ ನಡುವೆ ಬಿನ್ನಾಭಿಪ್ರಾಯ ಉಂಟಾಯಿತು. ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು. ಆಗ ಹನ್ನೆರಡುಮಂದಿ ಪ್ರೇಷಿತರು ಭಕ್ತವಿಶ್ವಾಸಿಗಳ ಸಭೆಯನ್ನು ಕರೆದು, “ನಾವು ದೇವರ ವಾಕ್ಯದ ಬೋಧನೆಯನ್ನು ಅವಗಣಿಸಿ ಊಟೋಪಚಾರಗಳ ಸೇವೆಯಲ್ಲಿ ಮಗ್ನರಾಗಿ ಇರುವುದು ಸರಿಯಲ್ಲ. ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ. ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,” ಎಂದರು. ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು. ಪ್ರೇಷಿತರ ಮುಂದೆ ಅವರನ್ನು ನಿಲ್ಲಿಸಿದರು. ಪ್ರೇಷಿತರು ಪ್ರಾರ್ಥನೆಮಾಡಿ ಅವರ ಮೇಲೆ ಹಸ್ತನಿಕ್ಷೇಪ ಮಾಡಿದರು. ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.

ಕೀರ್ತನೆ: 33:1-2, 4-5, 18-19

ಶ್ಲೋಕ: ನಮ್ಮ ಮೇಲಿರಲಿ ಪ್ರಭೂ, ನಿನ್ನಚಲ ಪ್ರೀತಿ, ಕಾದಿಹೆವು ಇದೋ ನಿನ್ನ ನಂಬಿ ಭರವಸದಿ

ಎರಡನೇ ವಾಚನ: ೧ ಪೇತ್ರನು 2:4-9

ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು. ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ. ಈ ಕಾರಣದಿಂದಲೇ ಪವಿತ್ರಗ್ರಂಥ ಇಂತೆನ್ನುತ್ತದೆ : “ಅಮೂಲ್ಯ ಶಿಲೆಯೊಂದನ್ನು ನಾನಾರಿಸಿಕೊಂಡೆ. ಸಿಯೋನಿನಲ್ಲಿ ಅದನ್ನೇ ಮುಖ್ಯ ಮೂಲೆಗಲ್ಲನ್ನಾಗಿರಿಸಿದೆ. ಎಂದಿಗೂ ಆಶಾಭಂಗವಾಗದು ಅದರ ಮೇಲೆ ವಿಶ್ವಾಸವಿಡುವವರಿಗೆ.” ವಿಶ್ವಾಸವಿಟ್ಟಿರುವ ನಿಮಗಂತೂ ಈ ಶಿಲೆ ಅತ್ಯಮೂಲ್ಯವಾದುದು. “ಮನೆಕಟ್ಟುವವರು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.” “ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು. ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ. 

ಶುಭಸಂದೇಶ: ಯೊವಾನ್ನ 14:1-12

ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ. ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ. ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು. ನಾನು ಹೋಗುವ ಎಡೆಗೆ ಮಾರ್ಗವು ನಿಮಗೆ ತಿಳಿದೇ ಇದೆ,” ಎಂದು ಹೇಳಿದರು. ಆಗ ತೋಮನು, “ಪ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು; ಅಂದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಿದನು. ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು. ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗೂ ಕಂಡೂ ಇದ್ದೀರಿ,” ಎಂದು ನುಡಿದರು. ಆಗ ಫಿಲಿಪ್ಪನು, “ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೇ ಸಾಕು,” ಎಂದನು. ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ? ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ. ‘ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ,’ ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿಂದಾದರೂ ವಿಶ್ವಾಸಿಸಿರಿ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿ ವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ." ಎಂದರು.

06.05.23 - "ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 13:44-52

ಮುಂದಿನ ಸಬ್ಬತ್ದಿನ ದೇವರ ವಾಕ್ಯವನ್ನು ಕೇಳಲು ನಗರಕ್ಕೆ ನಗರವೇ ಆಗಮಿಸಿತು. ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು. ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ. ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೋದ್ಧಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ.’ ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು. ಪ್ರಭುವಿನ ವಾಕ್ಯ ಆ ಪ್ರದೇಶದಲ್ಲೆಲ್ಲಾ ಹಬ್ಬಿ ಹರಡಿತು. ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು. ಇದಕ್ಕೆ ಪ್ರತಿಯಾಗಿ ಪ್ರೇಷಿತರು ತಮ್ಮ ಪಾದಧೂಳನ್ನು ಝಾಡಿಸಿ ಇಕೋನಿಯಕ್ಕೆ ಹೊರಟುಹೋದರು. ಭಕ್ತ ವಿಶ್ವಾಸಿಗಳಾದರೋ ಪರಮಾನಂದಪಟ್ಟರು, ಪವಿತ್ರಾತ್ಮಭರಿತರಾದರು.

ಕೀರ್ತನೆ: 98:1, 2-3, 3-4

ಶ್ಲೋಕ: ಕಂಡು ಬಂದಿತು ಜಗದ ಎಲ್ಲೆ ಎಲ್ಲೆಗೆ, ನಮ್ಮ ದೇವ ಸಾಧಿಸಿದ ಜಯಗಳಿಗೆ

ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I
ಎಸಗಿಹನಾತನು ಪವಾಡಕಾರ್ಯಗಳನು I
ಗಳಿಸಿತಾತನ ಕೈ ಪೂತಭುಜ ಗೆಲುವನು II
ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು I
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು II
ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I
ನಮ್ಮ ದೇವ ಸಾಧಿಸಿದ ಜಯಗಳಿಕೆ II
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II

ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I
ನಮ್ಮ ದೇವ ಸಾಧಿಸಿದ ಜಯಗಳಿಕೆ II
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II
ಭೂನಿವಾಸಿಗಳೇಮಾಡಿರಿ ಜಯಕಾರ ಪ್ರಭುವಿಗೆ I
   ಮುದದಿ ಹಾಡಿರಿಮಾಡಿರಿ ಸುಮಧುರ ಭಜನೆ II

ಶುಭಸಂದೇಶ ಯೊವಾನ್ನ 14:7-14

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, "ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗೂ ಕಂಡೂ ಇದ್ದೀರಿ,” ಎಂದು ನುಡಿದರು. ಆಗ ಫಿಲಿಪ್ಪನು, “ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೇ ಸಾಕು,” ಎಂದನು. ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ? ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ. ‘ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ,’ ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿಂದಾದರೂ ವಿಶ್ವಾಸಿಸಿರಿ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ. ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ಹೌದು, ನನ್ನ ಹೆಸರಿನಲ್ಲಿ ನೀವು ಏನನ್ನು ಕೇಳಿದರೂ ನಾನು ಅದನ್ನು ಮಾಡಿಯೇ ತೀರುವೆನು." ಎಂದರು

05.05.23 - "ನಾನಿರುವೆಡೆಯಲ್ಲಿಯೇ ನೀವೂ ಇರಬೇಕು. ನಾನು ಹೋಗುವ ಎಡೆಗೆ ಮಾರ್ಗವು ನಿಮಗೆ ತಿಳಿದೇ ಇದೆ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 13:26-33

ಅಂತಿಯೋಕ್ಯದಲ್ಲಿ ಪ್ರಾರ್ಥನಾಮಂದಿರದಲ್ಲಿ ಪೌಲನು ಜನರನ್ನುದ್ದೇಶಿಸಿ, ಇಂತೆಂದನು. “ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ. ಜೆರುಸಲೇಮಿನ ನಿವಾಸಿಗಳು ಮತ್ತು ಅವರ ಅಧಿಕಾರಿಗಳು ಯೇಸು ಲೋಕೋದ್ಧಾರಕನೆಂದು ಅರಿತುಕೊಳ್ಳಲಿಲ್ಲ. ಪ್ರತಿ ಸಬ್ಬತ್ದಿನ ಓದಲಾದ ಪ್ರವಾದಿಗಳ ವಾಕ್ಯಗಳನ್ನು ಅವರು ಗ್ರಹಿಸಿಕೊಳ್ಳಲಿಲ್ಲ. ಯೇಸುವಿಗೆ ಮರಣದಂಡನೆಯನ್ನು ವಿಧಿಸಿ ಆ ಪ್ರವಾದನೆಗಳು ನಿಜವಾಗಲು ಕಾರಣರಾದರು. ಮರಣದಂಡನೆ ವಿಧಿಸಲು ಯಾವ ಕಾರಣವಿಲ್ಲದಿದ್ದರೂ ಅವರನ್ನು ಕೊಲ್ಲಿಸುವಂತೆ ಪಿಲಾತನನ್ನು ಕೇಳಿಕೊಂಡರು. ಯೇಸುವನ್ನು ಕುರಿತು ಪವಿತ್ರಗ್ರಂಥ ಹೇಳುವುದೆಲ್ಲವೂ ನೆರವೇರಿದ ಮೇಲೆ ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಮಾಡಿದರು. ಆದರೆ ದೇವರು ಅವರನ್ನು ಮರಣದಿಂದ ಪುನರುತ್ಥಾನಗೊಳಿಸಿದರು. ಹೀಗೆ ಪುನರುತ್ಥಾನ ಹೊಂದಿದ ಯೇಸು, ಗಲಿಲೇಯದಿಂದ ತಮ್ಮೊಡನೆ ಜೆರುಸಲೇಮಿಗೆ ಬಂದಿದ್ದವರಿಗೆ ಕಾಣಿಸಿಕೊಂಡರು. ಆ ವ್ಯಕ್ತಿಗಳೇ ಈಗ ನಮ್ಮ ಜನರ ಮಧ್ಯೆ ಇರುವ ಯೇಸುವಿನ ಪರವಾದ ಸಾಕ್ಷಿಗಳು. ನಾವೀಗ ನಿಮಗೆ ಸಾರುವ ಶುಭಸಂದೇಶ ಇದು: ದೇವರು ಯೇಸುಸ್ವಾಮಿಯನ್ನು ಪುನರುತ್ಥಾನಗೊಳಿಸಿದ್ದಾರೆ. ಈ ಮೂಲಕ ನಮ್ಮ ಪೂರ್ವಜರಿಗೆ ಮಾಡಿದ ವಾಗ್ದಾನವನ್ನು ಅವರ ಸಂತತಿಯಾದ ನಮಗಿಂದು ಈಡೇರಿಸಿದ್ದಾರೆ. ಎರಡನೆಯ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಪುತ್ರ, ನಾನಿಂದು ನಿನ್ನ ಜನಕ.

ಕೀರ್ತನೆ: 2:6-7, 8-9, 10-11
ಶ್ಲೋಕ: ಈ ದಿನ ನಾನಿನ್ನ ಹಡೆದಿಹನು; ನೀನೆನಗೆ ಮಗನು

ಶುಭಸಂದೇಶ ಯೊವಾನ್ನ 14:1-6

ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ. ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ. 3ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು. ನಾನು ಹೋಗುವ ಎಡೆಗೆ ಮಾರ್ಗವು ನಿಮಗೆ ತಿಳಿದೇ ಇದೆ,” ಎಂದು ಹೇಳಿದರು. ಆಗ ತೋಮನು, “ಪ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು; ಅಂದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಿದನು. ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು. ಎಂದರು.

04.05.23 - "ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 13:13-25

ಪೌಲ ಮತ್ತು ಸಂಗಡಿಗರು ಪಾಫೊಸಿನಿಂದ ನೌಕಾಯಾನ ಮಾಡಿ ಪಾಂಫೀಲಿಯದ ಪೆರ್ಗ ಎಂಬಲ್ಲಿಗೆ ಬಂದರು. ಮಾರ್ಕನೆನಿಸಿಕೊಂಡ ಯೊವಾನ್ನನು ಅವರನ್ನು ಅಲ್ಲೇ ಬಿಟ್ಟು ಜೆರುಸಲೇಮಿಗೆ ಹಿಂದಿರುಗಿದನು. ಉಳಿದವರು ಪೆರ್ಗದಿಂದ ಹೊರಟು ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಪ್ರಾರ್ಥನಾಮಂದಿರಕ್ಕೆ ಹೋಗಿ ಕುಳಿತುಕೊಂಡರು. ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ,” ಎಂದು ಕೇಳಿಕೊಂಡರು. ಆಗ ಪೌಲನು ಎದ್ದು ನಿಂತು ಜನರಿಗೆ ನಿಶ್ಯಬ್ದವಾಗಿರುವಂತೆ ಕೈಸನ್ನೆ ಮಾಡಿ, ಹೀಗೆಂದು ಉಪದೇಶ ಮಾಡಲಾರಂಭಿಸಿದನು: “ಇಸ್ರಯೇಲ್ ಬಾಂಧವರೇ, ಹಾಗು ನಿಜದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಕೇಳಿ: ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು. ಬೆಂಗಾಡಿನಲ್ಲಿ ಸುಮಾರು ನಾಲ್ವತ್ತು ವರ್ಷಗಳ ಕಾಲ ಅವರನ್ನು ಕಾಪಾಡಿದರು. ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟರು. ಹೀಗೆ ಸುಮಾರು ನಾನೂರ ಐವತ್ತು ವರ್ಷಗಳು ಕಳೆದವು. ಅನಂತರ ಪ್ರವಾದಿ ಸಮುವೇಲನ ಕಾಲದವರೆಗೆ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಕಳುಹಿಸಿದರು. ತಮಗೆ ಅರಸನು ಬೇಕೆಂದು ಕೇಳಿಕೊಂಡಾಗ ದೇವರು ಬೆನ್ಯಾಮೀನ ಗೋತ್ರದ ಕೀಷನ ಮಗ ಸೌಲನನ್ನು ನೇಮಿಸಿದರು. ಇವನು ನಾಲ್ವತ್ತು ವರ್ಷ ಆಳಿದನು. ಅನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, “ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,” ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು. ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ಧಾರಕನನ್ನು ಕಳುಹಿಸಿದರು. ಇವರೇ ಯೇಸುಸ್ವಾಮಿ. ಇವರ ಆಗಮನಕ್ಕೆ ಸಿದ್ಧತೆಯಾಗಿ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿ ಸ್ನಾನದೀಕ್ಷೆಯನ್ನು ಪಡೆಯಬೇಕೆಂದು ಯೊವಾನ್ನನು ಇಸ್ರಯೇಲಿನ ಎಲ್ಲ ಜನರಿಗೆ ಸಾರಿದರು. ಯೊವಾನ್ನನು ತನ್ನ ನಿಯೋಗವನ್ನು ಪೂರೈಸುತ್ತಿದ್ದಂತೆ ಜನರಿಗೆ, ‘ನಾನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ವ್ಯಕ್ತಿ ನಾನಲ್ಲ. ನನ್ನ ಅನಂತರ ಒಬ್ಬರು ಬರುವರು; ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು.

ಕೀರ್ತನೆ:  89:2-3, 21-22, 25, 27
ಶ್ಲೋಕ: ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು

ನಿನ್ನಚಲ ಪ್ರೀತಿ ಪ್ರಭುನನಗೆ ಶಾಶ್ವತ ಸಿದ್ಧ 
ನಿನ್ನ ಸತ್ಯತೆ ಆಗಸದಂತೆ ಸ್ಥಿರ ಸ್ಥಾಪಿತ 
ನೀನೆಂದೆ, “ನಾನಾರಿಸಿದವನೊಡನೆ ಮಾಡಿರುವೆ ಒಪ್ಪಂದ 
ನನ್ನ ದಾಸ ದಾವೀದನಿಗಿತ್ತಿರುವೆ ಈ ತೆರವಾದ ಶಪಥ 

ನನ್ನ ಕೈಯ ಆಸರೆ ಅವನಿಗಿದೆ ಸತತ 
ನನ್ನ ಭುಜಬಲವು ಅವನಿಗೆ ಶಕ್ತಿಯುತ 
ಸಿಗನು ಶತ್ರುವಿನ ಕುತಂತ್ರಕೆ 
ಕುಗ್ಗನು ಕೆಡುಕರಾ ದರ್ಪಕೆ 

ತೊರೆನದಿಗಳಿಂದ ಸಾಗರದವರೆಗೆ 
ಅಧಿಕಾರ ನೀಡುವೆ ಅವನ ಕೈಗೆ 

ಮಾಡುವೆನವನನು ಜೇಷ್ಠಪುತ್ರನನ್ನಾಗಿ
ಭೂರಾಜರುಗಳೊಳು ಅತ್ಯುನ್ನತನನ್ನಾಗಿ

ಶುಭಸಂದೇಶ :  ಯೊವಾನ್ನ 13:16-20

ತಮ್ಮ ಶಿಷ್ಯರ ಪಾದಗಳಾನ್ನು ತೊಳೆದ ನಂತರ ಯೇಸು ಹೀಗೆಂದರು: "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಧಣಿಗಿಂತ ದಾಸನು ದೊಡ್ಡವನಲ್ಲ. ಅಂತೆಯೇ ಕಳುಹಿಸಲಾದವನು ಕಳುಹಿಸುವವನಿಗಿಂತ ಶ್ರೇಷ್ಠನಲ್ಲ. ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು ! “ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ. ಅದು ಈಡೇರುವಾಗ ‘ಇರುವಾತನು ನಾನೇ’ ಎಂದು ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ಹೇಳುತ್ತಿದ್ದೇನೆ. ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ. ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,”.

03.05.23 - "ನಾನು ಪಿತನಲ್ಲಿ ಇದ್ದೇನೆ ಪಿತನು ನನ್ನಲ್ಲಿ ಇದ್ದಾರೆ,"

 ಮೊದಲನೇ ವಾಚನ: 1  ಕೊರಿಂಥಿಯರಿಗೆ 15:1-8 

ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ  ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ. ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು. ನಾನು ಪಡೆದುಕೊಂಡಿದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರ ಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು. ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ದಾನ ಹೊಂದಿದರು. ಆನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು. ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೊದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೊಗಿದ್ದರೂ ಬಹು ಮಂದಿ ಇಂದಿಗೂ ಬದುಕಿದ್ದಾರೆ. ಅದಾದ ಮೇಲೆ ಯಕೋಬನಿಗೂ ಆನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು. ಕಟ್ಟಕಡೆಗೆ ದಿನ ತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.

ಕೀರ್ತನೆ: 19:2-3, 4-5
ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ

ಶುಭಸಂದೇಶ: ಯೊವಾನ್ನ 14:6-14

ಅದಕ್ಕೆ ಯೇಸು, "ಮಾರ್ಗವೂ ಸತ್ಯವೂ ಜೀವವೂ ನಾನೇ.ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು. ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದೀರಿ ಹಾಗೂ ಕಂಡೂ ಇದ್ದೀರಿ," ಎಂದು ನುಡಿದರು. ಆಗ ಫಿಲಿಪ್ಪನು, "ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೆ ಸಾಕು," ಎಂದನು. ಅದಕ್ಕೆ ಉತ್ತರವಾಗಿ ಯೇಸು, "ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, "ನಮಗೆ ಪಿತನನ್ನು ತೋರಿಸಿ" ಎಂದು ಹೇಗೆ ಕೇಳುತ್ತೀ?  ನಾನು ಪಿತನಲ್ಲಿ ಇದ್ದೇನೆ ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ. "ನಾನು ಪಿತನಲ್ಲಿ ಇದ್ದೇನೆ ಪಿತನು ನನ್ನಲ್ಲಿ ಇದ್ದಾರೆ," ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ. ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿಂದಾದರೂ ವಿಶ್ವಾಸಿಸಿರಿ; ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿ ವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ಹೌದು, ನನ್ನ ಹೆಸರಿನಲ್ಲಿ ನೀವು ಏನನ್ನು ಕೇಳಿದರೂ ನಾನು ಅದನ್ನು ಮಾಡಿಯೇ ತೀರುವೆನು."

ಮನಸಿಗೊಂದಿಷ್ಟು : ಯೇಸುವಿನ ನಂತರ ಶಿಷ್ಯರು ಶುಭ ಸಂದೇಶದ ಪ್ರಚಾರದಲ್ಲಿ ಮಾಡಿದ ಸಾಧನೆ ಅಪಾರ. ’ ನನ್ನಲ್ಲಿ ವಿಶ್ವಾಸವುಳ್ಳವನು ಮಹತ್ತಾದುವುಗಳನ್ನು ಸಾಧಿಸುವನು’ ಎಂಬ ಯೇಸುವಿನ ಮಾತು ಶಿಷ್ಯರ ಹಾಗೂ ಅನೇಕ ಸಂತರ ಬಾಳಿನಲ್ಲಿ ನಿಜವಾದುದ್ದನ್ನು ನಾವು ಕಾಣುತ್ತೇವೆ. ಆ ಮಾತು ನಮ್ಮ ಮೂಲಕವೂ ಸಾಕರಾಗೊಳ್ಳಲೆಂಬ ಆಸೆ ನಮ್ಮದಾಗಲಿ.

02.05.23 - "ನಾನೂ ಪಿತನೂ ಒಂದೇ ಆಗಿದ್ದೇವೆ”

ಮೊದಲನೇ ವಾಚನ: ಪ್ರೇಷಿತರಕಾರ್ಯಕಲಾಪಗಳು 11:19-26

ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ. ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು. ಪ್ರಭುವಿನ ಶಕ್ತಿ ಅವರೊಡನೆ ಇತ್ತು. ಜನರು ಬಹುಸಂಖ್ಯೆಯಲ್ಲಿ ಪ್ರಭುವಿನಲ್ಲಿ ವಿಶ್ವಾಸವಿಟ್ಟು ಅವರ ಭಕ್ತರಾದರು. ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅಂತಿಯೋಕ್ಯಕ್ಕೆ ಅವರು ಕಳುಹಿಸಿದರು. ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು. ಬಾರ್ನಬನು ಸತ್ಪುರುಷನು, ಪವಿತ್ರಾತ್ಮಭರಿತನು ಹಾಗೂ ಅಗಾಧ ವಿಶ್ವಾಸವುಳ್ಳವನು. ಅನೇಕ ಜನರು ಪ್ರಭುವಿನ ಅನುಯಾಯಿಗಳಾದರು. ಅನಂತರ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಕ್ಕೆ ಹೋದನು.  ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.

ಕೀರ್ತನೆ: 87:1-3, 4-5, 6-7
ಶ್ಲೋಕ: ಸ್ತುತಿಮಾಡಿ ಪ್ರಭುವನು ಸಮಸ್ತ ರಾಷ್ಟ್ರಗಳೇ

ಪವಿತ್ರ ಪರ್ವತದಲಿ ಕರ್ತನು I
ಸ್ಥಾಪಿಸಿಹನು ತನ್ನ ನಗರವನು II
ಯಕೋಬ ವಂಶದ ಸಕಲ ನಿವಾಸಿಗಳಿಗಿಂತ I
ಸಿಯೋನ್ ದ್ವಾರಗಳು ಆತನಿಗೆ ಸುಪ್ರೀತ II
ದೈವ ಶ್ರೀನಗರವೇಕೇಳು ಇವನ್ನು I
ನಿನ್ನ ಕುರಿತ ಅತಿಶಯೋಕ್ತಿಗಳನು : II

ನನಗೆ ಮಣಿಯುವ ರಾಷ್ಟ್ರಗಳಲಿ I
ಈಜಿಪ್ಟ್ಬಾಬೆಲ್ ದೇಶಗಳನು ಲೆಕ್ಕಿಸುವೆ II
ಜೆರುಸಲೇಮಿನ ನಿವಾಸಿಗಳಲಿ I
ಪಿಲಿಷ್ಟಿಯಟೈರ್ಎಥಿಯೋಪಿಯ ಜನ ಸೇರಿವೆ II
ಸಕಲ ಜನಾಂಗಗಳ ಜನನಿ ಸಿಯೋನ್ ನಗರವೇ I
ಅದನು ಸ್ಥಾಪಿಸಿದವ ಪರಾತ್ಪರ ಪ್ರಭುವೇ” II

ಪ್ರಭು ಪಟ್ಟಿಮಾಡುವಾಗ ಸಕಲ ಜಾತಿಜನಾಂಗಗಳನು I
ನಿನ್ನ ಜನಾಂಗವೆಂದೇ ಪರಿಗಣಿಸುವನು ಪ್ರತಿಯೊಂದನು II
ಗಾಯಕ ನರ್ತಕರೂ ಹಾಡುವರೀ ಹಾಡ I

ನಮ್ಮೆಲ್ಲರ ಜೀವದೊರೆತೆ ನೀನೇ ನೋಡ” II

ಯೊವಾನ್ನ 10:22-30


ಅದು ಚಳಿಗಾಲವಾಗಿತ್ತು. ಜೆರುಸಲೇಮಿನಲ್ಲಿ ಮಹಾದೇವಾಲಯದ ಪ್ರತಿಷ್ಠಾಪನೆಯ ಹಬ್ಬಾಚರಣೆ ನಡೆಯುತ್ತಿತ್ತು. ಯೇಸು ಸ್ವಾಮಿ ಆ ದೇವಾಲಯದ ಆವರಣದಲ್ಲಿದ್ದ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು. ಯೆಹೂದ್ಯರು ಅವರನ್ನು ಸುತ್ತುವರಿದು, “ಇನ್ನೆಷ್ಟುಕಾಲ ನಮ್ಮನ್ನು ಸಂಶಯದಲ್ಲಿರಿಸುವೆ?ನೀನೇ ಅಭಿಷಿಕ್ತನಾದ ಲೋಕೋದ್ಧಾರಕ ಆಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು. ಯೇಸು ಪ್ರತ್ಯುತ್ತರವಾಗಿ, “ನಾನು ನಿಮಗೆ ಹೇಳಿಯಾಯಿತು. ಆದರೂ ನೀವು ನಂಬುತ್ತಿಲ್ಲ. ನನ್ನ ಪಿತನ ಹೆಸರಿನಲ್ಲಿ ನಾನು ಮಾಡುವ ಕಾರ್ಯಗಳೇ ನನ್ನ ಪರವಾಗಿ ಸಾಕ್ಷಿಕೊಡುತ್ತವೆ. ಆದರೂ ನಿಮಗೆ ನಂಬಿಕೆಯೆಂಬುದಿಲ್ಲ. ಕಾರಣ, ನೀವು ನನ್ನ ಕುರಿಗಳಲ್ಲ. ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು, ಅವನ್ನು ನನಗೆ ಕೊಟ್ಟ ಪಿತ ಸರ್ವಶ್ರೇಷ್ಠರು. ಪಿತನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು. ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.

01.05.23 - "ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ"

ಮೊದಲನೇ ವಾಚನ: ಪ್ರೇಷಿತರಕಾರ್ಯಕಲಾಪಗಳು 11:1-18


ಅನ್ಯಧರ್ಮದವರೂ ಸಹ ದೈವವಾಕ್ಯವನ್ನು ಸ್ವೀಕರಿಸಿದರೆಂಬ ಸುದ್ದಿ ಜುದೇಯದಲ್ಲಿದ್ದ ಪ್ರೇಷಿತರಿಗೂ ವಿಶ್ವಾಸಿಗಳಿಗೂ ಮುಟ್ಟಿತು. ಪೇತ್ರನು ಜೆರುಸಲೇಮಿಗೆ ಹೋದಾಗ ಅನ್ಯಧರ್ಮದವರಿಗೆ ಸುನ್ನತಿಯಾಗಬೇಕು ಎನ್ನುತ್ತಿದ್ದ ಪಂಗಡದವರು ಮುಂದೆ ಬಂದು, “ನೀನು ಸುನ್ನತಿಯಿಲ್ಲದ ಅನ್ಯಧರ್ಮದವರ ಮನೆಗೆ ಭೇಟಿಕೊಟ್ಟು ಅವರೊಡನೆ ಊಟ ಮಾಡಿದ್ದೇಕೆ?” ಎಂದು ಆಕ್ಷೇಪಿಸಿದರು. ಅದಕ್ಕೆ ಪೇತ್ರನು ನಡೆದ ವೃತ್ತಾಂತವನ್ನು ಆಮೂಲಾಗ್ರವಾಗಿ ಅವರಿಗೆ ವಿವರಿಸಿದನು: “ಜೊಪ್ಪ ಪಟ್ಟಣದಲ್ಲಿ ನಾನು ಧ್ಯಾನಪರವಶನಾಗಿದ್ದಾಗ ದರ್ಶನವೊಂದನ್ನು ಕಂಡೆ. ಸ್ವರ್ಗದಿಂದ ದೊಡ್ಡ ದುಪ್ಪಟಿಯಂಥ ವಸ್ತು ಒಂದು ಕೆಳಕ್ಕೆ ಇಳಿಯಿತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಕೆಳಕ್ಕೆ ಇಳಿಬಿಡಲಾಗಿತ್ತು. ಅದು ಬಂದು ನನ್ನ ಪಕ್ಕದಲ್ಲೇ ನಿಂತಿತು. ಅದನ್ನು ಗಮನಿಸಿ ನೋಡಿದಾಗ ಅದರಲ್ಲಿ ಪ್ರಾಣಿಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಕಂಡುಬಂದವು. ಆಗ, ‘ಪೇತ್ರ, ಏಳು, ಕೊಯ್ದು ತಿನ್ನು’ ಎಂಬ ವಾಣಿ ನನಗೆ ಕೇಳಿಸಿತು. ಅದಕ್ಕೆ ನಾನು, ‘ಬೇಡವೇ ಬೇಡ ಸ್ವಾಮಿ, ಅಶುದ್ಧ ಹಾಗು ಅಸ್ಪೃಶ್ಯವಾದುದು ಯಾವುದೂ ನನ್ನ ಬಾಯನ್ನು ಎಂದೂ ಹೊಕ್ಕಿಲ್ಲ,’ ಎಂದೆ. ಮತ್ತೊಮ್ಮೆ ಆ ವಾಣಿ ಸ್ವರ್ಗಲೋಕದಿಂದ, ‘ದೇವರೇ ಶುದ್ಧಿಕರಿಸಿರುವ ಏನನ್ನೂ ನೀನು ಅಶುದ್ಧವೆನ್ನಬೇಡ,’ ಎಂದು ಉತ್ತರಿಸಿತು. ಹೀಗೆ ಮೂರು ಬಾರಿ ನಡೆದ ಮೇಲೆ, ಅವೆಲ್ಲವನ್ನೂ ಒಟ್ಟಿಗೆ ಸ್ವರ್ಗಕ್ಕೆ ಮರಳಿ ಎಳೆದುಕೊಳ್ಳಲಾಯಿತು. ಅದೇ ಸಮಯಕ್ಕೆ ಸರಿಯಾಗಿ, ಸೆಜರೇಯದಿಂದ ಕಳುಹಿಸಲಾದ ಮೂರು ಮಂದಿ ನನ್ನನ್ನು ಹುಡುಕಿಕೊಂಡು, ನಾನು ತಂಗಿದ್ದ ಮನೆಗೆ ಬಂದರು. ನಾನು ಸಂಕೋಚ ಪಡದೆ ಅವರೊಡನೆ ಹೋಗಬೇಕೆಂದು ಪವಿತ್ರಾತ್ಮ ತಿಳಿಸಿದರು. ಜೊಪ್ಪದ ಈ ಆರು ಮಂದಿ ಭಕ್ತರೂ ನನ್ನೊಡನೆ ಸೆಜರೇಯಕ್ಕೆ ಬಂದರು. ನಾವೆಲ್ಲರೂ ಕೊರ್ನೇಲಿಯನ ಮನೆಯನ್ನು ಪ್ರವೇಶಿಸಿದೆವು. ಅವನು, “ನನ್ನ ಮನೆಯಲ್ಲೇ ದೂತನೊಬ್ಬನು ಕಾಣಿಸಿಕೊಂಡು, ‘ಈಗಲೇ ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾಗುವ ಸಿಮೋನನನ್ನು ಬರಹೇಳು. ಅವನು ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು,’ ಎಂದು ತಿಳಿಸಿದನು” ಎಂದು ನಮಗೆ ಹೇಳಿದನು. ನಾನು ಉಪದೇಶ ಮಾಡಲು ಪ್ರಾರಂಭಿಸಿದ ಕೂಡಲೇ ನಮ್ಮ ಮೇಲೆ ಇಳಿದಂತೆ ಅವರ ಮೇಲೂ ಪವಿತ್ರಾತ್ಮ ಇಳಿದು ಬಂದರು. ಆಗ ನನಗೆ, ‘ಯೊವಾನ್ನನು ನೀರಿನಿಂದ ಸ್ನಾನದೀಕ್ಷೆಯನ್ನು ಕೊಟ್ಟನು. ನೀವಾದರೋ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನವನ್ನು ಪಡೆಯುವಿರಿ,’ ಎಂಬ ಪ್ರಭುವಿನ ಮಾತುಗಳು ನೆನಪಿಗೆ ಬಂದವು. ನಾನುಪ್ರಭು ಯೇಸುಕ್ರಿಸ್ತರನ್ನು ವಿಶ್ವಾಸಿಸಿದಾಗ ನಮಗೆ ಕೊಟ್ಟ ವರವನ್ನೇ ದೇವರು ಆ ಅನ್ಯ ಧರ್ಮದವರಿಗೂ ಕೊಟ್ಟಿರುವರು. ಹೀಗಿರುವಲ್ಲಿ ದೇವರನ್ನು ತಡೆಗಟ್ಟಲು ನಾನಾರು?” ಎಂದನು. ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯ ಧರ್ಮದವರೂ ಪಶ್ಚಾತ್ತಾಪಪಟ್ಟು ನವ ಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವ ಸ್ತುತಿ ಮಾಡಿದರು.

ಕೀರ್ತನೆ: 42:2-3; 43:3-4
ಶ್ಲೋಕ: ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ,
ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ

ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ /
ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ? //
“ಎಲ್ಲಿನಿನ್ನ ದೇವನೆಲ್ಲಿ?” ಎಂದು ಜನ  ಜರೆಯುತಿರಲು /
ಕಂಬನಿಯೆ ನನಗನ್ನಪಾನವಾಗಿಹುದು  ಹಗಲಿರುಳು //

ಕಳುಹಿಸು ನಿನ್ನ ಜ್ಯೋತಿಯನು
ನಿನ್ನ ಸತ್ಯವನ್ನು ನನ್ನ ನಡೆಸಲಿಕೆ /
ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ
ನಿನ್ನಯ ನಿವಾಸಕೆ //
ಬರುವೆನಾಗ ನಿನ್ನ ಬಲಿಪೀಠದ ಬಳಿಗೆ /
ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ /
ವೀಣೆ ನುಡಿಸಿ ದೇವಾನಿನ್ನ ಸ್ತುತಿಸಲಿಕೆ //

ಯೊವಾನ್ನ 10:1-10


ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಹಟ್ಟಿಗೆ ಬಾಗಿಲ ಮೂಲಕ ಬರದೆ ಗೋಡೆ ಹತ್ತಿ ಬರುವವನು ಕಳ್ಳ ಹಾಗೂ ಕೊಳ್ಳೆಗಾರ. ಬಾಗಿಲ ಮೂಲಕ ಬರುವವನು ಕುರಿಗಾಹಿ. ಕಾವಲುಗಾರನು ಅವನಿಗೆ ಬಾಗಿಲು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಕುರಿಗಳನ್ನು ಹೆಸರಿಟ್ಟು ಕರೆದು ಹೊರಗೆ ಬಿಡುತ್ತಾನೆ. ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ನಂತರ ಅವನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಹಿಂದೆ ಹೋಗುತ್ತವೆ. ಏಕೆಂದರೆ ಅವುಗಳಿಗೆ ಅವನ ಸ್ವರ ಗೊತ್ತು. ಅಪರಿಚಿತನನ್ನು ಅವು ಹಿಂಬಾಲಿಸುವುದಿಲ್ಲ; ಅವನಿಂದ ದೂರ ಓಡಿಹೋಗುತ್ತವೆ. ಅಪರಿಚಿತರ ಸ್ವರವನ್ನು ಅವು ಗುರುತಿಸುವುದಿಲ್ಲ.” ಯೇಸುಸ್ವಾಮಿ ಹೇಳಿದ ಈ ಸಾಮತಿಯನ್ನು ಕೇಳಿದವರು ಅರ್ಥಮಾಡಿಕೊಳ್ಳಲಿಲ್ಲ. ಆದುದರಿಂದ ಯೇಸುಸ್ವಾಮಿ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಗಳಿಗೆ ನಾನೇ ಬಾಗಿಲು. ನನಗಿಂತ ಮೊದಲು ಬಂದವರೆಲ್ಲರು ಕಳ್ಳರು ಹಾಗೂ ಕೊಳ್ಳೆಗಾರರು, ಕುರಿಗಳು ಅವರಿಗೆ ಕಿವಿಗೊಡಲಿಲ್ಲ. ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ. ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ, ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು. ಎಂದರು.

30.04.23 - "ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:14, 36-41


ಆಗ ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: “ಯೆಹೂದ್ಯ ಸ್ವಜನರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ. “ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.” ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.  ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ. ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು. ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು. ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು. 

ಕೀರ್ತನೆ: 23:1-3, 3-4, 5, 6

ಶ್ಲೋಕ: ಪ್ರಭು ಕುರಿಗಾಹಿಯಾಗಿರಲು ನನಗೆ, ಕುಂದುಕೊರತೆಗಳೆಲ್ಲಿಯವು ಎನಗೆ?


ಪ್ರಭು ಕುರಿಗಾಹಿಯಾಗಿರಲು ನನಗೆ I
ಕುಂದುಕೊರತೆಗಳೆಲ್ಲಿಯವು ಎನಗೆII
ಹಸಿರುಗಾವಲುಗಳಲೆನ್ನ ತಂಗಿಸುವನು I
ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II
ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I

ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II

ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I
ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II
ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲುಅಂಜೆನು ಕೇಡಿಗೆ I
ನಿನ್ನ ಕುರಿಗೋಲುಊರುಗೋಲುಧೈರ್ಯವನು ತರುವುದೆನಗೆ I

ಕಾಣೆನೆಂದಿಗೂ ನಾ ದಿಗಿಲನುನೀನಿರಲು ನನ್ನೊಂದಿಗೆ II


ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I
ಹಚ್ಚುವೆ ತಲೆಗೆ ತೈಲವನುತುಂಬಿತುಳುಕಿಸುವೆ ಪಾನಪಾತ್ರೆಯನು II
ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I
ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ 


ಎರಡನೇ ವಾಚನ: 1 ಪೇತ್ರನು 2:20-25

ನೀವು ತಪ್ಪುಮಾಡಿ, ಶಿಕ್ಷೆಗೆ ಗುರಿಯಾದಾಗ ತಾಳ್ಮೆಯಿಂದಿದ್ದರೆ ಅದೇನೂ ದೊಡ್ಡ ಕಾರ್ಯವಲ್ಲ. ಆದರೆ ಒಳ್ಳೆಯದನ್ನು ಮಾಡಿಯೂ ಬರುವ ಹಿಂಸೆಬಾಧೆಗಳನ್ನು ತಾಳ್ಮೆಯಿಂದ ಸಹಿಸಿಕೊಂಡರೆ, ದೇವರು ನಿಮ್ಮನ್ನು ಮೆಚ್ಚುತ್ತಾರೆ. ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು. ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ. ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು. ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ. ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.

ಶುಭಸಂದೇಶ: ಯೊವಾನ್ನ 10:1-10


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿ ಹಟ್ಟಿಗೆ ಬಾಗಿಲ ಮೂಲಕ ಬರದೆ ಗೋಡೆ ಹತ್ತಿಬರುವವನು ಕಳ್ಳ ಹಾಗೂ ಕೊಳ್ಳೆಗಾರ. ಬಾಗಿಲ ಮೂಲಕ ಬರುವವನು ಕುರಿಗಾಹಿ. ಕಾವಲುಗಾರನು ಅವನಿಗೆ ಬಾಗಿಲು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಕುರಿಗಳನ್ನು ಹೆಸರಿಟ್ಟು ಕರೆದು ಹೊರಗೆ ಬಿಡುತ್ತಾನೆ. ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ನಂತರ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಹಿಂದೆ ಹೋಗುತ್ತವೆ. ಏಕೆಂದರೆ ಅವುಗಳಿಗೆ ಅವನ ಸ್ವರ ಗೊತ್ತು. ಅಪರಿಚಿತನನ್ನು ಅವು ಹಿಂಬಾಲಿಸುವುದಿಲ್ಲ; ಅವನಿಂದ ದೂರ ಓಡಿಹೋಗುತ್ತವೆ. ಅಪರಿಚಿತರ ಸ್ವರವನ್ನು ಅವು ಗುರುತಿಸುವುದಿಲ್ಲ. ಯೇಸು ಸ್ವಾಮಿ ಹೇಳಿದ ಈ ಸಾಮತಿಯನ್ನು ಕೇಳಿದವರು ಅರ್ಥ ಮಾಡಿಕೊಳ್ಳಲಿಲ್ಲ. ಆದುದರಿಂದ ಯೇಸು ಸ್ವಾಮಿ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಗಳಿಗೆ ನಾನೇ ಬಾಗಿಲು. ನನಗಿಂತ ಮೊದಲು ಬಂದವರೆಲ್ಲರು ಕಳ್ಳರು ಹಾಗೂ ಕೊಳ್ಳೆಗಾರರು. ಕುರಿಗಳು ಅವರಿಗೆ ಕಿವಿಗೊಡಲಿಲ್ಲ. ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ. ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.

29.04.23 - “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ?"

 ಮೊದಲನೇ ವಾಚನ ಪ್ರೇಷಿತರ ಕಾರ್ಯಕಲಾಪಗಳು 9:31-42

ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು. ಪೇತ್ರನು ಅಲ್ಲಲ್ಲಿದ್ದ ಭಕ್ತವಿಶ್ವಾಸಿಗಳಿಗೆ ಭೇಟಿಕೊಡುತ್ತಾ ಲುದ್ದ ಎಂಬ ಊರಿನಲ್ಲಿ ವಾಸವಾಗಿದ್ದ ಭಕ್ತರ ಬಳಿಗೆ ಬಂದನು. ಅಲ್ಲಿ ಪಾರ್ಶ್ವವಾಯು ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಐನೇಯಾ ಎಂಬವನನ್ನು ಕಂಡನು. ಪೇತ್ರನು ಅವನಿಗೆ, “ಐನೇಯಾ, ಯೇಸುಕ್ರಿಸ್ತರು ನಿನ್ನನ್ನು ಸ್ವಸ್ಥಪಡಿಸುತ್ತಾರೆ, ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು,” ಎಂದನು. ಆ ಕ್ಷಣವೇ ಅವನು ಎದ್ದನು. ಲುದ್ದ ಮತ್ತು ಸಾರೋನಿನ ನಿವಾಸಿಗಳೆಲ್ಲರೂ ಅವನನ್ನು ಕಂಡು ಪ್ರಭುವಿನ ಭಕ್ತರಾದರು. ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು. ಅವಳು ಕಾಯಿಲೆಯಿಂದ ಒಂದು ದಿನ ಸತ್ತಳು. ಜನರು ಅವಳ ಶವಕ್ಕೆ ಸ್ನಾನಮಾಡಿಸಿ ಮೇಲಂತಸ್ತಿನ ಕೋಣೆಯಲ್ಲಿ ಇರಿಸಿದರು. ಲುದ್ದವು ಜೊಪ್ಪಕ್ಕೆ ಸಮೀಪದಲ್ಲೇ ಇತ್ತು. ಪೇತ್ರನು ಲುದ್ದದಲ್ಲಿರುವುದನ್ನು ಕೇಳಿದ ಭಕ್ತಾದಿಗಳು, “ದಯವಿಟ್ಟು ಬೇಗನೆ ನಮ್ಮೂರಿಗೆ ಬನ್ನಿ,” ಎಂದು ಇಬ್ಬರ ಮುಖಾಂತರ ಹೇಳಿ ಕಳುಹಿಸಿದರು. ಪೇತ್ರನು ಎದ್ದು ಅವರ ಜೊತೆಯಲ್ಲೇ ಹೊರಟುಬಂದನು. ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ಅಲ್ಲಿ ಕೂಡಿದ್ದ ವಿಧವೆಯರೆಲ್ಲರೂ ಅವನ ಸುತ್ತುವರಿದು ಅಳುತ್ತಾ, ದೋರ್ಕಳು ಜೀವದಿಂದ ಇದ್ದಾಗ ತಮಗೆ ಮಾಡಿಕೊಟ್ಟ ಬಟ್ಟೆಬರೆಗಳನ್ನು ಅವನಿಗೆ ತೋರಿಸಿದರು. ಪೇತ್ರನು ಅವರೆಲ್ಲರನ್ನೂ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಅನಂತರ ಶವದ ಕಡೆಗೆ ತಿರುಗಿ, “ತಬಿಥಾ, ಮೇಲಕ್ಕೇಳು,” ಎಂದನು. ಆಕೆ ಕಣ್ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತಳು. ಪೇತ್ರನು ಕೈ ನೀಡಿ ಆಕೆಯನ್ನು ಎತ್ತಿ ನಿಲ್ಲಿಸಿದನು. ಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ತಬಿಥಳನ್ನು ಅವರಿಗೆ ತೋರಿಸಿದನು. ಈ ಸಮಾಚಾರ ಜೊಪ್ಪದಲ್ಲೆಲ್ಲಾ ಹರಡಿತು. ಅನೇಕರು ಪ್ರಭುವನ್ನು ವಿಶ್ವಾಸಿಸಿದರು

ಕೀರ್ತನೆ: 116:12-13, 14-15, 16-17
ಶ್ಲೋಕ: ಪ್ರಭು ಎನಗೆ ಮಾಡಿದ ಮಹೋಪಕಾರಗಳಿಗಾಗಿ ನನ್ನಿಂದೇನು ಮಾಡಲು ಸಾಧ್ಯ ಪ್ರತಿಯಾಗಿ?

ಪ್ರಭು ಎನಗೆ ಮಾಡಿದ ಮಹೋಪಕಾರಗಳಿಗಾಗಿ I
ನನ್ನಿಂದೇನು ಮಾಡಲು ಸಾಧ್ಯ ಪ್ರತಿಯಾಗಿ? II
ಪ್ರಭು ಎನಗೆ ಮಾಡಿದ ಮಹೋಪಕಾರಗಳಿಗಾಗಿ I
ನನ್ನಿಂದೇನು ಮಾಡಲು ಸಾಧ್ಯ ಪ್ರತಿಯಾಗಿ? II

ಎತ್ತಿ ಹಿಡಿವೆನು ರಕ್ಷಣೆಯ ಪಾನಪಾತ್ರೆಯನು I
ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II
ಆತನಿಗೆ ನಾ ಹೊತ್ತ ಹರಕೆಗಳನು I
ಆತನ ಸಭೆಮುಂದೆಯೆ ತೀರಿಸುವೆನು II

ಪ್ರಭು ಅಲ್ಪವೆಂದೆಣಿಸನು I
ತನ್ನ ಭಕ್ತರ ಮರಣವನು II
ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I
ನಿನ್ನ ದಾಸಿಯ ಮಗನು, ನಿನ್ನ ಸೇವಕನು I
ಬಿಡಿಸಿರುವೆ ನೀನು ನನ್ನ ಬಂಧನಗಳನು II

ಅರ್ಪಿಸುವೆ ನಾ ನಿನಗೆ ಕೃತಜ್ಞತಾ ಬಲಿಗಳನು I
ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II

ಶುಭಸಂದೇಶ: ಯೊವಾನ್ನ 6:60-69


ಯೇಸುಸ್ವಾಮಿಯ ಶಿಷ್ಯರಲ್ಲಿ ಹಲವರು, “ಇವು ಕಟುವಾದ ಮಾತುಗಳು, ಇವನ್ನು ಯಾರುತಾನೆ ಕೇಳಿಯಾರು?” ಎಂದು ಮಾತನಾಡಿಕೊಂಡರು. ಈ ವಿಷಯವಾಗಿ ತಮ್ಮ ಶಿಷ್ಯರು ಗೊಣಗುಟ್ಟುತ್ತಿರುವುದನ್ನು ಯೇಸು ತಾವಾಗಿಯೇ ಅರಿತು, “ಇಷ್ಟುಮಾತ್ರಕ್ಕೆ ನೀವು ಕಂಗೆಡಬೇಕೆ? ಹಾಗಾದರೆ ನರಪುತ್ರನು ತಾನು ಮೊದಲಿದ್ದ ಸ್ಥಳಕ್ಕೆ ಮರಳಿ ಏರುವುದನ್ನು ನೀವು ಕಂಡಾಗ ಏನನ್ನುವಿರಿ? ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ. ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರು, ತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರು, ಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.) “ ‘ಪಿತನು ಅನುಗ್ರಹಿಸಿದ ಹೊರತು ಯಾರೂ ನನ್ನ ಬಳಿಗೆ ಬರಲಾರರು,’ ಎಂದು ನಾನು ಹೇಳಿದುದು ಇದಕ್ಕಾಗಿಯೇ,” ಎಂದು ಯೇಸು ಮತ್ತೆ ನುಡಿದರು. ಅಂದಿನಿಂದ ಯೇಸುಸ್ವಾಮಿಯ ಹಿಂಬಾಲಕರಲ್ಲಿ ಹಲವರು ಅವರ ಸಹವಾಸವನ್ನು ಬಿಟ್ಟುಬಿಟ್ಟರು. ಹೋದವರು ಹಿಂದಿರುಗಿ ಬರಲಿಲ್ಲ. ಆಗ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಕೂಡ ಹೋಗಬೇಕೆಂದು ಇದ್ದೀರಾ?’ ಎಂದು ಕೇಳಿದರು. ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ. ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.

28.04.23 - "ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ"

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 9:1-20

ಇತ್ತ ಸೌಲನು ಯೇಸುಸ್ವಾಮಿಯ ಅನುಯಾಯಿಗಳಿಗೆ ಬೆದರಿಕೆ ಹಾಕುತ್ತಾ ಅವರನ್ನು ಸಂಹರಿಸಬೇಕೆಂದಿದ್ದನು. ಈ ಹೊಸಮಾರ್ಗವನ್ನು ಅವಲಂಭಿಸುವವರು ಹೆಂಗಸರೇ ಆಗಿರಲಿ ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನ ಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾ ಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು. ಅವನು ಅಲ್ಲಿಂದ ಪ್ರಯಾಣ ಮಾಡುತ್ತಾ ದಮಸ್ಕಸ್ ಪಟ್ಟಣವನ್ನು ಸಮೀಪಿಸಿದನು. ಇದ್ದಕ್ಕಿದ್ದಂತೆ ಆಕಾಶದಿಂದ ಬೆಳಕೊಂದು ಮಿಂಚಿ ಅವನ ಸುತ್ತಲೂ ಆವರಿಸಿತು. ಅವನು ನೆಲಕ್ಕುರುಳಿದನು. "ಸೌಲನೇ, ಸೌಲನೇ, ನನ್ನನ್ನೇಕೆ  ಹಿಂಸಿಸುತ್ತಿರುವೆ?" ಎಂಬ ವಾಣಿ ಅವನಿಗೆ ಕೇಳಿಸಿತು. ಆಗ ಅವನು, "ಪ್ರಭು, ನೀವಾರು?" ಎಂದನು. "ನೀನು ಹಿಂಸೆಪಡಿಸುತ್ತಿರುವ  ಯೇಸುವೇ ನಾನು. ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು." ಎಂದು ಆ ವಾಣಿ ಹೇಳಿತು. ಸೌಲನೊಡನೆ ಪ್ರಯಾಣ ಮಾಡುತ್ತಿದ್ದವರಿಗೆ ಆ ವಾಣಿ ಕೇಳಿಸಿತ್ತೇ ಹೊರತು, ಯಾರೂ ಕಾಣಿಸಲಿಲ್ಲ. ಅವರು ಸ್ತಬ್ಧರಾದರು. ಸೌಲನು ಮೇಲಕ್ಕೆದ್ದು ಕಣ್ಣರಳಿಸಿ ನೋಡಿದರೂ ಅವನಿಗೇನು ಕಾಣಿಸಲಿಲ್ಲ. ಆದುದರಿಂದ ಸಂಗಡಿಗರು ಅವನ ಕೈಹಿಡಿದು ದಮಸ್ಕಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು. ಮೂರು ದಿನಗಳವರೆಗೂ ಅವನಿಗೆ ಕಣ್ಣು ಕಾಣಿಸಲಿಲ್ಲ. ಅಲ್ಲದೆ ಅದುವರೆಗೂ ಅವನು ಅನ್ನಪಾನಗಳನ್ನು ಮುಟ್ಟಲಿಲ್ಲ. ದಮಸ್ಕಸಿನಲ್ಲಿ ಅನನೀಯ ಎಂಬ ಶಿಷ್ಯನಿದ್ದನು. ಪ್ರಭು ಅವನಿಗೆ ದರ್ಶನವಿತ್ತು,  "ಅನನೀಯಾ"  ಎಂದು ಕರೆಯಲು ಅವನು, "ಸ್ವಾಮೀ, ಅಪ್ಪಣೆಯಾಗಲಿ," ಎಂದನು. ಪ್ರಭು ಅವನಿಗೆ, "ನೀನೆದ್ದು "ನೇರಬೀದಿ" ಎಂಬ ಹಾದಿಗೆ ಹೋಗು; ತಾರ್ಸದ ಸೌಲ ಎಂಬ ವ್ಯಕ್ತಿಗಾಗಿ ಯೂದನ ಮನೆಯಲ್ಲಿ ವಿಚಾರಿಸು. ಆ ಸೌಲನು ಪ್ರಾರ್ಥನೆಯಲ್ಲಿರುವುದನ್ನು ಕಾಣುವೆ. ಅಲ್ಲದೆ ಅನನೀಯ ಎಂಬುವನು ತನ್ನ ಬಳಿಗೆ ಬಂದು ತಾನು ಮರಳಿ ದೃಷ್ಟಿಯನ್ನು ಪಡೆಯುವಂತೆ ತನ್ನ ಮೇಲೆ ಹಸ್ತನಿಕ್ಷೇಪ ಮಾಡುವುದನ್ನು ದರ್ಶನದಲ್ಲಿ ಕಂಡಿದ್ದಾನೆ," ಎಂದರು. ಅನನೀಯ ಪ್ರತ್ಯುತ್ತರವಾಗಿ, "ಪ್ರಭೂ ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡು ಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ. ಅಷ್ಟು ಮಾತ್ರವಲ್ಲ, ತಮ್ಮ ನಾಮಸ್ಮರಣೆ ಮಾಡುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕರಿಂದ ಅಧಿಕಾರವನ್ನು ಪಡೆದು ಇಲ್ಲಿಗೆ ಬಂದಿದ್ದಾನೆ," ಎಂದನು. ಪ್ರಭು ಅವನಿಗೆ, "ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ತ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು. ಅವನು ನನ್ನ ನಾಮದ ನಿಮಿತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ," ಎಂದರು. ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪ ಮಾಡಿ, "ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ," ಎಂದನು. ಆ ಕ್ಷಣವೇ ಸೌಲನ ಕಣ್ಣುಗಳಿಂದ ಪರೆಯೊಂದು ಕಳಚಿಬಿದ್ದಿತು. ಅವನಿಗೆ ಪುನಃ ಕಣ್ಣುಗಳು ಕಾಣತೊಡಗಿದವು. ಎದ್ದು ದೀಕ್ಷಾಸ್ನಾನವನ್ನು  ಪಡೆದನು. ತರುವಾಯ ಊಟಮಾಡಿದ ಮೇಲೆ ಅವನಿಗೆ ತ್ರಾಣ ಬಂದಿತು. ಸೌಲನು ಕೆಲವು ದಿನಗಳವರೆಗೆ ದಮಸ್ಕಸಿನಲ್ಲಿ ಭಕ್ತವಿಶ್ವಾಸಿಗಳೊಡನೆ ಇದ್ದನು. ಆನಂತರ ಸೌಲನು ತಡಮಾಡದೆ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಯೇಸುವೇ ದೇವರ ಪುತ್ರ ಎಂದು ಭೊಧಿಸಲು ಪ್ರಾರಂಭಿಸಿದನು.

ಕೀರ್ತನೆ: 117:1, 2
ಶ್ಲೋಕ: ಸ್ತುತಿಮಾಡಿ ಪ್ರಭುವನ್ನು ಸಮಸ್ತ ರಾಷ್ಟ್ರಗಳೇ

ಸ್ತುತಿ ಮಾಡಿ ಪ್ರಭುವನು ಸಮಸ್ತ ರಾಷ್ಟ್ರಗಳೇ I
ಆತನನು ಹೊಗಳಿ ಹಾಡಿ ಸರ್ವಜನಾಂಗಗಳೇ II

ನಮ್ಮ ಮೇಲೆ ಆತನಿಗಿರುವ ಪ್ರೀತಿ ಅಚಲ I
ಆತನ ಸತ್ಯಪರತೆ ಇರುವುದು ಅನಂತ ಕಾಲ II

ಶುಭಸಂದೇಶ :ಯೊವಾನ್ನ 6:52-59

ಅಷ್ಟಕ್ಕೆ ಆ ಯೆಹೂದ್ಯರಲ್ಲಿ ತೀವ್ರ ವಾಗ್ವಾದ ಉಂಟಾಯಿತು. "ಈತನು ತನ್ನ ಮಾಂಸವನ್ನು ತಿನ್ನಲು ಹೇಗೆ ಕೊಟ್ಟಾನು?" ಎಂದು ಕೇಳತೊಡಗಿದರು. ಅದಕ್ಕೆ ಯೇಸು, "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನರಪುತ್ರನ ಮಾಂಸವನ್ನು ತಿನ್ನದೆ, ಆತನ ರಕ್ತವನ್ನು ಕುಡಿಯದೆ ಹೋದರೆ ನಿಮ್ಮಲ್ಲಿ ಜೀವ ಇರುವುದಿಲ್ಲ. ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನಲ್ಲಿ ನಿತ್ಯಜೀವ ಇರುತ್ತದೆ ಅಲ್ಲದೆ ಅಂತಿಮ ದಿನದಂದು ನಾನು ಅವನನ್ನು ಜೀವಕ್ಕೆ ಎಬ್ಬಿಸುತ್ತೇನೆ. ನನ್ನ ಮಾಂಸವೇ ನಿಜವಾದ ಆಹಾರ; ನನ್ನ ರಕ್ತವೇ ನಿಜವಾದ ಪಾನ. ನನ್ನ ಮಾಂಸವನ್ನು ತಿಂದು,  ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ನೆಲಸಿರುತ್ತಾನೆ ನಾನು ಅವನಲ್ಲಿ ನೆಲಸಿರುತ್ತೇನೆ. ಜೀವಸ್ವರೂಪಿ ಆದ ಪಿತನು ನನ್ನನ್ನು ಕಳುಹಿಸಿಕೊಟ್ಟಿರುವರು.  ನಾನು ಅವರಿಂದಲೇ ಜೀವಿಸುತ್ತೇನೆ. ಅಂತೆಯೇ ನನ್ನನ್ನು ಭುಜಿಸುವವರು ನನ್ನಿಂದಲೇ ಜೀವಿಸುತ್ತಾನೆ. ಸ್ವರ್ಗದಿಂದ ಇಳಿದು ಬಂದ ರೊಟ್ಟಿ ಇದೇ ನಿಮ್ಮ ಪೂರ್ವಜರು  "ಮನ್ನ"ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು," ಎಂದು ಹೇಳಿದರು. ಕಫೆರ್ನವುಮಿನ ಪ್ರಾರ್ಥನಾಮಂದಿರದಲ್ಲಿ ಯೇಸು ಭೋದನೆ ಮಾಡುತ್ತಿದ್ದಾಗ ಆಡಿದ ಮಾತುಗಳಿವು.

ಮನಸಿಗೊಂದಿಷ್ಟು : ಶುಭಸಂದೇಶದ ಅತ್ಯಂತ ಹೃದಯಸ್ಪರ್ಶಿ ಘಟನೆ, ರೂಪಾಂತರವನ್ನು ಇಂದಿನ ವಾಚನದಲ್ಲಿ ಕಾಣುತ್ತೇವೆ. ಕ್ರೈಸ್ತ ತತ್ವಗಳನ್ನು ನಿರ್ನಾಮ ಮಾಡಲು ದಮಸ್ಕಸ್ ಗೆ ಹೊರಟ ಸೌಲನನ್ನು ಯೇಸು ತಮ್ಮ ಪ್ರೀತಿಯಲ್ಲಿ ಬಂಧಿಸುತ್ತಾರೆ. ಅವನ ನೋಡುತ್ತಿದ್ದ ಲೋಕವನ್ನು ಕುರುಡಾಗಿಸಿ ತಮ್ಮ ಬೆಳಕನ್ನು ನೀಡುತ್ತಾರೆ. ನಮ್ಮದೇ ಹಾದಿಯಲ್ಲಿ ನಡೆಯುತ್ತಿರುವ ನಮಗೂ ಆ ರೂಪಾಂತರದ ಭಾಗ್ಯ ದೊರೆಯುವಂತಾಗಲಿ

ಪ್ರಶ್ನೆ : ಕ್ಷಣಾರ್ಧದಲ್ಲಿ ಎಲ್ಲವನ್ನೂ ತ್ಯಜಿಸಿದ ಸೌಲ ನಮಗೆ ಸ್ಪೂರ್ತಿಯೇ?

27.04.23 - "ನಾನೇ ಸ್ವರ್ಗದಿಂದ ಇಳಿದು ಬಂದ ಜೀವಂತ ರೊಟ್ಟಿ"

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 8:26-40

ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯಮಾರ್ಗ,” ಎಂದನು. ಅಂತೆಯೇ ಫಿಲಿಪ್ಪನು ಹೊರಟನು. ಆಗ ಇಥಿಯೋಪಿಯದ ಕಂಚುಕಿಯೊಬ್ಬನು ಅದೇ ಮಾರ್ಗವಾಗಿ ಬರುತ್ತಿದ್ದನು. ಅವನು ಆ ದೇಶದ ರಾಣಿ ಕಂದಾಕಿಯ ಕೋಶಾಧಿಕಾರಿ ಹಾಗೂ ಸಚಿವ. ದೇವಾರಾಧನೆಗೆಂದು ಜೆರುಸಲೇಮಿಗೆ ಹೋಗಿ ಹಿಂದಿರುಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತು ಯೆಶಾಯನ ಪ್ರವಾದನೆಯನ್ನು ಓದುತ್ತಿದ್ದನು. ಪವಿತ್ರಾತ್ಮರು ಫಿಲಿಪ್ಪನಿಗೆ, “ನೀನು ಮುಂದೆ ಹೋಗಿ ಆ ರಥದ ಜೊತೆಯಲ್ಲೇ ನಡೆ,” ಎಂದು ತಿಳಿಸಿದರು. ಫಿಲಿಪ್ಪನು ಮುಂದಕ್ಕೆ ಧಾವಿಸಿ, ಅವನು ಯೆಶಾಯನ ಪ್ರವಾದನೆಯನ್ನು ಓದುತ್ತಿರುವುದನ್ನು ಕೇಳಿಸಿಕೊಂಡನು. “ನೀವು ಓದುತ್ತಿರುವುದು ಅರ್ಥವಾಗುತ್ತಿದೆಯೇ?” ಎಂದು ಪ್ರಶ್ನಿಸಿದನು. ಆ ಅಧಿಕಾರಿ ಪ್ರತ್ಯುತ್ತರವಾಗಿ, “ಯಾರಾದರೂ ವಿವರಿಸಿದ ಹೊರತು ಇದು ನನಗೆ ಅರ್ಥವಾಗುವುದಾದರೂ ಹೇಗೆ?” ಎಂದನು. ರಥವನ್ನು ಹತ್ತಿ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಹ್ವಾನಿಸಿದನು. ಅವನು ಓದುತ್ತಿದ್ದ ಪ್ರವಾದನೆ ಇದು: “ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ ಆತನು ಬಾಯ್ದೆರೆಯಲಿಲ್ಲ. ಆತನನ್ನು ಅವಮಾನಪಡಿಸಲಾಯಿತು, ನ್ಯಾಯವನ್ನೇ ಆತನಿಗೆ ನಿರಾಕರಿಸಲಾಯಿತು, ಆತನ ಸಂತತಿಯ ಮಾತೇ ಎತ್ತದಂತಾಯಿತು. ಇದಕಾರಣ ಆತನ ಭೌತಿಕ ಜೀವವನ್ನೇ ಮೊಟಕುಗೊಳಿಸಲಾಯಿತು.” ಆ ಅಧಿಕಾರಿ ಫಿಲಿಪ್ಪನಿಗೆ, “ಇಲ್ಲಿ ಪ್ರವಾದಿ ಯಾರನ್ನು ಕುರಿತು ಈ ಮಾತುಗಳನ್ನು ಹೇಳಿದ್ದಾನೆ. ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ, ಹೇಳಬಲ್ಲೆಯಾ?” ಎಂದು ಕೇಳಿದನು. ಆಗ ಫಿಲಿಪ್ಪನು ಮರುತ್ತರವಾಗಿ, ಆ ಪ್ರವಾದನೆಯನ್ನೇ ಆಧಾರವಾಗಿ ತೆಗೆದುಕೊಂಡು, ಯೇಸುವಿನ ಶುಭಸಂದೇಶವನ್ನು ಅವನಿಗೆ ಬೋಧಿಸಿದನು. ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ” ಎಂದನು. ಫಿಲಿಪ್ಪನು, “ನೀವು ಹೃದಯಪೂರ್ವಕವಾಗಿ ವಿಶ್ವಾಸಿಸುವುದಾದರೆ ದೀಕ್ಷಾಸ್ನಾನವನ್ನು ಪಡೆಯಬಹುದು,” ಎಂದನು. “ಯೇಸುಕ್ರಿಸ್ತ ದೇವರ ಪುತ್ರ ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಅಧಿಕಾರಿ ಪ್ರತ್ಯುತ್ತರವಿತ್ತನು. ಅಧಿಕಾರಿಯ ಆಜ್ಞೆಯಂತೆ ರಥವನ್ನು ಅಲ್ಲಿಯೇ ನಿಲ್ಲಿಸಲಾಯಿತು. ಅವರಿಬ್ಬರೂ ನೀರಿಗೆ ಇಳಿದರು. ಫಿಲಿಪ್ಪನು ಅಧಿಕಾರಿಗೆ ದೀಕ್ಷಾಸ್ನಾನವನ್ನು ಕೊಟ್ಟನು. ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು. ಫಿಲಿಪ್ಪನಾದರೋ ಆಜೋತ್ ಎಂಬಲ್ಲಿ ಕಾಣಿಸಿಕೊಂಡನು. ಅಲ್ಲಿಂದ ಸೆಜರೇಯವನ್ನು ತಲುಪುವವರೆಗೆ ಎಲ್ಲಾ ಊರುಗಳಲ್ಲೂ ಶುಭಸಂದೇಶವನ್ನು ಸಾರುತ್ತಾ ಹೋದನು.

ಕೀರ್ತನೆ: 66:8-9, 16-17, 20
ಶ್ಲೋಕ: ಜಗವೆಲ್ಲ ಮಾಡಲಿ ಜಯಕಾರ ದೇವನಿಗೆ

ಜನಾಂಗಗಳೇನಮಿಸಿರಿ ನಮ್ಮ ದೇವನನು I
ಗಟ್ಟಿಯಾಗಿ ಮಾಡಿರಿ ಅವನ ಗುಣಗಾನವನು II
ನಮ್ಮ ಪ್ರಾಣವನ್ನಾತ ಉಳಿಸಿದನಯ್ಯಾ I
ಕಾಲೆಡವದಂತೆ ಕಾಪಾಡಿದನಯ್ಯಾ II

ಬಂದು ಕೇಳಿರಿ ದೇವನಲಿ ಭಯಭಕ್ತಿಯುಳ್ಳವರೆ I
ದೇವನೆನಗೆ ಮಾಡಿದ ಕಾರ್ಯಗಳ ತಿಳಿಸುವೆ ನಿಮಗೆ II
ದೇವನಿಗೆನ್ನ ಮನ ಸ್ವರವೆತ್ತಿ ಮೊರೆಯಿಟ್ಟಿತು I
ಆತನ ಸ್ತುತಿ ನನ್ನ ಬಾಯಲಿ ತುಳುಕುತ್ತಿತ್ತು II

ಎನ್ನ ಪ್ರಾರ್ಥನೆಯನು ತಿರಸ್ಕರಿಸದ ದೇವನಿಗೆ ಸ್ತುತಿ I
ತನ್ನ ಪ್ರೀತಿಯನೆನಗೆ ನಿರಾಕರಿಸದಾತನಿಗೆ ಸನ್ನುತಿ II

ಶುಭಸಂದೇಶ: ಯೊವಾನ್ನ6:44-51


ಯೆಹೂದ್ಯರಿಗೆ  ಪ್ರತ್ಯುತ್ತರವಾಗಿ ಯೇಸುವು, "ನನ್ನನ್ನು ಕಳುಹಿಸಿಕೊಟ್ಟ ಪಿತನು, ನನ್ನತ್ತ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬಾರರು. ಬಂದವರನ್ನು ನಾನು ಅಂತಿಮ ದಿನದಂದು ಜೀವಕ್ಕೆ ಎಬ್ಬಿಸುತ್ತೇನೆ. ‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಗೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ. ಹಾಗೆಂದ ಮಾತ್ರಕ್ಕೆ ಪಿತನನ್ನು ಯಾರಾದರೂ ಕಣ್ಣಾರೆ ಕಂಡಿದ್ದಾರೆ ಎಂದಲ್ಲ, ದೇವರಿಂದ ಬಂದಿರುವ ಒಬ್ಬನು ಮಾತ್ರ ಪಿತನನ್ನು ಕಂಡಿದ್ದಾನೆ. ವಿಶ್ವಾಸವುಳ್ಳವನಲ್ಲಿ ನಿತ್ಯಜೀವ ಇದೆಯೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಜೀವದಾಯಕ ರೊಟ್ಟಿ ನಾನೇ. ನಿಮ್ಮ ಪೂರ್ವಜರು ಮರಳುಗಾಡಿನಲ್ಲಿ ‘ಮನ್ನಾ’ವನ್ನು ತಿಂದರು; ಆದರೂ ಸಾವಿಗೆ ತುತ್ತಾದರು. ಸ್ವರ್ಗದಿಂದ ಇಳಿದು ಬಂದ ರೊಟ್ಟಿಯಾದರೋ ಹಾಗಲ್ಲ. ಇದನ್ನು ತಿನ್ನುವ ಯಾರಿಗೂ ಸಾವೆಂಬುದು ಇಲ್ಲ. ನಾನೇ ಸ್ವರ್ಗದಿಂದ ಇಳಿದು ಬಂದ ಜೀವಂತ ರೊಟ್ಟಿ. ಈ ರೋಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.