ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

01.06.23

ಮೊದಲನೇ ವಾಚನ: ಸಿರಾಖ 42: 15-25

ಸರ್ವೇಶ್ವರನ ಕೆಲಸಗಳನ್ನು ಕುರಿತು ಈಗ ನೆನಪು ಮಾಡಿಕೊಡುತ್ತೇನೆ: ನಾನು ಕಂಡ ಸಂಗತಿಗಳನ್ನು ವಿವರಿಸುತ್ತೇನೆ: ಸರ್ವೇಶ್ವರನ ವಾಣಿಯ ಪ್ರಕಾರ ಆತನ ಕಾರ್ಯ ನೆರವೇರಿದೆ ಸೃಷ್ಟಿಸಮಸ್ತವೂ ಆತನ ಆಜ್ಞೆಗಳನ್ನು ಅನುಸರಿಸುತ್ತವೆ. ಪ್ರಕಾಶಕೊಡುವ ಸೂರ್ಯ ಎಲ್ಲವನ್ನು ದೃಷ್ಟಿಸುವನು ಸರ್ವೇಶ್ವರನ ಕೆಲಸ ಆತನ ಮಹಿಮೆಯಿಂದ ತುಂಬಿರುವುದು. ಸರ್ವೇಶ್ವರನ ಮಹತ್ಕಾರ್ಯಗಳನ್ನು ವಿವರಿಸುವ ಶಕ್ತಿಯನ್ನು ಆತ ಕೊಟ್ಟಿಲ್ಲ ತನ್ನ ದೇವದೂತರಿಗೂ. ಎಲ್ಲವೂ ತನ್ನ ಮಹಿಮೆಯಲ್ಲೇ ನೆಲೆಗೊಂಡಿರುವಂತೆ ಸ್ಥಾಪಿಸಿದವ ಸರ್ವಶಕ್ತನಾದ ಸರ್ವೇಶ್ವರನೇ. ಮಹೋನ್ನತ ಸರ್ವೇಶ್ವರ ತಿಳಿದಿರುವನು ಸರ್ವಜ್ಞಾನವನು, ಯುಗದ ಲಕ್ಷಣವನು; ಎಂದೇ ಪರಿಶೋಧಿಸಿಹನು ಪ್ರಪಾತವನು, ಹೃದಯವನು; ಬಲ್ಲನಾತನು ಅವುಗಳ ತಂತ್ರಕುತಂತ್ರಗಳನು. ಪ್ರಕಟಪಡಿಸುವನು ಹಿಂದೆ ನಡೆದವುಗಳನು ಮುಂದೆ ನಡೆಯುವಂಥವುಗಳನು ಶ್ರುತಪಡಿಸಬಲ್ಲನಾತನು ಗುಪ್ತವಾದುವುಗಳ ಸುಳಿವನು. ಯಾವ ಕಲ್ಪನೆಯೂ ಆತನಿಂದ ತಪ್ಪಿಸಿಕೊಳ್ಳದು ಯಾವ ಮಾತೂ ಆತನಿಗೆ ಮರೆಯಾಗಿರದು. ಯುಗಯುಗಾಂತರಕ್ಕೂ ಇರುವಾತನವನು ತನ್ನ ಜ್ಞಾನದ ಮಹತ್ಕಾರ್ಯಗಳನು ಕ್ರಮಪಡಿಸಿದರುವನು ಅದಕ್ಕೆ ಯಾವುದನ್ನು ಕೂಡಿಸಲಿಲ್ಲ, ಯಾವುದನ್ನು ಅದರಿಂದ ಕಳೆದಿಲ್ಲ ಸಲಹೆಗಾರನ ಅಗತ್ಯವೂ ಆತನಿಗಿರಲಿಲ್ಲ. ಆಹಾ, ಆತನ ಕಾರ್ಯಗಳು ಎಷ್ಟು ಅಪೇಕ್ಷಣೀಯ! ಆತನ ಕೆಲಸಗಳು ಎಷ್ಟು ತೇಜೋಮಯ! ಇವೆಲ್ಲವು ಅವುಗಳ ಪ್ರಯೋಜನಕ್ಕನುಸಾರ ಜೀವಿಸುತ್ತವೆ ನಿತ್ಯಕ್ಕೂ ಉಳಿಯುತ್ತವೆ, ಆತನಿಗೆ ವಿಧೇಯವಾಗಿರುತ್ತವೆ. ಎಲ್ಲ ಸಂಗತಿಗಳಿರುವುವು ದ್ವಂದ್ವವಾಗಿ ಒಂದು ಇನ್ನೊಂದಕ್ಕೆ ಎದುರಾಗಿ ಆತ ಯಾವುದನ್ನೂ ಮಾಡಿಲ್ಲ ಅಪೂರ್ಣವಾಗಿ. ವೈಶಿಷ್ಟ್ಯತೆಯಲ್ಲಿ ಒಂದು ಪರಿಪೂರ್ಣಗೊಳ್ಳುತ್ತದೆ ಇನ್ನೊಂದರಿಂದ. ಆತನ ಮಹಿಮೆಯನ್ನು ಪೂರ್ತಿಯಾಗಿ ಗ್ರಹಿಸಲು ಯಾರಿಂದ ಸಾಧ್ಯ?

ಕೀರ್ತನೆ: 33: 2-3, 4-5, 6-7, 8-9
ಶ್ಲೋಕ: ಸೃಷ್ಟಿಯಾಯಿತು ಗಗನಮಂಡಲ ಆತನ ನುಡಿಯೊಂದಕೆ. 

ಶುಭಸಂದೇಶ: ಮಾರ್ಕ 10: 46-52

ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು. ಅಲ್ಲಿಂದ ಹೊರಡುವಾಗ ಜನರ ದೊಡ್ಡಗುಂಪು ಅವರನ್ನು ಹಿಂಬಾಲಿಸಿತು. ಕುರುಡು ಭಿಕ್ಷುಗಾರನಾದ, ತಿಮಾಯನ ಮಗ ಬಾರ್‍ತಿಮಾಯನು ದಾರಿಯ ಮಗ್ಗುಲಲ್ಲಿ ಕುಳಿತಿದ್ದನು. ಆ ಮಾರ್ಗವಾಗಿ ಹೋಗುತ್ತಿರುವಾತನು ನಜರೇತಿನ ಯೇಸು ಎಂದು ಕೇಳಿದೊಡನೆಯೇ, ಅವನು, “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಗಟ್ಟಿಯಾಗಿ ಕೂಗಿಕೊಂಡನು. ಅನೇಕರು ‘ಸುಮ್ಮನಿರು’ ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಇನ್ನಷ್ಟು ಗಟ್ಟಿಯಾಗಿ ಕೂಗಿಕೊಂಡನು. ಇದನ್ನು ಕೇಳಿ ಯೇಸು ಅಲ್ಲೇ ನಿಂತು, “ಅವನನ್ನು ಕರೆದುಕೊಂಡು ಬನ್ನಿ,” ಎಂದು ಅಪ್ಪಣೆಮಾಡಿದರು. ಅವರು ಹೋಗಿ, “ಏಳು, ಭಯಪಡಬೇಡ, ಯೇಸು ನಿನ್ನನ್ನು ಕರೆಯುತ್ತಿದಾರೆ,” ಎಂದು ಹೇಳಿದರು. ಅವನು ತನ್ನ ಮೇಲುಹೊದಿಕೆಯನ್ನು ಅಲ್ಲೇ ಬಿಟ್ಟು ತಟ್ಟನೆ ಎದ್ದು, ಯೇಸುವಿನ ಬಳಿಗೆ ಬಂದನು. ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಕೇಳಿದರು. ಅದಕ್ಕೆ ಅವನು, “ಗುರುದೇವಾ! ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು. ಯೇಸು ಅವನಿಗೆ, “ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ,” ಎಂದರು. ಆ ಕ್ಷಣವೇ ಅವನಿಗೆ ದೃಷ್ಟಿ ಬಂದಿತು. ಅವನೂ ಯೇಸುವನ್ನು ಹಿಂಬಾಲಿಸಿ ಹಿಂದೆ ಹೋದನು.

31.05.23 - “ಸ್ತ್ರೀಯರಲ್ಲೆಲ್ಲಾ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ!"

 ಮೊದಲನೇ ವಾಚನ: ಜೆಫನ್ಯ 3: 14-18

ಹರ್ಷಧ್ವನಿಗೈ, ಸಿಯೋನ್ ಕುವರಿಯೇ ಘೋಷಿಸು, ಇಸ್ರಯೇಲ್ ದೇಶವೇ, ಹೃತ್ಪೂರ್ವಕವಾಗಿ ಸಂತೋಷಿಸು, ಜೆರುಸಲೇಮ್ ನಗರವೇ. ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ. ಜೆರುಸಲೇಮಿಗೆ ಈ ಪರಿ ಹೇಳುವರು ಆ ದಿನದೊಳು: “ಅಂಜಬೇಡ ಸಿಯೋನ್, ಸೋತು ಜೋಲುಬೀಳದಿರಲಿ ನಿನ್ನ ಕೈಗಳು.” ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ. ತಡೆದುಬಿಡುವನು ಸರ್ವವಿನಾಶವನು ದೂರಮಾಡುವನು ನಿನ್ನಿಂದ ನಿಂದೆ ಅಪಮಾನವನು.

ಯೆಶಾಯ 12: 2-6

ಶ್ಲೋಕ: ಹಾಡಿರಿ  ಮಾಡಿರಿ ಭಜನ, ಇಸ್ರಯೇಲಿನಾ ಸ್ವಾಮಿ ಪರಮ ಪಾವನ

ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. 
ದೇವಾದಿದೇವನೇ ಎನಗೆ ಶಕ್ತಿ 
ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”
ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ. //  ಶ್ಲೋಕ

“ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು 
ಸ್ಮರಿಸಿರಿ ಆತನ ಶ್ರೀನಾಮವನು 
ಸಾರಿರಿ ಜನತೆಗೆ ಆತನ ಕಾರ್ಯಗಳನು 
ಘೋಷಿಸಿರಿ ಆತನ ನಾಮ ಘನತೆಯನು. //  ಶ್ಲೋಕ

ಹಾಡಿರಿ ಸರ್ವೇಶ್ವರನಿಗೆ ಸ್ತುತಿಯನು 
ಎಸಗಿಹನಾತ ಮಹಿಮಾ ಕಾರ್ಯಗಳನು 
ತಿಳಿಸಿರಿ ಜಗದಾದ್ಯಂತಕೆ ಈ ವಿಷಯವನು.
ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ 
ನಿಮ್ಮ ಮಧ್ಯೆಯಿರುವ ಆ ಘನವಂತನ 
ಇಸ್ರಯೇಲಿನಾ ಸ್ವಾಮಿ ಪರಮಪಾವನ.” //  ಶ್ಲೋಕ

ಶುಭಸಂದೇಶ: ಲೂಕ 1: 39-56


ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು. ಅಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು. ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿದ್ದ ಶಿಶು ನಲಿದಾಡಿತು; ಎಲಿಜಬೇತಳು ಪವಿತ್ರಾತ್ಮಭರಿತಳಾಗಿ ಹರ್ಷೋದ್ಗಾರದಿಂದ ಹೀಗೆಂದಳು: “ಸ್ತ್ರೀಯರಲ್ಲೆಲ್ಲಾ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ! ನನ್ನ ಪ್ರಭುವಿನ ತಾಯಿ ನೀನು; ನನ್ನ ಬಳಿಗೆ ಬಂದುದು ಅದೆಂಥ ಭಾಗ್ಯ! ನಿನ್ನ ವಂದನೆಯ ದನಿ ನನ್ನ ಕಿವಿ ತಾಕಿದೊಡನೆ ನಲಿದಾಡಿತು ಆನಂದದಿಂದ, ನನ್ನ ಕರುಳ ಕುಡಿ! ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು.” ಮರಿಯಳ ಸ್ತುತಿಗೀತೆ ಆಗ ಹೀಗೆಂದು ಮರಿಯಳು ಹೊಗಳಿದಳು: “ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ ! ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ !! ತನ್ನ ದಾಸಿಯ ದೀನತೆಯನು ನೆನಪಿಗೆ ತಂದುಕೊಂಡನಾತ ! ಧನ್ಯಳೆಂದು ಹೊಗಳುವರೆನ್ನನು ಇಂದಿನಿಂದ ಸರ್ವ ಜನಾಂಗ !! ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ ! ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ !! ಆತನಲ್ಲಿ ಭಯಭಕ್ತಿಯುಳ್ಳವರಿಗೆ ! ಆತನ ಪ್ರೀತಿ ತಲತಲಾಂತರದವರೆಗೆ !! ಗರ್ವಹೃದಯಿಗಳನಾತ ಚದರಿಸಿರುವನು ! ಪ್ರದರ್ಶಿಸಿರುವನು ತನ್ನ ಬಾಹುಬಲವನು !! ಇಳಿಸಿಹನು ಗದ್ದುಗೆಯಿಂದ ಘನಾಧಿಪತಿಗಳನು ! ಏರಿಸಿರುವನು ಉನ್ನತಿಗೆ ದೀನದಲಿತರನು !! ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ ! ಹೊರದೂಡಿರುವನು ಸಿರಿವಂತರನು ಬರೀಗೈಯಲಿ !! ನೆರವಾದನು ತನ್ನ ದಾಸ ಇಸ್ರಯೇಲನಿಗೆ ! ಪೂರ್ವಜರಿಗಿತ್ತ ವಾಗ್ದಾನದ ಮೇರೆಗೆ !! ಮರೆಯಲಿಲ್ಲ ಆತ ಕರುಣೆತೋರಲು ಅಬ್ರಹಾಮನಿಗೆ ! ಅವನ ಸಂತತಿಗೆ, ಯುಗಯುಗಾಂತರದವರೆಗೆ !! ಮರಿಯಳು ಸುಮಾರು ಮೂರು ತಿಂಗಳು ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂದಿರುಗಿದಳು.

30.05.23

ಮೊದಲನೇ ವಾಚನ: ಸಿರಾಖ 35: 1-2

ಧರ್ಮಶಾಸ್ತ್ರ - ಬಲಿಯರ್ಪಣೆ ಧರ್ಮಶಾಸ್ತ್ರವನ್ನು ಅನುಸರಿಸು ವವನು ಕಾಣಿಕೆಗಳನು ಹೆಚ್ಚಾಗಿ ಅರ್ಪಿಸಿದವನಂತೆ ಆಜ್ಞೆಗಳನ್ನು ಕೈಗೊಳ್ಳುವವನು ಶಾಂತಿ ಸಮಾಧಾನದ ಬಲಿಯರ್ಪಿಸಿದವನಂತೆ. ಪ್ರತ್ಯುಪಕಾರ ಮಾಡುವವನು ಗೋದಿಹಿಟ್ಟನ್ನು ನೈವೇದ್ಯ ಮಾಡಿದವನಂತೆ ದಾನಧರ್ಮ ಮಾಡುವವನು ಸ್ತುತಿಬಲಿಯನ್ನು ಅರ್ಪಿಸಿದವನಂತೆ. ದುಷ್ಟತನವನು ಬಿಟ್ಟುಬಿಡುವುದು, ಸರ್ವೇಶ್ವರನಿಗೆ ಸುಪ್ರೀತ ಅಧರ್ಮವನು ಬಿಟ್ಟುಬಿಡುವುದು ಪಾಪಕ್ಕೆ ಪ್ರಾಯಶ್ಚಿತ್ತ. ಸರ್ವೇಶ್ವರನ ಸನ್ನಿಧಿಯನು ಸೇರಬಾರದು ಬರಿಗೈಯಿಂದ, ಇವುಗಳನ್ನೆಲ್ಲ ಮಾಡಬೇಕಾಗಿದೆ ಆತನ ಆಜ್ಞೆಯ ನಿಮಿತ್ತ. ಸರ್ವೇಶ್ವರನ ಸನ್ನಿಧಿಯನು ಸೇರಬಾರದು ಬರಿಗೈಯಿಂದ, ಇವುಗಳನ್ನೆಲ್ಲ ಮಾಡಬೇಕಾಗಿದೆ ಆತನ ಆಜ್ಞೆಯ ನಿಮಿತ್ತ. ನೀತಿವಂತನ ಅರ್ಪಣೆ ಒಂದು ಅಲಂಕಾರ ಯಜ್ಞವೇದಿಕೆ ಅದರ ಸುವಾಸನೆ ಏರುವುದು ಮಹೋನ್ನತನ ಸನ್ನಿಧಿಗೆ. ಸಮರ್ಪಕವಾಗಿರುವುದು ನೀತಿವಂತ ನೀಡುವ ಬಲಿಕಾಣಿಕೆ ಮರೆತುಹೋಗುವುದಿಲ್ಲ ಅದರ ಸ್ಮರಣೆ. ಉದಾರದೃಷ್ಟಿಯಿಂದ ಸರ್ವೇಶ್ವರನನು ಮಹಿಮೆಪಡಿಸು ಕಡಿಮೆಮಾಡಬೇಡ ನಿನ್ನ ಕೈಯ ಪ್ರಥಮ ಫಲಗಳನು. ಕಾಣಿಕೆ ಕೊಡುವಾಗಲೆಲ್ಲ ಹಸನ್ಮುಖಿಯಾಗಿರು ಸಂತೋಷದಿಂದ ದಶಮಾಂಶವನು ಸಲ್ಲಿಸು. ಮಹೋನ್ನತನು ನಿನಗೆ ಕೊಟ್ಟ ಪ್ರಮಾಣಕ್ಕೆ ಕೊಡು ನಿನ್ನ ಕೈ ಗಳಿಸಿದ ಪ್ರಮಾಣಕ್ಕೆ ಸರಿಯಾಗಿ ಒಳ್ಳೇ ದೃಷ್ಟಿಯಿಂದ ಕೊಡು. ಏಕೆಂದರೆ ಸರ್ವೇಶ್ವರ ಪ್ರತಿಫಲ ನೀಡುವನು ಏಳ್ಮಡಿಯಾಗಿ ನಿನಗೆ ಕೊಡುವನು. ದೈವನೀತಿ ಲಂಚದೋಪಾದಿ ಕಾಣಿಕೆ ತರಬೇಡ, ಆತನು ಅವುಗಳನ್ನು ಅಂಗೀಕರಿಸುವುದಿಲ್ಲ ಅಕ್ರಮವಾದ ಬಲಿಯ ಮೇಲೆ ಮನಸ್ಸಿಡಬೇಡ, ಆತ ನ್ಯಾಯಾಧೀಶ, ಆತನಲ್ಲಿ ಮುಖದಾಕ್ಷಿಣ್ಯವಿಲ್ಲ.
ಕೀರ್ತನೆ: 50: 5-6, 7-8, 14, 23
ಶ್ಲೋಕ: ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ದಾರವನು. 

ಶುಭಸಂದೇಶ: ಮಾರ್ಕ 10: 28-31

ಆಗ ಪೇತ್ರನು ಮುಂದೆ ಬಂದು, “ನೋಡಿ, ನಾವು ಎಲ್ಲವನ್ನೂ ಬಿಟ್ಟುಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ,” ಎಂದನು. ಆಗ ಯೇಸು, “ನಾನು ನಿಶ್ಚಯವಾಗಿ ಹೇಳುತ್ತೇನೆ: ಯಾರಾದರೂ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ಮನೆಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುತ್ತಾನೋ ಅವನು, ಈ ಕಾಲದಲ್ಲೇ ಮನೆ, ಅಣ್ಣತಮ್ಮ, ಅಕ್ಕತಂಗಿ, ತಾಯಿ, ಮಕ್ಕಳು, ಹೊಲಗದ್ದೆ ಇವೆಲ್ಲವನ್ನೂ ನೂರ್ಮಡಿಯಷ್ಟು ಪಡೆಯುವನು. ಇವುಗಳೊಂದಿಗೆ ಹಿಂಸೆಯನ್ನೂ ಅನುಭವಿಸಬೇಕಾಗುವುದು; ಅದಲ್ಲದೆ ಮುಂದಿನ ಲೋಕದಲ್ಲಿ ಅಮರ ಜೀವವನ್ನು ಪಡೆಯುವನು. “ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು,” ಎಂದರು.


29.05.23 - ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಸೇರುವುದಕ್ಕಿಂತಲೂ ಒಂಟೆಯ ಸೂಜಿಗಣ್ಣಲ್ಲಿ ನುಸುಳುವುದು ಸುಲಭ

ಮೊದಲನೇ ವಾಚನ: ಸಿರಾಖ 17: 24-29

ತನ್ನಲ್ಲಿಗೆ ಬರಗೊಡಿಸುವನು ಪಶ್ಚಾತ್ತಾಪ ಪಡುವವನನ್ನು ಸಂತೈಸುವನು ತಾಳ್ಮೆಗೆಡುತ್ತಿರುವವರನ್ನು. ಸರ್ವೇಶ್ವರನ ಕಡೆ ತಿರುಗಿಕೊಂಡು, ಪಾಪವನ್ನು ತೊರೆದುಬಿಡು; ಆತನನ್ನು ಪ್ರಾರ್ಥಿಸಿ, ಅಪರಾಧಗಳ ಅಡ್ಡಿಯನ್ನು ಕಡಿಮೆಮಾಡು. ಮಹೋನ್ನತನ ಕಡೆ ಹಿಂದಿರುಗಿ, ಅಧರ್ಮವನ್ನು ಬಿಡು ಅಸಹ್ಯ ಕೃತ್ಯಗಳನ್ನು ಸಂಪೂರ್ಣವಾಗಿ ಹಗೆಮಾಡು. ಜೀವಿಸುತ್ತಾ ಮಹೋನ್ನತನಿಗೆ ಉಪಕಾರ ಸ್ತುತಿಮಾಡುವವರನ್ನು ಬಿಟ್ಟರೆ ಪಾತಾಳದಲ್ಲಿ ಆತನಿಗೆ ಸ್ತುತಿಹಾಡುವವರಾರಿದ್ದಾರೆ? ಕೃತಜ್ಞತಾಸ್ತುತಿ ಇರುವುದಿಲ್ಲ ಜೀವಿಸದೆ ಇದ್ದವನಲ್ಲಿ ಅಂತೆಯೇ ಅದು ಲಯವಾಗುತ್ತದೆ ಮೃತರಾದವರಲ್ಲಿ ಸರ್ವೇಶ್ವರನ ಸ್ತುತಿಗೈವನು ಜೀವಂತನು ಹಾಗು ಆರೋಗ್ಯಶಾಲಿ. ನಮ್ಮ ದೇವರಾದ ಸರ್ವೇಶ್ವರನ ಕೃಪೆ ಎಷ್ಟು ಘನವಾದುದು ಶುದ್ಧರಾಗಿ ಆತನ ಕಡೆ ತಿರುಗುವವರ ಮೇಲೆ ಆತನ ಕನಿಕರ ಎಷ್ಟು ವಿಶೇಷವಾದುದು !

ಕೀರ್ತನೆ: 32: 1-2, 5, 6-7
ಶ್ಲೋಕ: ಯಾರ ದ್ರೋಹ ವಿಮೋಚನೆಯಾಗಿದೆಯೋ ಅವರೇ ಧನ್ಯರು. 

ಶುಭಸಂದೇಶ: ಮಾರ್ಕ 10: 17-27

ಅಲ್ಲಿಂದ ಯೇಸುಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು. ದಾರಿಯಲ್ಲಿ ಒಬ್ಬನು ಅವರ ಬಳಿಗೆ ಓಡಿಬಂದು ಮೊಣಕಾಲೂರಿ, “ಒಳ್ಳೆಯ ಗುರುವೇ, ಅಮರಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು. “ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ. ದೈವಾಜ್ಞೆಗಳು ನಿನಗೆ ತಿಳಿದೇ ಇವೆ: ನರಹತ್ಯೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ಮೋಸ ಮಾಡಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು,” ಎಂದು ಯೇಸು ಉತ್ತರವಿತ್ತರು. ಅದಕ್ಕೆ ಅವನು, “ಗುರುದೇವಾ, ನಾನು ಬಾಲ್ಯದಿಂದಲೇ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ,” ಎಂದು ಹೇಳಿದನು. ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ, “ನೀನು ಮಾಡಬೇಕಾದ ಕಾರ್ಯವೊಂದು ಬಾಕಿಯಿದೆ. ಹೋಗು, ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು. ಯೇಸುವಿನ ಈ ಮಾತನ್ನು ಕೇಳುತ್ತಲೇ ಅವನ ಮುಖ ಪೆಚ್ಚಾಯಿತು. ಅವನು ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟು ಹೋದನು. ಏಕೆಂದರೆ ಅವನಿಗೆ ಅಪಾರ ಆಸ್ತಿಯಿತ್ತು ಆಗ ಯೇಸುಸ್ವಾಮಿ ಸುತ್ತಲೂ ನೋಡಿ, ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವುಳ್ಳವರಿಗೆ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದು ಎಷ್ಟೊಂದು ಕಷ್ಟ!” ಎಂದರು. ಅವರ ಈ ಮಾತನ್ನು ಕೇಳಿದ ಶಿಷ್ಯರು ಬೆರಗಾದರು. ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟು ಕಷ್ಟ! ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಸೇರುವುದಕ್ಕಿಂತಲೂ ಒಂಟೆಯ ಸೂಜಿಗಣ್ಣಲ್ಲಿ ನುಸುಳುವುದು ಸುಲಭ,” ಎಂದರು. ಇದನ್ನು ಕೇಳಿದ ಮೇಲಂತೂ ಶಿಷ್ಯರಿಗೆ ಅಪರಿಮಿತ ಆಶ್ಚರ್ಯವಾಯಿತು. “ಹಾಗಾದರೆ ಯಾರು ತಾನೇ ಜೀವೋದ್ಧಾರ ಹೊಂದಲು ಸಾಧ್ಯ?” ಎಂದು ತಮ್ಮ ತಮ್ಮೊಳಗೇ ಮಾತನಾಡಿಕೊಂಡರು. ಯೇಸು ಅವರನ್ನು ನಿಟ್ಟಿಸಿ ನೋಡಿ, “ಮನುಷ್ಯರಿಗೆ ಇದು ಅಸಾಧ್ಯ, ದೇವರಿಗಲ್ಲ. ದೇವರಿಗೆ ಎಲ್ಲವೂ ಸಾಧ್ಯ,” ಎಂದರು.

28.05.23 - "ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,”

ಪಂಚಾಶತ್ತಮ ಮಹೋತ್ಸವ

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:1-11


ಪಂಚಾಶತ್ತಮ ಹಬ್ಬದ ದಿನ ಭಕ್ತವಿಶ್ವಾಸಿಗಳೆಲ್ಲರೂ ಒಂದು ಸ್ಥಳದಲ್ಲಿ ಸಭೆಸೇರಿದ್ದರು. ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು. ಅಲ್ಲದೆ ಅಗ್ನಿಜ್ವಾಲೆಗಳು ಕೆನ್ನಾಲಿಗೆಯಂತೆ ಕಾಣಿಸಿಕೊಂಡವು. ಅವು ವಿಂಗಡ ವಿಂಗಡವಾಗಿ ಪ್ರತಿಯೊಬ್ಬರ ಮೇಲೂ ನೆಲೆಸಿದವು. ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು. ಅದೇ ಸಮಯದಲ್ಲಿ ವಿಶ್ವದ ಎಲ್ಲಾ ದೇಶಗಳಿಂದ ಧರ್ಮನಿಷ್ಠ ಯೆಹೂದ್ಯರು ಜೆರುಸಲೇಮಿಗೆ ಬಂದು ತಂಗಿದರು. ಆ ಶಬ್ದವನ್ನು ಕೇಳಿದ್ದೇ, ಜನರ ದೊಡ್ಡ ಗುಂಪು ಸೇರಿತು. ಭಕ್ತಾದಿಗಳು ಮಾತನಾಡುತ್ತಿದ್ದುದನ್ನು ತಮ್ಮ ತಮ್ಮ ಭಾಷೆಗಳಲ್ಲೇ ಕೇಳಿದ ಜನರು ದಿಗ್ಭ್ರಮೆಗೊಂಡರು. ಅವರೆಲ್ಲರೂ ವಿಸ್ಮಿತರಾಗಿ, “ಹೀಗೆ ಮಾತನಾಡುವ ಇವರೆಲ್ಲಾ ಗಲಿಲೇಯದವರಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನೂ ಇವರು ಮಾತನಾಡುತ್ತಿರುವುದನ್ನು ತನ್ನ ತನ್ನ ಮಾತೃಭಾಷೆಯಲ್ಲೇ ಕೇಳುತ್ತಿರುವುದು ಹೇಗೆ? ನಮ್ಮಲ್ಲಿ ಪಾರ್ಥಿಯರು, ಮೀಡಿಯರು ಮತ್ತು ಎಲಾಮಿನವರೂ, ಮೆಸಪೊಟೇಮಿಯ, ಜುದೇಯ ಮತ್ತು ಕಪ್ಪದೋಸಿಯದವರೂ ಇದ್ದಾರೆ. ಪೊಂತ ಮತ್ತು ಏಷ್ಯದವರೂ, ಫ್ರಿಜಿಯ ಮತ್ತು ಪಾಂಫಿಲಿಯದವರೂ ಇದ್ದಾರೆ. ಈಜಿಪ್ಟ್ ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರೂ ಸೇರಿದ್ದಾರೆ. ಅದಲ್ಲದೆ ನಮ್ಮಲ್ಲಿ ಕೆಲವರು ರೋಮ್ನಿಂದ ಬಂದಿದ್ದಾರೆ. ಯೆಹೂದ್ಯರೂ ಯೆಹೂದ್ಯ ಧರ್ಮಾವಲಂಬಿಗಳೂ ಆದ ಅನ್ಯರೂ, ಕ್ರೇಟ್ ಮತ್ತು ಅರೇಬಿಯದವರೂ ಇಲ್ಲಿದ್ದಾರೆ. ದೇವರ ಮಹತ್ಕಾರ್ಯಗಳನ್ನು ಕುರಿತು ಇವರು ಮಾತನಾಡುತ್ತಿರುವುದನ್ನು ನಾವೆಲ್ಲರೂ ನಮ್ಮ ನಮ್ಮ ಭಾಷೆಗಳಲ್ಲೇ ಕೇಳುತ್ತಿದ್ದೇವಲ್ಲಾ!” ಎಂದು ಅಚ್ಚರಿಯನ್ನು ವ್ಯಕ್ತಪಡಿಸಿದರು.

ಕೀರ್ತನೆ: 104:1, 24, 29-30, 31, 34
ಶ್ಲೋಕ: ನೀ ಉಸಿರನ್ನೂದಲು ಹೊಸದಾಗುವುವು, ಪುನಶ್ಚೇತನಗೊಳುವುದು ಜಗವೆಲ್ಲವು

ಎರಡನೇ ವಾಚನ: 1 ಕೊರಿಂಥಿಯರಿಗೆ 12:3-7, 12-13

ಸಹೊದರರೇ, ಇಷ್ಟುಮಾತ್ರ ನಿಮಗೆ ಸ್ಪಷ್ಟವಾಗಿ ತಿಳಿದಿರಲಿ; ಪವಿತ್ರಾತ್ಮ ಪ್ರೇರಣೆಯಿಂದ ಮಾತನಾಡುವ ಯಾವಾತನೂ, “ಯೇಸುವಿಗೆ ಧಿಕ್ಕಾರ!” ಎನ್ನಲಾರನು. ಅಂತೆಯೇ, ಪವಿತ್ರಾತ್ಮ ಪ್ರೇರಣೆಯಿಂದಲ್ಲದೆ ಯಾವಾತನೂ, “ಯೇಸುವೇ ಪ್ರಭು,” ಎಂದು ಒಪ್ಪಿಕೊಳ್ಳಲಾರನು. ವರದಾನಗಳು ವಿಧವಿಧವಾಗಿವೆ; ಅವುಗಳನ್ನು ಕೊಡುವ ಪವಿತ್ರಾತ್ಮ ಒಬ್ಬರೇ. ಸೇವೆಗಳು ವಿಧವಿಧವಾಗಿವೆ; ಅವುಗಳನ್ನು ಸ್ವೀಕರಿಸುವ ಪ್ರಭುವು ಒಬ್ಬರೇ. ಶಕ್ತಿಸಾಮರ್ಥ್ಯವು ನಾನಾ ವಿಧ; ಅವುಗಳನ್ನು ಎಲ್ಲರಲ್ಲೂ ಸಾಧಿಸುವ ದೇವರು ಒಬ್ಬರೇ. ಪ್ರತಿಯೊಬ್ಬನಲ್ಲಿ ಕಂಡುಬರುವ ಪವಿತ್ರಾತ್ಮರ ವರದಾನಗಳನ್ನು ಸರ್ವರ ಒಳಿತಿಗಾಗಿಯೇ ಕೊಡಲಾಗಿದೆ. ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು. ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ-ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ.

ಶುಭಸಂದೇಶ ಯೊವಾನ್ನ 20:19-23

ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು. “ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು. ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು. ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ. ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು. ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು,” ಎಂದು ನುಡಿದರು.

27.05.23 - "ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ..."

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 28:16-20, 30-31


ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು. ಮೂರು ದಿನಗಳ ನಂತರ ಪೌಲನು ಸ್ಥಳೀಯ ಯೆಹೂದ್ಯ ಮುಖಂಡರು ತನ್ನ ಬಳಿಗೆ ಬರುವಂತೆ ಹೇಳಿಕಳುಹಿಸಿದನು. ಅವರು ಬಂದಾಗ, “ನನ್ನ ಸೋದರ ಇಸ್ರಯೇಲರೇ, ನಾನು ನಮ್ಮ ಜನರಿಗೆ ವಿರೋಧವಾಗಿಯಾಗಲಿ, ನಮ್ಮ ಪೂರ್ವಜರಿಂದ ಬಂದ ಸಂಪ್ರದಾಯಗಳಿಗೆ ವಿರೋಧವಾಗಿಯಾಗಲಿ, ಏನನ್ನೂ ಮಾಡಿಲ್ಲ; ಆದರೂ ಜೆರುಸಲೇಮಿನಲ್ಲಿ ನನ್ನನ್ನು ಕೈದಿಯನ್ನಾಗಿಸಿ ರೋಮನರ ಕೈಗೆ ಒಪ್ಪಿಸಲಾಯಿತು. ಇವರು ನನ್ನನ್ನು ವಿಚಾರಣೆಗೆ ಒಳಪಡಿಸಿದರು. ಮರಣದಂಡನೆಗೆ ಗುರಿಮಾಡುವಂಥ ಅಪರಾಧ ಏನನ್ನೂ ನನ್ನಲ್ಲಿ ಕಾಣಲಿಲ್ಲ. ಈ ಕಾರಣ ನನ್ನನ್ನು ಬಿಡುಗಡೆ ಮಾಡಬೇಕೆಂದಿದ್ದರು. ಆದರೆ ಯೆಹೂದ್ಯರು ಇದನ್ನು ಪ್ರತಿಭಟಿಸಿದರು. ಆಗ ನಾನು ಚಕ್ರವರ್ತಿಗೇ ಅಪೀಲುಮಾಡಬೇಕಾಯಿತು. ನನ್ನ ಸ್ವದೇಶೀಯರ ಮೇಲೆ ದೋಷಾರೋಪಣೆ ಮಾಡಬೇಕೆಂದು ನಾನು ಹಾಗೆ ಮಾಡಲಿಲ್ಲ. ಈ ಕಾರಣದಿಂದಲೇ ನಿಮ್ಮನ್ನು ನೋಡಿ ಮಾತನಾಡಲು ಬಯಸಿದೆ. ಇಸ್ರಯೇಲ್ ಜನತೆ ಯಾರ ನಿರೀಕ್ಷೆಯಲ್ಲಿ ಇದೆಯೋ, ಅವರ ನಿಮಿತ್ತವೇ ನಾನು ಹೀಗೆ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು. ಪೌಲನು ತಾನು ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳವರೆಗೆ ವಾಸವಾಗಿದ್ದನು. ತನ್ನನ್ನು ನೋಡಲು ಬಂದವರನ್ನೆಲ್ಲಾ ಆದರದಿಂದ ಬರಮಾಡಿಕೊಳ್ಳುತ್ತಿದ್ದನು. ಭಯಭೀತಿಯಿಲ್ಲದೆ ಹಾಗೂ ಅಡ್ಡಿಆತಂಕವಿಲ್ಲದೆ ದೇವರ ಸಾಮ್ರಾಜ್ಯವನ್ನು ಕುರಿತು ಪ್ರಬೋಧಿಸುತ್ತಿದ್ದನು; ಸ್ವಾಮಿ ಯೇಸುಕ್ರಿಸ್ತರ ವಿಷಯವಾಗಿ ಉಪದೇಶಿಸುತ್ತಿದ್ದನು.

ಕೀರ್ತನೆ: 11:4, 5, 7
ಶ್ಲೋಕ: ಪ್ರಭೂ, ಸತ್ಪುರುಷನು ಸೇರುವನು ನಿಮ್ಮ ಸನ್ನಿಧಿಯನು

ಶುಭಸಂದೇಶ: ಯೊವಾನ್ನ 21:20-25


ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. (ಭೋಜನದ ಸಮಯದಲ್ಲಿ ಯೇಸುವಿನ ಪಕ್ಕದಲ್ಲೇ ಒರಗಿ, “ಪ್ರಭುವೇ, ನಿಮ್ಮನ್ನು ಹಿಡಿದುಕೊಡುವಂಥ ಸ್ವಾಮಿ ದ್ರೋಹಿ ಯಾರು?” ಎಂದು ಕೇಳಿದವನೇ ಅವನು.) ಇವನನ್ನು ಕಂಡು ಪೇತ್ರನು, “ಪ್ರಭೂ, ಇವನ ವಿಷಯವೇನು?” ಎಂದು ಯೇಸುವನ್ನು ಕೇಳಿದನು. ಅದಕ್ಕೆ ಯೇಸು, “ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆ; ಆದರೆ ಅದರಿಂದ ನಿನಗೇನಾಗಬೇಕು? ನೀನು ಅಂತೂ ನನ್ನನ್ನು ಹಿಂಬಾಲಿಸಿ ಬಾ,” ಎಂದರು. ಇದರಿಂದಾಗಿ ಆ ಶಿಷ್ಯನಿಗೆ ಸಾವಿಲ್ಲವೆಂಬ ವದಂತಿ ಸೋದರರಲ್ಲಿ ಹಬ್ಬಿತು. ಯೇಸು, ‘ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆಯಾದರೆ ಅದರಿಂದ ನಿನಗೇನಾಗಬೇಕು?’ ಎಂದು ಹೇಳಿದರೇ ಹೊರತು ಅವನಿಗೆ ಸಾವಿಲ್ಲವೆಂದು ಹೇಳಲಿಲ್ಲ. ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನ್ನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿ ಸತ್ಯವಾದುದೆಂದು ನಾವು ಬಲ್ಲೆವು. ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶಃ ಲೋಕವೇ ಹಿಡಿಸಲಾರದೆಂದು ನೆನಸುತ್ತೇನೆ.

25.05.23 - "ಪಿತನೇ, ಇವರೆಲ್ಲಾ ಒಂದಾಗಿರಲಿ"

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು  22:30; 23:6-11



ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು. ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು. ಅವನು ಹೀಗೆ ಹೇಳಿದಾಕ್ಷಣವೇ, ಫರಿಸಾಯರ ಮತ್ತು ಸದ್ದುಕಾಯರ ನಡುವೆ ವಾಗ್ವಾದ ಉಂಟಾಯಿತು. ಸಭೆಯಲ್ಲಿ ಭಿನ್ನಭೇದವುಂಟಾಯಿತು. ಏಕೆಂದರೆ, ಸದ್ದುಕಾಯರು ಪುನರುತ್ಥಾನವಾಗಲಿ, ದೇವದೂತರಾಗಲಿ, ದೇಹರಹಿತ ಆತ್ಮವಾಗಲಿ ಇದೆಯೆಂದು ಒಪ್ಪುವುದಿಲ್ಲ. ಆದರೆ ಫರಿಸಾಯರು ಇವೆಲ್ಲಾ ಇವೆಯೆಂದು ನಂಬುತ್ತಾರೆ. ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು. ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು. ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.

ಕೀರ್ತನೆ: 16:1-2, 5, 7-8, 9-10, 11

ಶ್ಲೋಕ: ನೀಡು ದೇವಾ ರಕ್ಷಣೆಯನು ನಾ ನಿನಗೆ ಶರಣಾಗತನು


ನೀಡು ದೇವಾ ರಕ್ಷಣೆಯನು I
ನಾ ನಿನಗೆ ಶರಣಾಗತನು II
ನೀನೇ ನನ್ನೊಡೆಯ"ನೆಂದು ನಾ ನುಡಿದೆ I
ನಿನ್ನ ಹೊರತು ನನಗಿಲ್ಲ ಒಳಿತು” ಎಂದೇ II

ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I
ನಿನ್ನ ಕೈಯಲ್ಲಿದೆ ಪ್ರಭುನನ್ನ ವಿಮೆ II

ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ I
ಅಂಧಕಾರದೊಳೂ ನನ್ನ ಮನಸ್ಸಾಕ್ಷಿಯೆ ನನಗೆ ಬೋಧಕ II
ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I
ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II

ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ I
ಆನಂದಗೊಂಡಿದೆ ಮನಸುರಕ್ಷಿತವಿದೆ ಕಾಯ II
ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I
ಬಿಟ್ಟುಕೊಡುವುದಿಲ್ಲ ನಿನ್ನ  ಭಕ್ತನನು ಪಾತಾಳಕೆ II

ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I
ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I
ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II

ಶುಭಸಂದೇಶ: ಯೊವಾನ್ನ 17:20-26


ಯೇಸುಸ್ವಾಮಿ ಆಕಾಶದತ್ತ ಕಣ್ಣೆತ್ತಿ ಹೀಗೆಂದು ಪ್ರಾರ್ಥಿಸಿದರು: “ಇವರಿಗಾಗಿ ಮಾತ್ರವಲ್ಲ, ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ. ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ. ನಾವು ಒಂದಾಗಿರುವಂತೆ ಇವರೂ ಒಂದಾಗಿರಲೆಂದು ನೀವು ನನಗಿತ್ತ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು. ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ. ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ. ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಅವರಲ್ಲಿ ಇರುವಂತಾಗುವುದು.”

26.05.23 - “ನನ್ನ ಕುರಿಮರಿಗಳನ್ನು ಮೇಯಿಸು, ನನ್ನ ಕುರಿಗಳನ್ನು ಮೇಯಿಸು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 25:13-21


ಕೆಲವು ದಿನಗಳಾದ ನಂತರ ರಾಜ ಅಗ್ರಿಪ್ಪನು ಬೆರ್ನಿಸಳೊಂದಿಗೆ ಫೆಸ್ತನನ್ನು ಅಭಿನಂದಿಸಲು ಸೆಜರೇಯಕ್ಕೆ ಬಂದನು. ಅವರು ಹಲವು ದಿನಗಳವರೆಗೆ ಅಲ್ಲೇ ತಂಗಿದ್ದರು. ಫೆಸ್ತನು ಪೌಲನ ವಿಷಯವನ್ನು ಅವನ ಮುಂದೆ ಪ್ರಸ್ತಾಪಿಸುತ್ತಾ, “ಫೆಲಿಕ್ಸನು ಕೈದಿಯಾಗಿ ಬಿಟ್ಟುಹೋದ ಒಬ್ಬ ವ್ಯಕ್ತಿ ಇಲ್ಲಿದ್ದಾನೆ. ನಾನು ಜೆರುಸಲೇಮಿಗೆ ಹೋಗಿದ್ದಾಗ ಯೆಹೂದ್ಯರ ಮುಖ್ಯ ಯಾಜಕರೂ ಪ್ರಮುಖರೂ ಅವನ ವಿರುದ್ಧ ಆಪಾದನೆಗಳನ್ನು ತಂದರು. ಅವನಿಗೆ ದಂಡನೆ ವಿಧಿಸುವಂತೆ ಕೇಳಿಕೊಂಡರು. ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು ; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ. ಆದುದರಿಂದ ಅವರು ನನ್ನೊಡನೆ ಇಲ್ಲಿಗೆ ಬಂದರು. ನಾನು ತಡಮಾಡದೆ ಮರುದಿನವೇ ನ್ಯಾಯಸ್ಥಾನದಲ್ಲಿ ಕುಳಿತು ಅವನನ್ನು ನನ್ನ ಮುಂದೆ ತರುವಂತೆ ಆಜ್ಞೆಮಾಡಿದೆ. ಆಪಾದಿಸಿದವರು ಅವನ ವಿರುದ್ಧ ಎದ್ದುನಿಂತು ಮಾತನಾಡಿದಾಗ ನಾನು ಭಾವಿಸಿದಂತಹ ಅಪರಾಧವೊಂದನ್ನೂ ಅವನ ಮೇಲೆ ಹೊರಿಸಲಿಲ್ಲ. ಅವನೊಡನೆ ಅವರಿಗಿದ್ದ ವಾದವಿವಾದ ಅವರ ಧರ್ಮಾಚರಣೆಗಳಿಗೆ ಸಂಬಂಧಪಟ್ಟಿತ್ತು. ಯೇಸು ಎಂಬ ಒಬ್ಬ ವ್ಯಕ್ತಿಯನ್ನು ಕುರಿತೂ ವಿವಾದ ಇತ್ತು. ಯೇಸು ಸತ್ತಿದ್ದರೂ ಜೀವಂತನಾಗಿದ್ದಾನೆಂದು ಪೌಲನು ಸಾಧಿಸುತ್ತಿದ್ದನು. ಈ ವಿಷಯಗಳ ಬಗ್ಗೆ ಹೇಗೆ ವಿಚಾರಣೆಮಾಡುವುದೆಂದು ನನಗೆ ತೋಚಲಿಲ್ಲ. ಆದುದರಿಂದ, ‘ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ಈ ವಿಷಯಗಳ ಬಗ್ಗೆ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?’ ಎಂದು ಪೌಲನನ್ನು ಕೇಳಿದೆ. ಅದಕ್ಕೆ ಅವನು, ‘ಚಕ್ರವರ್ತಿಯೇ ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯವರೆಗೆ ನನಗೆ ರಕ್ಷಣೆ ಬೇಕು,’ ಎಂದು ವಿನಂತಿಸಿದ. ಅಂತೆಯೇ ಅವನನ್ನು ಚಕ್ರವರ್ತಿಯ ಬಳಿಗೆ ಕಳುಹಿಸಲಾಗುವ ತನಕ ಕಾವಲಿನಲ್ಲಿ ಇಡಬೇಕೆಂದು ಆಜ್ಞೆಮಾಡಿದೆ,” ಎಂದನು. 

ಕೀರ್ತನೆ: 103:1-2, 11-12, 19-20

ಶ್ಲೋಕ: ಸ್ಥಾಪಿಸಿಹನು ಪ್ರಭು ಸ್ವರ್ಗದೊಳು ಸಿಂಹಾಸನವನು

ಭಜಿಸು ನನ್ನ ಮನವೇ, ಭಜಿಸು ಪ್ರಭುವನು I
ನನ್ನ ಅಂತರಂಗವೇ, ಭಜಿಸು ಆತನನು I
ನೆನೆ ಆತನ ಪರಮಪಾವನ ನಾಮವನು II
ಭಜಿಸು ನನ್ನ ಮನವೇ, ಭಜಿಸು ಪ್ರಭುವನು I
ಮರೆಯದಿರು ಆತನ ಉಪಕಾರಗಳೊಂದನು II

ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I
ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II
ಪಡುವಣದಿಂದ ಮೂಡಣವೆಷ್ಟೋ ದೂರ I
ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ II

ಸ್ಥಾಪಿಸಿಹನು ಪ್ರಭು ಸ್ವರ್ಗದೊಳು ಸಿಂಹಾಸನವನು I
ಎಲ್ಲದರ ಮೇಲೆ ನಡೆಸುತಿಹನು ರಾಜ್ಯಾಡಳಿತವನು II
ಭಜಿಸಿರಿ ಪ್ರಭುವನು ದೇವದೂತರುಗಳೇ 
ಆತನ ಆಣತಿ ಪಾಲಿಪ ಪರಾಕ್ರಮಿಗಳೇ I

ಶುಭಸಂದೇಶ: ಯೊವಾನ್ನ 21:15-19


ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. ಅದಕ್ಕೆ ಪೇತ್ರನು, “ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದನು. ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದರು. ಯೇಸು ಎರಡನೆಯ ಬಾರಿ, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಲು, “ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದು ಮರುನುಡಿದನು. ಯೇಸು ಅವನಿಗೆ, “ನನ್ನ ಕುರಿಗಳನ್ನು ಕಾಯಿ,” ಎಂದರು. ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು; ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈಚಾಚುವೆ. ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು,” ಎಂದು ನುಡಿದರು. ಪೇತ್ರನು ಎಂಥ ಸಾವಿನಿಂದ ದೇವರ ಮಹಿಮೆಯನ್ನು ಬೆಳಗಿಸಲಿದ್ದಾನೆಂದು ಸೂಚಿಸಿ ಹಾಗೆ ಹೇಳಿದರು. ಇದಾದ ಮೇಲೆ ಯೇಸು ಪೇತ್ರನಿಗೆ, “ನೀನು ನನ್ನನ್ನು ಹಿಂಬಾಲಿಸಿ ಬಾ,” ಎಂದರು.

24.05.23 - "ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು  20:28-38


ಪೌಲನು ಎಫೆಸದ ಸಭೆಯ ಹಿರಿಯರನ್ನು ಉದ್ದೇಶಿಸಿ ಮಾತನಾಡುತ್ತಾ ಹೀಗೆಂದನು: "ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ. ನಾನು ಹೋದ ಬಳಿಕ ಕ್ರೂರವಾದ ತೋಳಗಳು ನಿಮ್ಮ ಮಧ್ಯೆ ನುಗ್ಗುವುವು ಎಂದು ನಾನು ಬಲ್ಲೆ. ಅವು ಮಂದೆಗೆ ಹಾನಿಮಾಡದೆ ಬಿಡವು. ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಭಕ್ತವಿಶ್ವಾಸಿಗಳನ್ನು ತಮ್ಮ ಕಡೆ ಸೆಳೆದುಕೊಳ್ಳಲು ಅಸತ್ಯವಾದವುಗಳನ್ನು ಹೇಳುವರು. ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ. “ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನ ಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು. ನಾನು ಯಾರ ಬೆಳ್ಳಿ ಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ. ನನ್ನ ಹಾಗೂ ನನ್ನ ಸಂಗಡಿಗರ ಅವಶ್ಯಕತೆಗಳನ್ನು ನೀಗಿಸಲು ಈ ಕೈಗಳೇ ದುಡಿದಿವೆಯೆಂಬುದು ನಿಮ್ಮೆಲ್ಲರಿಗೂ ತಿಳಿದಿದೆ. ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.” ಇಷ್ಟು ಹೇಳಿದ ಮೇಲೆ ಪೌಲನು ಅವರೆಲ್ಲರ ಸಂಗಡ ಮೊಣಕಾಲೂರಿ ಪ್ರಾರ್ಥನೆ ಮಾಡಿದನು. ಅನಂತರ ಅವರು ಅವನನ್ನು ತಬ್ಬಿಕೊಂಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಾಕಾರವಾಗಿ ಹರಿಯುತ್ತಿತ್ತು. ‘ಇನ್ನೆಂದೂ ನೀವು ನನ್ನ ಮುಖವನ್ನು ಕಾಣಲಾರಿರಿ,’ ಎಂಬ ಅವನ ಮಾತು ಅವರನ್ನು ಅತೀವ ದುಃಖಕ್ಕೆ ಈಡುಮಾಡಿತ್ತು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು.

ಕೀರ್ತನೆ: 68:29-30, 33-35, 35-36

ಶ್ಲೋಕ: ಭೂರಾಜ್ಯಗಳೇ, ಸ್ತುತಿಸಿರಿ ದೇವರನು!


ವಸತಿಯಾಯಿತದು ನಿನ್ನ ಜನಮಂದೆಗೆ I
ಆಸ್ಥೆಯಿಂದೊದಗಿಸಿದೆ ದೀನ ದಲಿತರಿಗೆ II
ಹೊರಡಿಸಿದನು ಪ್ರಭು ಶುಭವಾರ್ತೆಯೊಂದನು I
ಹರಡಿತು ಜನಸ್ತೋಮ ಆ ಸಂದೇಶವನು II
ನಮ್ಮ ದೇವರು ಜೀವೋದ್ಧಾರಕ ದೇವರು ಹೌದು I
ಸಾವಿಂದ ತಪ್ಪಿಸುವ ಶಕ್ತಿಸ್ವಾಮಿ ದೇವರದು II
ಸಂಹರಿಸುವನಾತನು ಶತ್ರುಗಳಾ ಶಿರಸ್ಸನು I
ನಸುಕುವನು ದುರ್ಮಾರ್ಗಿಗಳ ಕೇಶ ಕಿರೀಟವನು II

ಶುಭಸಂದೇಶ: ಯೊವಾನ್ನ 17:11-19


ಯೇಸುಸ್ವಾಮಿ ಆಕಾಶದತ್ತ ಕಣ್ಣೇತ್ತಿ ಹೀಗೆಂದು ಪ್ರಾರ್ಥಿಸಿದರು:  ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ. ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ. ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿ ತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ. ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ. ಇವರನ್ನು ಲೋಕದಿಂದ ತೆಗೆದುಬಿಡಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತಿಲ್ಲ. ಆದರೆ ಕೇಡಿಗನಿಂದ ಇವರನ್ನು ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ. ನಾನು ಲೋಕಕ್ಕೆ ಹೇಗೆ ಸೇರಿದವನಲ್ಲವೋ ಹಾಗೆಯೇ ಇವರೂ ಲೋಕಕ್ಕೆ ಸೇರಿದವರಲ್ಲ. ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ. ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನು ಇವರನ್ನು ಲೋಕಕ್ಕೆ ಕಳಿಸಿದ್ದೇನೆ. ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.

23.05.23 - “ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ"

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 20:17-27


ಪೌಲನು ಮಿಲೇತದಿಂದ ಎಫೆಸಕ್ಕೆ ಸಮಾಚಾರ ಕಳುಹಿಸಿ, ಅಲ್ಲಿನ ಧರ್ಮಸಭೆಯ ಪ್ರಮುಖರನ್ನು ಬರಮಾಡಿಕೊಂಡನು. ಬಂದಮೇಲೆ ಅವರಿಗೆ ಹೀಗೆಂದನು : “ನಾನು ಏಷ್ಯಪ್ರಾಂತ್ಯದಲ್ಲಿ ಕಾಲಿಟ್ಟ ದಿನ ಮೊದಲ್ಗೊಂಡು ಇಂದಿನವರೆಗೆ ನಿಮ್ಮ ಮಧ್ಯೆ ಹೇಗೆ ಬಾಳಿದೆನೆಂದು ನಿಮಗೆ ತಿಳಿದಿದೆ. ಯೆಹೂದ್ಯರ ಕುತಂತ್ರಗಳಿಂದ ನನಗೆ ಬಂದೊದಗಿದ ಸಂಕಷ್ಟಗಳಲ್ಲಿ ನಾನು ಅತಿ ನಮ್ರತೆಯಿಂದಲೂ ಕಣ್ಣೀರಿಡುತ್ತಲೂ ಪ್ರಭುವಿನ ಸೇವೆಮಾಡಿಕೊಂಡು ಬಂದೆನು. ನಿಮಗೆ ಹಿತಕರವಾದುದೆಲ್ಲವನ್ನು ಬಹಿರಂಗದಲ್ಲೂ ಮನೆಗಳಲ್ಲೂ ಹಿಂಜರಿಯದೆ ಬೋಧಿಸಿದ್ದೇನೆ ಹಾಗೂ ಕಲಿಸಿದ್ದೇನೆ. ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ. ಈಗಲಾದರೋ, ಪವಿತ್ರಾತ್ಮ ಪರವಶನಾಗಿ ನಾನು ಜೆರುಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೇನು ಸಂಭವಿಸುವುದೋ ತಿಳಿಯದು. ಸೆರೆಮನೆ ಹಾಗೂ ಸಂಕಷ್ಟಗಳು ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ಪ್ರತಿಯೊಂದು ಪಟ್ಟಣದಲ್ಲೂ ಕೊಟ್ಟ ಎಚ್ಚರಿಕೆ ಮಾತ್ರ ಸ್ಪಷ್ಟವಾಗಿದೆ. ನನಗಾದರೋ, ನನ್ನ ಪ್ರಾಣವು ತೃಣಕ್ಕೆ ಸಮಾನ. ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ. ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸಂಚರಿಸಿದ ನನ್ನ ಮುಖವನ್ನು ಇನ್ನು ಮುಂದೆ ನೀವು ಯಾರೂ ಕಾಣಲಾರಿರಿ ಎಂದು ನಾನು ಬಲ್ಲೆ. ಇಂತಿರಲು ನಾನು ನಿಮಗೆ ಸಾರಿ ಹೇಳುವುದೇನೆಂದರೆ - “ನಿಮ್ಮಲ್ಲಿ ಯಾರಾದರು ನಾಶವಾದರೆ, ಅದಕ್ಕೆ ನಾನು ಹೊಣೆಯಲ್ಲ. ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ. 

ಕೀರ್ತನೆ: 68:10-11, 20-21

ಶ್ಲೋಕ: ಭೂರಾಜ್ಯಗಳೇ, ಸ್ತುತಿಸಿರಿ ದೇವರನು!

ವಸತಿಯಾಯಿತದು ನಿನ್ನ ಜನಮಂದೆಗೆ I
ಆಸ್ಥೆಯಿಂದೊದಗಿಸಿದೆ ದೀನ ದಲಿತರಿಗೆ II
ಹೊರಡಿಸಿದನು ಪ್ರಭು ಶುಭವಾರ್ತೆಯೊಂದನು I
ಹರಡಿತು ಜನಸ್ತೋಮ  ಸಂದೇಶವನು II

ನಮ್ಮ ದೇವರು ಜೀವೋದ್ಧಾರಕ ದೇವರು ಹೌದು I
ಸಾವಿಂದ ತಪ್ಪಿಸುವ ಶಕ್ತಿಸ್ವಾಮಿ ದೇವರದು II
ಸಂಹರಿಸುವನಾತನು ಶತ್ರುಗಳಾ ಶಿರಸ್ಸನು I
ನಸುಕುವನು ದುರ್ಮಾರ್ಗಿಗಳ ಕೇಶ ಕಿರೀಟವನು II

ಶುಭಸಂದೇಶ: ಯೊವಾನ್ನ 17:1-11


ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ. ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು. ಏಕೈಕ ನಿಜ ದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ. ನೀವು ನನಗೆ ಕೊಟ್ಟ ಕಾರ್ಯವನ್ನು ನಾನು ಮಾಡಿ ಮುಗಿಸಿ ನಿಮ್ಮ ಮಹಿಮೆಯನ್ನು ಜಗತ್ತಿಗೆಲ್ಲ ತೋರ್ಪಡಿಸಿದೆನು. ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ. “ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ. ನೀವು ನನಗೆ ಕೊಟ್ಟಿದೆಲ್ಲವೂ ನಿಜವಾಗಿ ನಿಮ್ಮಿಂದಲೇ ಬಂದಿರುವುದೆಂದು ಈಗ ಇವರಿಗೆ ತಿಳಿದಿದೆ. ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ. “ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ. ಏಕೆಂದರೆ, ಇವರು ನಿಮ್ಮವರು; ಇವರಿಂದ ನನಗೆ ಮಹಿಮೆ ಉಂಟಾಗಿದೆ. ನನ್ನದೆಲ್ಲವೂ ನಿಮ್ಮದೇ; ನಿಮ್ಮದು ಎಲ್ಲವೂ ನನ್ನದೇ. ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ. 

22.05.23

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 19:1-8

ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗ, ಪೌಲನು ಮೇಲ್ನಾಡಿನ ಪ್ರಾಂತ್ಯದ ಮಾರ್ಗವಾಗಿ ಎಫೆಸಕ್ಕೆ ಬಂದನು. ಅಲ್ಲಿ ಕೆಲವು ಮಂದಿ ಶಿಷ್ಯರನ್ನು ಕಂಡು, “ನೀವು ವಿಶ್ವಾಸಿಸಿದಾಗ ಪವಿತ್ರಾತ್ಮ ಅವರನ್ನು ಪಡೆದಿರೋ?’ ಎಂದು ಕೇಳಿದನು. ಅದಕ್ಕೆ ಅವರು, “ಪವಿತ್ರಾತ್ಮ ಎಂಬವರು ಇದ್ದಾರೆಂದು ನಾವು ಕೇಳಿಯೇ ಇಲ್ಲ,” ಎಂದು ಉತ್ತರಿಸಿದರು. ಹಾಗಾದರೆ ನೀವು ಯಾವ ಸ್ನಾನದೀಕ್ಷೆಯನ್ನು ಪಡೆದಿರಿ?” ಎಂದು ಪೌಲನು ಕೇಳಲು, “ನಾವು ಯೊವಾನ್ನನ ಸ್ನಾನದೀಕ್ಷೆ ಪಡೆದೆವು,” ಎಂದರು. ಆಗ ಪೌಲನು, “ಯಾರು ತಮ್ಮ ಪಾಪದಿಂದ ವಿಮುಖರಾಗಿ ದೇವರಿಗೆ ಅಭಿಮುಖರಾಗುತ್ತಿದ್ದರೋ, ಅಂಥವರಿಗೆ ಯೊವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದನು. ಆದರೆ ಆ ಯೊವಾನ್ನನೇ ‘ತನ್ನ ಬಳಿಕ ಬರುವಾತನಲ್ಲಿ ವಿಶ್ವಾಸವಿಡಿ; ಅವರೇ ಯೇಸು’ ಎಂದು ಇಸ್ರಯೇಲರಿಗೆ ಬೋಧಿಸಿದ್ದನು,” ಎಂದನು. ಇದನ್ನು ಕೇಳಿದಾಗ ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದರು. ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು. ಇವರು ಸುಮಾರು ಹನ್ನೆರಡು ಮಂದಿ ಇದ್ದಿರಬಹುದು. ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.

ಕೀರ್ತನೆ: 68:2-3, 4-5, 6-7
ಶ್ಲೋಕ: ಭೂರಾಜ್ಯಗಳೇ, ಸ್ತುತಿಸಿರಿ ದೇವರನು!

ಶುಭಸಂದೇಶ: ಯೊವಾನ್ನ 16:29-33

ಶಿಷ್ಯರು ಯೇಸುವಿಗೆ, “ಈಗ ನೀವು ಸಾಮತಿಗಳನ್ನು ಬಳಸದೆ ಸ್ಪಷ್ಟವಾಗಿಯೇ ಮಾತನಾಡುತ್ತಿದ್ದೀರಿ. ನೀವು ಎಲ್ಲವನ್ನೂ ಬಲ್ಲವರು. ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದು ನಾವು ವಿಶ್ವಾಸಿಸುತ್ತೇವೆ,” ಎಂದರು. ಆಗ ಯೇಸು ಸ್ವಾಮಿ, “ಈಗ ನೀವು ವಿಶ್ವಾಸಿಸುತ್ತೀರೋ? ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ. ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.

21.05.23

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 1:1-11

ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು. ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು. ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ. ಏಕೆಂದರೆ, ಯೊವಾನ್ನನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದನು; ಆದರೆ ಇನ್ನು ಕೆಲವೇ ದಿನಗಳಲ್ಲಿ ನೀವು ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು. ಯೇಸುಸ್ವಾಮಿಯ ಸ್ವರ್ಗಾರೋಹಣ ಮತ್ತೊಮ್ಮೆ ಯೇಸುಸ್ವಾಮಿ ತಮ್ಮೊಡನೆ ಇದ್ದಾಗ ಪ್ರೇಷಿತರು, “ಪ್ರಭೂ, ನೀವು ಇದೀಗಲೇ ಇಸ್ರಯೇಲ್ ಜನರ ರಾಜ್ಯವನ್ನು ಪುನರ್ ಸ್ಥಾಪಿಸುವಿರೋ?” ಎಂದು ಕೇಳಿದರು.ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ. ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು. ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು. ಹೀಗೆ ಮೇಲೇರುತ್ತಿದ್ದ ಯೇಸುಸ್ವಾಮಿಯನ್ನು ನೋಡುತ್ತಿದ್ದ ಪ್ರೇಷಿತರ ದೃಷ್ಟಿ ಇನ್ನೂ ಆಕಾಶದತ್ತ ನಾಟಿತ್ತು. ಆಗ ಬಿಳಿಯ ವಸ್ತ್ರ ಧರಿಸಿದ್ದ ವ್ಯಕ್ತಿಗಳಿಬ್ಬರು ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತರು. “ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತಿರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿ ಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.

ಕೀರ್ತನೆ: 47:2-3, 6-7, 8-9
ಶ್ಲೋಕ: ಏರಿದನು ಪ್ರಭು ಜಯಜಯಕಾರದೊಂದಿಗೆ, ಆರೋಹಣವಾದನು ತುತೂರಿನಾದದ ಜೊತೆಗೆ

ಎರಡನೇ ವಾಚನ: ಎಫೆಸಿಯರಿಗೆ 1:17-23

ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ. ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ಥ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು. ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು. ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೇಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು. ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ. ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.

ಶುಭಸಂದೇಶ: ಮತ್ತಾಯ 28:16-20

ಹನ್ನೊಂದು ಮಂದಿ ಶಿಷ್ಯರು ಗಲಿಲೇಯಕ್ಕೆ ಹೋದರು. ಯೇಸು ಸೂಚಿಸಿದ್ದ ಬೆಟ್ಟಕ್ಕೆ ಬಂದರು. ಅಲ್ಲಿ ಯೇಸುಸ್ವಾಮಿಯನ್ನು ಕಂಡು ಅವರನ್ನು ಪೂಜಿಸಿದರು. ಆದರೆ ಕೆಲವರು ಸಂದೇಹಪಟ್ಟರು. ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ. ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ. ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು.

20.05.23 - "ಪಿತನಿಗೆ ನಿಮ್ಮ ಮೇಲೆ ಅಕ್ಕರೆಯಿದೆ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18: 23-28

ಪೌಲನು ಅಂತಿಯೋಕ್ಯದಲ್ಲಿ ಕೆಲಕಾಲವಿದ್ದು ಪುನಃ ಹೊರಟು ಗಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸಂಚರಿಸುತ್ತಾ ಭಕ್ತರೆಲ್ಲರನ್ನು ದೃಢಪಡಿಸಿದನು. ಅಲೆಕ್ಸಾಂಡ್ರಿಯದ ಅಪೊಲ್ಲೋಸ್ ಎಂಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನೊಬ್ಬ ಉತ್ತಮ ಭಾಷಣಕಾರ ಹಾಗೂ ಪವಿತ್ರಗ್ರಂಥದಲ್ಲಿ ಪಾಂಡಿತ್ಯಪಡೆದವನು. ಪ್ರಭುವಿನ ಮಾರ್ಗದ ಬಗ್ಗೆ ಅವನಿಗೆ ಉಪದೇಶಮಾಡಲಾಗಿತ್ತು. ಸ್ನಾನಿಕ ಯೊವಾನ್ನನ ಸ್ನಾನದೀಕ್ಷೆ ಒಂದನ್ನೇ ಅವನು ಬಲ್ಲವನಾಗಿದ್ದನು. ಆದರೂ ಯೇಸುಸ್ವಾಮಿಯ ಬಗ್ಗೆ ಉತ್ಸಾಹಭರಿತನಾಗಿ ಉಪದೇಶಮಾಡಿ ಚ್ಯುತಿಯಿಲ್ಲದೆ ಬೋಧಿಸುತ್ತಾ ಬಂದನು. ಇವನು ಪ್ರಾರ್ಥನಾಮಂದಿರದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದಾಗ, ಪ್ರಿಸ್ಸಿಲ ಮತ್ತು ಅಕ್ವಿಲರು ಅವನ ಬೋಧನೆಯನ್ನು ಕೇಳಿದರು. ಅವನನ್ನು ಮನೆಗೆ ಕರೆದುಕೊಂಡು ಹೋಗಿ ಪ್ರಭುವಿನ ಮಾರ್ಗವನ್ನು ಇನ್ನೂ ಸೂಕ್ಷ್ಮವಾಗಿ ವಿವರಿಸಿದರು. ಇವನು ಅಖಾಯಕ್ಕೆ ಹೋಗಲು ಇಷ್ಟಪಟ್ಟಾಗ ಭಕ್ತಾದಿಗಳು ಅವನನ್ನು ಪ್ರೋತ್ಸಾಹಿಸಿ, ಅಖಾಯದ ಭಕ್ತಾದಿಗಳಿಗೆ ಪತ್ರ ಬರೆದು, ಇವನನ್ನು ಸ್ವಾಗತಿಸುವಂತೆ ಬಿನ್ನವಿಸಿದರು. ಇವನು ಅಲ್ಲಿಗೆ ಹೋಗಿ ದೇವರ ಕೃಪೆಯಿಂದ ವಿಶ್ವಾಸಿಗಳಾಗಿದ್ದವರಿಗೆ ಬಹುವಾಗಿ ನೆರವಾದನು. ಹೇಗೆಂದರೆ, ಪವಿತ್ರಗ್ರಂಥಾನುಸಾರ ಯೇಸುವೇ ಲೋಕೋದ್ಧಾರಕನೆಂದು ಖಚಿತಪಡಿಸಿ ಯೆಹೂದ್ಯರನ್ನು ಎಲ್ಲರ ಮುಂದೆ ಬಹಿರಂಗವಾಗಿ ಪ್ರತಿಭಟಿಸಿದನು.

ಕೀರ್ತನೆ: 47:2-3, 8-9, 10
ಶ್ಲೋಕ: ದೇವನು ಭೂಮಂಡಲಕ್ಕೆಲ್ಲಾ ಒಡೆಯನು

ಪರಾತ್ಪರನಾದ ಪ್ರಭುವು ಘನಗಂಭೀರನು I
ಪ್ರಪಂಚಕ್ಕೆಲ್ಲ ರಾಜಾಧಿರಾಜನು II
ಜನಾಂಗಗಳನಾತ ನಮಗಧೀನಪಡಿಸಿಹನು I
ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು II
ವಹಿಸಿಕೊಂಡನು ದೇವನು ಸರ್ವಾಧಿಪತ್ಯ I

ಅಲಂಕರಿಸಿಹನು ತನ್ನ ಪೂಜ್ಯ ಗದ್ದುಗೆಯ II
ಒಟ್ಟುಗೂಡಿ ಬಂದರು ಪ್ರಜೆಯ ಪ್ರಮುಖರು I
ಅಬ್ರಹಾಮನ ದೇವಜನರೊಡನೆ ಸೇರಿಕೊಂಡರು II

ಭೂಪಾಲರೆಲ್ಲರೂ ದೇವರಿಗೆ ಅಧೀನರು I
ಸರ್ವೋನ್ನತನುಸಾರ್ವಭೌಮನು ದೇವರು II

ಶುಭಸಂದೇಶ:  ಯೊವಾನ್ನ 16:23-28


ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು. ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು. “ಈ ಸಂಗತಿಗಳನ್ನೆಲ್ಲಾ ನಿಮಗೆ ಸಾಮತಿಗಳ ರೂಪದಲ್ಲಿ ತಿಳಿಸಿರುವೆನು. ಕಾಲವು ಬರಲಿದೆ. ಆಗ ಸಾಮತಿಗಳನ್ನು ಬಳಸದೆ ಸ್ಪಷ್ಟವಾದ ಮಾತಿನಲ್ಲಿ ಪಿತನನ್ನು ಕುರಿತು ನಿಮಗೆ ತಿಳಿಸುವೆನು. ಆ ಕಾಲವು ಬಂದಾಗ ನನ್ನ ಹೆಸರು ಹೇಳಿ ನೀವೇ ಪಿತನಲ್ಲಿ ಬೇಡುವಿರಿ. ನಿಮ್ಮ ಪರವಾಗಿ ನಾನು ಪಿತನಲ್ಲಿ ಬೇಡಿಕೊಳ್ಳುವೆನೆಂದು ನಾನು ಹೇಳುವುದಿಲ್ಲ. ಕಾರಣ, ಪಿತನೇ ನಿಮ್ಮನ್ನು ಪ್ರೀತಿಸುತ್ತಾರೆ. ನೀವು ನನ್ನನ್ನು ಪ್ರೀತಿಸಿ ನಾನು ಅವರಿಂದ ಬಂದವನೆಂದು ವಿಶ್ವಾಸಿಸಿದ್ದರಿಂದ ಪಿತನಿಗೆ ನಿಮ್ಮ ಮೇಲೆ ಅಕ್ಕರೆಯಿದೆ. ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ,” ಎಂದರು.

19.05.23 - "ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18:9-18


ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು, ನಾನು ನಿನ್ನೊಡನೆ ಇದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ಹಾನಿಮಾಡುವುದಿಲ್ಲ. ಪಟ್ಟಣದ ಅನೇಕ ಜನರು ನನ್ನ ಪರವಾಗಿದ್ದಾರೆ,” ಎಂದರು. ಅಂತೆಯೇ ಪೌಲನು ಒಂದೂವರೆ ವರ್ಷಕಾಲ ಅಲ್ಲಿದ್ದು ದೇವರವಾಕ್ಯವನ್ನು ಜನರಿಗೆ ಬೋಧಿಸಿದನು. ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು. “ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾದ ರೀತಿಯಲ್ಲಿ ದೇವರನ್ನು ಆರಾಧಿಸುವಂತೆ ಈ ಮನುಷ್ಯ ಜನರನ್ನು ಪ್ರೇರೇಪಿಸುತ್ತಾ ಇದ್ದಾನೆ,” ಎಂದು ಅಲ್ಲಿ ದೂರಿತ್ತರು. ಪೌಲನು ಮಾತನಾಡಬೇಕೆಂದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸಂಬೋಧಿಸಿ, “ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿಂದ ಕೇಳಬೇಕಾದುದು ಸರಿಯಷ್ಟೆ. ಆದರೆ ಇದು ನಾಮನೇಮಗಳಿಗೆ ಹಾಗು ನಿಮ್ಮ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ಪ್ರಶ್ನೆ. ಅದನ್ನು ನಿಮ್ಮನಿಮ್ಮಲ್ಲೇ ಇತ್ಯರ್ಥಮಾಡಿಕೊಳ್ಳಿ. ಇಂಥ ವಿಷಯಗಳನ್ನು ವಿಚಾರಣೆಮಾಡಲು ನನಗೆ ಮನಸ್ಸಿಲ್ಲ,” ಎಂದು ಹೇಳಿ ಅವರನ್ನು ನ್ಯಾಯಸ್ಥಾನದಿಂದ ಹೊರಗಟ್ಟಿದನು. ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ. ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು. 

ಕೀರ್ತನೆ: 47:2-3, 4-5, 6-7
ಶ್ಲೋಕ: ದೇವನು ಭೂಮಂಡಲಕ್ಕೆಲ್ಲಾ ಒಡೆಯನು

ಪರಾತ್ಪರನಾದ ಪ್ರಭುವು ಘನಗಂಭೀರನು I
ಪ್ರಪಂಚಕ್ಕೆಲ್ಲ ರಾಜಾಧಿರಾಜನು II
ಜನಾಂಗಗಳನಾತ ನಮಗಧೀನಪಡಿಸಿಹನು I
ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು II

ಆಯ್ದನಾಡನು ಸೊತ್ತಾಗಿ ನೀಡಿದನೆಮಗೆ I
ಪ್ರತಿಷ್ಠಿತರು ನಾವುಆತನೊಲಿದ ಯಕೋಬಿಗೆ II
ಏರಿದನು ಪ್ರಭು ಜಯಜಯಕಾರದೊಂದಿಗೆ I
ಆರೋಹಣವಾದನು ತುತೂರಿನಾದ ಜೊತೆಗೆ II

ಕೀರ್ತಿಸಿರಿನಮ್ಮ ದೇವನನು ಸಂಕೀರ್ತಿಸಿರಿ I
ಕೀರ್ತಿಸಿರಿನಮ್ಮ ರಾಜನನು ಸಂಕೀರ್ತಿಸಿರಿ II
ದೇವನು ಭೂಮಂಡಲಕ್ಕೆಲ್ಲಾ ಒಡೆಯನು I

ಕೀರ್ತನೆಯಿಂದ ಕೊಂಡಾಡಿರಿ ಆತನನು II


ಶುಭಸಂದೇಶ: ಯೊವಾನ್ನ 16:20-23


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತುಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು. ಗರ್ಭಿಣಿಯಾದ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ; ಮಗುವನ್ನು ಹೆರುತ್ತಲೇ ಜಗದಲ್ಲಿ ಮಾನವನೊಬ್ಬನು ಜನಿಸಿದನೆಂಬ ಉಲ್ಲಾಸದಿಂದ ತಾನು ಪಟ್ಟ ವೇದನೆಯನ್ನು ಮರೆತುಬಿಡುತ್ತಾಳೆ; ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ. ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು."