ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

01.07.23

ಮೊದಲನೇ ವಾಚನ: ಆದಿಕಾಂಡ 18: 1-15

ಒಂದು ದಿನ ಅಬ್ರಹಾಮನು ಉರಿಬಿಸಿಲ ವೇಳೆಯಲ್ಲಿ ಮಮ್ರೋತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿದ್ದನು. ಆಗ ಅವನಿಗೆ ಸರ್ವೇಶ್ವರ ಸ್ವಾಮಿಯ ದರ್ಶನವಾಯಿತು. ಅವನು ಕಣ್ಣೆತ್ತಿ ನೋಡಿದಾಗ ಯಾರೋ ಮೂರು ಮಂದಿ ಪುರುಷರು ಹತ್ತಿರದಲ್ಲೇ ನಿಂತಿದ್ದರು. ಅವರನ್ನು ಎದುರುಗೊಳ್ಳಲು ಅಬ್ರಹಾಮನು ಕೂಡಲೆ ಗುಡಾರದ ಬಾಗಿಲಿನಿಂದ ಓಡಿಬಂದು, ತಲೆಬಾಗಿ ನಮಸ್ಕರಿಸಿ, ಸ್ವಾವಿೂ, ದಯವಿರಲಿ, ದಾಸನ ಬಳಿಗೆ ದಯಮಾಡದೆ ಮುಂದೆ ಹೋಗಬೇಡಿ. ನೀರು ತರಿಸಿಕೊಡುತ್ತೇನೆ. ಕಾಲು ತೊಳೆದುಕೊಂಡು ಈ ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿ. ಸ್ವಲ್ಪ ಆಹಾರ ತರುತ್ತೇನೆ. ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು. ದಾಸನಿರುವ ಸ್ಥಳದ ಹತ್ತಿರ ಹಾದುಹೋಗುತ್ತಿದ್ದೀರಲ್ಲವೆ?” ಎನ್ನಲು ಅವರು “ನೀನು ಹೇಳಿದಂತೆಯೇ ಆಗಲಿ,” ಎಂದರು. ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿ ಆಕೆಗೆ, “ಹಸನಾದ ಮೂರು ಸೇರುಹಿಟ್ಟನ್ನು ನಾದಿ, ಬೇಗ ರೊಟ್ಟಿಗಳನ್ನು ಮಾಡು,” ಎಂದನು. ಅನಂತರ ದನಗಳ ಹಟ್ಟಿಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. ಆಳು ಬೇಗನೆ ಅಡಿಗೆಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನು ಹಾಗೂ ಅಟ್ಟಮಾಂಸವನ್ನು ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಊಟಮಾಡಿ ಮುಗಿಸುವವರೆಗೂ ಅವನೇ ಹತ್ತಿರ ನಿಂತು ಉಪಚಾರ ಮಾಡಿದನು. ಬಳಿಕ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಆ ಅತಿಥಿಗಳು ವಿಚಾರಿಸಿದಾಗ, “ಅಲ್ಲಿ ಗುಡಾರದಲ್ಲಿದ್ದಾಳೆ,” ಎಂದು ಉತ್ತರಕೊಟ್ಟನು. ಆಗ ಸರ್ವೇಶ್ವರಸ್ವಾಮಿ, “ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಳಿಗೆ ಮಗನಿರುತ್ತಾನೆ,” ಎಂದರು. ಈ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿದ್ದಿತು. ಅಬ್ರಹಾಮನು ಮತ್ತು ಸಾರಳು ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು. ಎಂತಲೇ ಆಕೆ, “ನನ್ನಂಥ ಮುದುಕಿಗೆ ಸಂಭೋಗ ಸಾಧ್ಯವೆ? ನನ್ನ ಯಜಮಾನರೂ ಮುದುಕರಲ್ಲವೆ?” ಎಂದುಕೊಂಡು ನಕ್ಕಳು. ಅಬ್ರಹಾಮನಿಗೆ, ಸರ್ವೇಶ್ವರ “ಸಾರಳು ತಾನು ಮುದುಕಿಯಾದ ಕಾರಣ ಹೆರಲು ಸಾಧ್ಯವೆ’ ಎಂದು ನಕ್ಕಿದ್ದು ಏಕೆ? ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು. ಆಗ ಸಾರಳು ಭಯದಿಂದ, “ನಾನು ನಗಲಿಲ್ಲ” ಎಂದು ನಿರಾಕರಿಸಿದಳು. ಸರ್ವೇಶ್ವರ, “ಹಾಗನ್ನಬೇಡಮ್ಮಾ, ನೀನು ನಕ್ಕದ್ದು ನಿಜ,” ಎಂದರು.

ಕೀರ್ತನೆ: 1:46-47, 48-49, 50, 53, 54-55
ಶ್ಲೋಕ: ಮರೆಯಲಿಲ್ಲ ಪ್ರಭು ಕರುಣೆತೋರಲು. 

ಆಗ ಹೀಗೆಂದು ಮರಿಯಳು ಹೊಗಳಿದಳು:
“ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ I
ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ II
ತನ್ನ ದಾಸಿಯ ದೀನತೆಯನು ನೆನಪಿಗೆ ತಂದುಕೊಂಡನಾತ I

ಧನ್ಯಳೆಂದು ಹೊಗಳುವರೆನ್ನನು ಇಂದಿನಿಂದ ಸರ್ವಜನಾಂಗ II
ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ I
ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ II
ಆತನಲ್ಲಿ ಭಯಭಕ್ತಿಯುಳ್ಳವರಿಗೆ I

ಆತನ ಪ್ರೀತಿ ತಲತಲಾಂತರದವರೆಗೆ II
ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ I
ಹೊರದೂಡಿರುವನು ಸಿರಿವಂತರನು ಬರೀಗೈಯಲಿ II
ನೆರವಾದನು ತನ್ನ ದಾಸ ಇಸ್ರಯೇಲನಿಗೆ I

ಪೂರ್ವಜರಿಗಿತ್ತ ವಾಗ್ದಾನದ ಮೇರೆಗೆ II
ಮರೆಯಲಿಲ್ಲ ಆತ ಕರುಣೆತೋರಲು ಅಬ್ರಹಾಮನಿಗೆ I
ಅವನ ಸಂತತಿಗೆ, ಯುಗಯುಗಾಂತರದವರೆಗೆ II

ಶುಭಸಂದೇಶ: ಮತ್ತಾಯ 8:5-17

ಯೇಸುಸ್ವಾಮಿ ಕಫೆರ್ನವುಮ್ ಊರಿಗೆ ಬಂದಾಗ ಶತಾಧಿಪತಿಯೊಬ್ಬನು ಅವರನ್ನು ಎದುರುಗೊಂಡನು. “ಪ್ರಭೂ, ನನ್ನ ಸೇವಕ ಮನೆಯಲ್ಲಿ ಪಾಶ್ರ್ವವಾಯು ರೋಗದಿಂದ ಹಾಸಿಗೆ ಹಿಡಿದಿದ್ದಾನೆ. ಬಹಳವಾಗಿ ನರಳುತ್ತಿದ್ದಾನೆ,” ಎಂದು ವಿನಂತಿಸಿದನು. ಯೇಸು, “ನಾನೇ ಬಂದು ಅವನನ್ನು ಗುಣಪಡಿಸುತ್ತೇನೆ,” ಎಂದರು ಅದಕ್ಕೆ ಆ ಶತಾಧಿಪತಿ, “ಪ್ರಭುವೇ, ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು. ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು. ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು, ‘ಬಾ’ ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ, ‘ಹೋಗು’ ಎಂದರೆ ಹೋಗುತ್ತಾನೆ. ಸೇವಕನಿಗೆ, ‘ಇಂಥದ್ದನ್ನು ಮಾಡು’ ಎಂದರೆ ಮಾಡುತ್ತಾನೆ," ಎಂದನು. ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: "ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಪೂರ್ವ ಪಶ್ಚಿಮ ದಿಕ್ಕುಗಳಿಂದ ಅನೇಕ ಜನರು ಬಂದು ಅಬ್ರಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು. ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!" ಅನಂತರ ಯೇಸು ಆ ಶತಾಧಿಪತಿಗೆ, "ಇನ್ನು ಮನೆಗೆ ಹೋಗು, ನೀನು ವಿಶ್ವಾಸಿಸಿದಂತೆಯೇ ಆಗುವುದು," ಎಂದರು. ಅದೇ ಕ್ಷಣದಲ್ಲಿ ಅವನ ಸೇವಕನು ಸ್ವಸ್ಥನಾದನು. ತರುವಾಯ ಯೇಸುಸ್ವಾಮಿ ಪೇತ್ರನ ಮನೆಗೆ ಬಂದರು. ಅಲ್ಲಿ ಪೇತ್ರನ ಅತ್ತೆ ಜ್ವರದಿಂದ ಮಲಗಿರುವುದನ್ನು ಕಂಡರು. ಯೇಸು ಆಕೆಯ ಕೈ ಮುಟ್ಟಿದುದೇ ಜ್ವರ ಬಿಟ್ಟುಹೋಯಿತು, ಆಕೆ ಎದ್ದು ಅವರನ್ನು ಸತ್ಕರಿಸಿದಳು.

30.06.23 - "ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು"

ಮೊದಲನೇ ವಾಚನ: ಆದಿಕಾಂಡ 17: 1, 9-10, 15-22


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು. ಇದಲ್ಲದೆ ದೇವರು ಅಬ್ರಹಾಮನಿಗೆ ಹೀಗೆಂದು ಹೇಳಿದರು: “ನೀನು ಕೂಡ ನನ್ನ ಒಡಂಬಡಿಕೆಯನ್ನು ಕೈಗೊಂಡು ನಡೆಯಬೇಕು. ನೀನು ಮಾತ್ರವಲ್ಲ, ನಿನ್ನ ಸಂತತಿಯವರು ತಲತಲಾಂತರಕ್ಕೂ ಅದನ್ನು ಕೈಗೊಂಡು ನಡೆಯಬೇಕು. ನೀನೂ ನಿನ್ನ ಸಂತತಿಯವರೂ ಕೈಗೊಳ್ಳಬೇಕಾದ ನನ್ನ ಒಡಂಬಡಿಕೆ ಇದು: ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕು. ದೇವರು ಅಬ್ರಹಾಮನಿಗೆ ಇನ್ನೂ ಹೇಳಿದ್ದು ಏನೆಂದರೆ: “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳು ಎಂದು ಕರೆಯದೆ ಸಾರಳು ಎಂದು ಕರೆಯಬೇಕು. ನಾನು ಆಕೆಯನ್ನು ಆಶೀರ್ವದಿಸಿದ್ದೇನೆ. ಆಕೆ ನಿನಗೊಬ್ಬ ಮಗನನ್ನು ಹೆರುವಳು. ನನ್ನ ಆಶೀರ್ವಾದ ಪಡೆದ ಆಕೆ ರಾಷ್ಟ್ರಗಳಿಗೆ ಮಾತೆಯಾಗುವಳು; ಆಕೆಯಿಂದ ರಾಷ್ಟ್ರಗಳೂ, ರಾಜರುಗಳೂ ಉತ್ಪತ್ತಿಯಾಗುವರು.” ಅಬ್ರಹಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು. ಆದರೆ, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೆ? ತೊಂಬತ್ತು ವರ್ಷದವಳಾದ ಸಾರಳು ಹೆತ್ತಾಳೆ?” ಎಂದು ಅಬ್ರಹಾಮನು ಮನಸ್ಸಿನಲ್ಲೇ ನೆನೆದು ನಕ್ಕು ದೇವರಿಗೆ, ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ. ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತತಿಯನ್ನು ಕೊಡುತ್ತೇನೆ. ಅವನು ಹನ್ನೆರಡು ಮಂದಿ ಅಧಿಪತಿಗಳಿಗೆ ಮೂಲ ಪಿತನಾಗುವನು. ಅವನ ಸಂತತಿಯನ್ನು ದೊಡ್ಡ ರಾಷ್ಟ್ರವನ್ನಾಗಿ ಮಾಡುತ್ತೇನೆ. ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನಲ್ಲಿಯೇ ಊರ್ಜಿತಗೊಳಿಸುತ್ತೇನೆ. ಬರುವ ವರ್ಷ ಇದೇ ಕಾಲದಲ್ಲಿ ಸಾರಳು ಅವನನ್ನು ಹೆರುವಳು,” ಎಂದರು. ಇಷ್ಟನ್ನು ಮಾತಾಡಿ ಮುಗಿಸಿದ ಮೇಲೆ ದೇವರು ಅಬ್ರಹಾಮನಿಂದ ಅದೃಶ್ಯರಾದರು.

ಕೀರ್ತನೆ: 128:1, 3, 4-5

ಶ್ಲೋಕ: ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I

ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II
ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I
ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II ಶ್ಲೋಕ

ಇರುವಳು ನಿನ್ನ ಪತ್ನಿ ಮನೆಯಲ್ಲಿ ಫಲಭರಿತ ದ್ರಾಕ್ಷಾಲತೆಯಂತೆ I
ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ ಓಲಿವ್ ಸಸಿಗಳಂತೆ II ಶ್ಲೋಕ
ಹೊಂದುವನು ಅಂತಹ ಆಶೀರ್ವಾದವನು I
ಪ್ರಭುವಿನಲಿ ಭಯಭಕ್ತಿಯುಳ್ಳವನು II ಶ್ಲೋಕ

ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಲಿ I
ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ II ಶ್ಲೋಕ

ಶುಭಸಂದೇಶ: ಮತ್ತಾಯ 8:1-4


ಯೇಸುಸ್ವಾಮಿ ಬೆಟ್ಟದಿಂದ ಇಳಿದು ಬಂದಾಗ ಜನರು ಗುಂಪುಗುಂಪಾಗಿ ಅವರನ್ನು ಹಿಂಬಾಲಿಸಿದರು. ಆಗ ಒಬ್ಬ ಕುಷ್ಠರೋಗಿ ಯೇಸುವಿನ ಮುಂದೆ ಬಂದು, ತಲೆಬಾಗಿ, "ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣ ಮಾಡಬಲ್ಲಿರಿ," ಎಂದು ಬೇಡಿದನು. ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣ ಹೊಂದು,” ಎಂದರು. ತಕ್ಷಣವೇ ಅವನ ಕುಷ್ಠವು ಮಾಯವಾಯಿತು. ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು. ಯೇಸುಸ್ವಾಮಿ ಕಫೆರ್ನವುಮ್ ಊರಿಗೆ ಬಂದಾಗ ಶತಾಧಿಪತಿಯೊಬ್ಬನು ಅವರನ್ನು ಎದುರುಗೊಂಡನು. “ಪ್ರಭೂ, ನನ್ನ ಸೇವಕ ಮನೆಯಲ್ಲಿ ಪಾಶ್ರ್ವವಾಯು ರೋಗದಿಂದ ಹಾಸಿಗೆ ಹಿಡಿದಿದ್ದಾನೆ. ಬಹಳವಾಗಿ ನರಳುತ್ತಿದ್ದಾನೆ,” ಎಂದು ವಿನಂತಿಸಿದನು. ಯೇಸು, “ನಾನೇ ಬಂದು ಅವನನ್ನು ಗುಣಪಡಿಸುತ್ತೇನೆ,” ಎಂದರು ಅದಕ್ಕೆ ಆ ಶತಾಧಿಪತಿ, “ಪ್ರಭುವೇ, ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು.

29.06.23 - "ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 12:1-11

ಆ ದಿನಗಳಲ್ಲಿ ಅರಸ ಹೆರೋದನು ಕ್ರೈಸ್ತಸಭೆಯ ಸದಸ್ಯರಲ್ಲಿ ಕೆಲವರನ್ನು ಹಿಂಸಿಸಲು ಆರಂಭಿಸಿದನು. ಯೊವಾನ್ನನ ಸಹೋದರ ಯಕೋಬನನ್ನು ಖಡ್ಗದಿಂದ ಕೊಲ್ಲಿಸಿದನು. ಇದರಿಂದ ಯೆಹೂದ್ಯರಿಗೆ ಮೆಚ್ಚುಗೆಯಾಯಿತೆಂದು ತಿಳಿದು ಪೇತ್ರನನ್ನು ಬಂಧಿಸಿದನು. (ಆಗ ಹುಳಿರಹಿತ ರೊಟ್ಟಿಯ ಹಬ್ಬ ನಡೆಯುತ್ತಿತ್ತು). ಪೇತ್ರನನ್ನು ಬಂಧಿಸಿದ ಮೇಲೆ ಸೆರೆಮನೆಯಲ್ಲಿಟ್ಟು ಅವನನ್ನು ಕಾಯಲು ನಾಲ್ಕು ನಾಲ್ಕು ಸೈನಿಕರಿದ್ದ ಚತುರ್ದಳಕ್ಕೆ ವಹಿಸಿದನು. ಪಾಸ್ಕಹಬ್ಬದ ನಂತರ ಪೇತ್ರನನ್ನು ಬಹಿರಂಗ ವಿಚಾರಣೆಗೆ ಗುರಿಪಡಿಸಲು ಉದ್ದೇಶಿಸಿದ್ದನು. ಪೇತ್ರನನ್ನು ಹೀಗೆ ಸೆರೆಯಲ್ಲಿಟ್ಟಿದ್ದಾಗ, ಸಭೆಯು ಅವನಿಗಾಗಿ ಶ್ರದ್ಧೆಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿತ್ತು. ಹೆರೋದನು ಪೇತ್ರನನ್ನು ಜನರ ಮುಂದೆ ತರಬೇಕೆಂದಿದ್ದ ಹಿಂದಿನ ರಾತ್ರಿ ಅದು. ಪೇತ್ರನು ಇಬ್ಬರು ಸೈನಿಕರ ನಡುವೆ ನಿದ್ರಿಸುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಪಹರೆಯವರು ಸೆರೆಮನೆಯ ದ್ವಾರದಲ್ಲಿ ಕಾವಲಿದ್ದರು. ಫಕ್ಕನೆ ದೇವದೂತನೊಬ್ಬನು ಕಾಣಿಸಿಕೊಂಡನು. ಆ ಕೋಣೆಯೆಲ್ಲಾ ಪ್ರಕಾಶಮಯವಾಯಿತು. ದೂತನು ಪೇತ್ರನ ಭುಜವನ್ನು ತಟ್ಟಿ, ಎಬ್ಬಿಸಿ, “ಬೇಗನೆ ಏಳು,” ಎಂದನು. ಆ ಕ್ಷಣವೇ ಪೇತ್ರನ ಕೈಗಳಿಗೆ ಕಟ್ಟಿದ್ದ ಸರಪಣಿಗಳು ಕಳಚಿಬಿದ್ದವು. ದೂತನು ಅವನಿಗೆ, “ಬಟ್ಟೆಯನ್ನು ತೊಟ್ಟುಕೋ, ಪಾದರಕ್ಷೆಯನ್ನು ಮೆಟ್ಟಿಕೋ,” ಎಂದನು. ಪೇತ್ರನು ಹಾಗೆಯೇ ಮಾಡಿದನು. ಅನಂತರ ದೂತನು, “ನಿನ್ನ ಮೇಲುಹೊದಿಕೆಯನ್ನು ಹೊದ್ದುಕೊಂಡು ನನ್ನ ಜೊತೆ ಬಾ,” ಎಂದನು. ಪೇತ್ರನು ಸೆರೆಮನೆಯ ಹೊರಕ್ಕೆ ಅವನನ್ನು ಹಿಂಬಾಲಿಸಿ ಹೋದನು. ಅಷ್ಟಾದರೂ ದೂತನು ಮಾಡುತ್ತಿರುವುದು ನಿಜವೆಂದು ಅವನಿಗೆ ಅರಿವಾಗಲಿಲ್ಲ; ತನಗೇನೋ ದರ್ಶನವಾಗುತ್ತಿದೆಯೆಂದೆ ಭಾವಿಸಿದನು. ಅವರು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿದರು. ಪಟ್ಟಣದ ಕಡೆಯಿದ್ದ ಕಬ್ಬಿಣದ ದ್ವಾರದ ಬಳಿ ಬಂದರು. ಆ ದ್ವಾರ ತನ್ನಷ್ಟಕ್ಕೆ ತಾನೇ ತೆರೆಯಿತು. ಅವರು ಹೊರ ನಡೆದರು. ಬೀದಿಯೊಂದರಲ್ಲಿ ಹಾದುಹೋಗುತ್ತಿರಲು ಒಮ್ಮೆಲೆ ದೂತನು ಪೇತ್ರನನ್ನು ಬಿಟ್ಟು ಅದೃಶ್ಯನಾದನು. ನಡೆದ ಸಂಗತಿ ಏನೆಂದು ಪೇತ್ರನಿಗೆ ಅರಿವಾದಾಗ ಆತನು, “ನಡೆದುದೆಲ್ಲಾ ಸಾಕ್ಷಾತ್ ಸತ್ಯವೆಂದು ಈಗ ನನಗೆ ತಿಳಿಯಿತು. ಪ್ರಭು ತಮ್ಮ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯರು ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಪಾರುಮಾಡಿದ್ದಾರೆ,” ಎಂದುಕೊಂಡನು.

ಕೀರ್ತನೆ: 34:2-3, 4-5, 6-7, 8-9

ಶ್ಲೋಕ: ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು

ಎರಡನೇ ವಾಚನ: 2 ತಿಮೊಥೇಯನಿಗೆ 4:6-8, 17-18

ಅತಿ ಪ್ರಿಯನೇ, ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ. ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ. ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು. ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು. ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.

ಶುಭಸಂದೇಶ: ಮತ್ತಾಯ 16:13-19


ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು. ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು. ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ. ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು. ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,

28.06.23 - "ಒಳ್ಳೆಯ ಮರ ಒಳ್ಳೆಯ ಹಣ್ಣನ್ನೂ ಕೆಟ್ಟ ಮರವು ಕೆಟ್ಟ ಹಣ್ಣನ್ನೂ ಕೊಡುತ್ತದೆ"

ಮೊದಲನೇ ವಾಚನ: ಆದಿಕಾಂಡ 15:1-12, 17-18

ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯ ದರ್ಶನ ಆಯಿತು. ಅದರಲ್ಲಿ ಸರ್ವೇಶ್ವರಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ, ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ.” ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - "ಸ್ವಾಮಿ ಸರ್ವೇಶ್ವರಾ, ನನಗೆ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆ ಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ. ನೀವು ನನಗೆ ಮಕ್ಕಳನ್ನು ಕೊಟ್ಟಿಲ್ಲ. ನನ್ನ ಮನೆದಾಸನೇ ನನಗೆ ಉತ್ತರಾಧಿಕಾರಿ,” ಎಂದನು. ಮತ್ತೆ ಸ್ವಾಮಿಯ ವಾಣಿ - “ಇಲ್ಲ, ಅವನು ಉತ್ತರಾಧಿಕಾರಿಯಾಗುವುದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಉತ್ತರಾಧಿಕಾರಿ ಆಗುತ್ತಾನೆ,” ಎಂದಿತು. ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು. ಅಬ್ರಾಮನು ಸರ್ವೇಶ್ವರಸ್ವಾಮಿಯಲ್ಲಿ ವಿಶ್ವಾಸವಿಟ್ಟನು. ಅವರು ಅವನ ವಿಶ್ವಾಸವೇ ಸರಿಯಾದ ಸಂಬಂಧವೆಂದು ಪರಿಗಣಿಸಿದರು. ಸರ್ವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: “ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ,” ಎಂದರು. ಅದಕ್ಕೆ ಅಬ್ರಾಮನು, “ಸರ್ವೇಶ್ವರಾ, ಇದು ನನ್ನ ಸೊತ್ತು ಎಂದು ತಿಳಿದುಕೊಳ್ಳುವುದು ಹೇಗೆ?” ಎಂದನು. ಸರ್ವೇಶ್ವರ ಪ್ರತ್ಯುತ್ತರವಾಗಿ, “ನೀನು ಮೂರು ವರ್ಷದ ಒಂದು ಕಡಸನ್ನು, ಒಂದು ಆಡನ್ನು, ಒಂದು ಟಗರನ್ನು, ಒಂದು ಬೆಳವಕ್ಕಿಯನ್ನು ಹಾಗು ಒಂದು ಮರಿಪಾರಿವಾಳವನ್ನು ತೆಗೆದುಕೊಂಡು ಬಾ,” ಎಂದರು. ಅಬ್ರಾಮನು ಅವುಗಳನ್ನೆಲ್ಲಾ ತೆಗೆದುಕೊಂಡು ಬಂದು ಆ ಪ್ರಾಣಿಗಳನ್ನು ಕಡಿದು, ಎರಡೆರಡು ಹೋಳು ಮಾಡಿ, ತುಂಡಿಗೆ ತುಂಡನ್ನು ಎದುರಾಗಿಟ್ಟನು. ಪಕ್ಷಿಗಳನ್ನು ಮಾತ್ರ ಕಡಿಯಲಿಲ್ಲ. ಆ ಪ್ರಾಣಿಗಳ ತುಂಡುಗಳ ಮೇಲೆ ರಣಹದ್ದುಗಳು ಎರಗಿದಾಗ ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು. ಹೊತ್ತು ಮುಳುಗುತ್ತಿದ್ದಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಭೀಕರವಾದ ಕಾರ್ಗತ್ತಲು ಅವನನ್ನು ಕವಿಯಿತು. ಹೊತ್ತು ಮುಳುಗಿ ಕಾರ್ಗತ್ತಲಾದಾಗ ಇಗೋ, ಹೊಗೆಯಾಡುವ ಒಲೆಯೊಂದು ಹಾಗು ಉರಿಯುವ ದೀವಟಿಗೆಯೊಂದು ಕಾಣಿಸಿಕೊಂಡು ಆ ತುಂಡುಗಳ ನಡುವೆ ಹಾದುಹೋದವು. ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: “ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”

ಕೀರ್ತನೆ: 105: 1-2. 3-4. 6-7. 8-9
ಶ್ಲೋಕ: ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು

ಸಲ್ಲಿಸಿ ಪ್ರಭುವಿಗೆ ಕೃತಜ್ಞತಾಸ್ತೋತ್ರವನು I
ಮಾಡಿರಿ ಆತನ ನಾಮಸ್ಮರಣೆಯನು I
ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II ಶ್ಲೋಕ

ಹಾಡಿ ಪಾಡಿ ಹೊಗಳಿರಿ ಪ್ರಭುವನು I
ಧ್ಯಾನಿಸಿ ನೀವು ಆತನ ಪವಾಡಗಳನು II
ಹೆಮ್ಮೆಪಡಿ, ನೆನೆದಾತನ ಶ್ರೀನಾಮ I ಶ್ಲೋಕ

ಹಿಗ್ಗಲಿ ಹೃದಯ, ಕೋರಿ ಆತನ ದರ್ಶನ II
ಅರಸಿರಿ ಪ್ರಭುವನೂ ಆತನ ಶಕ್ತಿಯನೂ I
ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II ಶ್ಲೋಕ

ನೆನೆಯಿರಿ ಆತನದ್ಭುತಗಳನು, ಮಹತ್ಕಾರ್ಯಗಳನು I
ಆತನ ವದನ ವಿಧಿಸಿದಾ ನ್ಯಾಯನಿರ್ಣಯಗಳನು II
ಪ್ರಭು ನಮ್ಮ ದೇವನೆಂಬುದು ಶ್ರುತ I
ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ II ಶ್ಲೋಕ

ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು I
ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು II
ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I
ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು I ಶ್ಲೋಕ

ಶುಭಸಂದೇಶ: ಮತ್ತಾಯ 7:15-20


ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು. ಅವರ ವರ್ತನೆಯಿಂದ ನೀವು ಅವರನ್ನು ಗುರುತು ಹಚ್ಚುವಿರಿ. ಮುಳ್ಳುಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವುದುಂಟೇ? ಮದ್ದುಗುಣಿಕೆಯಲ್ಲಿ ಅಂಜೂರ ಕೀಳುವುದುಂಟೇ? ಅದರಂತೆಯೇ ಒಳ್ಳೆಯ ಮರ ಒಳ್ಳೆಯ ಹಣ್ಣನ್ನೂ ಕೆಟ್ಟ ಮರವು ಕೆಟ್ಟ ಹಣ್ಣನ್ನೂ ಕೊಡುತ್ತದೆ. ಒಳ್ಳೆಯ ಮರ ಕೆಟ್ಟ ಹಣ್ಣನ್ನು ಕೊಡಲಾರದು, ಹಾಗೆಯೇ ಕೆಟ್ಟ ಮರ ಒಳ್ಳೆಯ ಹಣ್ಣನ್ನು ಕೊಡಲಾರದು. ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನೂ ಕಡಿದು ಬೆಂಕಿಯಲ್ಲಿ ಹಾಕಲಾಗುವುದು. ಆದ್ದರಿಂದ ಸುಳ್ಳು ಪ್ರವಾದಿಗಳನ್ನು ಅವರ ನಡತೆಯಿಂದ ಗುರುತುಹಚ್ಚುವಿರಿ."

27.06.23 - "ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ; ಅದರ ಬಾಗಿಲು ಕಿರಿದು"

ಮೊದಲನೇ ವಾಚನ: ಆದಿಕಾಂಡ 13:2, 5-18

ಅಬ್ರಾಮನು ಈಜಿಪ್ಟನ್ನು ಬಿಟ್ಟು ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು. ಈಗ ಅವನಿಗೆ ಪಶುಪ್ರಾಣಿಗಳಿದ್ದವು, ಬೆಳ್ಳಿ ಬಂಗಾರವಿತ್ತು. ಅವನೀಗ ಘನ ಧನವಂತನಾಗಿದ್ದನು. ಅಬ್ರಾಮನ ಜೊತೆಯಲ್ಲಿದ್ದ ಲೋಟನಿಗೆ ಕುರಿಮಂದೆಗಳೂ ದನಕರುಗಳೂ ಗುಡಾರಬಿಡಾರಗಳೂ ಇದ್ದವು. ಈ ಕಾರಣ ಅವರಿಬ್ಬರ ಜೀವನಕ್ಕೆ ಅಲ್ಲಿ ಸ್ಥಳ ಸಾಲದೆ ಹೋಯಿತು. ಇಬ್ಬರಿಗೂ ಪಶುಪ್ರಾಣಿಗಳು ಹೇರಳವಾಗಿದ್ದುದರಿಂದ ಒಂದೇ ಸ್ಥಳದಲ್ಲಿ ವಾಸವಾಗಿರಲು ಆಗಲಿಲ್ಲ. ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಬೇರೆ. ಇದೂ ಅಲ್ಲದೆ, ಆ ಕಾಲದಲ್ಲಿ ಕಾನಾನ್ಯರೂ ಪೆರಿಜೀಯರೂ ಅದೇ ನಾಡಿನಲ್ಲಿ ವಾಸವಾಗಿದ್ದರು. ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು. ನಾಡೆಲ್ಲಾ ನಿನ್ನ ಕಣ್ಮುಂದಿದೆ. ದಯವಿಟ್ಟು ನನ್ನನ್ನು ಬಿಟ್ಟು ಬೇರೆ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುತ್ತೇನೆ.” ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೊದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯ ಪಡೆದಿತ್ತು. ಆದುದರಿಂದ ಲೋಟನು ಜೋರ್ಡನ್ ನದಿಯ ಸುತ್ತಲಿನ ಪ್ರದೇಶವನ್ನು ಆರಿಸಿಕೊಂಡು ಪೂರ್ವ ದಿಕ್ಕಿನ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಬೇರೆ ಬೇರೆ ಆದರು. ಜೋರ್ಡನ್ ನದಿಯ ಸುತ್ತಣ ಊರುಗಳಲ್ಲಿ ವಾಸಮಾಡುತ್ತಾ ಸೊದೋಮ್‍ಗೆ ಸವಿೂಪದಲ್ಲಿ ಗುಡಾರ ಹಾಕಿದನು. ಸೊದೋಮಿನ ಪಟ್ಟಣದವರು ಬಹಳ ದುಷ್ಟರು. ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು. ಲೋಟನು ಅಬ್ರಾಮನನ್ನು ಬಿಟ್ಟುಹೋದ ಬಳಿಕ ಸರ್ವೇಶ್ವರಸ್ವಾಮಿ ಅಬ್ರಾಮನಿಗೆ, “ನೀನು ಇರುವ ಸ್ಥಳದಿಂದಲೇ ದಕ್ಷಿಣೋತ್ತರ ಪೂರ್ವ ಪಶ್ಚಿಮಗಳ ಕಡೆಗೆ ಕಣ್ಣೆತ್ತಿ ನೋಡು. ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ. ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು. ನೀನೆದ್ದು ಈ ನಾಡಿನ ಉದ್ದಗಲಕ್ಕೂ ತಿರುಗಾಡು; ಇದನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಹೇಳಿದರು ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರ ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆವೃಕ್ಷಗಳ ತೋಪಿಗೆ ಬಂದು ವಾಸಮಾಡಿದನು. ಸರ್ವೇಶ್ವರಸ್ವಾಮಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.

ಕೀರ್ತನೆ: 15:1-5
ಶ್ಲೋಕ: ಯೋಗ್ಯನಾರು ಪ್ರಭೂ, ನಿನ್ನ ಗುಡಾರದಲಿ ಬಿಡಾರಮಾಡಲು? ಅರ್ಹನಾರು ನಿನ್ನ ಪವಿತ್ರ ಶಿಖರದಲಿ ವಾಸವಾಗಿರಲು?  

ಅಂಥವನಿರಬೇಕು ನಿರ್ದೋಷಿ, ಸನ್ಮಾರ್ಗಿ I
ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ II
ಚಾಡಿಯನು ಹೇಳನು, ಕೇಡನು ಮಾಡನನ್ಯರಿಗೆ I ಶ್ಲೋಕ

ಗುರಿಮಾಡನವನು ನೆರೆಹೊರೆಯವರನು ನಿಂದೆಗೆ II
ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I
ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II ಶ್ಲೋಕ

ಕೊಡುವನು ಕಡವನು, ಬಯಸನು ಬಡ್ಡಿಯನು I
ಎಡವರ ಕೇಡಿಗೆ ಪಡೆಯನು ಲಂಚವನು I
ಕದಲನೆಂದಿಗೂ ಈಪರಿ ನಡೆವವನು II ಶ್ಲೋಕ

ಶುಭಸಂದೇಶ:ಮತ್ತಾಯ 7:6, 12-14

ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು." "ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ. ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ." "ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು. ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ; ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು."

26.06.231 - "ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದು ಹಾಕು"

ಮೊದಲನೇ ವಾಚನ: ಆದಿಕಾಂಡ 12:1-9


ಸರ್ವೇಶ್ವರಸ್ವಾಮಿ ಅಬ್ರಾಮನಿಗೆ ಹೀಗೆಂದರು - “ನೀನು ನಿನ್ನ ಸ್ವಂತ ನಾಡನ್ನೂ ಬಂಧು ಬಳಗದವರನ್ನೂ ತವರು ಮನೆಯನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೊರಟು ಹೋಗು. ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆ ಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ. “ನಿನ್ನನ್ನು ಹರಸುವವರನು ನಾ ಹರಸುವೆ. ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.” ಸರ್ವೇಶ್ವರ ಹೀಗೆಂದು ಹೇಳಿದಮೇಲೆ ಅಬ್ರಾಮನು ಹೊರಟನು. ಲೋಟನು ಅವನ ಸಂಗಡವೆ ಹೋದನು. ಆ ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಅಬ್ರಾಮನಿಗೆ ಎಪ್ಪತ್ತೈದು ವರ್ಷಗಳಾಗಿದ್ದವು. ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿ ಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು. ಆ ನಾಡಿನಲ್ಲಿ ಸಂಚರಿಸುತ್ತಾ ಅಬ್ರಾಮನು ಶೆಕೆಮ್ ಪುಣ್ಯಕ್ಷೇತ್ರದಲ್ಲಿರುವ ‘ಮೋರೆ’ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ನಾಡಿನಲ್ಲಿ ವಾಸವಾಗಿದ್ದರು. ಅಲ್ಲಿ ಸರ್ವೇಶ್ವರಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆ ಮಾಡಿ ಆರಾಧಿಸಿದನು. ತರುವಾಯ ಅಲ್ಲಿಂದ ಮುಂದೆ ಮುಂದಕ್ಕೆ ಸಾಗುತ್ತಾ ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು.

ಕೀರ್ತನೆ: 33: 12-13, 18-19, 20, 22
ಶ್ಲೋಕ: ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ 

ಭುವನು ದೇವರಾಗಿ ಪಡೆದ ಜನಾಂಗ ಧನ್ಯ I
ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ II
ವೀಕ್ಷಿಸುತಿಹನು ಪ್ರಭು ಸಮಸ್ತವನು ಪರದಿಂದ I
ಲಕ್ಷಿಸುತಿಹನು ಮನುಜರನು ಸಿಂಹಾಸನದಿಂದ II ಶ್ಲೋಕ

ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I
ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II
ತಪ್ಪಿಸುವನವನು ಪ್ರಾಣವನು ಮರಣದಿಂದ I
ಉಳಿಸುವನು ಜೀವವನು ಕ್ಷಾಮಡಾಮರದಿಂದ II ಶ್ಲೋಕ

ಕಾದಿದೆ ಎನ್ನ ಮನ ಪ್ರಭುವಿಗಾಗಿ I
ಆತನಿಹನು ಎನಗೆ ಗುರಾಣಿಯಾಗಿ II
ನಮ್ಮ ಮೇಲಿರಲಿ ಪ್ರಭು, ನಿನ್ನಚಲ ಪ್ರೀತಿ I
ಕಾದಿಹೆವು ಇದೋ ನಿನ್ನ ನಂಬಿ ಭರವಸದಿ II ಶ್ಲೋಕ

ಶುಭಸಂದೇಶ:ಮತ್ತಾಯ 7:1-5


"ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ. ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು. ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ? ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, "ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದು ಬಿಡುತ್ತೇನೆ," ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು."

25.06.23 - "ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ."

ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 20:10-13

ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ. ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ. ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ. ಸರ್ವೇಶ್ವರನನ್ನು ಸ್ತುತಿಸಿರಿ, ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವರ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ. 

ಕೀರ್ತನೆ: 69:8-10, 14, 17, 33-35

ಶ್ಲೋಕ: ಪ್ರೀತಿಮಯ ದೇವಾ, ಸದುತ್ತರ ನೀಡೆನಗೆ

ಎರಡನೇ ವಾಚನ: ರೋಮನರಿಗೆ  5:12-15

ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು. ಧರ್ಮಶಾಸ್ತ್ರವನ್ನು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರ ಇಲ್ಲದೆ ಇದ್ದುದರಿಂದ ಪಾಪವನ್ನು ಗಣನೆಗೆ ತಂದುಕೊಳ್ಳಲಾಗಲಿಲ್ಲ. ಆದರೂ, ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣವು ದಬ್ಬಾಳಿಕೆ ನಡೆಸುತ್ತಿತ್ತು. ದೇವರ ಆಜ್ಞಾವಿಧಿಗಳನ್ನು ಮೀರಿ ಆದಾಮನು ಮಾಡಿದ ಪಾಪಕ್ಕೆ ಸಮನಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ, ಮರಣದ ಆಳ್ವಿಕೆ ನಡೆಯುತ್ತಿತ್ತು. ಆದಾಮನು ಮುಂಬರಲಿದ್ದ ಮಹಾತ್ಮನ ಮುನ್ಸೂಚನೆಯಾಗಿದ್ದಾನೆ. ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.

ಶುಭಸಂದೇಶ: ಮತ್ತಾಯ 10:26-33

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು. ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ. ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ. ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ. ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು. “ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ. ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.

24.06.23

ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 49:1-6

ಕಿವಿಗೊಡಿ ನನ್ನ ದ್ವೀಪನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರದಲ್ಲಿದ್ದಾಗಲೇ. ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ ಮುಚ್ಚಿಟ್ಟಹನು ನನ್ನನ್ನು ತನ್ನ ಕರದ ನೆರಳಿನಲ್ಲಿ ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನು ತನ್ನ ಬತ್ತಳಿಕೆಯಲ್ಲಿ. ಆತನೆನಗೆ ಇಂತೆಂದ : “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.” ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ. ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲಿ. ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವ ಜನಾಂಗಗಳಿಗೆ.

ಕೀರ್ತನೆ: 139:1-3, 13-15
ಶ್ಲೋಕ: ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ

ಭು, ಪರಿಶೋಧಿಸಿರುವೆ ನೀ ನನ್ನನು I
ಅರಿತುಕೊಂಡಿರುವೆ ಅಂತರಂಗವನು II
ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I
ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II

ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ I
ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ II
ನನ್ನ ಅಂತರಂಗವನು ಉಂಟುಮಾಡಿದಾತ ನೀನು I
ತಾಯಗರ್ಭದಲೆ ನನ್ನ ರೂಪಿಸಿದಾತ ನೀನು II

ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ I
ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ I
ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ II
ನನ್ನ ಅಸ್ಥಿಪಂಜರವನು ರೂಪಿಸುವಾಗ I

ತಾಯಗರ್ಭದೊಳು ಅಚ್ಚರದಿ ರಚಿಸುವಾಗ I
ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ I
ಮರೆಯಾಗಿರಲಿಲ್ಲ ನಾನು ನಿನಗಾಗ II

ಎರಡನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 13:22-26

ಪೌಲನು ಉಪದೇಶ ಮಾಡುತ್ತಾ ಹೀಗೆಂದನು: "ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, “ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,” ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು. ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ಧಾರಕನನ್ನು ಕಳುಹಿಸಿದರು. ಇವರೇ ಯೇಸುಸ್ವಾಮಿ. ಇವರ ಆಗಮನಕ್ಕೆ ಸಿದ್ಧತೆಯಾಗಿ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿ ಸ್ನಾನದೀಕ್ಷೆಯನ್ನು ಪಡೆಯಬೇಕೆಂದು ಯೊವಾನ್ನನು ಇಸ್ರಯೇಲಿನ ಎಲ್ಲ ಜನರಿಗೆ ಸಾರಿದರು. ಯೊವಾನ್ನನು ತನ್ನ ನಿಯೋಗವನ್ನು ಪೂರೈಸುತ್ತಿದ್ದಂತೆ ಜನರಿಗೆ, ‘ನಾನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ವ್ಯಕ್ತಿ ನಾನಲ್ಲ. ನನ್ನ ಅನಂತರ ಒಬ್ಬರು ಬರುವರು; ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು. “ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ."

ಶುಭಸಂದೇಶ: ಲೂಕ  1:57-66, 80


ದಿನ ತುಂಬಿದಾಗ ಎಲಿಜಬೇತಳು ಗಂಡುಮಗುವಿಗೆ ಜನ್ಮವಿತ್ತಳು. ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು. ಎಂಟನೆಯ ದಿನ ಮಗುವಿನ ಸುನ್ನತಿಗಾಗಿ ಅವರು ಬಂದು ಅದಕ್ಕೆ, ತಂದೆಯ ಹೆಸರನ್ನು ಅನುಸರಿಸಿ, ಜಕರೀಯನೆಂದು ನಾಮಕರಣ ಮಾಡುವುದರಲ್ಲಿ ಇದ್ದರು. ಆದರೆ ಮಗುವಿನ ತಾಯಿ, “ಇಲ್ಲ, ಅದು ಕೂಡದು, ಅವನಿಗೆ ‘ಯೊವಾನ್ನ’ ಎಂಬ ಹೆಸರಿಡಬೇಕು,” ಎಂದಳು. ಅದಕ್ಕೆ ಅವರು, “ನಿನ್ನ ಬಂಧುಬಳಗದವರಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ,” ಎಂದು ಹೇಳಿ, “ಮಗುವಿಗೆ ಏನು ಹೆಸರಿಡಬೇಕೆನ್ನುತ್ತೀರಿ?” ಎಂದು ಮಗುವಿನ ತಂದೆಗೆ ಸನ್ನೆಮಾಡಿ ಕೇಳಿದರು. ಆಗ ಜಕರೀಯನು ಬರೆಯುವ ಒಂದು ಹಲಗೆಯನ್ನು ತರಿಸಿಕೊಂಡು, ‘ಇವನ ಹೆಸರು ಯೊವಾನ್ನ’ ಎಂದು ಬರೆದನು. ಎಲ್ಲರೂ ಬೆರಗಾದರು. ತಕ್ಷಣವೇ ಅವನಿಗೆ ಬಾಯಿ ಬಂದಿತು; ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು. ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು. ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು. ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ‘ಈ ಮಗು ಮುಂದೆ ಎಂಥವನಾಗುವನೋ!’ ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯ ಹಸ್ತವು ಈ ಮಗುವಿನ ಮೇಲಿತ್ತು. ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು.

23.06.23 - "ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು"

ಮೊದಲನೇ ವಾಚನ: 2 ಕೊರಿಂಥಿಯರಿಗೆ 11:18, 21-30

ಅನೇಕರು ಕೇವಲ ಪ್ರಾಪಂಚಿಕ ವಿಷಯಗಳನ್ನು ಕುರಿತು ತಮ್ಮನ್ನೇ ಹೊಗಳಿಕೊಳ್ಳುತ್ತಾರೆ. ಹಾಗೆಯೇ ನಾನೂ ಹೊಗಳಿಕೊಳ್ಳುತ್ತೇನೆ. ಇದನ್ನೆಲ್ಲಾ ಮಾಡುವ ಸಾಹಸ ನಮಗಿಲ್ಲವೆಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ. ಯಾರಿಗಾದರೂ ಯಾರ ವಿಷಯದಲ್ಲಾದರೂ ಹೊಗಳಿಕೊಳ್ಳುವ ಧೈರ್ಯವಿದ್ದರೆ ಅದಕ್ಕಿಂತ ಹೆಚ್ಚಿನ ಧೈರ್ಯ ನನಗಿದೆ. ಇದನ್ನು ನಾನು ಹುಚ್ಚನಂತೆಯೇ ಹೇಳುತ್ತಿದ್ದೇನೆ ಎಂದು ಭಾವಿಸಿಕೊಳ್ಳಿ. ಅವರು ಹಿಬ್ರಿಯರೋ? ನಾನೂ ಹಿಬ್ರಿಯನೇ. ಅವರು ಇಸ್ರಯೇಲರೋ? ನಾನೂ ಇಸ್ರಯೇಲನೇ. ಅವರು ಅಬ್ರಹಾಮನ ವಂಶದವರೋ? ನಾನೂ ಅದೆ ವಂಶದವನೇ. ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿವಿೂರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ. ಐದು ಸಾರಿ ಯೆಹೂದ್ಯರಿಂದ ನನಗೆ ನಲವತ್ತಕ್ಕೆ ಒಂದು ಕಡಿಮೆ ಚಾಟಿ ಏಟುಗಳು ಬಿದ್ದವು. ಮೂರು ಸಾರಿ ರೋಮನರು ನನ್ನನ್ನು ಛಡಿಗಳಿಂದ ಹೊಡೆಸಿದರು. ಒಮ್ಮೆ ಜನರು ನನ್ನನ್ನು ಕೊಲ್ಲಲೆಂದು ಕಲ್ಲು ತೂರಿದರು. ಮೂರು ಸಲ ನಾನಿದ್ದ ಹಡಗು ಒಡೆದು ನೀರುಪಾಲಾಯಿತು. ಒಂದು ರಾತ್ರಿ, ಒಂದು ಹಗಲು ನಡುಗಡಲಲ್ಲಿ ತೇಲಾಡಿದೆ. ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ. ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ. ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ. ಇಂಥ ಇನ್ನಿತರ ಕಷ್ಟ ಸಂಕಟಗಳನ್ನು ಅನುಭವಿಸಿದ್ದೇನೆ. ಅಷ್ಟೇ ಅಲ್ಲದೆ, ಎಲ್ಲ ಸಭೆಗಳ ಹಿತಚಿಂತನೆಯೂ ನನ್ನನ್ನು ಅನುದಿನವೂ ಕಾಡಿಸಿದೆ. ಒಬ್ಬನು ಬಲಹೀನನಾಗಿದ್ದರೆ, ಅವನೊಡನೆ ನಾನೂ ಬಲಹೀನನೇ. ಒಬ್ಬನು ಪಾಪಕ್ಕೆ ಬಲಿಯಾದರೆ ನಾನೂ ತಾಪದಿಂದ ಕುದಿಯುತ್ತೇನೆ. ನಾನು ನನ್ನನ್ನೇ ಹೊಗಳಿಕೊಳ್ಳಬೇಕಾಗಿ ಬಂದರೆ, ನನ್ನ ದೌರ್ಬಲ್ಯವನ್ನು ಬಹಿರಂಗಪಡಿಸುವ ವಿಷಯಗಳ ಬಗ್ಗೆ ಹೊಗಳಿಕೊಳ್ಳುತ್ತೇನೆ.

ಕೀರ್ತನೆ: 34:1-2, 3-4, 5-6
ಶ್ಲೋಕ: ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ

ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು
ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು
ಪ್ರಭುವಿನಲ್ಲಿದೆ ನನ್ನ ಮನದಭಿಮಾನ
ದೀನರಿದನು ಕೇಳಿ, ಪಡೆಯಲಿ ಸುಮ್ಮಾನ ಶ್ಲೋಕ

ಬನ್ನಿ, ಕೊಂಡಾಡುವ ಪ್ರಭು ದೇವನನು
ಘನಪಡಿಸೋಣ ಅವನ ಶ್ರೀನಾಮವನು
ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು
ಭಯಭೀತಿಯಿಂದೆನ್ನನು ಮುಕ್ತ ನಾಗಿಸಿಹನು ಶ್ಲೋಕ

ಆತನತ್ತ ತಿರುಗಿದ ಮುಖ ಅರಳುವುದು
ಲಜ್ಜೆಯಿಂದೆಂದಿಗು ಕುಂದಿಹೋಗದು
ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು
ಸರ್ವಾಪತ್ತಿನಿಂದವನು ಮುಕ್ತಗೊಂಡನು. ಶ್ಲೋಕ

ಶುಭಸಂದೇಶ: ಮತ್ತಾಯ 6: 19-23


ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು. ನಿಮ್ಮ ಆಸ್ತಿಯನ್ನು ಸ್ವರ್ಗದಲ್ಲಿ ಕೂಡಿಸಿಡಿ. ಅಲ್ಲಿ ತುಕ್ಕು ಹಿಡಿಯದು, ನುಸಿ ಹೊಡೆಯದು, ಕಳ್ಳರು ಕನ್ನ ಕೊರೆದು ಕದಿಯರು. ನಿನ್ನ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿನ್ನ ಹೃದಯ."ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ ನಿನ್ನ ದೇಹವೆಲ್ಲ ಕತ್ತಲೆಮಯವಾಗುವುದು. ನಿನ್ನೊಳಗಿರುವ ಬೆಳಕೇ ಕತ್ತಲೆಯಾದಲ್ಲಿ ಅದೆಂತಹ ಕರಾಳ ಕತ್ತಲೆಯಾಗಿರಬಹುದು!"

22.06.23 - "ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು"

ಮೊದಲನೇ ವಾಚನ: 2 ಕೊರಿಂಥಿಯರಿಗೆ 11:1-11


ನನ್ನನ್ನು ನಾನೇ ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನಿಮ್ಮ ಬಗ್ಗೆ ದೇವರಿಗಿರುವ ಪೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ. ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು. ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ. “ಮಹಾ ಪ್ರೇಷಿತರು” ಎನಿಸಿಕೊಳ್ಳುವ ಆ ಜನರಿಗಿಂತ ನಾನು ಯಾವುದರಲ್ಲೂ ಕಡಿಮೆಯಿಲ್ಲ. ಮಾತಿನಲ್ಲಿ ಚತುರನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ನಿಮಗೆ ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ. ನಿಮಗೆ ದೇವರ ಶುಭಸಂದೇಶವನ್ನು ಉಚಿತವಾಗಿಯೇ ಬೋಧಿಸಿದೆನು. ನಿಮ್ಮನ್ನು ಮೇಲಕ್ಕೇರಿಸಲು ನನ್ನನ್ನೇ ತಗ್ಗಿಸಿಕೊಂಡೆನು. ಹೀಗೆ ಮಾಡಿದ್ದು ತಪ್ಪಾಯಿತೇ? ನಿಮಗೆ ಸೇವೆ ಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವು ಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿ ಮಾಡುತ್ತಿದ್ದೆ. ನಾನು ನಿಮ್ಮೊಂದಿಗಿದ್ದಾಗ ನನಗೆ ಹಣದ ಕೊರತೆ ಇದ್ದರೂ ನಿಮ್ಮಲ್ಲಿ ಯಾರಿಗೂ ಹೊರೆಯಾಗಲಿಲ್ಲ. ಮಕೆದೋನಿಯದಿಂದ ಬಂದ ಸಹೋದರರು ನನ್ನ ಕೊರತೆಯನ್ನೆಲ್ಲಾ ನೀಗಿಸಿದರು. ನಿಮಗೆ ಯಾವುದರಲ್ಲೂ ಹೊರೆಯಾಗಬಾರದೆಂದು ಎಚ್ಚರಿಕೆ ವಹಿಸಿದ್ದೆ; ಇನ್ನು ಮುಂದಕ್ಕೂ ಎಚ್ಚರಿಕೆಯಿಂದ ಇರುತ್ತೇನೆ. ಈ ನನ್ನ ಹೊಗಳಿಕೆಯನ್ನು ಅಖಾಯ ಪ್ರಾಂತ್ಯದ ಯಾರೂ ಅಡಗಿಸುವಂತಿಲ್ಲವೆಂದು ಕ್ರಿಸ್ತಯೇಸುವಿನ ಮುಂದೆ ಸತ್ಯವಾಗಿ ನುಡಿಯುತ್ತೇನೆ. ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲರು.

ಕೀರ್ತನೆ: 112:1-2, 3-4, 9
ಶ್ಲೋಕ: ನೀತಿ ಸತ್ಯತೆಯುಳ್ಳವು ಆತನ ಸತ್ಕಾರ್ಯಗಳು

ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ
ಹೊಗಳುವೆ ಪ್ರಭುವನು ಮನಃ ಪೂರ್ವಕವಾಗಿ ಹಾಡಿ
ಮಹತ್ತಾದವು ಪ್ರಭುವಿನಾ ಕಾರ್ಯಗಳು
ಕೊಂಡಾಡುವರು ಅವುಗಳನು ಭಕ್ತಾದಿಗಳು ಶ್ಲೋಕ

ಘನತೆ ಗೌರವವುಳ್ಳವು ಆತನ ಎಲ್ಲ ಕಾರ್ಯ
ನಿಲ್ಲುವುದು ಆತನ ನ್ಯಾಯನೀತಿಯು ನಿತ್ಯ
ಆತನ ಅದ್ಭುತಕಾರ್ಯ ಸ್ಮರಣೀಯ ಶ್ಲೋಕ

ಕರುಣಾವಂತ ಪ್ರಭು, ಪ್ರೀತಿಯನು.
ನೀತಿ ಸತ್ಯತೆಯುಳ್ಳವು ಆತನ ಸತ್ಕಾರ್ಯಗಳು
ಸುಸ್ಥಿರವಾದವು ಆತನ ನಿಯಮ ನಿಬಂಧನೆಗಳು
ಯುಗಯುಗಾಂತರಕು ದೃಢವಾಗಿರುವುವು
ಸತ್ಯನೀತಿಗಳು ಅವುಗಳಿಗೆ ಅಡಿಪಾಯವು. ಶ್ಲೋಕ

ಶುಭಸಂದೇಶ: ಮತ್ತಾಯ 6: 7-15

ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸುಗುಟ್ಟಬೇಡ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ. ನೀವು ಅವರಂತೆ ಆಗಬೇಡಿ. ನಿಮ್ಮ ಅಗತ್ಯಗಳೇನೆಂದು ನೀವು ಕೇಳುವುದಕ್ಕೆ ಮೊದಲೇ ನಿಮ್ಮ ತಂದೆಗೆ ಗೊತ್ತಿದೆ. ಆದುದರಿಂದ ಹೀಗೆಂದು ಪ್ರಾರ್ಥನೆ ಮಾಡಿ: "ಸ್ವರ್ಗದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ; ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ. ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ. ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ. ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ. "ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು. ಜನರನ್ನು ನೀವು ಕ್ಷಮಿಸದಿದ್ದರೆ, ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸರು."

21.06.23 - "ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು."

ಮೊದಲನೇ ವಾಚನ: 2 ಕೊರಿಂಥಿಯರಿಗೆ 9:6-11


ವಿರಳವಾಗಿ ಬಿತ್ತುವವನು ವಿರಳವಾಗಿ ಕೊಯ್ಯತ್ತಾನೆ. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ. ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ. ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ. “ದೀನದಲಿತರಿಗೆ ಧಾರಾಳವಾಗಿ ನೀಡುವನು; ಅನವರತ ಇರುವುದು ಅವನ ದಾನಧರ್ಮದ ಫಲವು,” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಊಟವನ್ನೂ ಒದಗಿಸುವ ದೇವರು, ಬಿತ್ತನೆಗೆ ಬೇಕಾದ ಬೀಜವನ್ನು ನಿಮಗೂ ಕೊಟ್ಟು ಅದನ್ನು ಬೆಳೆಸುವರು. ನಿಮ್ಮ ದಾನಧರ್ಮದ ಫಲಗಳು ಸಮೃದ್ಧಿಗೊಳ್ಳುವಂತೆ ಮಾಡುವರು. ನೀವು ಸದಾ ಉದಾರಿಗಳಾಗಿರುವಂತೆ ನಿಮ್ಮನ್ನು ಎಲ್ಲಾ ವಿಧದಲ್ಲೂ ಸಿರಿವಂತರನ್ನಾಗಿ ಮಾಡುವರು. ನಿಮ್ಮ ಕೊಡುಗೆ ನಮ್ಮ ಸೇವೆಯ ಮೂಲಕ ಬೇರೆಯವರಿಗೆ ತಲುಪಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ಮಾಡುವುದು.

ಕೀರ್ತನೆ: 112:1-2, 3-4, 9
ಶ್ಲೋಕ: ಪ್ರಭುವಿನಲಿ ಭಯಭಕ್ತಿ ಉಳ್ಳವನು ಧನ್ಯನು

ಅಲ್ಲೆಲೂಯ ಪ್ರಭುವಿನಲಿ ಭಯಭಕ್ತಿ ಉಳ್ಳವನು ಧನ್ಯನು
ಆತನಾಜ್ಞೆಗಳಲಿ ಹಿಗ್ಗುವವನು ಭಾಗ್ಯನು
ಬಲಿಷ್ಠವಾಗುವುದು ಜಗದೊಳು ಅವನ ಸಂತಾನ
ಸಜ್ಜನರ ಸಂತತಿ ಪಡೆವುದು ಆಶೀರ್ವಚನ ಶ್ಲೋಕ

ಸಿರಿಸಂಪತ್ತಿರುವುದವನ ಮನೆಯಲಿ ಸಮೃದ್ಧಿಯಾಗಿ
ನೀತಿ ಫಲಿಸುವುದು ಆತನ ಮನದಲಿ ಶಾಶ್ವತವಾಗಿ
ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು
ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು ಶ್ಲೋಕ

ಉದಾರತೆಯಿಂದ ಕೊಡುವನು ಬಡವರಿಗೆ
ಫಲಿಸುವುದು ಅವನಾ ನೀತಿ ಸದಾಕಾಲಕೆ
ಮಹಿಮೆತರುವ ಕೋಡುಮೂಡುವುದು ಅವನಿಗೆ ಶ್ಲೋಕ

ಶುಭಸಂದೇಶ: ಮತ್ತಾಯ 6:1-6, 16-18

"ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು. ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ದಾನಧರ್ಮ ಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು." "ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ. ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆ ಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು." "ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ. ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು."

20.06.23 - "ನಾನು ಹೇಳುವುದನ್ನು ಗಮನಿಸಿರಿ: ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ"

ಮೊದಲನೇ ವಾಚನ: 2 ಕೊರಿಂಥಿಯರಿಗೆ 8: 1-9

ಸಹೋದರರೇ, ಮಕೆದೋನಿಯ ಸಭೆಗಳಿಗೆ ದೇವರು ದಯಪಾಲಿಸಿದ ಕೃಪಾತಿಶಯಗಳನ್ನು ನಾನು ನಿಮಗೆ ತಿಳಿಸಬಯಸುತ್ತೇನೆ. ಈ ಸಭೆಗಳವರು ಕಷ್ಟಸಂಕಟಗಳ ಕುಲುಮೆಯಲ್ಲಿ ಬೆಂದಿದ್ದರೂ ಹರ್ಷಭರಿತರಾಗಿದ್ದಾರೆ. ಕಡುಬಡತನದಲ್ಲಿ ನರಳುತ್ತಿದ್ದರೂ ಅಪಾರ ಔದಾರ್ಯದಿಂದ ನಡೆದುಕೊಳ್ಳುತ್ತಿದ್ದಾರೆ. ತಮ್ಮ ಶಕ್ತಿಗನುಸಾರವಾಗಿ ಮಾತ್ರವಲ್ಲ, ಕೆಲವೊಮ್ಮೆ ಶಕ್ತಿವಿೂರಿಯೂ ನೀಡಿದ್ದಾರೆಂದು ನಾನು ಖಂಡಿತವಾಗಿ ಹೇಳುತ್ತೇನೆ. ದೇವಜನರಿಗೆ ನೆರವಾಗುವ ಸೌಭಾಗ್ಯದಲ್ಲಿ ತಾವೂ ಭಾಗಿಗಳಾಗಬೇಕೆಂದು, ಸ್ವಂತ ಇಷ್ಟದಿಂದ ನಮ್ಮನ್ನು ಅವರು ಬಹುವಾಗಿ ಬೇಡಿಕೊಂಡರು. ಇದನ್ನು, ನಾವು ನಿರೀಕ್ಷಿಸಲೇ ಇಲ್ಲ! ಮೊಟ್ಟಮೊದಲು ಅವರು ತಮ್ಮನ್ನೇ ಪ್ರಭುವಿಗೆ ಸಮರ್ಪಿಸಿದರು. ಅನಂತರ ದೈವಚಿತ್ತಕ್ಕೆ ಅನುಗುಣವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು. ಇಂಥ ಪ್ರೀತಿಮಯ ಸೇವಾಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ತೀತನು ಅದನ್ನು ಮುಂದುವರಿಸಿ, ಪೂರ್ಣಗೊಳಿಸಬೇಕೆಂದು ನಾವು ಆತನನ್ನು ಕೇಳಿಕೊಂಡಿದ್ದೇವೆ. ವಿಶ್ವಾಸ, ವಾಕ್ಚಾತುರ್ಯ, ಜ್ಞಾನ, ಶ್ರದ್ಧೆ, ನಮ್ಮ ಬಗ್ಗೆ ನಿಮಗಿರುವ ಪ್ರೀತಿ - ಈ ಎಲ್ಲಾ ವಿಷಯಗಳಲ್ಲೂ ನೀವು ಸಮೃದ್ಧರಾಗಿದ್ದೀರಿ. ಹಾಗೆಯೇ ಈ ಸೇವಾಕಾರ್ಯದಲ್ಲೂ ಸಮೃದ್ಧರಾಗಿರಿ. ಇದನ್ನು ನಾನು ಆಜ್ಞಾರೂಪವಾಗಿ ಹೇಳುತ್ತಿಲ್ಲ. ಬೇರೆಯವರಿಗೆ ಈ ಸೇವಾಕಾರ್ಯದಲ್ಲಿ ಇರುವ ಶ್ರದ್ಧೆಯನ್ನು ಆದರ್ಶವಾಗಿ ಹಿಡಿದು ನಿಮ್ಮ ಪ್ರೀತಿ ಎಷ್ಟು ಯಥಾರ್ಥವಾದುದೆಂದು ಕಂಡುಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇನೆ. ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.

ಕೀರ್ತನೆ: 146: 2, 5-9
ಶ್ಲೋಕ: ನನ್ನ ಮನವೇ, ವಂದಿಸು ಪ್ರಭುವನು.

ಪ್ರಾಣವಿರುವವರೆಗೆ ಸ್ತುತಿಸುವೆನು ಪ್ರಭುವನು
ಬಾಳೆಲ್ಲ ಹಾಡಿ ಭಜಿಪೆನು ನನ್ನ ದೇವರನು. ಶ್ಲೋಕ

ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ,
ಅವನೇ ಧನ್ಯನು ಪ್ರಭುವನು ತನ್ನ ದೇವರೆಂದು
ಯಾರು ನಂಬಿಹನೋ, ಅವನೇ ಧನ್ಯನು. ಶ್ಲೋಕ

ಭೂಮ್ಯಾಕಾಶ, ಸಾಗರ, 
ಚರಾಚರಗಳನು ನಿರ್ಮಿಸಿದವ ಆತನೆ
ಕೊಟ್ಟ ವಾಗ್ದಾನಗಳನು ತಪ್ಪದೆ
ನೆರವೇರಿಸುವವ ಆತನೆ. ಶ್ಲೋಕ

ದೊರಕಿಸುವನು ನ್ಯಾಯ ದಲಿತರಿಗೆ
ಒದಗಿಸುವನು ಆಹಾರ ಹಸಿದವರಿಗೆ
ನೀಡುವನು ಬಿಡುಗಡೆ ಬಂಧಿತರಿಗೆ ಶ್ಲೋಕ

ಕಣ್ಣನ್ನೀಯುವನು ಪ್ರಭು ಕುರುಡರಿಗೆ
ಉದ್ಧಾರಕನಾ ಪ್ರಭು ಕುಗ್ಗಿದವರಿಗೆ
ಆತನ ಒಲವಿರುವುದು ಸಾಧು ಸಜ್ಜನರಿಗೆ
ರಕ್ಷಿಸುವನು ಪ್ರಭು ಪರದೇಶಿಗಳನು
ಆದರಿಸುವನು ಅನಾಥರನು, ವಿಧವೆಯರನು ಶ್ಲೋಕ

ಶುಭಸಂದೇಶ: ಮತ್ತಾಯ 5:43-48


ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದೇನೆಂದರೆ "ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು" ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ. ನಾನು ಹೇಳುವುದನ್ನು ಗಮನಿಸಿರಿ: ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ. ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ. ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿ ಮಾಡುವವರೂ ಹಾಗೆ ಮಾಡುವುದಿಲ್ಲವೇ? ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ? ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ."

19.06.23 - "ನಿನ್ನೊಡನೆ ವ್ಯಾಜ್ಯಮಾಡಿ ನಿನ್ನ ಒಳ ಅಂಗಿಯನ್ನು ಕಿತ್ತುಕೊಳ್ಳುವವನಿಗೆ ಹೊರ ಅಂಗಿಯನ್ನೂ ಕೊಟ್ಟುಬಿಡು"

ಮೊದಲನೇ ವಾಚನ: 2 ಕೊರಿಂಥಿಯರಿಗೆ 6: 1-10

ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ “ಸುಪ್ರಸನ್ನತೆಯ ಕಾಲದಲ್ಲಿ ನಿನ್ನನ್ನಾಲಿಸಿದೆನು; ಉದ್ಧಾರ ದಿನದಂದು ನಿನಗೆ ನೆರವಾದೆನು,” ಎಂದಿದ್ದಾರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ ಉದ್ಧಾರದ ಸುದಿನ. ನಮ್ಮ ಸೇವಾಕಾರ್ಯವು ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಯಾವ ತೆರನಾದ ಅಡ್ಡಿಯನ್ನೂ ಒಡ್ಡಲಿಲ್ಲ. ಬದಲಿಗೆ, ಎಲ್ಲ ವಿಷಯಗಳಲ್ಲೂ ದೇವರ ದಾಸರೆಂದು ತೋರಿಸಿಕೊಳ್ಳುತ್ತೇವೆ. ಕಷ್ಟ ಸಂಕಟಗಳಲ್ಲೂ ದುಃಖದುರಿತಗಳಲ್ಲೂ ತಾಳ್ಮೆಯಿಂದ ವರ್ತಿಸಿದ್ದೇವೆ. ಏಟು ಪೆಟ್ಟುಗಳನ್ನು ತಿಂದಿದ್ದೇವೆ, ಸೆರೆಮನೆವಾಸ ಅನುಭವಿಸಿದ್ದೇವೆ, ಕೋಪಕ್ರಾಂತಿಗಳಿಗೆ ಗುರಿಯಾಗಿದ್ದೇವೆ, ಮೈಮುರಿಯೆ ದುಡಿದಿದ್ದೇವೆ, ನಿದ್ದೆಗೆಟ್ಟು ಬಳಲಿದ್ದೇವೆ, ಊಟವಿಲ್ಲದೆ ಸೊರಗಿದ್ದೇವೆ. ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ, ಸತ್ಯೋಕ್ತಿ, ದೈವಶಕ್ತಿ ಇವುಗಳಿಂದಲೂ ನಾವು ದೇವರ ದಾಸರೆಂದು ತೋರ್ಪಡಿಸುತ್ತೇವೆ. ರಕ್ಷಿಸಲೂ ಎದುರಿಸಲೂ ಧರ್ಮವೆಂಬ ಆಯುಧವನ್ನು ಕೈಯಲ್ಲಿ ಹಿಡಿದಿದ್ದೇವೆ. ಮಾನ-ಅವಮಾನ, ಕೀರ್ತಿ-ಅಪಕೀರ್ತಿ ಎರಡನ್ನೂ ಅನುಭವಿಸುತ್ತಿದ್ದೇವೆ. ಸತ್ಯವಾದಿಗಳು ನಾವಾದರೂ ಮಿಥ್ಯವಾದಿಗಳು ಎಂದೆನಿಸಿಕೊಂಡಿದ್ದೇವೆ. ಪ್ರಖ್ಯಾತರಾಗಿದ್ದರೂ ಖ್ಯಾತಿರಹಿತರಾಗಿದ್ದೇವೆ. ಬದುಕಿದ್ದರೂ ಸತ್ತವರೆನಿಸಿಕೊಂಡಿದ್ದೇವೆ. ಶಿಕ್ಷೆಗೆ ಗುರಿಯಾಗಿದ್ದರೂ ಇನ್ನೂ ಕೊಲೆಗೆ ಈಡಾಗದೆ ಇದ್ದೇವೆ. ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.

ಕೀರ್ತನೆ: 98:1-4
ಶ್ಲೋಕ: ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು

ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು
ಎಸಗಿಹನಾತನು ಪವಾಡಕಾರ್ಯಗಳನು
ಗಳಿಸಿತಾತನ ಕೈ ಪೂತಭುಜ ಗೆಲುವನು. ಶ್ಲೋಕ

ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿ ವಿಧಾನವನು
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು. ಶ್ಲೋಕ

ಕಂಡು ಬಂದಿತು ಜಗದ ಎಲ್ಲೆ ಎಲ್ಲೆಗೆ
ನಮ್ಮ ದೇವ ಸಾಧಿಸಿದ ಜಯಗಳಿಕೆ
ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ
ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ ಶ್ಲೋಕ

ಶುಭಸಂದೇಶ: ಮತ್ತಾಯ 5: 38-42


ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಬದಲಾಗಿ ಹಲ್ಲು" ಎಂಬುದನ್ನು ನೀವು ಕೇಳಿದ್ದೀರಿ. ಆದರೆ ನನ್ನ ಬೋಧೆ ಇದು: ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು. ನಿನ್ನೊಡನೆ ವ್ಯಾಜ್ಯಮಾಡಿ ನಿನ್ನ ಒಳ ಅಂಗಿಯನ್ನು ಕಿತ್ತುಕೊಳ್ಳುವವನಿಗೆ ಹೊರ ಅಂಗಿಯನ್ನೂ ಕೊಟ್ಟುಬಿಡು. ಯಾರಾದರೂ ಒಂದು ಕಿಲೊವಿೂಟರ್ ದೂರ ಬಾ ಎಂದು ನಿನ್ನನ್ನು ಒತ್ತಾಯಪಡಿಸಿದರೆ ಅವನೊಡನೆ ಎರಡು ಕಿಲೊವಿೂಟರ್ ಹೋಗು; ಬೇಡಿಕೊಳ್ಳುವವನಿಗೆ ಕೊಡು. ಸಾಲ ಕೇಳಬಂದವನಿಂದ ಮುಖ ತಿರುಗಿಸಿಕೊಳ್ಳಬೇಡ."

18.06.23

ಮೊದಲನೇ ವಾಚನ: ವಿಮೋಚನಕಾಂಡ 19:2-6

ಅವರು ರೆಫೀದೀಮನ್ನು ಬಿಟ್ಟು ಆ ಮರುಭೂಮಿಗೆ ಬಂದು ಅಲ್ಲಿನ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು. ಮೋಶೆ ಆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಬಂದನು. ಸರ್ವೇಶ್ವರಸ್ವಾಮಿ ಬೆಟ್ಟದ ಮೇಲಿಂದ ಕೂಗಿ ಅವನಿಗೆ, “ನೀನು ಯಕೋಬನ ಮನೆತನದವರಾದ ಇಸ್ರಯೇಲರಿಗೆ ಈ ಮಾತುಗಳನ್ನು ಹೇಳು: ‘ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ. ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲೂ ನನಗೆ ಸ್ವಕೀಯ ಜನರಾಗುವಿರಿ. ಅಲ್ಲದೆ ನೀವು ನನಗೆ ಯಾಜಕರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ.’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.

ಕೀರ್ತನೆ: 100: 1-2, 3, 5
ಶ್ಲೋಕ: ಸೃಷ್ಟಿಕರ್ತನ ಜನ, ಆತನೇ ಮೇಯಿಸುವ ಕುರಿಗಳು ನಾವು. 

ಎರಡನೇ ವಾಚನ: ರೋಮನರಿಗೆ 5: 6-11
ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗಮಾಡಿದರು. ನೀತಿವಂತನಿಗಾಗಿ ಒಬ್ಬನು ತನ್ನ ಪ್ರಾಣಕೊಡುವುದು ವಿರಳ. ಸತ್ಪುರುಷನಿಗಾಗಿ ಒಬ್ಬನು ತನ್ನ ಪ್ರಾಣವನ್ನು ಕೊಟ್ಟರೂ ಕೊಟ್ಟಾನು. ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ. ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ. ಹೀಗಿರಲಾಗಿ, ಬರಲಿರುವ ದೈವಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ? ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ? ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆ ಪಡುತ್ತೇವೆ.

ಶುಭಸಂದೇಶ: ಮತ್ತಾಯ 9: 35, 10:1-8

ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀ ಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾ ತರಹದ ರೋಗರುಜಿನಗಳನ್ನು ಗುಣಪಡಿಸಿದರು.ಯೇಸುಸ್ವಾಮಿ ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಆ ಹನ್ನೆರಡು ಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ; ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ; ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ. ಆ ಹನ್ನೆರಡು ಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: "ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ. ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳ

17.06.23 - ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆ ಹೋಯಿತೆ?”

 ಮೊದಲನೇ ವಾಚನ: ಯೆಶಾಯ: 61:9-11

ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.” ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು. ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.


1 ಸಮುವೇಲ 2:1, 4-8
ಶ್ಲೋಕ: ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ. 

ಶುಭಸಂದೇಶ: ಲೂಕ: 2:41-51


ಯೇಸುಸ್ವಾಮಿಯ ತಂದೆತಾಯಿಗಳು ಪ್ರತಿವರ್ಷವೂ ಪಾಸ್ಕಹಬ್ಬಕ್ಕೆ ಜೆರುಸಲೇಮಿಗೆ ಹೋಗುತ್ತಿದ್ದರು. ಯೇಸುವಿಗೆ ಹನ್ನೆರಡು ವರ್ಷವಾದಾಗ ವಾಡಿಕೆಯ ಪ್ರಕಾರ ಹಬ್ಬಕ್ಕೆ ಹೋದರು. ಹಬ್ಬ ಮುಗಿಸಿಕೊಂಡು ಅವರು ಹಿಂದಿರುಗಿ ಬರುವಾಗ ಬಾಲಕಯೇಸು ಜೆರುಸಲೇಮಿನಲ್ಲಿಯೇ ಉಳಿದುಬಿಟ್ಟರು. ಇದು ತಂದೆತಾಯಿಗಳಿಗೆ ತಿಳಿಯದು. ಮಗನು ಯಾತ್ರಿಕರ ಗುಂಪಿನಲ್ಲಿ ಬರುತ್ತಿರಬಹುದೆಂದು ಭಾವಿಸಿ ಒಂದು ದಿನದ ಪ್ರಯಾಣ ಬಂದುಬಿಟ್ಟಿದ್ದರು. ನಂತರ ಮಗನನ್ನು ಕಾಣದೆ ತಮ್ಮ ಬಂಧುಬಳಗದವರಲ್ಲೂ ಪರಿಚಿತರಲ್ಲೂ ಹುಡುಕಾಡಿದರು. ಅಲ್ಲೆಲ್ಲೂ ಕಾಣದೆ ಅವರನ್ನು ಹುಡುಕಿಕೊಂಡು ಜೆರುಸಲೇಮಿಗೆ ಮರಳಿ ಬಂದರು. ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು. ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು. ತಂದೆತಾಯಿಗಳು ಮಗನನ್ನು ಅಲ್ಲಿ ಕಂಡು ವಿಸ್ಮಯಗೊಂಡರು. ಆಗ ತಾಯಿಯು, “ಕಂದಾ, ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಪಟ್ಟು ನಿನ್ನನ್ನು ಹುಡುಕಾಡಿದೆವಲ್ಲಾ,” ಎಂದಳು. ಅದಕ್ಕೆ ಉತ್ತರವಾಗಿ ಯೇಸು, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆ ಹೋಯಿತೆ?” ಎಂದರು. ಆದರೆ ಅವರ ಮಾತು ತಂದೆತಾಯಿಗಳಿಗೆ ಅರ್ಥವಾಗಲಿಲ್ಲ. ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. 

16.06.23 - ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು. ಪ್ರವೇಶಿಸಲಾರಿರಿ

ಮೊದಲನೆಯ  ವಾಚನ : ಪೌಲನು  ಕೊರಿಂಥಿಯರಿಗೆ  ಬರೆದ  ಎರಡನೆಯ  ಪತ್ರದಿಂದ  ವಾಚನ 3:15-4:1, 3-6


" ಹೌದು,  ಮೋಶೆ  ಬರೆದುದನ್ನು  ಓದುವಾಗಲೆಲ್ಲಾ  ಅವರ  ಮನಸ್ಸು   ಇಂದಿಗೂ  ಅದೇ  ಮುಸುಕಿನಿಂದ  ಮುಚ್ಚಿದೆ.  ಪ್ರಭುವಿಗೆ  ಅಭಿಮುಖರಾದಾಗ  ಮಾತ್ರ  ಆ  ಮುಸುಕನ್ನು  ತೆಗೆಯಲಾಗುತ್ತದೆ.  ' ಈ  ವಾಕ್ಯದಲ್ಲಿ,  'ಪ್ರಭು'  ಎಂದರೆ  ದೇವರ  ಆತ್ಮವೇ.  ಪ್ರಭುವಿನ  ಆತ್ಮ  ಎಲ್ಲಿದೆಯೋ  ಅಲ್ಲಿ  ವಿಮೋಚನೆಯೂ  ಇದೆ.  ಮುಸುಕು  ತೆರೆದ  ಮುಖವುಳ್ಳ  ನಾವೆಲ್ಲರೂ  ಪ್ರಭುವಿನ ಮಹಿಮೆಯನ್ನು  ಪ್ರತಿಬಿಂಬಿಸುವ  ಕನ್ನಡಿಯಂತೆ  ಇದ್ದೇವೆ.  ಆ  ಪ್ರಭುವಿನಿಂದ  ಹೊರಹೊಮ್ಮುವ   ಮಹಿಮೆ  ನಮ್ಮನ್ನು  ಅಧಿಕಾಧಿಕವಾಗಿ  ಮಾರ್ಪಡಿಸಿ  ಅವರನ್ನೆ  ಹೋಲುವಂತೆ  ಮಾಡುತ್ತದೆ.  ಇದೆಲ್ಲಾ  ದೇವರಾತ್ಮವಾಗೀರುವ  ಪ್ರಭುವಿನ  ಕಾರ್ಯವೇ  ಸರಿ.

ದೇವರ  ಕರುಣೆಯಿಂದ  ಈ  ಸೇವೆಯನ್ನು  ಕೈಗೊಂಡಿರುವ  ನಾವು  ಧೈರ್ಯಗೆಟ್ಟು  ಹಿಂಜರಿಯುವುದಿಲ್ಲ.  ನಾವು  ಪ್ರಚಾರಮಾಡುವ  ಶುಭಸಂದೇಶ  ಕೆಲವರಿಗೆ  ಇನ್ನೂ  ಮುಸುಕಿನ  ಮರೆಯಾಗಿದ್ದರೆ,  ಹಾಗಿರುವುದು  ವಿನಾಶ  ಮಾರ್ಗದಲ್ಲಿರುವವರಿಗೆ  ಮಾತ್ರ.   ಇವರು  ವಿಶ್ವಾಸಿಸುವುದಿಲ್ಲ.  ಏಕೆಂದರೆ,  ಪೃಥ್ವಿಯ  ಮಿಥ್ಯ  ದೈವವು  ಇವರ  ಮನಸ್ಸನ್ನು  ಮಂಕಾಗಿಸಿದೆ;  ದೇವರ  ಪ್ರತಿರೂಪವಾಗಿರುವ  ಕ್ರಿಸ್ತ  ಯೇಸುವಿನ  ಮಹಿಮೆಯನ್ನು  ಸಾರುವ  ಶುಭಸಂದೇಶದ  ಬೆಳಕನ್ನು  ಕಾಣುವಂತೆ  ಇವರನ್ನು  ಕುರುಡಾಗಿಸಿದೆ.  ನಾವು  ನಮ್ಮನ್ನೇ  ಕುರಿತು  ಪ್ರಚಾರ  ಮಾಡುತ್ತಿಲ್ಲ.  ಆದರೆ  ಕ್ರಿಸ್ತ  ಯೇಸುವೇ  ಪ್ರಭುವೆಂದೂ  ಅವರಿಗೋಸ್ಕರ  ನಾವು  ನಿಮ್ಮ  ದಾಸರೆಂದೂ  ಪ್ರಚುರಪಡಿಸುತ್ತಿದ್ದೇವೆ.  " ಕತ್ತಲೆಯಿಂದ   ಬೆಳಕು  ಹೊಳೆಯಲಿ,  " ಎಂದ  ದೇವರೇ,  ತಮ್ಮ  ಜ್ಯೋತಿಯಿಂದ  ನಮ್ಮ  ಅಂತರಂಗವನ್ನು  ಬೆಳಗಿಸಿದ್ದಾರೆ.  ಇದರ  ಪರಿಣಾಮವಾಗಿ  ಕ್ರಿಸ್ತ  ಯೇಸುವಿನ  ಮುಖಮಂಡಲದಲ್ಲಿ  ಪ್ರಜ್ವಲಿಸುತ್ತಿರುವ  ದೇವರ  ಮಹಿಮೆಯ  ದಿವ್ಯಜ್ಞಾನವು  ನಮ್ಮಲ್ಲಿ  ಉದಯಿಸುವಂತಾಗಿದೆ.

- ಪ್ರಭುವಿನ  ವಾಕ್ಯ

ಕೀರ್ತನೆ    85:8-9,10-11,12-13,V.9

ಶ್ಲೋಕ:  ಪ್ರಭುವಿನ  ಮಹಿಮೆ  ನಾಡಿನಲ್ಲಿರುವುದು  ನಿರುತ|

1.  ನಾ ಕೇಳುತ್ತಿರುವೆನುಪ್ರಭು  ಹೇಳುವುದನು|

ತನ್ನ  ಜನರಿಗಾತ  ನುಡಿವುದು  ಶಾಂತಿಯನು||

ಭಯಭತ್ತಿಯುಳ್ಳವರಿಗಾತನ  ರಕ್ಕಣೆ  ಸನ್ನಿಹಿತ|

ಇದರಿಂದಾತನ  ಮಹಿಮೆ  ನಾಡಿನಲ್ಲಿರುವುದು  ನಿರುತ||


2.  ಪ್ರೀತಿಯೂ  ಸತ್ಯವೂ  ಒಂದಾನೊಂದು   ಕೂಡಿರುವುವು|

ನೀತಿಯೂ  ಶಾಂತಿಯೂ  ಒಂದಾನೊಂದು  ಚುಂಬಿಸುವುವು||

ಸತ್ಯತೆಯು  ಹುಟ್ಟುವುದು  ಭೂಮಿಯಿಂದ|

ನೀತಿಯು  ದೃಷ್ಟಿಸುವುದು  ಗಗನದಿಂದ ||

 

3.  ಪ್ರಭು ಕೊಟ್ಟೇತೀರುವನು  ಒಳಿತನು|

ನಮ್ಮ  ನಾಡು  ನೀಡುವುದು  ಬೆಳೆಯನು||

ನಡೆವುದು  ಪ್ರಭುವಿನ  ಮುಂದೆ  ನೀತಿ|

ಮಾಡುವುದು  ಆತನ  ಹೆಜ್ಜೆಗೆ  ಹಾದಿ||

ಘೋಷಣೆ             ಮತ್ತಾಯ 11:25

ಪಿತನೇ,  ಪರಲೋಕ  ಭೂಲೋಕಗಳ  ಒಡೆಯನೆ,  ಜ್ಜಾನಿಗಳಿಗೂ  ಮೇಧಾವಿಗಳಿಗೂ  ಈ  ವಿಷಯಗಳನ್ನು  ಮರೆಮಾಡಿ,  ಮಕ್ಕಳಂತವರಿಗೆ  ನೀವು  ಶ್ರುತಪಡಿಸಿದ್ದೀರಿ ;  ಇದಕ್ಕಾಗಿ  ನಿಮ್ಮನ್ನು  ವಂದಿಸುತ್ತೇನೆ,

ಅಲ್ಲೆಲೂಯ!

ಶುಭಸಂದೇಶ  : ಮತ್ತಾಯನು  ಬರೆದ  ಪವಿತ್ರ  ಶುಭಸಂದೇಶದಿಂದ  ವಾಚನ 5:20-26



ಆ  ಕಾಲದಲ್ಲಿ  ಯೇಸು  ತಮ್ಮ  ಶಿಷ್ಯರಿಗೆ  ಹೇಳಿದ್ದೇನೆಂದರೆ : " ಧರ್ಮಶಾಸ್ತ್ರಿಗಳ  ಹಾಗೂ  ಫರಿಸಾಯರ  ಧರ್ಮನಿಷ್ಠೆಗಿಂತ  ನಿಮ್ಮ  ಧರ್ಮನಿಷ್ಠೆ  ಉತ್ತಮವಾಗದ  ಹೊರತು  ನೀವು  ಸ್ವರ್ಗಸಾಮ್ರಾಜ್ಯವನ್ನು. ಪ್ರವೇಶಿಸಲಾರಿರಿ  ಎಂಬುದು  ನಿಶ್ಚಯ.  ' ನರಹತ್ಯೆ  ಮಾಡುವವನು  ನ್ಯಾಯತೀರ್ಪಿಗೆ  ಗುರಿಯಾಗುವನು'  ಎಂದು  ಪೂರ್ವಿಕರಿಗೆ  ಹೇಳಿದ್ದನ್ನು  ನೀವು  ಕೇಳಿದ್ದೀರಿ.  ಆದರೆ  ನಾನೀಗ  ನಿಮಗೆ  ಹೇಳುತ್ತೇನೆ,  ಕೇಳಿ:

ತನ್ನ  ಸೋದರನ  ಮೇಲೆ  ನಿಷ್ಠಾರಣವಾಗಿ  ಕೋಪಗೊಳ್ಳುವ  ಪ್ರತಿಯೊಬ್ಬನೂ  ನ್ಯಾಯತೀರ್ಪಿಗೆ  ಈಡಾಗುವನು ;  ತನ್ನ  ಸೋದರನನ್ನು  ತುಚ್ಛೀಕರಿಸುವವನು   ನ್ಯಾಯಸಭೆಯ  ವಿಚಾರಣೆಗೆ  ಒಳಗಾಗುವನು ;  'ಮೂರ್ಖ'  ಎಂದು  ಮೂದಲಿಸುವವನು  ನರಕಾಗ್ನಿಗೆ  ಗುರಿಯಾಗುವನು.  ಆದಕಾರಣ,  ಬಲಿಪೀಠದ  ಮುಂದೆ  ದೇವರಿಗೆ  ಕಾಣಿಕೆಯನ್ನು  ಅರ್ಪಿಸಲಿರುವಾಗ,  ನಿನ್ನ  ಸೋದರನಿಗೆ  ನಿನ್ನ  ಮೇಲೆ  ಏನೋ  ಮನಸ್ತಾಪವಿದೆ  ಎಂಬುದು  ನಿನ್ನ  ನೆನಪಿಗೆ  ಬಂದರೆ,  ನಿನ್ನ  ಕಾಣಿಕೆಯನ್ನು  ಆ  ಬಲಿಪೀಠದ  ಮುಂದೆಯೇ  ಇಟ್ಟುಬಿಡು.  ಮೊದಲು  ಹೋಗಿ  ನಿನ್ನ  ಸೋದರನೊಡನೆ  ಸಮಾಧಾನಮಾಡಿಕೊ  ಅನಂತರ  ಬಂದು  ನಿನ್ನ  ಕಾಣಿಕೆಯನ್ನು  ಒಪ್ಪಿಸು.  ನಿನ್ನ  ಎದುರಾಳಿ  ನಿನ್ನನ್ನು  ನ್ಯಾಯಸ್ಥಾನಕ್ಕೆ  ಎಳೆಯುವಾಗ  ಮಾರ್ಗಮಧ್ಯದಲ್ಲೇ  ಅವನೊಡನೆ  ಬೇಗ  ಸಂಧಾನಮಾಡಿಕೊ.  ಇಲ್ಲದಿದ್ದರೆ,  ಅವನು  ನಿನ್ನನ್ನು  ನ್ಯಾಯಧಿಪತಿಗೆ  ಒಪ್ಪಿಸಬಹುದು.  ನ್ಯಾಯಾಧಿಪತಿ  ನಿನ್ನನ್ನು  ಪೋಲೀಸರ  ವಶಕ್ಕೆ  ಬಿಡಬಹುದು.  ಅನಂತರ  ನಿನಗೆ  ಸೆರೆವಾಸ  ಪ್ರಾಪ್ತವಾದೀತು !  ಅಲ್ಲಿಂದ  ನೀನು  ಹೊರಗೆ  ಬರಬೇಕಾದರೆ  ಬಿಡಿಕಾಸನ್ನೂ  ಬಿಡದೆ  ಎಲ್ಲವನ್ನೂ  ತೆರಬೇಕಾಗುವುದು.   ಇದನ್ನು ನೆನಪಿನಲ್ಲಿಡು."

ಪ್ರಭುಕ್ರಿಸ್ತರ  ಶುಭಸಂದೇಶ