ಮೊದಲನೆಯ ವಾಚನ: 2 ಕೊರಿಂಥಿಯರಿಗೆ 1:18-22
ಸಹೋದರರೇ ನಾನು ನಿಮಗೆ ಕೊಟ್ಟ ಮಾತು ದ್ವಂದ್ವಾರ್ಥವುಳ್ಳದಾಗಿರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ. ನಾವು, ಅಂದರೆ ಸಿಲ್ವಾನ, ತಿಮೋಥೇಯ ಮತ್ತು ನಾನು, ಪ್ರಚಾರಮಾಡಿದ ದೇವರ ಪುತ್ರರಾದ ಯೇಸುಕ್ರಿಸ್ತರು, ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವರಲ್ಲ , ಅವರು ದೇವರ ತಥಾಸ್ತು ಆಗಿದ್ದಾರೆ. ಏಕೆಂದರೆ, ದೇವರು ಮಾಡಿದ ಸಮಸ್ತ ವಾಗ್ದಾನಗಳಿಗೂ 'ಹೌದು' ಎಂಬ ಉತ್ತರ ಸಾಕ್ಷತ್ ಅವರೇ. ಈ ಕಾರಣದಿಂದಲೇ ನಾವು ದೇವರ ಮಹಿಮೆಯನ್ನು ಸಾರುವಾಗ ಯೇಸುಕ್ರಿಸ್ತರ ಮುಖಾಂತರವೇ 'ಆಮೆನ್' ಎನ್ನುತ್ತೇವೆ. ನಿಮ್ಮನ್ನೂ ನಮ್ಮನ್ನೂ ಕ್ರಿಸ್ತ ಯೇಸುವಿನಲ್ಲಿ ಒಂದಾಗಿಸಿ ಸ್ಥಿರಪಡಿಸಿದವರು ದೇವರೇ. ನಮ್ಮನ್ನು ಅಭಿಷೇಕಿಸಿದವರೂ, ಮೀಸಲಾಗಿಟ್ಟವರೂ ದೇವರೇ. ಅವರೇ ನಮ್ಮ ಮೇಲೆ ತಮ್ಮ ಮುದ್ರೆಯನ್ನೊತ್ತಿ, ನಮ್ಮ ಅಂತರಂಗದಲ್ಲಿ ಪವಿತ್ರಾತ್ಮ ಅವರನ್ನು ಖಾತರಿಯಾಗಿ ಇರಿಸಿದ್ದಾರೆ.
ಕೀರ್ತನೆ: 119:129-130,131-132,133,135. V.135
ಶ್ಲೋಕ: ತೋರು ನಿನ್ನ ಮುಖದರ್ಶನ ಈ ದಾಸನಿಗೆ |
ಅಪೂರ್ವವಾದ ನಿನ್ನ ಕಟ್ಟಳೆಗಳನು|
ಹೃತ್ಪೂರ್ವಕವಾಗಿ ನಾ ಪಾಲಿಸುವೆನು||
ತರುವುದು ನಿನ್ನ ವಾಕ್ಯೋಪದೇಶ|
ಸರಳ ಜನರಿಗೆ ಜ್ಞಾನಪ್ರಕಾಶ||
ಬಾಯ್ದೆರೆದು ಹಾತೊರೆಯುತಿರುವೆ|
ನಿನ್ನ ಆಜ್ಞೆಗಳನು ಅರಸುತಿರುವೆ||
ನಿನ್ನ ನಾಮಪ್ರಿಯರಿಗೆ ಮಾಡುವಂತೆ|
ನನಗಭಿಮುಖನಾಗಿ ತೋರು ನೀ ಮಮತೆ||
ನಿನ್ನ ನುಡಿಗನುಸಾರ ದೃಢಪಡಿಸು ನನ್ನ ನಡತೆಯನು|
ಕೆಡುಕೊಂದೂ ಅಧೀನಪಡಿಸದಿರಲಿ ನನ್ನನ್ನು||
ತೋರು ನಿನ್ನ ಮುಖದರ್ಶನ ಈ ದಾಸನಿಗೆ|
ನೀ ಕಲಿಸು ನಿನ್ನ ನಿಬಂಧನೆಗಳನು ಎನಗೆ||
ಘೋಷಣೆ ಕೀರ್ತನೆ 147:15
ಅಲ್ಲೆಲೂಯ, ಅಲ್ಲೆಲೂಯ!
ಧನ್ಯವಾದವಿತ್ತು ಹಾಡಿರಿ ಪ್ರಭುವನು | ಕಳಿಸುವನು ಧರೆಗೆ ತನ್ನ ಆಣತಿಯನು ||
ಶುಭಸಂದೇಶ: ಮತ್ತಾಯ 5:13-16
ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: " ಈ ಧರೆಗೆ ನೀವೇ ಉಪ್ಪು ; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿ ಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ. ದಾರಿಗರು ಅದನ್ನು ತುಳಿದುಬಿಡುತ್ತಾರಷ್ಟೆ. ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು. ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲಿ ಕೆಳಗೆ ಬಚ್ಚಿಡುವುದಿಲ್ಲ ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ. ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.
Subscribe to:
Post Comments (Atom)
15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ
ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...
No comments:
Post a Comment