ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

05.07.23 - "ಆಗ ಊರಿಗೆ ಊರೇ ಯೇಸುವನ್ನು ನೋಡಲು ಬಂದಿತು"

ಮೊದಲನೇ ವಾಚನ: ಆದಿಕಾಂಡ 21:5, 8-20

ಇಸಾಕನು ಹುಟ್ಟಿದಾಗ ಅಬ್ರಹಾಮನಿಗೆ ನೂರು ವರ್ಷವಾಗಿತ್ತು. ಕ್ರಮೇಣ ಆ ಮಗು ಬೆಳೆದು ಹಾಲು ಕುಡಿಯುವುದನ್ನು ಬಿಟ್ಟಿತು. ಇಸಾಕನು ಮೊಲೆ ಬಿಟ್ಟ ಆ ದಿನದಂದು ಅಬ್ರಹಾಮನು ದೊಡ್ಡ ಔತಣವನ್ನು ಏರ್ಪಡಿಸಿದ್ದನು. ಈಜಿಪ್ಟಿನ ಹಾಗರಳಿಂದ ಅಬ್ರಹಾಮನಿಗೆ ಹುಟ್ಟಿದ ಹುಡುಗನು ತನ್ನ ಮಗ ಇಸಾಕನೊಡನೆ ನಕ್ಕುನಲಿದಾಡುವುದನ್ನು ಸಾರಳು ಕಂಡಳು. ಆಕೆ ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಮನೆಯಿಂದ ಕಳುಹಿಸಿಬಿಡಿ. ದಾಸಿಯ ಮಗನು ನನ್ನ ಮಗನೊಂದಿಗೆ ಹಕ್ಕು ಬಾಧ್ಯಸ್ಥನಾಗಬಾರದು,” ಎಂದು ಹೇಳಿದಳು. ಈ ಮಾತನ್ನು ಕೇಳಿ ಅಬ್ರಹಾಮನಿಗೆ ಬಹು ದುಃಖವಾಯಿತು. ಕಾರಣ - ಆ ದಾಸಿಯ ಮಗನೂ ಅವನ ಸ್ವಂತ ಮಗನಾಗಿದ್ದನು. ಆದರೆ ದೇವರು, ಅಬ್ರಹಾಮನಿಗೆ, “ನಿನ್ನ ಮಗನ ಹಾಗೂ ದಾಸಿಯ ಬಗ್ಗೆ ನಿನಗೆ ಚಿಂತೆಬೇಡ; ಸಾರಳು ಹೇಳಿದಂತೆಯೇ ಮಾಡು, ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು. ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದ್ದರಿಂದ ಅವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದರು. ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು. ತಿತ್ತಿಯಲ್ಲಿದ್ದ ನೀರು ಮುಗಿದುಹೋಯಿತು. ಮಗು ಸಾಯುವುದನ್ನು ನಾನು ನೋಡಲಾರೆ ಎಂದುಕೊಂಡು, ಅವಳು ಆ ಮಗುವನ್ನು ಒಂದು ಗಿಡದ ನೆರಳಿನಲ್ಲಿ ಬಿಟ್ಟು ಒಂದು ಬಾಣವನ್ನೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು ಗಟ್ಟಿಯಾಗಿ ಅತ್ತಳು. ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು; ನೀನೆದ್ದು ಹೋಗಿ ಅವನನ್ನು ಎತ್ತಿಕೊ; ಅವನನ್ನು ಕೈ ಬಿಡಬೇಡ; ಅವನಿಂದ ಒಂದು ದೊಡ್ಡ ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದನು. ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದರು; ನೀರಿನ ಬಾವಿಯೊಂದು ಅವಳಿಗೆ ಕಾಣಿಸಿತು; ತಿತ್ತಿಯಲ್ಲಿ ನೀರನ್ನು ತುಂಬಿಸಿಕೊಂಡು ಹೋಗಿ ಆ ಹುಡುಗನಿಗೆ ಕುಡಿಸಿದಳು. ಹುಡುಗನ ಸಂಗಡ ದೇವರಿದ್ದರು.

ಕೀರ್ತನೆ: 34:6-7, 9-10, 11-12
ಶ್ಲೋಕ: ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು. 

ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು I
ಕಾಯುವನು ಪ್ರಭುವಿನ ದೂತನೆ ಬಂದಿಳಿದು II
ಸವಿದು ನೋಡು ಪ್ರಭುವಿನ ಮಾಧುರ್ಯವನು I
ಆತನನು ಆಶ್ರಯಿಸಿಕೊಂಡವನು ಧನ್ಯನು II

ದೇವಜನರೆ, ನಿಮಗಿರಲಿ ಪ್ರಭುವಿನ ಭಯಭಕುತಿ I
ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ II
ಯುವ ಕೇಸರಿಗೆ ಇರಬಹುದು ಹಸಿವು, ದಾಹ I
ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II

ಬನ್ನಿ ಮಿತ್ರರೇ, ಆಲಿಸಿರೀ ಮಾತನು I
ಕಲಿಸುವೆನು ನಾ ನಿಮಗೆ ದೇವ ಭಯವನು II
ಎಲೆ ಮಾನವ, ಬಲುದಿನ ಬಾಳಲು ಬಯಸುವೆಯಾ? I
ಆಯುರಾರೋಗ್ಯ ಭಾಗ್ಯವನು ಆಶಿಸುವೆಯಾ? II

ಕಾದಿಡು ನಾಲಿಗೆಯನು ಕೇಡನು ಆಡದಂತೆ I
ಬಿಗಿಯಿಡು ತುಟಿಯನ್ನು ಕುಟಿಲವನು ನುಡಿಯದಂತೆ II

ಶುಭಸಂದೇಶ: ಮತ್ತಾಯ 8:28-34


ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ಕಡೆಯಿದ್ದ ಗದರೇನ ಎಂಬ ಪ್ರಾಂತ್ಯಕ್ಕೆ ಬಂದರು. ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಹೊರಬಂದು ಅವರಿಗೆ ಎದುರಾದರು. ಅವರಿಬ್ಬರೂ ಮಹಾಕ್ರೂರಿಗಳು. ಈ ಕಾರಣ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ. ಅವರು ಯೇಸುವನ್ನು ನೋಡಿದೊಡನೆಯೇ "ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತ ಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?" ಎಂದು ಕೂಗಿಕೊಂಡರು. ಹಂದಿಗಳ ದೊಡ್ಡ ಹಿಂಡೊಂದು ಅಲ್ಲಿಂದ ಸ್ವಲ್ಪ ದೂರದಲ್ಲೇ ಮೇಯುತ್ತಿತ್ತು. "ನೀವು ನಮ್ಮನ್ನು ಹೊರದೂಡಿದ್ದೇ ಆದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ," ಎಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು. ಯೇಸು, "ಹೋಗಿ" ಎಂದು ಅಪ್ಪಣೆಯಿತ್ತರು. ದೆವ್ವಗಳು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆ ಕ್ಷಣವೇ ಆ ಹಿಂಡೆಲ್ಲಾ ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ, ಸರೋವರಕ್ಕೆ ಬಿದ್ದು, ನೀರುಪಾಲಾಗಿ ಹೋಯಿತು. ಹಂದಿ ಮೇಯಿಸುತ್ತಿದ್ದವರು ಅಲ್ಲಿಂದ ಪಲಾಯನ ಮಾಡಿ ಊರಿಗೆ ಓಡಿಹೋಗಿ ನಡೆದದ್ದೆಲ್ಲವನ್ನೂ ಮತ್ತು ದೆವ್ವ ಮೆಟ್ಟಿದ್ದವರಿಗೆ ಸಂಭವಿಸಿದ್ದನ್ನೂ ವರದಿಮಾಡಿದರು. ಆಗ ಊರಿಗೆ ಊರೇ ಯೇಸುವನ್ನು ನೋಡಲು ಬಂದಿತು. ಅವರನ್ನು ಕಂಡು ತಮ್ಮ ಆಸುಪಾಸನ್ನು ಬಿಟ್ಟು ಹೋಗಬೇಕೆಂದು ಮನವಿ ಮಾಡಿಕೊಂಡಿತು.

No comments:

Post a Comment