06.08.23 - "ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು"

ಮೊದಲನೇ ವಾಚನ: ದಾನಿಯೇಲ 7:9-10, 13-14

ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.  ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು. ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು. ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!

ಕೀರ್ತನೆ: 97:1-2, 5-6, 9
ಶ್ಲೋಕ: ಪ್ರಭುವೇ, ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ

ಇದೆ ಪ್ರಭುವಿನ ಕೈಯಲ್ಲಿ ರಾಜ್ಯಾಧಿಕಾರ
ಉಲ್ಲಾಷಿಸಲಿ ಧರಣಿಮಂಡಲದಾದ್ಯಂತ
ಸಂತೋಷಿಸಲಿ ಕಡಲಿನ ದ್ವೀಪಗಳೆಲ್ಲ
ಇವೆ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲೂ
ನ್ಯಾಯನೀತಿ ಆತನ ಗದ್ದುಗೆಯಸ್ತಿವಾರಗಳು

ಸಾರ್ವಭೌಮನಾದ ಪ್ರಭುವಿನ ಮುಂದೆ
ಕರಗುತ್ತಿವೆ ಬೆಟ್ಟಗುಡ್ಡಗಳು ಮೇಣದಂತೆ
ಘೋಷಿಸುತ್ತಿದೆ ಗಗನಮಂಡಲ ಆತನ ನೀತಿಯನು
ಕಾಣುತ್ತವೆ ಸಕಲ ಜನಾಂಗ ಆತನ ಮಹಿಮೆಯನು

ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ
ಮಹೋನ್ನತನು ನೀನು ದೇವರುಗಳಿಗೆಲ್ಲಾ


ಎರಡನೇ ವಾಚನ: ಪೇತ್ರ 1:16-19

ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ.  ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, “ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು.  ಆಗ ನಾವು ಆ ಪುನೀತ ಪರ್ವತದ ಮೇಲೆ ಅವರೊಡನೆ ಇದ್ದೆವು. ಸ್ವರ್ಗದಿಂದ ಆ ವಾಣಿಯನ್ನು ನಾವು ಕೇಳಿದೆವು. ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.

ಶುಭಸಂದೇಶ: ಮತ್ತಾಯ 17:1-9


ಪೇತ್ರ, ಯಕೋಬ ಮತ್ತು ಆತನ ಸಹೋದರ ಯೊವಾನ್ನ ಇವರನ್ನು ಯೇಸುಸ್ವಾಮಿ ಪ್ರತ್ಯೇಕವಾಗಿ ತಮ್ಮೊಡನೆ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು. ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರು, ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತು. ಇದ್ದಕ್ಕಿದ್ದ ಹಾಗೆ ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಅವರಿಗೆ ಕಾಣಿಸಿತು. ಆಗ ಪೇತ್ರನು ಯೇಸುವಿಗೆ, “ಪ್ರಭೂ, ನಾವು ಇಲ್ಲೇ ಇರುವುದು ಎಷ್ಟು ಒಳ್ಳೆಯದು! ಅಪ್ಪಣೆಯಾದರೆ ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ತಮಗೊಂದು, ಮೋಶೆಗೊಂದು, ಎಲೀಯನಿಗೊಂದು,” ಎಂದನು. ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು. ಶಿಷ್ಯರು ಈ ವಾಣಿಯನ್ನು ಕೇಳಿ ಭಯಭ್ರಾಂತರಾದರು; ಬೋರಲು ಬಿದ್ದರು. ಆಗ ಯೇಸು ಅವರ ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿ, ಭಯಪಡಬೇಡಿ,” ಎಂದರು. ಅವರು ಕಣ್ಣೆತ್ತಿ ನೋಡಿದಾಗ ಯೇಸುವನ್ನು ಬಿಟ್ಟು ಮತ್ತೆ ಯಾರನ್ನೂ ಕಾಣಲಿಲ್ಲ. ಅವರೆಲ್ಲರು ಬೆಟ್ಟದಿಂದ ಇಳಿದುಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು. 

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...