ಮೊದಲನೇ ವಾಚನ: ಯೆಹೋಶುವ 24:14-29
"ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆ ಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಪ್ರಟೀಸ್ ನದಿಯಾಚೆ ಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದು ಬಿಡಿ. ಸರ್ವೇಶ್ವರನಿಗೆ ಸೇವೆ ಸಲ್ಲಿಸಿರಿ. ನಿಮಗೆ ಇದು ಸರಿ ಕಾಣದಿದ್ದರೆ ಯಾರಿಗೆ ಸೇವೆ ಸಲ್ಲಿಸಬೇಕೆಂದಿದ್ದೀರಿ ಇಂದೇ ಆರಿಸಿಕೊಳ್ಳಿ; ನಿಮ್ಮ ಪೂರ್ವಜರು ಯೂಪ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೆ ಸೇವೆ ಸಲ್ಲಿಸುತ್ತೇವೆ," ಎಂದನು. ಅದಕ್ಕೆ ಜನರು, "ಸರ್ವೇಶ್ವರನನ್ನು ಬಿಟ್ಟು ಅನ್ಯ ದೇವತೆಗಳಿಗೆ ಸೇವೆ ಸಲ್ಲಿಸುವುದು ನಮ್ಮಿಂದ ದೂರವಿರಲಿ. ನಾವು ದಾಸತ್ವದಲ್ಲಿದ್ದ ಈಜಿಪ್ಟಿನಿಂದ ನಮ್ಮನ್ನೂ ನಮ್ಮ ಪೂರ್ವಜರನ್ನೂ ಹೊರ ತಂದವರು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ. ನಮ್ಮೆದುರಿನಲ್ಲೇ ಅವರು ಮಾಡಿದ ಅದ್ಬುತ ಕಾರ್ಯಗಳನ್ನು ನೋಡಿದ್ದೇವೆ. ನಮ್ಮ ಎಲ್ಲಾ ಪ್ರಯಾಣಗಳಲ್ಲೂ ನಾವು ದಾಟಿಬಂದ ಜನಾಂಗಗಳಿಂದ ನಮ್ಮನ್ನು ಕಾಪಾಡಿದವರು ಅವರೇ. ಈನಾಡಿನ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆ ಸಲ್ಲಿಸುತ್ತೇವೆ. ಅವರೇ ನಮ್ಮ ದೇವರು," ಎಂದು ಉತ್ತರಕೊಟ್ಟರು. ಆಗ ಯೆಹೋಶುವನು ಅವರಿಗೆ, "ನೀವು ಸರ್ವೇಶ್ವರನಿಗೆ ಸೇವೆ ಸಲ್ಲಿಸಲು ಶಕ್ತರಲ್ಲ. ಸರ್ವೇಶ್ವರ ಸ್ವಾಮಿ ಪರಿಶುದ್ದರು; ತಮಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಪಾಪ, ಅಪರಾಧಗಳನ್ನು ಕ್ಷಮಿಸುವರು. ನೀವು ಅವರನು ಬಿಟ್ಟು ಅನ್ಯ ದೇವತೆಗಳಿಗೆ ಸೇವೆ ಸಲ್ಲಿಸಿದರೆ ನಿಮಗೆ ವಿಮುಖರಾಗಿ, ಒಳಿತಿಗೆ ಬದಲಾಗಿ ಕೇಡನ್ನೇ ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವರು," ಎಂದನು. ಜನರು ಯೆಹೋಶುವನಿಗೆ, "ಇಲ್ಲ ನಾವು ಸರ್ವೇಶ್ವರ ಸ್ವಾಮಿಗೇ ಸೇವೆ ಸಲ್ಲಿಸುತ್ತೇವೆ," ಎಂದರು. ಯೆಹೋಶುವ ಅವರಿಗೆ, "ನೀವು ಸರ್ವೇಶ್ವರನಿಗೇ ಸೇವೆ ಸಲ್ಲಿಸುವುದನ್ನು ಆರಿಸಿ ಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು," ಎನ್ನಲು ಅವರು, "ಹೌದು, ನಾವೇ ಸಾಕ್ಷಿಗಳು," ಎಂದು ಉತ್ತರ ಕೊಟ್ಟರು. ಆಗ ಯೆಹೋಶುವ, ಹಾಗಾದರೆ ನಿಮ್ಮಲ್ಲಿರುವ ಅನ್ಯ ದೇವತೆಗಳನ್ನು ತೊರೆದು ಬಿಟ್ಟು ಇಸ್ರಯೇಲಿನ ದೇವರಾದ ಸರ್ವೇಶ್ವರನ ಕಡೆಗೆ ನಿಮ್ಮ ಹೃನ್ಮನಗಳನ್ನು ತಿರುಗಿಸಿಕೊಳ್ಳಿ," ಎಂದನು. ಅದಕ್ಕೆ ಜನರು, "ನಮ್ಮ ದೇವರಾದ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ರೇವೆ. ಅವರ ಮಾತನ್ನೇ ಕೇಳುತ್ತೇವೆ," ಎಂದರು. ಹೀಗೆ ಯೆಹೋಶುವ ಶೆಕೆಮಿನಲ್ಲಿ ಇಸ್ರಯೇಲರೊಡನೆ ಒಪ್ಪಂದ ಮಾಡಿಕೊಂಡು ಅವರಿಗೆ ವಿಧಿ ನಿಯಮಗಳನ್ನು ನೇಮಿಸಿದನು. ಇದು ಮಾತ್ರವಲ್ಲ, ಈ ಎಲ್ಲಾ ಮಾತುಕತೆಯನ್ನು ದೇವರ ಧರ್ಮಶಾಸ್ತ್ರಗ್ರಂಥಲ್ಲಿ ಬರೆದಿಟ್ಟನು. ಒಂದು ದೊಡ್ಡ ಕಲ್ಲನ್ನು ಸರ್ವೇಶ್ವರನ ಆಲಯದ ಹತ್ತಿರದಲ್ಲೇ ಇದ್ದ ಓಕ್ ವೃಕ್ಷದ ಅಡಿಯಲ್ಲಿ ನಿಲ್ಲಿಸಿದನು. ಬಳಿಕ ಎಲ್ಲಾ ಜನರಿಗೆ, "ಇಗೋ, ನೋಡಿ ಈ ಕಲ್ಲು! ಇದು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಸರ್ವೇಶ್ವರ ನಮಗೆ ಹೇಳಿದ ಎಲ್ಲ ಮಾತುಗಳನ್ನು ಇದು ಕೇಳಿದೆ. ಆದ್ದರಿಂದ ನೀವು ನಿಮ್ಮ ದೇವರಾದ ಅವರನ್ನು ಅಲ್ಲಗಳೆದುದ್ದೇ ಆದರೆ ಈ ಕಲ್ಲೇ ನಿಮಗೆ ಸಾಕ್ಷಿಯಾಗಿರುವುದು," ಎಂದು ಹೇಳಿ ಆ ಜನರನ್ನು ಅವರವರ ಸೊತ್ತಿದ್ದಲ್ಲಿಗೆ ಕಳುಹಿಸಿಬಿಟ್ಟನು. ಇದಾದ ಮೇಲೆ ಸರ್ವೇಶ್ವರನ ದಾಸನಾದ ನೂನನ ಮಗ ಯೆಹೋಶುವನು ನೂರ ಹತ್ತು ವರ್ಷದವನಾಗಿ ಮರಣ ಹೊಂದಿದ.
ಕೀರ್ತನೆ: 16:1-2, 5, 7-8, 11
ಶ್ಲೋಕ: ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ
ಶುಭಸಂದೇಶ: ಮತ್ತಾಯ 19:13-15
ಆನಂತರ ಕೆಲವರು ಚಿಕ್ಕಮಕ್ಕಳನ್ನು ಯೇಸುಸ್ವಾಮಿಯ ಬಳಿಗೆ ತಂದರು. ಶಿಷ್ಯರು ಅವರನ್ನು ಗದರಿಸಿದರು. ಆಗ ಯೇಸು, "ಚಿಕ್ಕ ಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ. ಸ್ವರ್ಗ ಸಾಮ್ರಾಜ್ಯ ಇಂಥವರದೇ," ಎಂದರು. ತರುವಾಯ ಆ ಮಕ್ಕಳ ಮೇಲೆ ಕೈ ಇಟ್ಟು ಆಶೀರ್ವದಿಸಿದರು. ಬಳಿಕ ಅಲ್ಲಿಂದ ಹೊರಟು ಹೋದರು.
No comments:
Post a Comment