ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

31.08.23 - " ಎಚ್ಚರಿಕೆಯಿಂದಿರಿ, ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು"

ಮೊದಲನೆಯ ವಾಚನ: 1 ಥೆಸಲೋನಿಯರಿಗೆ 3:7-13


ಸಹೋದರರೇ, ನಾವು ಕಷ್ಟಸಂಕಟಗಳನ್ನು ಅನುಭವಿಸುತ್ತಿದರೂ ನಿಮ್ಮ ವಿಶ್ವಾಸವನ್ನು ಕುರಿತು ಕೇಳಿ ನಮಗೆ ಸಮಾಧಾನವಾಯಿತು. ನೀವು ಪ್ರಭುವಿನಲ್ಲಿ ಅಚಲರಾಗಿರುವುದನ್ನು ಕೇಳಿ ಪುನಶ್ಚೇತನಗೊಂಡಿದ್ದೇವೆ. ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು. ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ವಿಶ್ವಾಸದಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ನಾವು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ. ಪಿತನಾದ ದೇವರೂ ಪ್ರಭುವಾದ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ನಮ್ಮ ಮಾರ್ಗವನ್ನು ಸುಗಮಗೊಳಿಸಲಿ. ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ದಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ದಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ, ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನಾರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವು ಸಹ ಪರಿಶುದ್ದರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.

ಕೀರ್ತನೆ 90:3-4, 12-13, 14-17
ಶ್ಲೋಕ: ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ.

ಇಳೆಯ ಮಾನವರನು ನೀ ಮಣ್ಣು ಪಾಲಾಗಿಸುತಿಹೆ,
' ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ ' ಎನ್ನುತಿಹೆ,,
ನಿನ್ನ ದೃಷ್ಟಿಯಲಿ ಪ್ರಭೂ, ಸಹಸ್ರ ವರುಷ,
ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ,,

ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು,
ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು,
ಪ್ರಭೂ, ತಿರುಗಿ ಬಾ, ಕೋಪವೆಷ್ಟರ ತನಕ?,
ನಿನ್ನೀ ಸೇವಕರ ಮೇಲಿರಲಿ ಮರುಕ,,

ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ,
ಹರ್ಷಿಸಿ ಆನಂದಿಸುವೆವು ಆಗ ದಿನದಾದ್ಯಂತ,,
ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ,
ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ,,

ಶುಭಸಂದೇಶ: ಮತ್ತಾಯ 24:42-51


ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: " ಎಚ್ಚರಿಕೆಯಿಂದಿರಿ, ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ. ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಹಾಕಲು ಬಿಡನು, ಅಲ್ಲವೆ ? ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು. ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು ? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು. ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಮೇಸ್ತ್ರಿ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು. ಅಂಥವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುತ್ತಾನೆಂಬುದು ನಿಶ್ಚಯ. ಆದರೆ ಆ ಮೇಸ್ತ್ರಿ ದುಷ್ಟನಾಗಿದ್ದು ' ನನ್ನ ಯಜಮಾನ ತಡಮಾಡುವನು ' ಎಂದು ನೆನೆಸಿಕೊಂಡು, ತನ್ನ ಜೊತೆಯ ಸೇವಕರನ್ನು ಹೊಡೆಯತೊಡಗಿದರೆ, ಕುಡುಕರ ಸಂಗಡ ತಿಂದು ಕುಡಿಯಲಾರಂಭಿಸಿದರೆ, ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ, ಯಜಮಾನನು ಬರುವನು. ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು."

No comments:

Post a Comment