ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

02.10.23 - " ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ,"

ಮೊದಲನೆಯ ವಾಚನ: ಜೆಕರ್ಯ 8:1-8


ಸೇನಾಧೀಶ್ವರ ಸರ್ವೇಶ್ವರ ಜೆಕರ್ಯನಿಗೆ ಪುನಃ ಕೊಟ್ಟ ಸಂದೇಶವಿದು : " ಸಿಯೋನಿನ ವಿಷಯದಲ್ಲಿ ನನಗೆ ತುಂಬಾ ಅಭಿಮಾನವಿದೆ. ಅದರ ಶತ್ರುಗಳ ವಿಷಯದಲ್ಲಿ ಅಧಿಕ ರೋಷವಿದೆ. " ಸರ್ವೇಶ್ವರ ಇಂತೆನ್ನುತ್ತಾರೆ : " ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ' ನಿಷ್ಠಾವಂತ ನಗರ ' ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರ ಸರ್ವೇಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು. ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ : " ಮುದುಕರು, ಮುದುಕಿಯರು ಮತ್ತೆ ಜೆರುಸಲೇಮಿನ ಚೌಕಗಳಲ್ಲಿ ಕುಳಿತುಕೊಳ್ಳುವರು. ವೃದ್ಧಾಪ್ಯದ ಪ್ರಯುಕ್ತ ಒಬ್ಬೊಬ್ಬರ ಕೈಯಲ್ಲಿ ಊರುಗೋಲು ಇರುವುದು. ಪಟ್ಟಣದ ಹಾದಿಬೀದಿಗಳಲ್ಲಿ ಮಕ್ಕಳು ತುಂಬಿಕೊಂಡಿರುವರು. " ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ : ಅಳಿದುಳಿದಿರುವ ಜನರಿಗೆ ಇಂಥ ಪರಿಸ್ಥಿತಿ ಅತಿಶಯವಾಗಿ ಕಾಣಬಹುದು. ಆದರೆ ನನಗೆ ಅದೇನೂ ಅತಿಶಯವಲ್ಲ. " ಇದು ಸರ್ವೇಶ್ವರನ ನುಡಿ. ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ. " ಇಗೋ, ನಾನು ನನ್ನ ಜನರನ್ನು ಪೂರ್ವ ಪಶ್ಚಿಮ ನಾಡುಗಳಿಂದ ಬಿಡುಗಡೆಮಾಡಿ, ಇಲ್ಲಿಗೆ ಬರಮಾಡುವೆನು. ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಸತ್ಸಂಬಂಧವುಳ್ಳ, ಸದ್ಧರ್ಮದ ಪ್ರಜೆಗಳಾಗಿರುವರು."

ಕೀರ್ತನೆ 102:15-17, 18-20, 21, 22, 28
ಶ್ಲೋಕ: ಪುನರುದ್ಧರಿಸುವನು ಪ್ರಭು ಸಿಯೋನನು.

ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು|
ಭಯಪಡುವರು ನಿನ್ನ ಪ್ರತಾಪಕೆ ಭೂ ರಾಜರುಗಳು||
ಏಕೆನೆ ಪುನರುದ್ಧರಿಸುವನು ಸಿಯೋನನು|
ಪ್ರತ್ಯಕ್ಷ ಮಾಡುವನಾತ ತನ್ನ ಮಹಿಮೆಯನು||
ತಿರಸ್ಕರಿಸನಾತ ನಿರ್ಗತಿಕರ ಮೊರೆಯನು|
ನೆರವೇರಿಸದೆ ಬಿಡನು ಅವರ ಕೋರಿಕೆಯನು||

ಮುಂದಣ ಸಂತತಿಗದು ಶಾಸನವಾಗಿರಲಿ|
ಮುಂದೆ ಹುಟ್ಟುವ ಪ್ರಜೆ ಪ್ರಭುವನು ಹೊಗಳಲಿ||
ಭೂಲೋಕವನು ವೀಕ್ಷಿಸಿದನು ಪ್ರಭು ಪರಲೋಕದಿಂದ|
ದೃಷ್ಟಿಸಿದನು ತನ್ನ ಉನ್ನತ ಪವಿತ್ರಸ್ಥಾನದಿಂದ||
ಆಲಿಸಿದಾತನು ಬಂಧಿತರ ಗೋಳಾಟವನು|
ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು||

ಬಾಳುವರು ನಿನ್ನ ದಾಸರ ಮಕ್ಕಳು ಸುರಕ್ಷಿತವಾಗಿ|
ಇರುವುದವರ ಸಂತತಿ ನಿನ್ನ ಸಮ್ಮುಖದಲಿ ಸ್ಥಿರವಾಗಿ||
ಹೀಗೆ ಪ್ರಭುವಿನಾರಾಧನೆ ಸಲ್ಲಿಸಲು|
ಜನಾಂಗಗಳೂ ರಾಜ್ಯಗಳೂ ಕೂಡಿರಲು||
ಹೊಗಳಲಾಗುವುದು ಪ್ರಭುವಿನ ನಾಮ ಸಿಯೋನಿನಲಿ|
ಆತನ ಗುಣಗಾನವಿರುವುದು ಜೆರುಸಲೇಮಿನನಲಿ||

ಶುಭಸಂದೇಶ: ಲೂಕ 9:46-50

ಆ ಕಾಲದಲ್ಲಿ ತಮ್ಮಲ್ಲಿ ಅತಿ ಶ್ರೇಷ್ಠನು ಯಾರೆಂಬ ವಾದ ಶಿಷ್ಯರಲ್ಲಿ ಎದ್ದಿತು. ಅವರ ಮನಸ್ಸಿನ ಆಲೋಚನೆಗಳನ್ನು ಅರಿತ ಯೇಸು, ಒಂದು ಚಿಕ್ಕ ಮಗುವನ್ನು ತಂದು ತಮ್ಮ ಪಕ್ಕದಲ್ಲಿ ನಿಲ್ಲಿಸಿಕೊಂಡು, " ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ, ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು, " ಎಂದರು. ಆಗ ಯೊವಾನ್ನನು ಯೇಸುವಿಗೆ, " ಗುರುವೇ, ಯಾವನೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲದ ಕಾರಣ ಅವನನ್ನು ತಡೆದೆವು, " ಎಂದನು. ಅದಕ್ಕೆ ಯೇಸು, " ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾದಿ, " ಎಂದು ಉತ್ತರ ಕೊಟ್ಟರು.

No comments:

Post a Comment