ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

19.09.23 - "ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು,"

ಮೊದಲನೇ ವಾಚನ: 1 ತಿಮೊಥೇಯನಿಗೆ  3:1-13

ಅತಿ ಪ್ರಿಯನೇ , ಯಾರಾದರೂ ಧರ್ಮಧ್ಯಕ್ಷನಾಗಲು ಅಪೇಕ್ಷಿಸಿದರೆ, ಅಂಥವನು ಉತ್ತಮ ಸೇವೆಯನ್ನೇ ಬಯಸುತ್ತಾನೆಂಬುದು ನಿಜ. ಅಂಥವನು ನಿಂದಾರಹಿತನಾಗಿರಬೇಕು. ಏಕಪತ್ನಿ ಉಳ್ಳವನು, ಸ್ವಸ್ಥಬುದ್ಧಿಯುಳ್ಳವನು, ಜಿತೇಂದ್ರಿಯನು, ಗೌರವಸ್ಥನು ಮತ್ತು ಅತಿಥಿ ಸತ್ಕಾರ ಮಾಡುವವನು ಆಗಿರಬೇಕು. ಬೊಧಿಸುವುದರಲ್ಲಿ ಪ್ರವೀಣನಾಗಿರಬೇಕು. ಅವನು ಕುಡುಕನು, ಕಲಹ ಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು. ತನ್ನ ಕುಟುಂಬವನ್ನು ಜವಾಬ್ದಾರಿಯುತವಾಗಿ ನಡೆಸುವವನೂ ಮಕ್ಕಳನ್ನು ಶಿಸ್ತಿನಲ್ಲಿ ಬೆಳೆಸಿ ಅವರಿಂದ ಗೌರವವನ್ನೂ ಪಡೆದುಕೊಳ್ಳುವವನೂ ಆಗಿರಬೇಕು. ತನ್ನ ಕುಟುಂಬವನ್ನೇ ಜವಾಬ್ದಾರಿಯುತವಾಗಿ ನಡೆಸಲು ತಿಳಿಯದವನು ದೇವರ ಸಭೆಯನ್ನು ಹೇಗೆ ತಾನೇ ಪರಿಪಾಲಿಸಿಯಾನು? ಆತನು ಹೊಸದಾಗಿ ಕ್ರೈಸ್ತಧರ್ಮವನ್ನು ಅಂಗೀಕರಿಸಿದವನಾಗಿರಬಾರದು. ಇಲ್ಲದಿದ್ದರೆ ಆಹಂಕಾರದಿಂದ ಉಬ್ಬಿಕೊಂಡು ಸೈತಾನನಂತೆಯೇ ದಂಡನೆಗೆ ಗುರಿಯಾದಾನು. ಕ್ರೈಸ್ಥರಲ್ಲದವರಿಂದಲೂ ಆತನು ಒಳ್ಳೆಯವನೆನಸಿಕೊಂಡಿರಬೇಕು. ಹೀಗಿದ್ದರೆ ಮಾತ್ರ ನಿಂದೆಗೊಳಗಾಗದೆ ಸೈತಾನನ ಕುತಂತ್ರಗಳಿಂದ ದೂರವಿರಬಲ್ಲನು. ಸಭಾಸೇವಕರು ಸಜ್ಜನರಾಗಿರಬೇಕು. ಎರಡು ನಾಲಿಗೆಯುಳ್ಳವರೂ ಕುಡುಕರೂ ಲಾಭಕೋರರೂ ಆಗಿರಬಾರದು. ವಿಶ್ವಾಸದ ನಿಗೂಢ ರಹಸ್ಯಗಳನ್ನು ಶುದ್ಧ ಮನಸಾಕ್ಷಿಯಿಂದ ಕಾಪಾಡಿಕೊಂಡು ಬರುವವರಾಗಿರಬೇಕು. ಇವರನ್ನು ಮೊದಲು ಪರೀಕ್ಷೆಗೊಳಪಡಿಸಬೇಕು. ಯಾವುದೇ ಕುಂದುಕೊರತೆ ಕಂಡು ಬರದಿದ್ದಲ್ಲಿ, ಇವರನ್ನು ಸಭಾಸೇವಕರನ್ನಾಗಿ ನೇಮಿಸಬಹುದು. ಅಂತೆಯೇ, ಸಭಾಸೇವಕಿಯರು ಸಜ್ಜನೆಯರಾಗಿರಬೇಕು. ಚಾಡಿಮಾತುಗಳನ್ನು ಆಡುವವರೂ ಮದ್ಯಾಸಕ್ತರು ಆಗಿರದೆ ಎಲ್ಲ ವಿಷಯಗಳಲ್ಲಿ ನಂಬಿಕಸ್ಥರಾಗಿರಬೇಕು ಸಭಾಸೇವಕರು ಏಕಪತ್ನಿಯುಳ್ಳವರಾಗಿದ್ದು ತಮ್ಮ ಮಕ್ಕಳನ್ನೂ ಕುಟುಂಬವನ್ನೂ ಜವಾಬ್ದಾರಿಯುತವಾಗಿ ನಡೆಸಿಕೊಂಡು ಹೋಗುವವರಾಗಿರಬೇಕು. ನಿಷ್ಠೆಯಿಂದ ಸೇವೆಸಲ್ಲಿಸುವ  ಸಭಾಸೇವಕರು ಒಳ್ಳೆಯ ಸ್ಥಾನಮಾನಗಳನ್ನು ಪಡೆಯುತ್ತಾರೆ. ಕ್ರಿಸ್ತ ಯೇಸುವಿನಲ್ಲಿ ಅವರಿಗಿರುವ ವಿಶ್ವಾಸವನ್ನು ಸಾರಲು ಧೈರ್ಯಸ್ಥೈರ್ಯವನ್ನ ಪಡೆಯುತ್ತಾರೆ.

ಕೀರ್ತನೆ: 101:1-2, 2-3, 5, 6

ಶ್ಲೋಕ: ಪ್ರಭೂ, ಸನ್ಮಾರ್ಗದಲೇ ನಾ ನಡೆಯುವೆನು.

ಶುಭಸಂದೇಶ: ಲೂಕ 7:11-17


ಯೇಸುಸ್ವಾಮಿ ನಾಯಿನ್ ಎಂಬ ಊರಿಗೆ ಹೊರಟರು. ಅವರೊಂದಿಗೆ ಶಿಷ್ಯರೂ ಅನೇಕ ಜನರೂ ಹೊರಟರು ಊರ ಬಾಗಿಲನ್ನು ಸಮೀಪಿಸುದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು. ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು "ಅಳಬೇಡ" ಎಂದು ಹೇಳಿ, ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, "ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು," ಎಂದರು. ಸತ್ತವನು ಎದ್ದು ಕುಳಿತು ಮಾತನಾಡಲಾರಂಭಿಸಿದನು. ಯೇಸು ಆ ಮಗನನ್ನು ತಾಯಿಗೆ ಒಪ್ಪಿಸಿದರು. ಎಲ್ಲರೂ ಭಯಭ್ರಾಂತರಾದರು. "ಮಹಾ ಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ;  ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ," ಎಂದು ದೇವರನ್ನು ಕೊಂಡಾಡಿದರು. ಯೇಸುವಿನ ಈ ಸಮಾಚಾರ ಜುದೇಯ ನಾಡಿನಲ್ಲೆಲ್ಲಾ ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲೆಲ್ಲಾ ಹರಡಿತು.

No comments:

Post a Comment