20.09.23 - "ದೈವಜ್ಞಾನವೇ ನಿಜವಾದ ಜ್ಞಾನ"

 ಮೊದಲನೇ ವಾಚನ: 1ತಿಮೊಥೇಯನಿಗೆ  3:14-16


ಪ್ರಿಯ ಸಹೋದರನೇ, ನಾನು ನಿನ್ನ ಬಳಿಗೆ ಬೇಗನೆ ಬರುವೆನೆಂಬ ನಿರೀಕ್ಷೆಯಿಂದಲೇ ಈ ಪತ್ರವನ್ನು ಬರೆಯುತ್ತಿದ್ದೇನೆ.  ಒಂದು ವೇಳೆ ನಾನು ಬರುವುದು ತಡವಾದರೆ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ. ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಟವಾದುದ್ದು ಎಂಬುದು ನಿಸ್ಸಂದೇಹವಾದ ವಿಷಯ. "ನರಮಾನವ ರೂಪದಲ್ಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗೆ ದೇವದೂತರಿಗೆ ಪ್ರದರ್ಶಿತನಾಗಿ, ಅನ್ಯಜನರಿಗೆ ಪ್ರಬೋದಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ."

ಕೀರ್ತನೆ: 111:1-2, 3-4, 5-6
ಶ್ಲೋಕ: ಮಹತ್ತಾದವು ಪ್ರಭುವಿನ ಕಾರ್ಯಗಳು

ಶುಭಸಂದೇಶ : ಲೂಕ 7:31-35


ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ?  ಇವರು ಯಾರನ್ನು ಹೋಲುತ್ತಾರೆ? ಪೇಟೆಬೀದಿಗಳಲ್ಲಿ ಕುಳಿತು, "ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ" ಎಂದು ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಹೋಲುತ್ತಾರೆ. ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಆಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು, "ಅವನಿಗೆ ದೆವ್ವ ಹಿಡಿದಿದೆ," ಎಂದು ಹೇಳಿದಿರಿ; ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, "ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ," ಎನ್ನುತ್ತೀರಿ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ," ಎಂದರು.

No comments:

Post a Comment