ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥದಿಂದ ಇಂದಿನ ಮೊದಲನೆಯ ವಾಚನ 1:4
ಸರ್ವೇಶ್ವರಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು: "ನಿನ್ನನ್ನು ತಾಯಿಯ ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆಯೇ ನಿನ್ನನ್ನು ನಾನು ತಿಳಿದಿದ್ದೆ ; ನೀನು ಉದರದಿಂದ ಹೊರ ಬರುವುದಕ್ಕೆ ಮೊದಲೇ ನಿನ್ನನ್ನು ಪವಿತ್ರೀಕರಿಸಿದ್ದೆ ; ನಿನ್ನನ್ನು ರಾಷ್ಟ್ರಗಳಿಗೆ ಪ್ರವಾದಿಯನ್ನಾಗಿ ನೇಮಿಸಿದ್ದೇನೆ." ಅದಕ್ಕೆ ನಾನು, "ಅಯ್ಯೋ, ಸ್ವಾಮಿ ಸರ್ವೇಶ್ವರಾ, ನಾನು ಮಾತುಬಲ್ಲವನಲ್ಲ, ಇನ್ನೂ ತರುಣ, " ಎಂದು ಬಿನ್ನವಿಸಿದೆ. ಆಗ ಸರ್ವೇಶ್ವರ ನನಗೆ, "ನಾನೊಬ್ಬ ತರುಣ ಎನ್ನಬೇಡ ; ಯಾರ ಬಳಿಗೆ ನಿನ್ನನ್ನು ಕಳಿಸುತ್ತೇನೋ, ಅವರೆಲ್ಲರ ಬಳಿಗೆ ನೀನು ಹೋಗಲೇಬೇಕು ; ಅವರಿಗೆ ಅಂಜಬೇಡ ; ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗೆ ಇರುತ್ತೇನೆ ; ಇದು ಸರ್ವೇಶ್ವರನಾದ ನನ್ನ ಮಾತು, "ಎಂದರು.
- ಪ್ರಭುವಿನ ವಾಕ್ಯ
ಕೀರ್ತನೆ:
ಶ್ಲೋಕ: ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ |
1. ಸ್ತುತಿ ಮಾಡಿ ಪ್ರಭುವನು ಸಮಸ್ತ ರಾಷ್ಟ್ರಗಳೇ|
ಆತನನು ಹೊಗಳಿ ಹಾಡಿ ಸರ್ವಜನಾಂಗಗಳೇ||
ಶ್ಲೋಕ
2. ನಮ್ಮ ಮೇಲೆ ಆತನಿಗಿರುವ ಪ್ರೀತಿ ಅಚಲ|
ಆತನ ಸತ್ಯಪರತೆ ಇರುವುದು ಅನಂತ ಕಾಲ||
ಶ್ಲೋಕ
ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ!
ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ | ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ||
ಅಲ್ಲೆಲೂಯ!
ಶುಭಸಂದೇಶ: ಮಾರ್ಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 16:15-20
ಯೇಸು ಹನ್ನೆರಡು ಮಂದಿ ಶಿಷ್ಯರಿಗೆ ಹೀಗೆಂದರು: " ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ. ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೇ ಇರುವವನು ಖಂಡನೆಗೆ ಗುರಿಯಾಗುವನು. ವಿಶ್ವಾಸಿಸುವುದರಿಂದ ಈ ಅದ್ಭುತ ಕಾರ್ಯಗಳು ಆಗುವುವು. ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು ; ಹೊಸ ಭಾಷೆಗಳಲ್ಲಿ ಮಾತಾಡುವರು; ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷ ಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು, " ಎಂದರು. ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು. ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು.
ಪ್ರಭುಕ್ರಿಸ್ತರ ಶುಭಸಂದೇಶ
No comments:
Post a Comment