ಮೊದಲನೇ ವಾಚನ: ಯೆಶಾಯ 30: 19-21, 23-26
ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು. ಅವರು ನಿಮಗೆ ಕಷ್ಟಸಂಕಟವನ್ನು ಅನ್ನಪಾನವಾಗಿ ಕೊಟ್ಟರೂ ನಿಮ್ಮ ಬೋಧಕರು ಇನ್ನು ನಿಮಗೆ ಮರೆಯಾಗಿ ಇರುವುದಿಲ್ಲ. ನೀವು ಅವರನ್ನು ಕಣ್ಣಾರೆ ಕಾಣುವಿರಿ. ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು. ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲು ಗಾವಲುಗಳಲ್ಲಿ ಮೇಯುವುವು. ಹೊಲಗೇಯುವ ನಿಮ್ಮ ಎತ್ತು ಕತ್ತೆಗಳು ಮೊರದಿಂದಲೂ ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು. ಕೋಟೆಕೊತ್ತಲಗಳು ಬಿದ್ದುಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು. ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.
ಕೀರ್ತನೆ: 147: 1-2, 3-4, 5-6
ಶ್ಲೋಕ: ಪ್ರಭುವಿನಲ್ಲಿ ವಿಶ್ವಾಸವಿಡುವವರು ಉಲ್ಲಾಸಿಸುತ್ತಾರೆ
ಶುಭಸಂದೇಶ: ಮತ್ತಾಯ 9: 35 – 10: 1, 5a, 6-8
ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀ ಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾ ತರಹದ ರೋಗರುಜಿನಗಳನ್ನು ಗುಣಪಡಿಸಿದರು. ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು. ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು. ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, "ಬೆಳೆಯೇನೋ ಹೇರಳ; ಕೊಯಿಲಿಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ," ಎಂದರು. ಯೇಸುಸ್ವಾಮಿ ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ, ದೆವ್ವಗಳನ್ನು ಬಿಡಿಸಿರಿ. ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.
No comments:
Post a Comment