ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

21.01.24 - “ನನ್ನನ್ನು ಹಿಂಬಾಲಿಸಿ ಬನ್ನಿ, ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,”

ಮೊದಲನೇ ವಾಚನ: ಯೋನ 3:1-5, 10


ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು,” ಎಂದಿತು. ಸ್ವಾಮಿಯ ಆಜ್ಞಾನುಸಾರ ಯೋನನು ನಿನೆವೆಗೆ ಹೋದನು. ಅದೊಂದು ವಿಸ್ತಾರವಾದ ನಗರ. ಅದನ್ನು ಹಾದುಹೋಗಲು ಮೂರು ದಿನಗಳು ಹಿಡಿಯುತ್ತಿತ್ತು. ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣ ಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, “ಜನರೇ ಕೇಳಿ: ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು,” ಎಂದನು. ಆ ನಗರದ ನಿವಾಸಿಗಳು ದೇವರ ಸಂದೇಶವನ್ನು ನಂಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆಂದು ನಿರ್ಧರಿಸಿದರು. ಹಿರಿಯರು ಮೊದಲುಗೊಂಡು ಕಿರಿಯರವರೆಗೆ – ಎಲ್ಲರೂ ಮನಃಪರಿವರ್ತನೆಯ ಚಿಹ್ನೆಯಾಗಿ ಗೋಣಿತಟ್ಟನ್ನು ಉಟ್ಟುಕೊಂಡರು. ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನ ಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.
ಪ್ರಭುವಿನ ವಾಕ್ಯ

ಕೀರ್ತನೆ: 25:4-5, 6-7, 8-9 

ಶ್ಲೋಕ: ನಿನ್ನ ಮಾರ್ಗವನ್ನು ಪ್ರಭೂ, ನನಗೆ ತೋರಿಸು. 

ನಿನ್ನ ಮಾರ್ಗವನು ಪ್ರಭು ನನಗೆ ತೋರಿಸು I
ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು II
ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ I
ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ II

ನೆನೆಸಿಕೋ ಪ್ರಭು, ನಿನ್ನ ನಿರಂತರ ಕರುಣೆಯನು I
ಆದಿಯಿಂದ ನೀ ತೋರಿದಚಲ ಪ್ರೀತಿಯನು II
ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I
ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II

ಸತ್ಯಸ್ವರೂಪನು, ದಯಾವಂತನು ಪ್ರಭು I
ದಾರಿತಪ್ಪಿದವರಿಗೆ ಬೋಧಕನು ವಿಭು II
ದೀನರನು ನಡೆಸುವನು ತನ್ನ ವಿಧಿಗನುಸಾರ I
ದಲಿತರಿಗೆ ಕಲಿಸುವನು ತನ್ನ ಧರ್ಮಾಚಾರ II

ಎರಡನೇ ವಾಚನ: 1 ಕೊರಿಂಥಿಯರಿಗೆ 7:29-31 

ಪ್ರಿಯ ಸಹೋದರರೇ, ನನ್ನ ಅಭಿಪ್ರಾಯ ಇದು: ಉಳಿದಿರುವ ಕಾಲವು ಕೊಂಚ ಮಾತ್ರ. ಆದ್ದರಿಂದ ಮದುವೆಯಾದವರು ಮದುವೆಯಾಗದವರೋ ಎಂಬಂತೆ ನಡೆದುಕೊಳ್ಳಲಿ. ದುಃಖಿತರು ದುಃಖವಿಲ್ಲದವರಂತೆ, ಸಂತೋಷಭರಿತರು ಸಂತೋಷರಹಿತರಂತೆ ಹಾಗು ಕೊಂಡುಕೊಳ್ಳುವವರು ಕೊಂಡದ್ದು ತಮ್ಮದಲ್ಲವೋ ಎಂಬಂತೆ ನಡೆದುಕೊಳ್ಳಲಿ. ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ. 
ಪ್ರಭುವಿನ ವಾಕ್ಯ

ಮಾರ್ಕನು ಬರೆದ ಶುಭಸ೦ದೇಶ 1:14-20 


ಯೊವಾನ್ನನು ಬಂಧಿತನಾದ ಬಳಿಕ ಯೇಸುಸ್ವಾಮಿ ಗಲಿಲೇಯಕ್ಕೆ ಹೋಗಿ ದೇವರ ಶುಭಸಂದೇಶವನ್ನು ಸಾರಿದರು: “ಕಾಲವು ಪರಿಪಕ್ವವಾಗಿದೆ, ದೇವರ ಸಾಮ್ರಾಜ್ಯವು ಸಮೀಪಿಸಿದೆ; ಪಶ್ಚಾತ್ತಾಪಪಟ್ಟು ಪಾಪ ಜೀವನಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ. ಶುಭಸಂದೇಶದಲ್ಲಿ ವಿಶ್ವಾಸವಿಡಿ,” ಎಂದು ಘೋಷಿಸಿದರು. ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದಾಗ ಸಿಮೋನನನ್ನೂ ಆತನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು. ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿ ಬನ್ನಿ, ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,” ಎಂದು ಕರೆದರು. ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು. ಇನ್ನೂ ಸ್ವಲ್ಪ ಮುಂದಕ್ಕೆ ಹೋಗುತ್ತಿದ್ದಾಗ, ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನರನ್ನು ಯೇಸು ಕಂಡರು. ಅವರು ದೋಣಿಯಲ್ಲಿ ಕುಳಿತು ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಕೂಡಲೇ, ಯೇಸು ಅವರನ್ನು ಕರೆದರು. ಅವರೂ ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲೇ ಬಿಟ್ಟು ಯೇಸುವನ್ನು ಹಿಂಬಾಲಿಸಿದರು. 
ಪ್ರಭು ಕ್ರಿಸ್ತರ ಶುಭಸ೦ದೇಶ

No comments:

Post a Comment