ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

03.03.24

ಮೊದಲನೆಯ ವಾಚನ: ವಿಮೋಚನಾಕಾಂಡ 20:1-17

ದೇವರು ಕೊಟ್ಟ ಆಜ್ಞೆಗಳು ಇವು: " ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು. ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ, ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ. ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆ ತೋರಿಸುತ್ತೇನೆ. ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ. ಸಬ್ಬತ್ ದಿನವನ್ನು ದೇವರ ದಿನವೆಂದು ತಿಳಿದು ಪವಿತ್ರವಾಗಿ ಆಚರಿಸು. ಆರು ದಿನಗಳು ದುಡಿದು ನಿನ್ನ ಕೆಲಸವನ್ನೆಲ್ಲ ಮಾಡು. ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಹೆಣ್ಣು ಮಕ್ಕಳು, ನಿನ್ನ ಗಂಡುಹೆಣ್ಣು ಆಳುಗಳು, ಪಶುಪ್ರಾಣಿಗಳು ಹಾಗು ನಿನ್ನ ಊರಿನಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು. ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ. ಕೊಲೆಮಾಡಬೇಡ; ವ್ಯಭಿಚಾರ ಮಾಡಬೇಡ; ಕದಿಯಬೇಡ; ಸುಳ್ಳುಸಾಕ್ಷಿ ಹೇಳಬೇಡ, ನೆರೆಯವನ ಮನೆಯನ್ನು ಬಯಸಬೇಡ, ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ."

ಕೀರ್ತನೆ: 19:7-10
ಶ್ಲೋಕ: ಪ್ರಭೂ, ನಿತ್ಯ ಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ |


ಪ್ರಭುವಿನ ಆಜ್ಞೆ ಪರಿಪೂರ್ಣ
ಜೀವನಕದು ನವಚೇತನ|
ನಂಬಲರ್ಹ ಪ್ರಭುವಿನ ಶಾಸನ, ಮುಗ್ದರಿಗದು ಸುಜ್ಞಾನ||
ಪ್ರಭುವಿನ ನಿಯಮ ನೀತಿಬದ್ದ, ಮನಸ್ಸಿಗದು ಹರ್ಷಾನಂದ|
ಪ್ರಭುವಿನ ಕಟ್ಟಳೆ ಪರಿಶುದ್ಧ ಕಣ್ಣಿಗದು ದೀವಿಗೆ||

ಪ್ರಭುವಿನ ಭೀತಿ ಪವಿತ್ರ ಎಂದೆಂದಿಗೂ ಶಾಶ್ವತ|
ಪ್ರಭುವಿನ ತೀರ್ಪು ಯಥಾರ್ಥ|
ಪರಿಪೂರ್ಣ ನ್ಯಾಯಯುತ||

ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ|
ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ||

ಎರಡನೆಯ ವಾಚನ: 1 ಕೊರಿಂಥಿಯರಿಗೆ : 1:22-25

"ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಅನ್ಯಜನರಿಗೆ ಇದು ಹಾಸ್ಯಾಸ್ಪದವಾಗಿದೆ. ಆದರೆ ದೇವರಿಂದ ಕರೆ ಹೊಂದಿದ್ದರೆ ಅಂಥವರಿಗೆ ಯೇಸು ದೇವರ ಜ್ಞಾನವಾಗಿದ್ದಾರೆ‌." ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರು ಜ್ಞಾನವನ್ನು ಅರಸುತ್ತಾರೆ. ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ. ಆದರೆ ಯೆಹೂದ್ಯರಾಗಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಜಾನವಾಗಿದ್ದಾರೆ. 'ದೇವರ ಹುತ್ತುತನ' ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. 'ದೇವರ ದೌರ್ಬಲ್ಯ' ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.

ಘೋಷಣೆ
ದೇವರ ವಾಕ್ಯವಾದ ಪ್ರಭು ಯೇಸುವೇ, ನಿಮಗೆ ಸದಾ ಸ್ತೋತ್ರವೂ ಮಹಿಮೆಯೂ ಸಲ್ಲಲಿ!
"ಪುನರುತ್ಥಾನವೂ ಜೀವವೂ ನಾನೇ, ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು"

ಶುಭಸಂದೇಶ: ಯೊವಾನ್ನ 2:13-25

ಆ ಕಾಲದಲ್ಲಿ ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸು ಜೆರುಸಲೇಮಿಗೆ ತೆರಳಿದರು. ಅಲ್ಲಿಯ ಮಹಾದೇವಾಲಯದಲ್ಲಿ ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುವವರು ಮತ್ತು ನಾಣ್ಯವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿದ್ದರು. ಅದನ್ನು ಕಂಡ ಯೇಸು, ಹಗ್ಗವನ್ನು ಚಾವಟಿಯಂತೆ ಹೆಣೆದು ಅದರಿಂದ ಅವರನ್ನೆಲ್ಲಾ ದೇವಾಲಯದಿಂದ ಹೊರಗಟ್ಟಿದರು ದನಕುರಿಗಳನ್ನು ಓಡಿಸಿದರು. ನಾಣ್ಯ ವಿನಿಮಯ ಮಾಡುವವರ ಮೇಜುಗಳನ್ನು ಕೆಡವಿ, ಚಿಲ್ಲರೆ ಹಣವನ್ನು ಚೆಲ್ಲಿದರು. ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, " ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ, " ಎಂದು ಹೇಳಿದರು. 'ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ, " ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು. ಯೆಹೂದ್ಯರು, "ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿ ತೋರಿಸಬಲ್ಲೆ? " ಎಂದು ಯೇಸುವನ್ನು ಪ್ರಶ್ನಿಸಿದರು. ಅದಕ್ಕೆ ಯೇಸು, " ಈ ದೇವಾಲಯವನ್ನು ಕೆಡವಿಬಿಡಿ; ಮೂರು ದಿನದಲ್ಲಿ ಅದನ್ನು ಪುನಃ ಎಬ್ಬಿಸುವೆನು, " ಎಂದು ಉತ್ತರಕೊಟ್ಟರು. ಚಕಿತರಾದ ಯೆಹೂದ್ಯರು, " ಈ ದೇವಾಲಯವನ್ನು ಕಟ್ಟಲು ನಲವತ್ತಾರು ವರ್ಷಗಳು ಹಿಡಿದಿವೆ. ನೀನು ಮೂರು ದಿನಗಳಲ್ಲೇ ಅದನ್ನು ಎಬ್ಬಿಸಬಲ್ಲೆಯಾ? " ಎಂದು ಕೇಳಿದರು. ಯೇಸು ಹೇಳಿದ್ದು ತಮ್ಮ ದೇಹವೆಂಬ ದೇಗುಲವನ್ನು ಕುರಿತು. ಅವರು ಸತ್ತು ಪುನರುತ್ಥಾನಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾತಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು. ಯೇಸು ಪಾಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದಾಗ ಮಾಡಿದ ಸೂಚಕಾರ್ಯಗಳನ್ನು. ನೋಡಿ ಅನೇಕರು ಅವರನ್ನು ನಂಬಿದರು. ಆದರೆ ಯೇಸು ಎಲ್ಲರನ್ನು ಚೆನ್ನಾಗಿ ಬಲ್ಲವರಾದ್ದರಿಂದ ಅವರ ಈ ನಂಬಿಕೆಗೆ ಮಾರುಹೋಗಲಿಲ್ಲ. ಜನರನ್ನು ಕುರಿತು ಯಾರೂ ಅವರಿಗೆ ತಿಳಿಸಬೇಕಾದ ಪ್ರಮೇಯವಿರಲಿಲ್ಲ. ಮಾನವನ ಅಂತರಂಗ ಅವರಿಗೆ ಬಹಿರಂಗವಾಗಿತ್ತು.

No comments:

Post a Comment