ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

03.04.24 - “ಪ್ರಭು ಜೀವಂತರಾಗಿ ಎದ್ದಿರುವುದು ನಿಜ ! ಅವರು ಸಿಮೋನನಿಗೆ ಕಾಣಿಸಿಕೊಂಡರು”

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 3:1-10



ಒಂದು ದಿನ ಮಧ್ಯಾಹ್ನ ಮೂರು ಗಂಟೆಯ ಸಮಯ. ಅದು ಪ್ರಾರ್ಥನಾವೇಳೆ, ಪೇತ್ರ ಮತ್ತು ಯೊವಾನ್ನ ಮಹಾದೇವಾಲಯಕ್ಕೆ ಹೋದರು. ‘ಸುಂದರ ದ್ವಾರ’ ಎಂದು ಕರೆಯಲಾದ ಬಾಗಿಲ ಬಳಿ ಹುಟ್ಟು ಕುಂಟನೊಬ್ಬ ಇದ್ದನು. ಅವನನ್ನು ಪ್ರತಿ ದಿನ ಹೊತ್ತು ತಂದು ಈ ದ್ವಾರದ ಬಳಿ ಬಿಡಲಾಗುತ್ತಿತ್ತು. ಅವನು ದೇವಾಲಯಕ್ಕೆ ಬರುತ್ತಿದ್ದ ಜನರಿಂದ ಭಿಕ್ಷೆ ಬೇಡುತ್ತಿದ್ದನು. ಪೇತ್ರ ಮತ್ತು ಯೊವಾನ್ನ ದೇವಾಲಯದೊಳಗೆ ಹೋಗುತ್ತಿರುವುದನ್ನು ಅವನು ಕಂಡನು. ತನಗೆ ಏನಾದರೂ ಭಿಕ್ಷೆ ಕೊಡಬೇಕೆಂದು ಬೇಡಿದನು. ಅವರು ಕುಂಟನನ್ನು ತದೇಕ ದೃಷ್ಟಿಯಿಂದ ಈಕ್ಷಿಸಿದರು. ಪೇತ್ರನು, “ಎಲ್ಲಿ, ನಮ್ಮನ್ನು ನೋಡು,” ಎಂದನು. ಕುಂಟನು ಅವರಿಂದ ಭಿಕ್ಷೆಯನ್ನು ಅಪೇಕ್ಷಿಸುತ್ತಾ ಅವರನ್ನೇ ನೋಡಿದನು. ಆದರೆ ಪೇತ್ರನು, “ಹಣ ಕಾಸೇನೂ ನನ್ನಲ್ಲಿಲ್ಲ, ನನ್ನಲ್ಲಿ ಇರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಆಜ್ಞಾಪಿಸುತ್ತೇನೆ, ಎದ್ದು ನಡೆ” ಎನ್ನುತ್ತಾ, ಅವನ ಬಲಗೈಯನ್ನು ಹಿಡಿದು ನಿಲ್ಲಲು ಸಹಾಯ ಮಾಡಿದನು. ಆ ಕ್ಷಣವೇ ಕುಂಟನ ಅಂಗಾಲು ಮುಂಗಾಲುಗಳು ಬಲಗೊಂಡವು. ಅವನು ಜಿಗಿದುನಿಂತು ಅತ್ತಿತ್ತ ನಡೆದಾಡಲು ಪ್ರಾರಂಭಿಸಿದನು. ಅನಂತರ ಅವನು ಕುಣಿಯುತ್ತಾ ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಅವರೊಡನೆಯೇ ದೇವಾಲಯದೊಳಗೆ ಹೋದನು. ಅವನು ಹೀಗೆ ನಡೆಯುವುದನ್ನೂ ದೇವರನ್ನು ಕೊಂಡಾಡುವುದನ್ನೂ ಜನಸಮೂಹ ನೋಡಿತು. ದೇವಾಲಯದ ಸುಂದರ ದ್ವಾರದ ಬಳಿ ಕುಳಿತು ಭಿಕ್ಷೆ ಬೇಡುತ್ತಿದ್ದವನು ಇವನೇ ಎಂದು ಜನರು ಗುರುತು ಹಚ್ಚಿದರು. ಅವನಿಗೆ ಸಂಭವಿಸಿದ್ದನ್ನು ಕಂಡು ಬೆಕ್ಕಸಬೆರಗಾದರು.



ಕೀರ್ತನೆ: 105:1-2, 3-4, 6-7, 8-9
ಶ್ಲೋಕ: ಹೆಮ್ಮೆಪಡಿ, ನೆನೆದಾತನ ಶ್ರೀನಾಮ, ಹಿಗ್ಗಲಿ ಹೃದಯ, ಕೋರಿ ಆತನ ದರ್ಶನ

ಹೆಮ್ಮೆಪಡಿ, ನೆನೆದಾತನ ಶ್ರೀನಾಮ I
ಹಿಗ್ಗಲಿ ಹೃದಯ, ಕೋರಿ ಆತನ ದರ್ಶನ II
ಸಲ್ಲಿಸಿ ಪ್ರಭುವಿಗೆ ಕೃತಜ್ಞತಾಸ್ತೋತ್ರವನು I
ಮಾಡಿರಿ ಆತನ ನಾಮಸ್ಮರಣೆಯನು I
ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II

ಹಾಡಿ ಪಾಡಿ ಹೊಗಳಿರಿ ಪ್ರಭುವನು I
ಧ್ಯಾನಿಸಿ ನೀವು ಆತನ ಪವಾಡಗಳನು II
ಹೆಮ್ಮೆಪಡಿ, ನೆನೆದಾತನ ಶ್ರೀನಾಮ I
ಹಿಗ್ಗಲಿ ಹೃದಯ, ಕೋರಿ ಆತನ ದರ್ಶನ II

ಅರಸಿರಿ ಪ್ರಭುವನೂ ಆತನ ಶಕ್ತಿಯನೂ I
ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II
ಆತನ ದಾಸ ಅಬ್ರಹಾಮನ ಸಂತತಿಯವರೇ I
ಆತನಾರಿಸಿಕೊಂಡ ಯಕೋಬನ ವಂಶದವರೇ II

ಪ್ರಭು ನಮ್ಮ ದೇವನೆಂಬುದು ಶ್ರುತ I
ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ II
ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು I
ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು II

ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I
ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು II

ಶುಭಸಂದೇಶ: ಲೂಕ: 24:13-35


ಅದೇ ದಿನ ಶಿಷ್ಯರಲ್ಲಿ ಇಬ್ಬರು ಜೆರುಸಲೇಮಿಗೆ ಹನ್ನೊಂದು ಕಿಲೋಮೀಟರಿನಷ್ಟು ದೂರದಲ್ಲಿದ್ದ ಎಮ್ಮಾವು ಎಂಬ ಗ್ರಾಮಕ್ಕೆ ಹೋಗುತ್ತಿದ್ದರು. ಇತ್ತೀಚೆಗೆ ನಡೆದ ವಿಷಯಗಳನ್ನೆಲ್ಲಾ ಕುರಿತು ಅವರು ಸಂಭಾಷಣೆ ಮಾಡುತ್ತಾ ನಡೆಯುತ್ತಿದ್ದರು. ಹೀಗೆ ಮಾತನಾಡಿಕೊಂಡು ಚರ್ಚೆ ಮಾಡುತ್ತಾ ಹೋಗುತ್ತಿರುವಾಗ, ಯೇಸುಸ್ವಾಮಿಯೇ ಖುದ್ದಾಗಿ ಸಮೀಪಿಸಿ ಅವರ ಜೊತೆ ಸೇರಿಕೊಂಡರು. ಆದರೆ ಇವರಾರೆಂದು ಅವರು ಗುರುತು ಹಚ್ಚಲಿಲ್ಲ. ಕಾರಣ - ಶಿಷ್ಯರಿಗೆ ಕಣ್ಣು ಕಟ್ಟಿದಂತಾಗಿತ್ತು. “ನೀವು ತರ್ಕ ಮಾಡಿಕೊಂಡು ಹೋಗುತ್ತಿರುವಿರಲ್ಲಾ, ಏನು ವಿಷಯ?” ಎಂದು ಯೇಸು ಕೇಳಿದರು. ಶಿಷ್ಯರು ಸಪ್ಪೆ ಮುಖಮಾಡಿ ನಿಂತರು. ಆಗ ಅವರಲ್ಲಿ ಒಬ್ಬನಾದ ಕ್ಲೆಯೋಫ, “ಇತ್ತೀಚೆಗೆ ಜೆರುಸಲೇಮಿನಲ್ಲಿ ಜರುಗಿದ ಘಟನೆಗಳನ್ನು ಪಟ್ಟಣಕ್ಕೆ ಪಟ್ಟಣವೇ ತಿಳಿದಿದೆ; ನಿನಗೊಬ್ಬನಿಗೇ ಅವು ತಿಳಿಯದೆ?” ಎಂದನು. “ಏನು ನಡೆಯಿತು?” ಎಂದು ಯೇಸು ಪುನಃ ಕೇಳಿದಾಗ ಆ ಶಿಷ್ಯರಿಬ್ಬರು, “ಇವು ನಜರೇತಿನ ಯೇಸುವಿಗೆ ಸಂಭವಿಸಿದ ಘಟನೆಗಳು. ಅವರು ನಡೆಯಲ್ಲೂ ನುಡಿಯಲ್ಲೂ ದೇವರ ಹಾಗೂ ಸಕಲ ಮಾನವರ ದೃಷ್ಟಿಯಲ್ಲಿ ಪ್ರವಾದಿಯಾಗಿದ್ದರು. ನಮ್ಮ ಮುಖ್ಯ ಯಾಜಕರು ಮತ್ತು ಮುಖಂಡರು ಅವರನ್ನು ಮರಣದಂಡನೆಗೆ ಗುರಿಮಾಡಿಸಿ ಶಿಲುಬೆಗೆ ಜಡಿಸಿದರು. ಇಸ್ರಯೇಲನ್ನು ಬಿಡುಗಡೆ ಮಾಡುವ ಉದ್ಧಾರಕ ಅವರೇ ಎಂದು ನಾವು ನಂಬಿಕೊಂಡಿದ್ದೆವು. ಇಷ್ಟು ಮಾತ್ರವಲ್ಲ, ಇದೆಲ್ಲಾ ಸಂಭವಿಸಿ ಇಂದಿಗೆ ಮೂರುದಿನಗಳು ಆಗಿವೆ. ಆದರೂ ನಮ್ಮಲ್ಲಿ ಕೆಲವು ಮಂದಿ ಮಹಿಳೆಯರು ಮುಂಜಾನೆ ಸಮಾಧಿಯ ಬಳಿಗೆ ಹೋಗಿದ್ದರು. ಅಲ್ಲಿ ಯೇಸುವಿನ ಪಾರ್ಥಿವ ಶರೀರವನ್ನು ಕಾಣಲಿಲ್ಲ. ಹಿಂದಿರುಗಿ ಬಂದು, ‘ನಮಗೆ ದೇವದೂತರು ಪ್ರತ್ಯಕ್ಷರಾದರು; ಇವರು ಯೇಸುಸ್ವಾಮಿ ಸಜೀವದಿಂದ ಇದ್ದಾರೆಂದು ನಮಗೆ ತಿಳಿಸಿದರು,’ ಎಂದು ಹೇಳಿ ನಮ್ಮನ್ನು ದಿಗ್ಭ್ರಾಂತರನ್ನಾಗಿ ಮಾಡಿದರು. ನಮ್ಮ ಸಂಗಡಿಗರಲ್ಲಿ ಕೆಲವರು ಸಮಾಧಿಯ ಬಳಿಗೆ ಹೋಗಿ ನೋಡಿದರು; ಮಹಿಳೆಯರು ಹೇಳಿದ್ದೆಲ್ಲಾ ಸರಿಯಾಗಿತ್ತು. ಆದರೆ ಯೇಸುಸ್ವಾಮಿಯನ್ನು ಮಾತ್ರ ಕಾಣಲಿಲ್ಲ,” ಎಂದರು. ಆಗ ಯೇಸು, “ಎಂಥ ಮತಿಹೀನರು ನೀವು! ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು! ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾ ಸಿದ್ದಿಯನ್ನು ಪಡೆಯಬೇಕಾಗಿತ್ತು ಅಲ್ಲವೇ?” ಎಂದರು. ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರ ಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು. ಅಷ್ಟರಲ್ಲಿ ಶಿಷ್ಯರು ತಲುಪಬೇಕಾಗಿದ್ದ ಗ್ರಾಮವು ಸಮೀಪಿಸಿತು. ಯೇಸುಸ್ವಾಮಿ ಇನ್ನೂ ಮುಂದಕ್ಕೆ ಸಾಗುವವರಂತೆ ಕಂಡಿತು. ಆಗ ಶಿಷ್ಯರು, “ಸಂಜೆಯಾಯಿತು, ಕತ್ತಲಾಗುತ್ತ ಬಂದಿತು; ಬಂದು ನಮ್ಮೊಡನೆ ತಂಗಿರಿ,” ಎಂದು ಒತ್ತಾಯಪಡಿಸಿದರು. ಯೇಸು ಅವರೊಡನೆ ತಂಗಲು ಹೋದರು. ಅವರ ಸಂಗಡ ಊಟಕ್ಕೆ ಕುಳಿತಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು ಅವರಿಗೆ ಕೊಟ್ಟರು. ಆಗಲೇ ಶಿಷ್ಯರ ಕಣ್ಣುಗಳು ತೆರೆದವು; ಯೇಸುವನ್ನು ಗುರುತು ಹಚ್ಚಿದರು. ಆಗ ಯೇಸು ಅವರಿಂದ ಅದೃಶ್ಯರಾದರು. ಶಿಷ್ಯರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ, “ದಾರಿಯಲ್ಲಿ ಇವರು ನಮ್ಮ ಸಂಗಡ ಮಾತನಾಡುತ್ತಾ ಪವಿತ್ರ ಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೇ?” ಎಂದುಕೊಂಡರು. ಒಡನೇ ಅವರು ಅಲ್ಲಿಂದ ಎದ್ದು ಜೆರುಸಲೇಮಿಗೆ ಹಿಂದಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡಿಗರೂ ಒಟ್ಟುಗೂಡಿದ್ದರು. “ಪ್ರಭು ಜೀವಂತರಾಗಿ ಎದ್ದಿರುವುದು ನಿಜ ! ಅವರು ಸಿಮೋನನಿಗೆ ಕಾಣಿಸಿಕೊಂಡರು,” ಎಂದು ಅಲ್ಲಿದ್ದವರು ಹೇಳುವುದನ್ನು ಕೇಳಿದರು. ಆಗ ಅವರು ತಾವು ದಾರಿಯಲ್ಲಿ ಕಂಡ ವಿಷಯವನ್ನೂ ರೊಟ್ಟಿ ಮುರಿದು ಕೊಡುವಾಗ ಸ್ವಾಮಿಯನ್ನು ತಾವು ಗುರುತು ಹಚ್ಚಿದ ವಿಷಯವನ್ನೂ ಅಲ್ಲಿದ್ದವರಿಗೆ ವರದಿ ಮಾಡಿದರು

No comments:

Post a Comment