ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 3:13-15, 17-19
ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ. ಯೇಸು ಪುನೀತರು ಹಾಗೂ ಸತ್ಯಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ. ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು. “ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ. ಕ್ರಿಸ್ತಯೇಸು ಯಾತನೆಯನ್ನು ಅನುಭವಿಸಬೇಕೆಂದು ದೇವರು ಪ್ರವಾದಿಗಳೆಲ್ಲರ ಮುಖಾಂತರ ಆಗಲೇ ಮುಂತಿಳಿಸಿದ್ದರು. ಆ ಪ್ರವಾದನೆಗಳನ್ನು ಈಗ ನೆರವೇರಿಸಿದ್ದಾರೆ. ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.
ಕೀರ್ತನೆ: 4:1, 3, 6, 8
ಶ್ಲೋಕ: ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II
ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I
ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II
ಭಕ್ತನನು ಪ್ರಭು ಪ್ರತ್ಯೇಕಿಸಿಕೊಂಡನೆಂದು ತಿಳಿದುಕೊ I
ನಾ ಮೊರೆಯಿಟ್ಟಾಗ ಆತ ಕಿವಿಗೊಡುವನೆಂದು ಅರಿತುಕೊ II
ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I
ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II
ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I
ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II
ಎರಡನೇ ವಾಚನ: 1 ಯೋವಾನ್ನ 2: 1-5
ಪ್ರಿಯ ಮಕ್ಕಳೇ, ನೀವು ಪಾಪ ಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು. ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ. ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ. ದೇವರನ್ನು ಬಲ್ಲೆನೆಂದು ಹೇಳಿಕೊಳ್ಳುತ್ತಾ ಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ. ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.
ಶುಭಸಂದೇಶ: ಲೂಕ 24:35-48
ಆಗ ಅವರು ತಾವು ದಾರಿಯಲ್ಲಿ ಕಂಡ ವಿಷಯವನ್ನೂ ರೊಟ್ಟಿ ಮುರಿದು ಕೊಡುವಾಗ ಸ್ವಾಮಿಯನ್ನು ತಾವು ಗುರುತುಹಚ್ಚಿದ ವಿಷಯವನ್ನೂ ಅಲ್ಲಿದ್ದವರಿಗೆ ವರದಿಮಾಡಿದರು. ಅವರು ವರದಿಮಾಡುತ್ತಿದ್ದಂತೆ ಯೇಸುಸ್ವಾಮಿಯೇ ಅವರ ಮಧ್ಯೆ ಪ್ರತ್ಯಕ್ಷವಾಗಿ ನಿಂತು, ‘ನಿಮಗೆ ಶಾಂತಿ,’ ಎಂದರು. ಅವರೆಲ್ಲರೂ ಚಕಿತರಾಗಿ, ದಿಗಿಲುಗೊಂಡು, ತಾವು ಕಾಣುತ್ತಿರುವುದು ಭೂತವೆಂದು ಭಾವಿಸಿದರು. ಆಗ ಯೇಸು, “ಏಕೆ ಕಳವಳಪಡುತ್ತೀರಿ? ನಿಮ್ಮ ಮನಸ್ಸಿನಲ್ಲಿ ಸಂಶಯವೇಕೆ? ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿ, ನಾನೇ ಅಲ್ಲವೇ? ನನ್ನನ್ನು ಮುಟ್ಟಿ ನೋಡಿರಿ, ನೀವು ನನ್ನಲ್ಲಿ ಕಾಣುವಂತೆ, ಮಾಂಸ ಮತ್ತು ಎಲುಬು ಭೂತಕ್ಕೆ ಇರುವುದಿಲ್ಲ,” ಎಂದರು. ಇಂತೆಂದ ಮೇಲೆ ತಮ್ಮ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದರು. ಶಿಷ್ಯರು ಇನ್ನೂ ನಂಬದೆ, ಆನಂದಾಶ್ಚರ್ಯಭರಿತರಾಗಿದ್ದರು. ಆಗ ಯೇಸು, “ನಿಮ್ಮಲ್ಲಿ ತಿನ್ನಲು ಏನಾದರೂ ಇದೆಯೇ?” ಎಂದು ಕೇಳಿದರು. ಹುರಿದ ವಿೂನಿನ ತುಂಡು ಒಂದನ್ನು ಶಿಷ್ಯರು ಕೊಟ್ಟರು. ಯೇಸು ಅದನ್ನು ತೆಗೆದುಕೊಂಡು ಅವರ ಎದುರಿಗೇ ತಿಂದರು. ಅಂತಿಮ ಸಂದೇಶ ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥದಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು. ಆಮೇಲೆ, ಪವಿತ್ರ ಗ್ರಂಥವನ್ನು ಅವರು ಅರ್ಥಮಾಡಿಕೊಳ್ಳುವಂತೆ ಅವರ ಬುದ್ಧಿಯನ್ನು ವಿಕಾಸಗೊಳಿಸಿದರು. ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು; ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು. ಇದಕ್ಕೆಲ್ಲಾ ನೀವೇ ಸಾಕ್ಷಿಗಳು.
No comments:
Post a Comment