ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪ 4:8-12
ಪೇತ್ರನು ಪವಿತ್ರಾತ್ಮಭರಿತನಾಗಿ ಹೀಗೆಂದು ಉತ್ತರಕೊಟ್ಟನು: "ಜನರ ಅಧಿಕಾರಿಗಳೇ, ಪ್ರಮುಖರೇ, ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದುದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ. ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ: ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ. ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಅವರನ್ನು ಪುನರುತ್ಥಾನಗೊಳಿಸಿದ್ದಾರೆ. 'ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು' ಎಂದು ಬರೆದಿರುವುದು ಇವರನ್ನು ಕುರಿತೇ. ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ."
ಕೀರ್ತನೆ 118:1,8-9,21-23,26-27,28
ಶ್ಲೋಕ: ಮನೆಕಟ್ಟುವವರು ಮೂಲೆಗೆಸೆದ ಕಲ್ಲು | ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು ||
ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ|
ಆತ ಒಳ್ಳೆಯವ ಆತನ ಪ್ರೀತಿ ಶಾಶ್ವತ||
ಮನುಜರಲಿ ಭರವಸೆಯಿಡುವುದಕ್ಕಿಂತ|
ಪ್ರಭುವನು ಆಶ್ರಯಿಸಿಕೊಳ್ಳುವುದು ಹಿತ||
ರಾಜರಲಿ ಭರವಸೆಯಿಡುವುದಕ್ಕಿಂತ|
ಪ್ರಭುವನು ಆಶ್ರಯಿಸಿಕೊಳ್ಳುವುದು ಹಿತ||
ಸದುತ್ತರ ಪಾಲಿಸಿದ ಪ್ರಭೂ, ನಿನಗೆ ವಂದನೆ|
ಉದ್ಧಾರ ಮಾಡಿದೆ, ನಿನಗೆ ಕೃತಜ್ಞತಾವಂದನೆ||
ಮನೆಕಟ್ಟುವವರು ಮೂಲೆಗೆಸೆದ ಕಲ್ಲು|
ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು||
ಪ್ರಭುವಿನಿಂದಲೇ ಅದ ಈ ಕಾರ್ಯ|
ನಮ್ಮ ಕಣ್ಣಿಗೆ ಅದೆಂತಹ ಆಶ್ಚರ್ಯ||
ಪ್ರಭುವಿನ ನಾಮದಲ್ಲಿ ಬರುವವನಿಗೆ ಜಯಮಂಗಳ|
ಪ್ರಭುವಿನ ಮಂದಿರದಲ್ಪಿಹ ನಿಮ್ಮಿಂದ ಶುಭಮಂಗಳ||
ಪ್ರಭುವೇ ದೇವನು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು|
ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ|
ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ||
ಎರಡನೆಯ ವಾಚನ: ಯೊವಾನ್ನ 3:1-2
ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದಕಾರಣ ನಾವು ಎಂಥವರೆಂದು ಅದು ಅರಿತಿಲ್ಲ. ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.
ಘೋಷಣೆ ಯೊವಾನ್ನ 10:14,15
ಅಲ್ಲೆಲೂಯ, ಅಲ್ಲೆಲೂಯ!
ಯೇಸು ಹೀಗೆಂದರು: ನಾನಾದರೋ ಉತ್ತಮ ಕುರಿಗಾಹಿ | ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು||
ಶುಭಸಂದೇಶ: ಯೊವಾನ್ನ 10:11-18
"ನಾನೇ ಉತ್ತಮ ಕುರಿಗಾಹಿ. ಉತ್ತಮ ಕುರಿಗಾಹಿಯು ಕುರಿಗಳಗೋಸ್ಕರ ತನ್ನ ಪ್ರಾಣವನ್ನೇ ಕೊಡುತ್ತಾನೆ. ಕುರಿಗಾಹಿಯಾಗಲಿ, ಕುರಿಗಳ ಒಡೆಯನಾಗಲಿ ಅಲ್ಲದ ಕೂಲಿಯಾಳು; ತೋಳವು ಬಂದು ಕುರಿಗಳ ಮೇಲೆ ಎರಗಿ, ಮಂದೆಯನ್ನು ಚದರಿಸುತ್ತದೆ. ಅವನು ಕೇವಲ ಕೂಲಿಯಾಳು; ಕುರಿಗಳ ಚಿಂತೆ ಅವನಿಗಿಲ್ಲ. ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತಾನೆ. ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆಯಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು, ಒಬ್ಬನೇ ಕುರಿಗಾಹಿ ಇರುವನು. ಏಕೆಂದರೆ, ನನ್ನ ಪಿತನಿಗೆ ನನ್ನಲ್ಲಿ ಪ್ರೀತಿ ಇದೆ. ನನ್ನ ಪ್ರಾಣವನ್ನು ಮರಳಿ ಪಡೆಯುವಂತೆ ನಾನದನ್ನು ಧಾರೆಯೆರೆಯುತ್ತೇನೆ. ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ, " ಎಂದು ಯೇಸು ನುಡಿದರು.
No comments:
Post a Comment