ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

23.04.24 - "ನಾನೂ ಪಿತನೂ ಒಂದೇ ಆಗಿದ್ದೇವೆ”

ಮೊದಲನೇ ವಾಚನ: ಪ್ರೇಷಿತರಕಾರ್ಯಕಲಾಪಗಳು 11:19-26

ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ. ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು. ಪ್ರಭುವಿನ ಶಕ್ತಿ ಅವರೊಡನೆ ಇತ್ತು. ಜನರು ಬಹುಸಂಖ್ಯೆಯಲ್ಲಿ ಪ್ರಭುವಿನಲ್ಲಿ ವಿಶ್ವಾಸವಿಟ್ಟು ಅವರ ಭಕ್ತರಾದರು. ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅಂತಿಯೋಕ್ಯಕ್ಕೆ ಅವರು ಕಳುಹಿಸಿದರು. ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು. ಬಾರ್ನಬನು ಸತ್ಪುರುಷನು, ಪವಿತ್ರಾತ್ಮಭರಿತನು ಹಾಗೂ ಅಗಾಧ ವಿಶ್ವಾಸವುಳ್ಳವನು. ಅನೇಕ ಜನರು ಪ್ರಭುವಿನ ಅನುಯಾಯಿಗಳಾದರು. ಅನಂತರ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಕ್ಕೆ ಹೋದನು.  ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.

ಕೀರ್ತನೆ: 87:1-3, 4-5, 6-7
ಶ್ಲೋಕ: ಸ್ತುತಿಮಾಡಿ ಪ್ರಭುವನು ಸಮಸ್ತ ರಾಷ್ಟ್ರಗಳೇ

ಪವಿತ್ರ ಪರ್ವತದಲಿ ಕರ್ತನು I
ಸ್ಥಾಪಿಸಿಹನು ತನ್ನ ನಗರವನು II
ಯಕೋಬ ವಂಶದ ಸಕಲ ನಿವಾಸಿಗಳಿಗಿಂತ I
ಸಿಯೋನ್ ದ್ವಾರಗಳು ಆತನಿಗೆ ಸುಪ್ರೀತ II
ದೈವ ಶ್ರೀನಗರವೇಕೇಳು ಇವನ್ನು I
ನಿನ್ನ ಕುರಿತ ಅತಿಶಯೋಕ್ತಿಗಳನು : II

ನನಗೆ ಮಣಿಯುವ ರಾಷ್ಟ್ರಗಳಲಿ I
ಈಜಿಪ್ಟ್ಬಾಬೆಲ್ ದೇಶಗಳನು ಲೆಕ್ಕಿಸುವೆ II
ಜೆರುಸಲೇಮಿನ ನಿವಾಸಿಗಳಲಿ I
ಪಿಲಿಷ್ಟಿಯಟೈರ್ಎಥಿಯೋಪಿಯ ಜನ ಸೇರಿವೆ II
ಸಕಲ ಜನಾಂಗಗಳ ಜನನಿ ಸಿಯೋನ್ ನಗರವೇ I
ಅದನು ಸ್ಥಾಪಿಸಿದವ ಪರಾತ್ಪರ ಪ್ರಭುವೇ” II

ಪ್ರಭು ಪಟ್ಟಿಮಾಡುವಾಗ ಸಕಲ ಜಾತಿಜನಾಂಗಗಳನು I
ನಿನ್ನ ಜನಾಂಗವೆಂದೇ ಪರಿಗಣಿಸುವನು ಪ್ರತಿಯೊಂದನು II
ಗಾಯಕ ನರ್ತಕರೂ ಹಾಡುವರೀ ಹಾಡ I

ನಮ್ಮೆಲ್ಲರ ಜೀವದೊರೆತೆ ನೀನೇ ನೋಡ” II

ಯೊವಾನ್ನ 10:22-30


ಅದು ಚಳಿಗಾಲವಾಗಿತ್ತು. ಜೆರುಸಲೇಮಿನಲ್ಲಿ ಮಹಾದೇವಾಲಯದ ಪ್ರತಿಷ್ಠಾಪನೆಯ ಹಬ್ಬಾಚರಣೆ ನಡೆಯುತ್ತಿತ್ತು. ಯೇಸು ಸ್ವಾಮಿ ಆ ದೇವಾಲಯದ ಆವರಣದಲ್ಲಿದ್ದ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು. ಯೆಹೂದ್ಯರು ಅವರನ್ನು ಸುತ್ತುವರಿದು, “ಇನ್ನೆಷ್ಟುಕಾಲ ನಮ್ಮನ್ನು ಸಂಶಯದಲ್ಲಿರಿಸುವೆ?ನೀನೇ ಅಭಿಷಿಕ್ತನಾದ ಲೋಕೋದ್ಧಾರಕ ಆಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು. ಯೇಸು ಪ್ರತ್ಯುತ್ತರವಾಗಿ, “ನಾನು ನಿಮಗೆ ಹೇಳಿಯಾಯಿತು. ಆದರೂ ನೀವು ನಂಬುತ್ತಿಲ್ಲ. ನನ್ನ ಪಿತನ ಹೆಸರಿನಲ್ಲಿ ನಾನು ಮಾಡುವ ಕಾರ್ಯಗಳೇ ನನ್ನ ಪರವಾಗಿ ಸಾಕ್ಷಿಕೊಡುತ್ತವೆ. ಆದರೂ ನಿಮಗೆ ನಂಬಿಕೆಯೆಂಬುದಿಲ್ಲ. ಕಾರಣ, ನೀವು ನನ್ನ ಕುರಿಗಳಲ್ಲ. ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು, ಅವನ್ನು ನನಗೆ ಕೊಟ್ಟ ಪಿತ ಸರ್ವಶ್ರೇಷ್ಠರು. ಪಿತನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು. ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.

No comments:

Post a Comment